ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ಸಾರ್ವಜನಿಕರಿಗೆ ವಾಹನ ಟೋಯಿಂಗ್ ಸಿಬ್ಬಂದಿ ನೀಡುವ ಕಿರುಕುಳ ಸಲ್ಲದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ಟೋಯಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಾ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿರುವ ಅವರು, ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಪೂರ್ವದಲ್ಲಿ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ
ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ಎಲ್ಲ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯ ಪ್ರತಿಯೊಂದು ತಂತ್ರವೂ ನಮ್ಮ ಪಕ್ಷವನ್ನು ಬಲಪಡಿಸುತ್ತದೆ: ಟಿಎಂಸಿ ಶಾಸಕ
ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ‘ನೋ ಪಾರ್ಕಿಂಗ್’ ಶುಲ್ಕವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟುಕೊಡಬೇಕು ಎಂದಿದ್ದಾರೆ.
ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಟೋಯಿಂಗ್ ಮಾಡಲಾಗುವ ವಾಹನಗಳನ್ನು
ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.


