Homeಮುಖಪುಟಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ಕರ್ನಾಟಕದಲ್ಲೂ ಹಲವು ಸಮುದಾಯಗಳು ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ಮಾಡಿದ್ದು, ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿತ್ತು.

- Advertisement -
- Advertisement -

ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಮರಾಠಾ ಮೀಸಲಾತಿಯನ್ನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇದನ್ನು ಅಸಂವಿಧಾನಿಕ ಎಂದು ಬುಧವಾರ ಹೇಳಿದೆ. ಶೇ. 50 ರ ಗರಿಷ್ಠ ಮಿತಿಯನ್ನು ಮತ್ತೆ ಪರಿಶೀಲಿಸುವ ಅಗತ್ಯ ಇಲ್ಲ ಎಂದೂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಐದು ನ್ಯಾಯಾಧೀಶರ ಪೀಠವು, ಮಹಾರಾಷ್ಟ್ರ ಸರ್ಕಾರವು ಮೀಸಲಾತಿಯ ಶೇ. 50 ರ ಗರಿಷ್ಠ ಮಿತಿಯನ್ನು ಮುರಿಯಲು ಯಾವುದೇ ಅಸಾಮಾನ್ಯ ಸನ್ನಿವೇಶಗಳಿಲ್ಲ ಎಂದು ಹೇಳಿದೆ.

ರಾಜ್ಯದಲ್ಲಿ ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ 2018 ರ ಕ್ರಮವನ್ನು ಸುಪ್ರೀಂಕೋರ್ಟ್ ಬುಧವಾರ ರದ್ದುಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ: ಮೀಸಲಾತಿ: ತುಷ್ಟೀಕರಣದ ತಂತ್ರವಾಗುತ್ತಿರುವ ಸಮಾನತೆಯ ಅಸ್ತ್ರ: ಎ ನಾರಾಯಣ

ಸಮುದಾಯವೊಂದಕ್ಕೆ ಪ್ರತ್ಯೇಕ ಮೀಸಲಾತಿ ನೀಡುವ ಕ್ರಮವನ್ನು ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ಘೋಷಿಸಿದೆ ಎಂದು ಪಿಟಿಐ ತಿಳಿಸಿದೆ.

ಕರ್ನಾಟಕದಲ್ಲೂ ಹಲವು ಸಮುದಾಯಗಳು ಪ್ರತ್ಯೇಕ ಮೀಸಲಾತಿಗಾಗಿ ಹೋರಾಟ ಮಾಡಿದ್ದು, ಹೋರಾಟ ಇನ್ನೂ ಚಾಲನೆಲ್ಲಿದೆ. ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದೆ. ಇದನ್ನು ಸಾಧಿಸಲು ಶೇ. 50 ರ ಗರಿಷ್ಠ ಮಿತಿಯನ್ನು ಉಲ್ಲಂಘಿಸಬೇಕಾಗುತ್ತದೆ. ನ್ಯಾಯಾಲಯಗಳ ಈ ನಿರ್ಬಂಧನೆಯಿಂದ ಪಾರಾಗಲು ಸಂಸತ್ತಿನ ಅನುಮೋದನೆ ಪಡೆಯಬೇಕಾಗುತ್ತದೆ. ಈ ಹಿಂದೆ ಈ ಸಾಹಸ ಮಾಡಿ ಯಶಸ್ವಿಯಾದ ತಮಿಳುನಾಡು ಅಲ್ಲಿ ಶೇ.69 ಪ್ರಮಾಣದ ಮೀಸಲಾತಿ ನಿಗದಿ ಮಾಡಿದೆ.

ದೇಶದ ಜನಸಂಖ್ಯೆಯ ಶೇ. 24 ರಷ್ಟಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಈಗ ಶೇ. 18 ಮೀಸಲಾತಿ ಸಿಗುತ್ತಿದೆ. ಈ ಸಮುದಾಯಗಳಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ಇತರೆ ಹಿಂದುಳಿದ ವರ್ಗದ (ಒಬಿಸಿ) ಸಮುದಾಯಗಳಿಗೂ ನ್ಯಾಯಯುತ ಪಾಲು ಸಿಕ್ಕಿಲ್ಲ ಎಂದು ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ಪ್ರಗತಿಪರ ಸಂಘಟನೆಗಳ ನಾಯಕರು ಆಕ್ಷೇಪ ಎತ್ತುತ್ತಲೇ ಬಂದಿದ್ದಾರೆ.

ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ಶೇ. 50 ರಷ್ಟು ಮೀಸಲಾತಿ ಅಂದರೆ, ಸಾಪೇಕ್ಷವಾಗಿ ಅಲ್ಪಸಂಖ್ಯಾತರಾದ (ಜನಸಂಖ್ಯೆಯಲ್ಲಿ ಎಸ್‌ಸಿ-ಎಸ್‌ಟಿ-ಒಬಿಸಿಗಳಿಗಿಂತ ಕಡಿಮೆ ಇರುವ) ಮುಂದುವರೆದ ಮೇಲ್ವರ್ಗ ಮತ್ತು ಮೇಲ್ಜಾತಿಗಳಿಗೆ ಉಳಿದ ಶೇ. 50 ರಷ್ಟು ಮೀಸಲಾತಿ ನೀಡಿದಂತೆ ಆಗುತ್ತದೆ ಎಂಬ ವಾದವೂ ಇದೆ.

ಈ ನಡುವೆ ಕಳೆದ ವರ್ಷ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ಕಲ್ಪಿಸಿದ್ದು, ಶೇ.3 ರಷ್ಟು ಇರುವ ಬ್ರಾಹ್ಮಣರಿಗಷ್ಟೇ ಅನುಕೂಲವಾಗುತ್ತಿದೆ.

ಹೀಗಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂಬ ವಾದ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಸುಪ್ರೀಂಕೋರ್ಟಿನ ನಿನ್ನೆಯ ಆದೇಶ ಕುರಿತು ಈಗಾಗಲೇ ಮಹಾರಾಷ್ಟ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.
’ಅಸಾಮಾನ್ಯ ಸಂದರ್ಭಗಳಲ್ಲಿ’ ಗರಿಷ್ಠ ಮಿತಿ ದಾಟಬಹುದು ಎಂಬ ಸುಪ್ರೀಂಕೋರ್ಟ್ ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿದೆ ಎನ್ನುವ ಕೆಲವು ತಜ್ಞರು, ಈ ’ಅಸಾಮಾನ್ಯ ಸಂದರ್ಭ-ಸನ್ನಿವೇಶ’ದ ವ್ಯಾಖ್ಯಾನವೇ ಆಗಿಲ್ಲ ಎನ್ನುತ್ತಾರೆ.

ಕೋರ್ಟ್ ನಿಲುವೇನು?

1992 ರ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ವಿಧಿಸಿರುವ ಶೇ.50 ಕೋಟಾ ಮಿತಿಯನ್ನು ಉಲ್ಲಂಘಿಸಿದೆ ಎನ್ನಲಾದ ‘ಮಹಾರಾಷ್ಟ್ರ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ-2018’ ಯನ್ನು ಪ್ರಶ್ನಿಸಿದ ಒಂದು ಗುಂಪಿನ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ಬುಧವಾರದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಲ್. ನಾಗೇಶ್ವರ ರಾವ್, ಎಸ್. ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್. ರವೀಂದ್ರ ಭಟ್ ಅವರ ಸಂವಿಧಾನ ಪೀಠವು, ಮಹಾರಾಷ್ಟ್ರದಲ್ಲಿ ಹಿಂದಿನ ಭಾರತೀಯ ಜನತಾ ಪಕ್ಷ ಸರ್ಕಾರವು ತಂದಿರುವ ಮೀಸಲಾತಿ ಕ್ರಮವು ಸಮಾನತೆಯ ತತ್ವಗಳನ್ನು ಉಲ್ಲಂಘಿಸಿದೆ ಎಂದು ತಿಳಿಸಿದೆ ಎಂದು ಲೈವ್ ಲಾ ವರದಿ ಹೇಳಿದೆ.

“ಗಾಯಕವಾಡ್ ಆಯೋಗ ಅಥವಾ ಹೈಕೋರ್ಟ್ ಎರಡೂ ಮರಾಠರಿಗೆ 50% ಮೀಸಲಾತಿಯನ್ನು ಮೀರಿದ ಯಾವುದೇ ಪರಿಸ್ಥಿತಿಯನ್ನು ಸೂಚಿಸಿಲ್ಲ” ಎಂದು ಭೂಷಣ್ ನೇತೃತ್ವದ ನ್ಯಾಯಪೀಠ ಸರ್ವಾನುಮತದಿಂದ ಘೋಷಿಸಿತು.

“ಆದ್ದರಿಂದ, ಗರಿಷ್ಠ ಮಿತಿಯನ್ನು ಮೀರಲು ಯಾವುದೇ ಅಸಾಮಾನ್ಯ ಸಂದರ್ಭಗಳಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ” ಎಂದು ಪೀಠ ಸ್ಪಷ್ಟಪಡಿಸಿದೆ.

ಈ ತೀರ್ಪು 2020 ರ ಸೆಪ್ಟೆಂಬರ್ 9 ರವರೆಗೆ ನಡೆದಿರುವ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ದಾಖಲಾತಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

ಮೀಸಲಾತಿ ಮಿತಿಯನ್ನು ಶೇ.50 ಎಂದು ನಿಗದಿಪಡಿಸಿದ 1992 ರ ಇಂದಿರಾ ಸಾಹ್ನಿ ತೀರ್ಪನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. “ಈ ತೀರ್ಪನ್ನು ಈ ನ್ಯಾಯಾಲಯವು ಪದೇ ಪದೇ ಅನುಸರಿಸುತ್ತಿದೆ ಮತ್ತು ಈ ನ್ಯಾಯಾಲಯದ ಕನಿಷ್ಠ ನಾಲ್ಕು ಸಂವಿಧಾನ ಪೀಠಗಳಿಂದ ಅನುಮೋದನೆ ಪಡೆದಿದೆ” ಎಂದು ಅದು ಹೇಳಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ತೀರ್ಪನ್ನು “ದುರದೃಷ್ಟಕರ” ಎಂದು ಕರೆದಿದ್ದಾರೆ ಎಂದ ಎನ್‌ಐ ವರದಿ ಮಾಡಿದೆ. ಸಮುದಾಯದ ಸದಸ್ಯರಿಗಾಗಿ “ಸ್ವಾಭಿಮಾನದ ಜೀವನ”ದ ಸಲುವಾಗಿ ಸರ್ವಾನುಮತದಿಂದ ಶಾಸನವನ್ನು ಅಂಗೀಕರಿಸಲಾಗಿದೆ ಎಂದು ಠಾಕ್ರೆ ಹೇಳಿದರು. “ಈಗ ಸುಪ್ರೀಂಕೋರ್ಟ್ ಮಹಾರಾಷ್ಟ್ರವು ಈ ಬಗ್ಗೆ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತದೆ, ಪ್ರಧಾನಿ ಮತ್ತು ಅಧ್ಯಕ್ಷರಿಗೆ ಮಾತ್ರ ಸಾಧ್ಯ” ಎಂದು ಅವರು ಹೇಳಿದರು.

2018 ರಲ್ಲಿ, ರಾಜ್ಯವ್ಯಾಪಿ ನಡೆದ ಮರಾಠಾ ಮೀಸಲಾತಿ ಹೋರಾಟದ ಆಗ್ರಹಕ್ಕೆ ಮಣಿದಿದ್ದ ಮಹಾರಾಷ್ಟ್ರದ ಅಂದಿನ ದೇವೇಂದ್ರ ಫಡ್ನವೀಸ್ ನೇತೃತ್ವದ ಬಿಜೆಪಿ ಸರ್ಕಾರವು ಮರಾಠರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.18 ಮೀಸಲಾತಿಯನ್ನು ಅನುಮೋದಿಸಿತ್ತು. 2019 ರಲ್ಲಿ ಈ ಕ್ರಮದ ವಿರುದ್ಧ ಅರ್ಜಿಗಳನ್ನು ವಿಚಾರನಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು, ಆದರೆ ಶೇ.18 ಮೀಸಲಾತಿ ಸಮರ್ಥನೀಯವಲ್ಲ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸುಗಳ ಪ್ರಕಾರ ಕೋಟಾವನ್ನು ಶೇ.12 -13 ಕ್ಕೆ ಇಳಿಸುವಂತೆ ಅದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಹೈಕೋರ್ಟ್‌ನ ತೀರ್ಪನ್ನು ತರುವಾಯ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅದು 2020 ರ ಸೆಪ್ಟೆಂಬರ್‌ನಲ್ಲಿ ತೀರ್ಪನ್ನು ತಡೆಹಿಡಿಯಿತು. ನಂತರ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ನೋಟಿಸ್ ನೀಡಿ, ಶೇ. 50 ರ ಮಿತಿಯನ್ನು ಮೀರಿ ಮೀಸಲಾತಿಯನ್ನು ಅನುಮತಿಸಬಹುದೇ ಎಂಬ ಬಗ್ಗೆ ರಾಜ್ಯಗಳ ಪ್ರತಿಕ್ರಿಯೆ ಕೋರಿತ್ತು.

ಕನಿಷ್ಠ ಆರು ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ಜಾಖಂಡ್ – ಮೀಸಲಾತಿ ಮೇಲಿನ ಮಿತಿಯನ್ನು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿವೆ. ಮಹಾರಾಷ್ಟ್ರ ವಿಧಾನಸಭೆ ಅಂಗೀಕರಿಸಿದ ಕಾನೂನು ಸಾಂವಿಧಾನಿಕವಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿತ್ತು.

ಸುಪ್ರೀಂಕೋರ್ಟಿನ ಈ ತೀರ್ಪು, ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಅಥವಾ ಮೀಸಲಾತಿ ಪರಿಷ್ಕರಣೆ ಮಾಡುವ ಒತ್ತಡದಲ್ಲಿರುವ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ತಮಿಳುನಾಡು ಮತ್ತು ಜಾಖಂಡ್ ರಾಜ್ಯಗಳ ಸರ್ಕಾರಗಳಿಗೆ ಹೊಸ ಸವಾಲನ್ನು ಒಡ್ಡಿದೆ.

ಇದನ್ನೂ ಓದಿ: ಮೀಸಲಾತಿಯ ಜೊತೆಗೇ ಸರ್ಕಾರಗಳು ಶಿಕ್ಷಣಕ್ಕೆ ಒತ್ತು ನೀಡಬೇಕು: ಸುಪ್ರೀಂ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...