ರಾಜ್ಯದಲ್ಲಿ ಶುಕ್ರವಾರದಿಂದ ಮುಂಗಾರು ಮಳೆ ಆರಂಭವಾಗಿದ್ದು, ರಾಜ್ಯಾದ್ಯಂತ ಮಳೆ ತೀವ್ರವಾಗುವ ಸಾಧ್ಯತೆಯಿದೆ. ಇನ್ನು ಒಂದು ವಾರಗಳ ಕಾಲ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರದಿಂದ ಜೂನ್ 13 ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ. ಅದಾದ ಬಳಿಕವೂ 3-2 ದಿನ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 3 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 14ರಂದು ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ
ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಬೀದರ್, ಗದಗ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ಅಲ್ಲಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕೇರಳವನ್ನು ಜೂನ್ 3ಕ್ಕೆ ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ತಲುಪಲು ಮೂರರಿಂದ ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, ಜೂನ್ 5 ರಂದೇ ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದ್ದು, ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ.
ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್ದೇವ್