ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಕೊನೆಗೂ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಮುಂದಿನ ಸಿಎಂ ಯಾರಾಗುತ್ತಾರೆ ಎಂಬುವುದು ಕೂಡಾ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದೆ. ಪ್ರಸ್ತುತ ರಾಜ್ಯದ ಸಂಪುಟದಲ್ಲಿ ಸಚಿವರಾಗಿರುವ ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಹಾಗೂ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರಸ್ತುತ ಸಿಎಂ ಆಕಾಂಕ್ಷಿಗಳು ಎಂದು ಬಿಂಬಿಸಲ್ಪಡುತ್ತಿದ್ದಾರೆ.
ಈ ಪೈಕಿ ಮುರುಗೇಶ್ ನಿರಾಣಿ ಅವರನ್ನು ಮುಂದಿನ ಸಿಎಂ ಅಗಿ ಬಿಜೆಪಿ ಹೈಕಮಾಂಡ್ ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಉಪ ಮುಖ್ಯಮಂತ್ರಿಯಾಗಿ ಶ್ರೀರಾಮುಲು ಮತ್ತು ಇನ್ನೊಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆಯೂ ಇದೆ.
ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ
ಯಡಿಯೂರಪ್ಪ ಅವರು ದೆಹಲಿ ಭೇಟಿ ಮುಗಿಸಿ ವಾಪಾಸು ರಾಜ್ಯಕ್ಕೆ ಬಂದ ಬಳಿಕ, ಮುರುಗೇಶ್ ನಿರಾಣಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಸಿಎಂ ಸ್ಥಾನಕ್ಕಾಗಿ ಬಿಜೆಪಿ ಹೈಕಮಾಂಡ್ ಮುಂದೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೆ, ಬಿಜೆಪಿಯಲ್ಲೇ ಇದ್ದುಕೊಂಡು, ಬಿಜೆಪಿ ನಾಯಕರ ವಿರುದ್ದವೇ ಸದಾ ಬುಸುಗುಡುತ್ತಿರುವ ಶಾಸಕ ಬಸನಗೌಡ ಯತ್ನಾಳ್ ಅವರು ಕೂಡಾ, ಸಿಎಂ ಸ್ಥಾನಕ್ಕೆ ನಿರಾಣಿ ಭಾರೀ ಲಾಬಿ ನಡೆಸುತ್ತಿದ್ಧಾರೆ ಎಂದು ಇತ್ತೀಚೆಗೆ ಆರೋಪಿಸಿದ್ದರು.
ಮುರುಗೇಶ್ ನಿರಾಣಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾಗಿದ್ದು, ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದಾರೆ.
ಈ ನಡುವೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರ ಹೆಸರು ಕೂಡಾ ಕೇಳಿಬಂದಿತ್ತಾದರೂ, ಕಳೆದ ಒಂದೆರೆಡು ದಿನಗಳಿಂದ ಅದು ಹಿನ್ನಲೆಗೆ ಸರಿದಿದೆ.
ಇದನ್ನೂ ಓದಿ: ರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ
ಮುರುಗೇಶ್ ನಿರಾಣಿ 2004 ರಲ್ಲಿ ಮೊದಲ ಬಾರಿಗೆ ಬೀಳಗಿ ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದರು. 2008 ರಲ್ಲಿ ಮತ್ತೆ ಆಯ್ಕೆಯಾದ ನಿರಾಣಿ, ಯಡಿಯೂರಪ್ಪ ಸರಕಾರದಲ್ಲಿ ಸಚಿವರಾಗಿದ್ದರು. 2008 ರಿಂದ 2014 ರವರೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಬಿಜೆಪಿ ಸರಕಾರದಲ್ಲಿ ಕಾರ್ಯನಿರ್ವಹಿಸಿದ್ದ ನಿರಾಣಿ, ಸಚಿವರಾಗಿದ್ದೂ 2014ರಲ್ಲಿ ಸೋಲುಂಡಿದ್ದರು. ಮತ್ತೆ 2018 ರಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗ ಎರಡನೇ ಬಾರಿ ಸಚಿವರಾಗಿ ಯಡಿಯೂರಪ್ಪ ಸಂಪುಟಕ್ಕೆ ಮರು ಪ್ರವೇಶ ಪಡೆದಿದ್ದರು.
“ಬಿಜೆಪಿ ಪಕ್ಷದ 120 ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲೂ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ” ಎಂದು ನಿರಾಣಿ ಇತ್ತೀಚೆಗಷ್ಟೇ ಹೇಳಿದ್ದರು.
“ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ” ಎಂದು ಅವರು ಅಂದು ಹೇಳಿದ್ದರು.
ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ