Homeಕಥೆಕಪಿಲ ಪಿ ಹುಮನಾಬಾದೆ ಅವರ ಕಥೆ: ಫೋಟೋ ಕನಸು

ಕಪಿಲ ಪಿ ಹುಮನಾಬಾದೆ ಅವರ ಕಥೆ: ಫೋಟೋ ಕನಸು

- Advertisement -
- Advertisement -

ರಾತ್ರಿ ಯಾವ ಸಪ್ಪಳವು ಮಾಡದೆ ಸುಮ್ಮನೆ ಮಲಗಿತ್ತು. ನಕ್ಷತ್ರಗಳು ಸಹ ಸುಸ್ತಾಗಿದ್ದವು. ನೆಲದ ಮೇಲಿನ ಮಣ್ಣಿನ ಮೇಲೆ ಯಾರೋ ನೀರು ಎರಚಿ ಹೋದಂತೆ ತಂಪಾದ ಗಾಳಿ ಮೂಗಿಗೆ ಬಂದು ಬಡಿಯುತ್ತಿತ್ತು. ಅಲ್ಲೇ ಮನೆ ಮುಂದಿನ ಅಂಗಳದಲ್ಲಿ ಮಲಗಿದ್ದ ಸುಮಯ್ಯ ಇವೆಲ್ಲ ಗಮನಿಸುತ್ತ ತನ್ನ ಪುಟ್ಟ ಕೈಗಳಿಂದ ತನ್ನವೇ ಕಾಲುಗಳು ಒತ್ತಿಕೊಳ್ಳುತ್ತ ಕೂತಿದ್ದಳು. ನಡುರಾತ್ರಿ ಹೀಗೆ ಹುಡುಗಿ ಎಚ್ಚರಗೊಂಡ ಸದ್ದಿಗೆ, ಸುಮಯ್ಯಳ ಅಮ್ಮ ರಜಿಯಾ ಕಣ್ಣು ಬಿಟ್ಟು ಎಚ್ಚರಗೊಂಡರು ಸಹ, ಮಗಳೊಂದಿಗೆ ಮಾತನಾಡಲು ಹೋಗಲಿಲ್ಲ. ಪಡಸಾಲಿಗೆ ಹೋಗಿ ನೀರು ಕುಡಿಯಬೇಕೆಂದುಕೊಂಡ ಫಾತಿಗೆ ಕತ್ತಲು ಯಾಕೋ ಭಯ ಹುಟ್ಟಿಸುತ್ತಿತ್ತು.

ನಡುರಾತ್ರಿ ನಸುಕಿಗೆ ಧುಮುಕುವುದಕ್ಕೆ ಇವತ್ಯಾಕೆ ಇಷ್ಟು ಹೊತ್ತು ತಗುಲಿತಿದೆಯೆಂದು ವಿಚಾರಕ್ಕೆ ಕೂತವಳಿಗೆ, ನಿದ್ದೆ ಬಂದು ಎತ್ತುಕೊಂಡು ಹೋಗಿದ್ದು, ಮುಂಜಾನೆ ಎದ್ದಮೇಲೆಯೇ ಹೊಳೆದದ್ದು. ಅಮ್ಮೀ ರಜಿಯಾ ಬಂದು “ಏಳೇ ಸುಮ್ಮಿ ಹೊತ್ತು ತಲಿ ಮ್ಯಾಲ ಏರ್ಯಾದ” ಅಂದಾಗ ಬುಸಕ್ಕನೆ ಎದ್ದಳು. ಹಾಸಿಗೆಯಿಂದ ಎದ್ದ ತಕ್ಷಣ ಮಗಳ ಮುಖ ದಿಟ್ಟಿಸಿ ವಿವರವಾಗಿ ನೋಡಿದ ರಜಿಯಾ, ಸುಮಯ್ಯ ದಿನಕ್ಕಿಷ್ಟು ಎತ್ತರವಾಗಿ ಮತ್ತು ಗಂಭೀರವಾಗಿ ಕಾಣುತ್ತಿರುವುದನ್ನು ನೋಡಿ ಒಳಗೊಳಗೆ ಭಯಪಟ್ಟಳು.

ಹಲ್ಲುಜ್ಜಿ, ಮುಖ ತೊಳೆದುಕೊಳ್ಳಲು ಹೇಳಿದ ಅಮ್ಮಿಯ ಮಾತು ಧಿಕ್ಕರಿಸಿ ನೇರವಾಗಿ ಚಹಾ ಹೀರುತ್ತಾ ಕೂತಳು. ಎಂದಿನಂತೆ ಅವಸರದಲ್ಲಿದ್ದಳು. ಕಣ್ಣೆದುರು ಬಗೆಬಗೆಯ ತರಕಾರಿಗಳು ತುಂಬಿದ ಬುಟ್ಟಿಯೊಂದು ಅವಳ ತಲೆಯೇರಲು ಕಾದು ಕುಳಿತಿತ್ತು. “ಅಮ್ಮಿಯ ಕಾಲು ನೆಟ್ಟಗಿದ್ದರೆ, ನಾನೊಂದು ಕೈಯಲ್ಲಿ ಸಣ್ಣ ತರಕಾರಿ ಚೀಲವೊಂದು ಹಿಡಿದುಕೊಂಡು ಬರ್ತಿದ್ದೆ. ಈಗ ಇಡೀ ತರಕಾರಿ ಬುಟ್ಟಿ ಹೊತ್ತುಕೊಳ್ಳುವಂತೆ” ಆಗಿದೆಯೆಂದು ಒಳಗೊಳಗೆ ಅಂದುಕೊಂಡು ನಿಟ್ಟುಸಿರೊಂದಬಿಟ್ಟಳು.

“ಅಮ್ಮೀ ಈ ಬುಟ್ಟಿ ಎತ್ತಿ ಜರಾ ತಲಿ ಮ್ಯಾಲಿನ ಸಿಂಬಿ ಮ್ಯಾಲ ಕರೆಕ್ಟ್ ಆಗಿ ಕುಂದರುವಂಗ ಇಡು” ಅಂದಳು ಸುಮಯ್ಯ. ತಾಳಗಿ ಇನ್ನೂ ಗಟ್ಟಿಯಾಗದ ತಲೆ ಮೇಲೆ ಎಂತಹ ಭಾರ ಹೊರೆಸುವಂತಾಯಿತ್ತಲ್ಲ ಎಂದು ರಜಿಯಾ ಮರುಕಪಟ್ಟಳು.

ಅಮ್ಮೀ ಕಣ್ಣುಗಳು ಹಸಿಯಾಗಿದ್ದು ನೋಡಿ, “ಆಮ್ಯಾಲ ಅಳುವಂತಿ, ಫಸ್ಟ್ ತಲೀ ಮ್ಯಾಲ ಬುಟ್ಟಿ ಇಡು, ಬಿಸಿಲು ನೆತ್ತಿಗೇರದರ ಏನ ಮಾಡ್ಲಿ ಹೇಳು, ಕಾಯಿಪಲ್ಯ ಎಷ್ಟು ನೀರು ಹಾಕಿದ್ರು ಒಣಗಿ ಹೋಗ್ತದ” ಎಂದಳು.

ನಾಜೂಕಾಗಿ ಮಗಳ ತಲೆ ಮೇಲೆ ಬುಟ್ಟಿ ಇಟ್ಟು ಅಂಗಳದಿಂದ ಇಳಿದುಹೋಗುತ್ತಿದ್ದ ಸುಮಯ್ಯಳ ಬೆನ್ನು ನೋಡುತ್ತಾ ನಿಂತಳು. ಅವಳ ದೇಹದ ಆಕಾರಕ್ಕಿಂತ ದೊಡ್ಡದಾದ ತರಕಾರಿ ಬುಟ್ಟಿ ಭಾರಕ್ಕೆ, ಹುಡುಗಿಗೆ ಸರಿಯಾಗಿ ಬಾಯಿಂದ ಗಾಳಿ ಸಹ ಬಿಡಲು ತೊಂದರೆ ಮಾಡುತ್ತಿತ್ತು. ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆದು ನಿಂತಿದೆ. ನಮ್ಮ ಸುಮಯ್ಯಳಿಗೆ ಸಾಲಿಗೆ ಸೇರಿಸಿದ್ದರೆ ಈಗ ಏಳನೇ ಕ್ಲಾಸಿನಲ್ಲಿರುತಿದ್ದಳು, ಎಂದು ಒಂದೆರಡು ವರ್ಷದ ಕೆಳಗೆ ಹೇಳಿದ ತುಂಗಪ್ಪ ಮಾಸ್ತರರ ಮಾತು ಎಂದಿನಂತೆ ಮತ್ತೆ ಕೇಳಿಸಿತು. ಏನೂ ಮಾಡಲಾಗದ ಅಸಹಾಯಕತೆಯಲ್ಲಿ ಅಡುಗೆ ಮನೆ ಸೇರಿ ರಜಿಯಾ ಕೆಲಸಕ್ಕಿಳಿದಳು.

ಅರ್ಧ ಎಕರೆಯಷ್ಟು ಹೊಲವಿರುವ ರಜಿಯಾ, ಊರಲ್ಲಿ ಯಾರ ಮುಂದೆಯೂ ಕೈ ಚಾಚಿದವಳಲ್ಲ. ಕುಡಿದು ಬಂದು ದನಕ್ಕೆ ಬಡಿದಂತೆ ಬಡಿಯುತ್ತಿದ್ದ ಗಂಡ ಸತ್ತು ಮೂರ್ನಾಲ್ಕು ವರ್ಷಗಳೆ ಆಯ್ತು. ಅವನ ನೆನಪುಗಳಿಗೆ ಎಂದಿಗೂ ಮಾತಾಡಿಸಿದವಳಲ್ಲ. ಒಂದಿಷ್ಟು ತರಕಾರಿ ಬೆಳೆದು, ಮಗಳಿಂದ ಮಾರಿಸಿ ಬದುಕು ಸಾಗಿಸುತ್ತಿದ್ದಳು.

“ಎರಡು ಹೊಟ್ಟಿ ತುಂಬಲಕ ಇಷ್ಟು ಸಾಕಲ್ಲವೇ?” ಎಂದು ತನಗೆ ತಾನೇ ಹೇಳಿಕೊಳ್ಳುತ್ತಿದ್ದಳು.

ಮುಂಜಾನೆ ಏಳೆಂಟು ಅನ್ನುವಷ್ಟರಲ್ಲಿಯೇ “ಫ್ರೆಶ್ ಪಾಲಕ್, ಚೌಳಿಕಾಯಿ, ಎಳಿಕ ಗಜರಿ, ಹೀರೆಕಾಯಿ, ಹತ್ತು ರೂಪಾಯಿಗಿ ಎರಡು ಸೂಡು ಮೆಂತಿ ಪಲ್ಯ ಅಂತ ಸೌಂಡು ಬರುವವರೆಗೂ ಎಷ್ಟೋ ಮನೆಗಳಲ್ಲಿ ಗ್ಯಾಸ್ ಆನ್ ಆಗುತ್ತಲೆ ಇರಲಿಲ್ಲ. ಸುಮಯ್ಯ ತನ್ನೂರಿಂದ ಸಮೀಪವೆ ಇರುವ ದೊಡ್ಡ ಪಟ್ಟಣದ ಏರಿಯಾ ಒಂದರಲ್ಲಿ ತರಕಾರಿ ಮಾರುತ್ತಿದ್ದಳು. ಅದೇ ಟೈಮಲ್ಲಿ ಬಣ್ಣಬಣ್ಣದ ಸ್ಕರ್ಟ್‌ಗಳು ತೊಟ್ಟುಕೊಂಡು, ತಲೆಗೆ ಕೆಂಪು ರಿಬ್ಬನ್ ಹಾಕಿಕೊಂಡು ಸ್ಕೂಲಿಗೋಗುವ ಹುಡುಗಿಯರತ್ತ ಆಸೆಗಣ್ಣಿನಿಂದ ನೋಡುತ್ತಾ ನಿಲ್ಲುತ್ತಿದ್ದಳು.

“ಏನೇ ಫಾತಿ ಮೊನ್ನಿ ಉಳದಿಂದೆ ಬುಟ್ಯಾಗ ತುರಕೊಂಡ ಬಂದಿ ಅನಸ್ತದ” ಅನ್ನುತ್ತಲೆ ತರಕಾರಿ ತೆಗೆದುಕೊಳ್ಳುವ ಆಂಟಿಯರೆದುರು, “ಇಲ್ಲರೀ ಯವ್ವಾ ಫ್ರೆಶ್ ಮಾಲ್ ಅದ” ಅಂತ ನಗುತ್ತಾ ಹೇಳುವುದನ್ನು ಈಗ ಅವಳು ಪೂರ್ತಿ ಕೈಬಿಟ್ಟಿದ್ದಳು. ನಾಲ್ಕೈದು ರೂಪಾಯಿ ಉಳಸೋ ಸಲುವಾಗಿ ಈ ಆಂಟಿಯರು ಈ ಡೈಲಾಗ್ ಹೊಡಿಲತರ ಎಂಬುವುದು ಅವಳಿಗೆ ಗೊತ್ತಾಗಿ ಹೋಗಿತ್ತು.

ಹೀಗೆ ಮನೆಯಿಂದ ಮನೆಗೆ ನಡೆಯುತ್ತಿದ್ದ ಸುಮಯ್ಯಳಿಗೆ, ರಸ್ತೆಯಲ್ಲಿ ಕೆಸರು ಗುಂಡಿಗಳು ಕಂಡರೆ ಸಾಕು ಮೊದಲಿನಂತೆ ಟಣ್ ಅಂತ ಹಾರದೆ, ಅದರ ಇನ್ನೊಂದು ಬದಿಯಿಂದ ನಾಜೂಕಾಗಿ ನಡೆಯುವುದು ಈಗ ಕಲಿತು ಬಿಟ್ಟಿದ್ದಳು. ಹಾಗೇ ಹೋಗು ತ್ತಿದ್ದವಳಿಗೆ ಎಂದಿನಂತೆ ಕರೆದು, ಒಂದಿಷ್ಟು ಉಳಿದಿದ್ದ ಟಿಫಿನ್ ಕೊಟ್ಟು ಮಾತಾಡಿಸುವ ದೊಡ್ಡ ದೇಹದ ಹೆಂಗಸಾದ ಸಂಗವ್ವ ಇವತ್ತೂ ಸಹ ಕರೆದಳು.

ಅಷ್ಟೇನೂ ವಯಸ್ಸಾಗಿರದ ಐವತ್ತು ದಾಟಿದ ಸಂಗವ್ವ ಸುಮಯ್ಯಗೆ ಏನಾದರೂ ತಿನ್ನಲು ಸದಾ ಕೊಡುತ್ತಿದ್ದಳು.
“ರಾತ್ರಿ ಭಾಳ ಕಾಲ ನೋಯಿಸಿತಿರಬೇಕಲ್ಲ? ಮೊದಲೆ ಎಳಿ ಹುಡುಗಿ” ಅಂದಳು ಸಂಗವ್ವ. ಇದಕ್ಕೆ ಏನು ಪ್ರತಿಕ್ರಿಯೆ ನೀಡದೆ ಪ್ಲೇಟಿನಲ್ಲಿದ್ದ ಉಪ್ಪಿಟ್ಟು ತಿನ್ನುತ್ತಾ ಕೂತಿದ್ದಳು ಸುಮಯ್ಯ.

ಪ್ರೀತಿ ಉಕ್ಕಿಸುವ ನೋಟದಿಂದ ಸಂಗವ್ವ “ಯಾಕೋ ಮುಖ ಭಾಳ ಬಾಡಿ ಹೋಗ್ಯಾದೆ ಪೋರಿ” ಎಂದಳು.

“ಏನಿಲ್ಲೇ ಸಂಗವ್ವ ರಾತ್ರಿ ವಿಚಿತ್ರ ಕನಸು ಬೀಳ್ತಾವ. ಫಸ್ಟ್ ಫಸ್ಟಿಗಿ ತರಕಾರಿ ಮಾರೋದ ಹೆಂಗತ ಚಿಂತಿ ಆಗಿತ್ತು. ಈಗ ರೂಢಿ ಬಿದ್ದದ. ಥೋಡೆ ಕಾಲು ಕೈ ಎಳಿತವ ಖರೇ, ಅವೆ ದೊಡ್ಡದು ಮಾಡಕೊಂತ ಕುಂತ ಅಂದರ ಅಮ್ಮೀ ಮೊತಿ ಸಣ್ಣದ ಮಾಡ್ತಾಳ” ಅನ್ನುತ್ತಲೇ ಸುಮಯ್ಯ ಮೌನವಾದಳು.

“ರಾತ್ರಿಗಿ ಅಂತದೇನ ಕನಸು ಬೀಳ್ತಾವೆ ಸುಮ್ಮಿ?”

ಎದೆಯೊಳಗೆ ಮುಚ್ಚಿಟ್ಟುಕೊಂಡಿದ್ದ ಪುಟ್ಟದೊಂದು ನಿಟ್ಟುಸಿರು ಬಿಟ್ಟಳು ಸುಮ್ಮಿ. “ಈ ಹೀರೆಕಾಯಿ ಹಂಗ ಉದ್ದ ಬೆಳಿಲತಿನಿ ಆದರ ಜೀವ ಇಲ್ಲ ಅನಸಲತದ ಒಳಗ. ಬಾಜು ಮನಿ ಫಾತಿ ಅಂತಾಳ ಟಮೋಟ್ ಹಂಗ ಕೆಂಪು ಅದೀ ಅಂತ ಆದರ ಒಳಗ ಒಣಗಿ ಹೋಗಿನಿ ಅನಸಲತದ ಸಂಗವ್ವ. ನನ್ನ ವಯಸ್ಸಿನ ಗೆಳತ್ಯಾರ ಜೊತಿ ಆಟ ಆಡೋ ವಯಸ್ಸಾಗ ನಿನ್ನ ಹಂತಕಿ ಸಂಗಟ ಮಾತ ಆಡಕೊತ ಕುಂದರೋ ಟೈಮ್ ಬಂದದ ನೋಡು ಯವ್ವಾ ಅಂದಳು.

ಯಾಕೋ ತಟ್ಟನೆ ಇಬ್ಬರೂ ಮಾತು ಮುಂದು ವರೆಸುವ ಆಸಕ್ತಿ ತೋರಿಸಲಿಲ್ಲ. ಮನೆಮುಂದಿನ ಗಾರ್ಡನ್ನಿನಲ್ಲಿಟ್ಟಿದ್ದ ಪಂಜರದೊಳಗೆ ಬಣ್ಣ ಬಣ್ಣದ ಹಕ್ಕಿಗಳು ಆಡೋದು ನೋಡಿ ಹೊರಗಿಂದ ಸುಮ್ಮಿ ಕೈತಟ್ಟಿ ಸಂಭ್ರಮಿಸಿದಳು. ಆ ಪಂಜರದ ಪಕ್ಕದಲ್ಲಿದ್ದ ಕೆಂಪು ಗೋಡೆ ಮೇಲೆ ಹಸಿರು ಬಣ್ಣದ ಹಕ್ಕಿಯೊಂದು ತಲೆ ಮೇಲೆ ಕೂತಂತೆ ಫೋಟೋ ತೆಗೆಸಿಕೊಂಡಿದ್ದ ಪುಟ್ಟ ಹುಡುಗನ ಪಟ ನೋಡಿ,

“ಯಾರಿದು ಸಂಗವ್ವ?” ಅಂದಳು.

“ಇದು ನನ್ನ ಮೊಮ್ಮಗ ಆಕರ್ಷ, ಅವರಪ್ಪ ಏನೇನೋ ಮಾಡಿ ಹಕ್ಕಿ ಒಯ್ದು ಪಾರಂದ ತಲಿ ಮ್ಯಾಲ ಕುಂದರಸಿ ಹಂಗ ಫೋಟೋ ತೆಗದಾನ ನೋಡು” ಅಂದಳು ಸಂಗವ್ವ.

“ಚಂದ ಬಂದದ, ಮೊಮ್ಮಗ ಮಸ್ತ್ ಹನಾ ನೋಡ” ಎನ್ನುತ್ತಾ, ಬುಟ್ಟಿಯಲ್ಲಿ ಉಳಿದಿದ್ದ ಕೋತ್ತಂಬರಿಯನ್ನ ಸಂಗವ್ವ ಬೇಡ ಅಂದರು ಅವಳ ಕೈಗಿಟ್ಟು, ಗೇಟು ತೆಗೆದು ಹೊರಬಂದಳು.

ಸಣ್ಣ ಕನ್ನಡಿಯಲ್ಲಿ ತನ್ನ ಮುಖ ತಾನೇ ನೋಡಿಕೊಂಡದ್ದು ಬಿಟ್ಟರೆ ತನ್ನದು ಅಂತ ಒಂದು ಫೋಟೋ ಇಲ್ಲವಲ್ಲ ಎಂಬುವುದು ಅವಳಿಗೆ ಇವತ್ತು ನೆನಪಾಯ್ತು! “ಛೇ! ಇಷ್ಟು ದಿನ ಹೊಳೆಯಲೇ ಇಲ್ಲ. ನಂದೊಂದು ಪೋಟೋ ಆದ್ರು ತೆಗಸಿಕೊಂಡು ಬರಬೇಕು ಅಮ್ಮೀಗೆ ಹೇಳಿ. ಒಂದು ಹತ್ತು ರೂಪಾಯಿ ಹೆಚ್ಚಿಗಿ ಕೊಟ್ಟು ಅಂಥದೊಂದು ಹಕ್ಕಿ ನನ್ನ ತಲಿ ಮ್ಯಾಲನು ಕುಂದರಸ ಅಂತ ಹೇಳಬೇಕು ಫೋಟೋ ತೆಗಿಯೊನಿಗೆ ಅಂದುಕೊಳ್ಳುತ್ತಾ, ಬುಟ್ಟಿಯಲ್ಲಿ ಇನ್ನೂ ಸ್ವಲ್ಪ ಉಳಿದಿದ್ದ ತರಕಾರಿ ಕಡೆ ನೋಡದೆ ಊರ ಹಾದಿ ಹಿಡಿದಳು.

“ಅಮ್ಮಿದು ನಂದು ಒಂದು ಫೋಟೊಯಿಲ್ಲ. ನೆನಪಿಗರೆ ಮುಂದ ನೋಡಲಕ ಫೋಟೋ ಇರಬೇಕು. ಸಂಗವ್ವನ ಜೊತಿ ಇವತ್ತು ಕುಂತಿದು ಮಸ್ತ್ ಆಯ್ತು ಇಲ್ಲಂದ್ರ ತಲ್ಯಾಗೆ ಬರತಿರಲಿಲ್ಲ ಈ ವಿಚಾರ” ಅಂದುಕೊಳ್ಳುತ್ತಾ, ಊರು ಪ್ರವೇಶಿಸಿದಳು.

ಊರಿಗೆ ಕಾಲಿಟ್ಟ ಸುಮ್ಮಿಗೆ ತಲಿ ಮ್ಯಾಲಿನ ಬುಟ್ಟಿ ಇನ್ನೂ ತುಸು ಭಾರವಾಗೆ ಇರೋದು ಈಗ ಅರಿವಿಗೆ ಬಂತು. ಅಮ್ಮಿಗೆ ಇವತ್ತು ಯಾರೂ ಅಷ್ಟು ತೊಗೊಳಿಲ್ಲ ಅಂತ ಹೇಳಿದರೆ ಆಯ್ತೆಂದು ಧೈರ್ಯದಿಂದ ನಡೆದಳು. ಅವಳ ಮುಂದಿನಿಂದಲೇ ಠಣ್ ಅಂತ ಜಿಗಿದು ಕರಿ ಬೆಕ್ಕಿನ ಮರಿಯೊಂದು ಮಿಂಚಿಹೋಯ್ತು. ಅವಳು ತಲೆಗೆ ಬಿಗಿಯಾಗಿ ಕಟ್ಟಿಕೊಂಡಿದ್ದ ಸ್ಕಾರ್ಫ್ ಸಡಿಲವಾಗಿತ್ತು. ಕೊಳೆತ ಈರುಳ್ಳಿಯೊಂದರ ವಾಸನೆ ಬುಟ್ಟಿಯಿಂದ ಸೋರಿ ಅವಳ ಮೂಗಿಗೆ ಕಿರಿಕಿರಿ ಉಂಟುಮಾಡುತ್ತಿತ್ತು.

ಓಣಿ ತಿರುವಿಗೆ ಸುಮ್ಮಿಗಾಗಿ ಶತಮಾನದಿಂದ ಕಾಯುತ್ತಿರುವಂತೆ ಅವಳ ಗೆಳತಿ ಫಾತಿ ಯಾವುದೋ ಒಂದು ಗಾಢ ಚಿಂತೆಯಲ್ಲಿರುವಂತೆ ಕುಳಿತಿದ್ದವಳು, ಇವಳಿಗೆ ನೋಡಿ ತುಸು ನಿರಾಳವಾಗಿ ಬಂದು ಕೈಹಿಡಿದಳು. ಇಬ್ಬರೂ ಮನೆಯತ್ತ ಸಾಗಿದರು. ಅಂಗಳವೇರಿ ಒಳಬಂದ ಸುಮ್ಮಿಯ ಕಣ್ಣುಗಳ ಮುಂದೆ ಅಮ್ಮೀ ತೀರಾ ಸೊರಗಿ ಹೋದಂತೆ ಕಾಣುತ್ತಿದ್ದಳು. ಮುಂಜಾನೆ ಲವಲವಿಕೆಯಿಂದ ಓಡಾಡಿಕೊಂಡಿದ್ದ ಅಮ್ಮೀ ಹೀಗೆ ಗರಬಡಿದಂತೆ ಕೂರಲು ಕಾರಣವೇನಿರಬಹುದೆಂದು ಹುಡುಕುತ್ತಿದ್ದ ಸುಮ್ಮಿಗೆ ತಲೆಯೊಳಗಿದ್ದ ಫೋಟೋ ಕಲ್ಪನೆಗಳು ಫಳಾರನೆ ಒಡೆದುಹೋದವು.

ರಜಿಯಾ ಮಗಳ ಗಲ್ಲ ನೇವರಿಸುತ್ತ. ಒಳಮನೆಯಿಂದ ಕುಡಿಯಲು ನೀರು ತಂದುಕೊಟ್ಟಳು.

“ಮಗ ಹೆಂಗಾಯ್ತು ವ್ಯಾಪಾರ?”

“ಅಮ್ಮೀ, ಎಲ್ಲಾ ಹೆಂಗಸರದು ಒಂದೇ ಗೋಳು, ತರಕಾರಿ ಎಷ್ಟು ಫ್ರೆಶ್ ಒಯ್ದು ಕೊಟ್ಟರೂ ಫ್ರೆಶ್ ಇಲ್ಲಂತರಾ, ಅಷ್ಟೇನ ಉಳಿದಿಲ್ಲ ಬಿಡು ಬುಟ್ಯಾಗ, ದಿನ ಹೋಗೊಷ್ಟೆ ಹೊಗ್ಯಾದ” ಅಂದಳು.

ಸಪ್ಪಗೆ ಬಿದ್ದ ಅಮ್ಮೀ ಮುಖ ನೋಡಿ ಏನಾಗಿದೆ ಅನ್ನೋ ನೋಟ ಬೀರಿದಳು.

ರಜಿಯಾ ತುದಿ ಬೆರಳುಗಳಿಂದ ನೆಲ ಸವರುತ್ತ ಮಗಳ ಹಣಿ ಮೇಲೆ ಕೈಯಾಡಿಸುತ್ತ. “ನಿನಗಂತೂ ಸಾಲಿ ಮುಖ ತೋರಸೋದು ನನ್ನ ಕೈಯಲ್ಲಿಂದ ಆಗಲಿಲ್ಲ ಸುಮ್ಮು, ನಂದು ಕಾಲಂತೂ ಮುರದೆ ಹೊಗ್ಯಾದ, ಅದು ನೆಟ್ಟಗ ನಿಲ್ಲಬೇಕಂದರ ಎಷ್ಟು ದಿನ ಬೇಕೊ ಏನೋ…” ಅನ್ನುತ್ತಾ ರಜಿಯಾ ಮಾತು ತುಂಡರಸಿ ನಿಂತಳು.

ಹೇಳಲಾಗದ ಮಾತುಗಳು ಗಂಟಲೊಳಗೆ ನುಂಗಿಕೊಳ್ಳುತ್ತಿದ್ದ ರಜಿಯಾಗೆ ಆ ಮಾತುಗಳು ಹೊರಹಾಕುವುದು ಇಷ್ಟವಿರಲಿಲ್ಲ.

ಇದು ಕಂಡ ಸುಮ್ಮಿ ನಗುತ್ತಾ “ಅಮ್ಮೀ ಒಂದು ಮಾತು ಛೋಲೊಂದು ಇರ್ತದ, ಇನ್ನೊಂದು ಖರಾಬ್ ಇರ್ತಾದ, ಎರಡರಾಗವೊಂದು ಕೇಳಬೇಕೆ ಬಿಡು, ಹೇಳ ಏನ ಆಗಲ್ಲ ಅಂದಳು.

ಸುತ್ತ ಕಣ್ಣಾಡಿಸಿದ ರಜಿಯಾಳಿಗೆ, ಅಂಗಳದಲ್ಲಿ ದಟ್ಟ ಬಳ್ಳಿ ಹರಡಿಕೊಂಡು ನಿಂತ ಹೀರೆಕಾಯಿ ನೋಡಿ ನನ್ನ ಮಗಳು ಸಹ ಹೀಗೆ ಅಂಗಳದ ತುಂಬಾ ಆಡಿ ಬೆಳೆದವಳು, ಮೂಲೆಯಲ್ಲಿದ್ದ ಟಮೋಟಗಿಂತಲೂ ಕೆಂಪಿರುವವಳು, ಇದೊಂದು ವಸ್ತು ನನ್ನ ಕಡೆ ಉಳಿಬಹುದು ಅನ್ನಕೊಂಡಿದ್ದೆ ಅದು ಸಹ ಹೋಗುವ ಕಾಲ ದೂರವಿಲ್ಲ ಅಂದುಕೊಂಡಳು.

“ಸುಮ್ಮಿ, ಮೆಹಬೂಬ್ ನಗರದ ಹುಸೇನಿ ತಾತ ಬಂದಿದ್ರು. ಮಗಳ ಬೆಳದ ನಿಂತಾಳ. ನಿನ್ನ ಕಣ್ಣಿಗಿ ಸಣ್ಣಾಕಿನಿ ಇರಬೇಕು ಆದರ ಪ್ಯಾಟಿ ಮಂದಿ ಕಣ್ಣು ಛೋಲೊ ಇರಲ್ಲ. ಕಾಲ ಸೂಕ್ಷ್ಮ ಅದ. ನಿನ್ನ ತರಕಾರಿ ಮಾರೋ ಕಾಲಗ, ಕೈಯಾಗಿನ ವಜ್ರ ಕಳಕೊಬ್ಯಾಡ, ಪಟ್ಟಂತ ನಮ್ಮ ಸಂಬಂಧಿ ಹುಡುಗ ಒಂದದ ಅವರ ಕಡೆ ಸಂಬಂಧ ನೋಡೊಣ ಸುಮ್ಮಿಗಿ ಅಂದಾರ” ಅಂದಳು .

ಅಮ್ಮೀ ಮಾತು ಬೆಳೆಯುತ್ತಲೆ ಹೋಗುತಿತ್ತು. “ಕಾನೂನು ಅದು ಇದು ಅಡ್ಡ ಬರ್ತಾವ ನೀ ಇನ್ನೂ ಸಣ್ಣಕಿ ಅದಿ, ಈಗ ಫಿಕ್ಸ್ ಮಾಡಿ ಇಡೋಣ, ಮುಂದಿಂದ ಮುಂದ ನೋಡೊಣ”.

ತುದಿ ಮೊದಲಿಲ್ಲದ ಅಮ್ಮೀ ಮಾತು ಬೆಳೆಯುತ್ತಲೇ ಹೋಗುತ್ತಿತ್ತು.

ಸುಮಯ್ಯ ಗಂಭೀರವಾಗಿ ತಟ್ಟನೆ “ಅಮ್ಮೀ ನಾಳಿಗಿ ಪ್ಯಾಟಿಗಿ ಹೋಗಿ ಒಂದು ಫೋಟೋ ತೆಗಿಸೋಣವಾ? ಅಂದಳು.

ಕಪಿಲ ಪಿ ಹುಮನಾಬಾದೆ

ಕಪಿಲ ಪಿ ಹುಮನಾಬಾದೆ
ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್‌ನವರು. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾದಂಬರಿ ಹಾಣಾದಿ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿದೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿದ್ಯಾರ್ಥಿ


ಇದನ್ನೂ ಓದಿ: ಇಬ್ಬರು ಹೆಣ್ಣುಗಳು : ಅಕ್ಷತಾ .ಕೆ ಅವರ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...