ರಾಜ್ಯದಲ್ಲಿ ಮತ್ತೆ ಲಾಕ್ಡೌನ್, ನೈಟ್ ಕರ್ಫ್ಯೂ ಹೇರಲಾಗುತ್ತದೆ ಎಂಬ ವದಂತಿಗೆ ಮುಖ್ಯಮಂತ್ರಿ ಯಡಿಯೂರಪ್ಪ ತೆರೆ ಎಳೆದಿದ್ದು, ಲಾಕ್ಡೌನ್ ಅಥವಾ ನೈಟ್ ಕರ್ಫ್ಯೂ ಹೇರುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಏರುತ್ತಿರುವ ಹಿನ್ನೆಲೆ, ಬುಧವಾರ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದದರು. ಸಭೆಯಲ್ಲಿ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಹಾಗೂ ಕೊರೊನಾ ಎರಡನೇ ಅಲೆ ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಸಭೆ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಲಾಕ್ಡೌನ್ ಅಥವಾ ನೈಟ್ ಕರ್ಫ್ಯೂ ಹೇರುವ ಪ್ರಶ್ನೆಯೇ ಇಲ್ಲ ಎಂಬುವುದನ್ನು ಸ್ಪಷ್ಟ ಪಡಿಸಿದ್ದಾರೆ. ಈಗಿರುವ ಪರಿಸ್ಥಿತಿಯೇ ಮುಂದುವರಿಯಲಿದೆ. ಜನ ಮಾಸ್ಕ್ ಹಾಕುವುದನ್ನು ಮರೆತಿದ್ದಾರೆ. ಮಾಸ್ಕ್ ಕಡ್ಡಾಯವಾಗಿ ಧರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಲಾಕ್ಡೌನ್ ಬೇಡವೆಂದರೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಿಸಲು ಸಹಕರಿಸಿ: ಯಡಿಯೂರಪ್ಪ
ಕೊರೊನಾ ನಿಯಂತ್ರಣಕ್ಕಾಗಿ ಮದುವೆ ಸಮಾರಂಭ, ಬರ್ತ್ ಡೇ ಪಾರ್ಟಿ, ಸಿನಿಮಾ ಹಾಲ್ ಸೇರಿದಂತೆ ಎಲ್ಲ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ. ಈಗಿರುವ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಸಾರ್ವಜನಿಕ ಸಭೆ ಸಮಾರಂಭಗಳು ನಡೆಯುವ ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆ ಹೆಚ್ಚು ಮಾಡುತ್ತಿದ್ದು, ಜನ ಸೇರುವ ಕಡೆ ಮುನ್ನೆಚ್ಚರಿಕೆಗೆ ಸೂಚನೆ ನೀಡುತ್ತೇವೆ. ಜೊತೆಗೆ ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲು ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು, ಬೀದರ್ ಹಾಗೂ ಕಲಬುರಗಿ ಈ ಮೂರು ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಹೆಚ್ಚಿನ ನಿಗಾ ವಹಿಸುವಂತೆಯೂ ಕೇಂದ್ರ ತಿಳಿಸಿದೆ. ಎರಡಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಆಗಿ ಘೋಷಿಸಲು ಯೋಜಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ