ಕರ್ನಾಟಕ ರಾಜ್ಯ ಸರಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಭಾಗವಾಗಿ, ಪದವಿ ವ್ಯಾಸಂಗವನ್ನು ಮೂರು ವರ್ಷಗಳಿಂದ ನಾಲ್ಕು ವರ್ಷಗಳಿಗೆ ವಿಸ್ತರಿಸಿರುವುದನ್ನು ಕೂಡಲೇ ವಾಪಸ್ಸು ಪಡೆಯಬೇಕೆಂದು ಎಡ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ. ಅದೇ ರೀತಿಯಲ್ಲಿ ಮೂರು ವರ್ಷಗಳ ಪದವಿ ವ್ಯಾಸಂಗದ ಸಂದರ್ಭದಲ್ಲಿದ್ದ ನಾಲ್ಕು ಸೆಮಿಸ್ಟರ್ಗಳ ಕನ್ನಡ ಭಾಷಾ ವ್ಯಾಸಂಗವನ್ನು ಎರಡು ಸೆಮಿಸ್ಟರ್ಗಳಿಗೆ ಮೊಟಕುಗೊಳಿಸಿರುವುದನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ AISF- SFI – AIDSO – AISA – KVS ವಿದ್ಯಾರ್ಥಿಗಳು ಸಂಘಟನೆಗಳು ಪತ್ರ ಬರೆದಿವೆ.
ರಾಜ್ಯ ಸರಕಾರದ ಈ ಎರಡು ಕ್ರಮಗಳು ವಿದ್ಯಾರ್ಥಿ ಹಾಗೂ ಕನ್ನಡ ವಿರೋಧಿ ಮತ್ತು ರಾಜ್ಯದ ಅಭಿವೃದ್ದಿ ವಿರೋಧಿ ಕ್ರಮಗಳಾಗಿವೆ. ತಕ್ಷಣವೇ ಈ ಜನ ವಿರೋಧಿ ಶಿಕ್ಷಣ ಕ್ರಮಗಳನ್ನು ವಾಪಾಸು ಪಡೆಯುವಂತೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ನಾಲ್ಕು ವರ್ಷಗಳ ಪದವಿ ಕೋರ್ಸ್ನಲ್ಲಿ ಕನ್ನಡಕ್ಕೆ ಕುತ್ತು: ಸಾಹಿತಿ ಬರಗೂರು ರಾಮಚಂದ್ರಪ್ಪ ಸೇರಿ ಹಲವರ ವಿರೋಧ
ʻʻಪದವಿ ವ್ಯಾಸಂಗವನ್ನು ನಾಲ್ಕು ವರ್ಷಗಳಿಗೆ ವಿಸ್ತರಿಸಿರುವುದು ಕೇವಲ ಮೂರು ವರ್ಷಗಳಲ್ಲೆ ಪದವಿ ವ್ಯಾಸಂಗ ಮುಗಿಸಿ, ನಿರುದ್ಯೋಗ ಸೈನ್ಯ ಸೇರುವವರನ್ನು ಕನಿಷ್ಠ ಒಂದು ವರ್ಷ ನಿಯಂತ್ರಿಸುವ ದುಷ್ಟ ಯೋಚನೆಯಾಗಿದೆ. ವಿದ್ಯಾರ್ಥಿ ಹಾಗೂ ಪೋಷಕರು ಮತ್ತೊಂದು ವರ್ಷದ ವ್ಯಾಸಂಗಕ್ಕೆ ದುಬಾರಿ ಶುಲ್ಕ, ಮತ್ತಿತರೇ ವೆಚ್ಚ ಭರಿಸುವ ಹೊರೆಯನ್ನು ಹೇರುವ ಮತ್ತು ಆ ಮೂಲಕ ಖಾಸಗೀ ಶಿಕ್ಷಣ ಸಂಸ್ಥೆಗಳ ಲೂಟಿಯ ಹರಿವನ್ನು ವಿಸ್ತರಿಸುವ ಸಂಚಾಗಿದೆʼʼ ಎಂದು ವಿದ್ಯಾರ್ಥಿ ಸಂಘಟನೆಗಳು ಕಿಡಿಕಾರಿವೆ.
ಕನ್ನಡ ಭಾಷೆ ಕಲಿಕೆಯನ್ನು ನಾಲ್ಕು ಸೆಮಿಸ್ಟರ್ ಗಳ ಅವಧಿಗಳಿಂದ ಎರಡು ಸೆಮಿಸ್ಟರ್ ಗಳ ಅವಧಿಗೆ ಮೊಟಕು ಮಾಡಿರುವುದು ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ಕಲಿಕೆಯನ್ನು ಮೊಟಕು ಮಾಡುವ ಹುನ್ನಾರವಾಗಿದೆ. ಆದ್ದರಿಂದ, ಈ ಕ್ರಮಗಳನ್ನು ಹಿಂಪಡೆದು ಎರಡು ವರ್ಷಗಳ ಭಾಷಾ ಕಲಿಕೆಯನ್ನು ಮುಂದುವರೆಸುವಂತೆ ಒತ್ತಾಯಿಸಿವೆ.
ಇದನ್ನೂ ಓದಿ: ಪದವಿ ಶಿಕ್ಷಣ ನಾಲ್ಕು ವರ್ಷಕ್ಕೆ ಏರಿಸುವುದಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧ