Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...