ಉತ್ತರ ಪ್ರದೇಶದ ಬಿಜೆಪಿ ಸಚಿವ ಮತ್ತು ಶಾಸಕ ಸೇರಿದಂತೆ 12 ಜನರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹಿಂತೆಗೆದುಕೊಳ್ಳಲು ಅಲ್ಲಿನ ಸ್ಥಳಿಯ ನ್ಯಾಯಾಲಯ ಅನುಮತಿ ನೀಡಿದೆ.
ಸಚಿವ ಸುರೇಶ್ ರಾಣಾ, ಬಿಜೆಪಿ ಶಾಸಕ ಸಂಗೀತ್ ಸೋಮ್, ಬಿಜೆಪಿ ಮಾಜಿ ಸಂಸದ ಭರ್ತೇಂಡು ಸಿಂಗ್ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನಾಯಕಿ ಸಾಧ್ವಿ ಪ್ರಾಚಿ ಸೇರಿದಂತೆ 12 ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರ ವಿರುದ್ಧ 2013 ರಲ್ಲಿ ಮುಜಾಫರ್ನಗರ ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.
ಶುಕ್ರವಾರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮ್ ಸುಧ್ ಸಿಂಗ್ ಅವರು ಸರ್ಕಾರದ ವಕೀಲರಿಗೆ ಪ್ರಕರಣವನ್ನು ಹಿಂಪಡೆಯಲು ಅವಕಾಶ ನೀಡಿದರು.
ಜಿಲ್ಲಾ ಸರ್ಕಾರಿ ವಕೀಲ ರಾಜೀವ್ ಶರ್ಮಾ ಅವರ ಪ್ರಕಾರ, “ಸರ್ಕಾರಿ ನೌಕರರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯುವ ಮತ್ತು ದುರ್ವರ್ತನೆಯಿಂದ ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು” ಎಂದು ಹೇಳಿದರು.
ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ
ಆಗಸ್ಟ್ 2013 ರ ಕೊನೆಯ ವಾರದಲ್ಲಿ ಆರೋಪಿಗಳು ಮಹಾಪಂಚಾಯತ್ನಲ್ಲಿ ಪಾಲ್ಗೊಂಡು ತಮ್ಮ ಭಾಷಣಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದರು ಎಂದು ಆರೋಪಿಸಲಾಗಿದೆ.
ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಜರುಗಿಸದಂತೆ ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ನಿರ್ಧರಿಸಿದ್ದು, ಈ ಪ್ರಕರಣವನ್ನು ಹಿಂಪಡೆಯಲು ನ್ಯಾಯಾಲಯವು ತನ್ನ ಮನವಿಯನ್ನು ಅನುಮತಿಸಬೇಕು ಎಂದು ರಾಜ್ಯ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
2013 ರಲ್ಲಿ ಮುಜಾಫರ್ನಗರ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಕನಿಷ್ಠ 62 ಜನರು ಸಾವನ್ನಪ್ಪಿದ್ದರು ಎಂದು ದಿ ವೈರ್ ವರದಿ ಮಾಡಿದೆ.
ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ