Homeಕ್ರೀಡೆಒಲಂಪಿಕ್ಭಾರತದ ಕೀರ್ತಿಪತಾಕೆ ಹಾರಿಸಿದ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು; ಇನ್ನಷ್ಟು ನೆರವಿನ ಅಗತ್ಯವಿದೆ

ಭಾರತದ ಕೀರ್ತಿಪತಾಕೆ ಹಾರಿಸಿದ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು; ಇನ್ನಷ್ಟು ನೆರವಿನ ಅಗತ್ಯವಿದೆ

- Advertisement -
- Advertisement -

ಟೋಕಿಯೊ ಪ್ಯಾರಾಲಿಂಪಿಕ್ಸ್-2020ರಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ. 1968ರಿಂದ ಇದುವೆರೆಗೂ ಒಟ್ಟು 12 ಪದಕಗಳನ್ನಷ್ಟೆ ಭಾರತ ಗೆದ್ದುಕೊಂಡಿತ್ತು, ಆದರೆ ಈ ಬಾರಿಯ ಕ್ರೀಡಾಕೂಟದಲ್ಲಿಯೇ ಭಾರತ ಒಟ್ಟು 19 ಪದಕಗಳನ್ನು ಗೆದ್ದುಕೊಂಡಿದೆ. ಹಾಗಾಗಿ ಟೊಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ 162 ರಾಷ್ಟ್ರಗಳ ಪೈಕಿ ಭಾರತ 24ನೇ ರ್‍ಯಾಂಕ್‌ಅನ್ನು ಅಲಂಕರಿಸಿದೆ. ಈ ಬಾರಿ ಭಾರತ ತಂಡಕ್ಕೆ ಒಟ್ಟು ಐದು ಚಿನ್ನದ ಪದಕ, ಎಂಟು ಬೆಳ್ಳಿ ಪದಕ ಮತ್ತು ಆರು ಕಂಚಿನ ಪದಕ ಸಿಕ್ಕಿದೆ. ಈ ಮೂಲಕ ತಂಡವು ಇತಿಹಾಸ ನಿರ್ಮಿಸಿದೆ.

ನಿರಾಶ್ರಿತರ ಪ್ಯಾರಾಲಿಂಪಿಕ್ಸ್ ತಂಡ ಮತ್ತು ರಶ್ಯಾ ಪ್ಯಾರಾಲಿಂಪಿಕ್ಸ್ ಸಮಿತಿ ಸೇರಿಸಿದಂತೆ ಒಟ್ಟು 162 ದೇಶಗಳ 4,537 ಕ್ರೀಡಾಳುಗಳು ಈ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಈವರೆಗೂ ಭಾಗವಹಿಸಿದ ಅತೀ ಹೆಚ್ಚಿನ ಕ್ರೀಡಾಳುಗಳ ಸಂಖ್ಯೆಯಾಗಿದೆ. ಈ ಕ್ರೀಡಾಕೂಟದಲ್ಲಿ ಒಟ್ಟು 22 ರೀತಿಯ ಕ್ರೀಡೆಗಳನ್ನು ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗಿತ್ತು.

ಪ್ಯಾರಾಲಿಂಪಿಕ್ಸ್ ಕೂಟದ ಬಗ್ಗೆ

’ಪ್ಯಾರಾಲಿಂಪಿಕ್’ ಎಂಬ ಪದವು ಗ್ರೀಕ್‌ನ ’ಪ್ಯಾರಾ’ ಮತ್ತು ’ಒಲಿಂಪಿಕ್’ ಪದದಿಂದ ಬಂದಿದೆ. ಪ್ಯಾರಾ ಎಂದರೆ ’ಸಮಾನಾಂತರ’ ಎಂಬ ಅರ್ಥ ಬರುತ್ತದೆ. ಒಟ್ಟಿನಲ್ಲಿ ಪ್ಯಾರಾಲಿಂಪಿಕ್ ಎಂದರೆ ಒಲಿಂಪಿಕ್‌ಗೆ ಸಮಾನವಾದದ್ದು ಎಂದರ್ಥ. ವಿಶ್ವದ ಮಾನವೀಯತೆಯ ಬೆಳವಣಿಗೆಯಲ್ಲಿ ಪ್ಯಾರಾಲಿಂಪಿಕ್ಸ್ ಮಹತ್ವದ ಪಾತ್ರ ವಹಿಸುತ್ತದೆ. ವಿಕಲಚೇತನ ವ್ಯಕ್ತಿಗಳು ಕೂಡಾ ಸಾಮರ್ಥ್ಯವಿರುವವರಾಗಿದ್ದು, ಅವರು ಕೂಡಾ ಸಾಧನೆ ಮಾಡಬಲ್ಲರು ಎಂಬುವುದನ್ನು ಈ ಕ್ರೀಡಾಕೂಟ ಎತ್ತಿ ತೋರಿಸುತ್ತದೆ. ದೇಹದಲ್ಲಿನ ಅಂಗಗಳು ಊನವಾಗಿದ್ದರೆ ಅದು ಮನುಷ್ಯ ಏರುವ ಎತ್ತರವನ್ನು ತಡೆಯುವುದಿಲ್ಲ ಎಂಬ ಸ್ಪೂರ್ತಿಯನ್ನು ಪ್ಯಾರಾಲಿಂಪಿಕ್ಸ್ ನೀಡುತ್ತದೆ.

ಡಾ. ಲುಡ್ವಿಕ್ ಗಟ್ಮನ್

ಒಲಿಂಪಿಕ್‌ಗೆ ಪುರಾತನ ಗ್ರೀಸ್ ನಾಗರಿಕತೆಯಷ್ಟು ಇತಿಹಾಸವಿದೆ. ಇದಕ್ಕೆ ಹೋಲಿಸಿದರೆ ಪ್ಯಾರಾಲಿಂಪಿಕ್ಸ್ ತೀರಾ ಇತ್ತೀಚೆಗೆ ಪ್ರಾರಂಭವಾಗಿದ್ದು. 1948ರಲ್ಲಿ ಜರ್ಮನಿಯ ನರವಿಜ್ಞಾನಿಯಾದ ಡಾ. ಲುಡ್ವಿಕ್ ಗಟ್ಮನ್ ತನ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸೈನಿಕರ ಮೂಲಕ ಈ ಕ್ರೀಡೆಯನ್ನು ಪ್ರಾರಂಭಿಸಿದರು. ’ಸ್ಟೋಕ್ ಮ್ಯಾಂಡೆವಿಲ್ಲೆ ಗೇಮ್ಸ್’ ಎಂಬ ಹೆಸರಿನಲ್ಲಿ ಪ್ರಾರಂಭವಾದ ಪ್ಯಾರಾಲಿಂಪಿಕ್ಸ್‌ನ ಮೊದಲ ಕ್ರೀಡಾ ಕೂಟದಲ್ಲಿ 14 ಪುರುಷರು ಮತ್ತು ಇಬ್ಬರು ಮಹಿಳೆಯರು ಗಾಲಿ ಕುರ್ಚಿಯಲ್ಲಿ ಕೂತು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಕೇವಲ ಬಿಲ್ಲುಗಾರಿಕೆಯನ್ನು ಮಾತ್ರವೆ ಆಯೋಜಿಸಲಾಗಿತ್ತು. 1952ರಲ್ಲಿ ಡಚ್ ಸೈನಿಕರು ’ಸ್ಟೋಕ್ ಮ್ಯಾಂಡೆವಿಲ್ಲೆ ಗೇಮ್ಸ್’ಗೆ ಪಾದಾರ್ಪಣೆ ಮಾಡುವುದರೊಂದಿಗೆ ಅದು ಅಂತರಾಷ್ಟ್ರೀಯ ಗೇಮ್ಸ್ ಆಗಿ ಹೊರಹೊಮ್ಮಿತು. ಈ ಕ್ರೀಡಾ ಕೂಟವನ್ನು ಡಾ. ಲುಡ್ವಿಕ್ ಗಟ್ಮನ್ ಅವರು ಪ್ರತಿ ವರ್ಷ ಆಯೋಜಿಸುತ್ತಿದ್ದರು.

1960 ಇಟಲಿಯ ರೋಮ್‌ನಲ್ಲಿ ವಿಶ್ವದ 23 ದೇಶಗಳ 400 ಕ್ರೀಡಾಳುಗಳು ಭಾಗವಹಿಸುವುದರೊಂದಿಗೆ ಕ್ರೀಡಾಕೂಟವು ಮತ್ತಷ್ಟು ಪ್ರಸಿದ್ದಿ ಪಡೆಯಿತು. ಅಂದಿನಿಂದ ಕ್ರೀಡಾಕೂಟವನ್ನು ಒಲಿಂಪಿಕ್ಸ್ ರೀತಿಯಲ್ಲಿಯೇ ನಾಲ್ಕು ವರ್ಷಗಳಿಗೊಮ್ಮೆ ನಡೆಸುವ ತೀರ್ಮಾನ ಮಾಡಲಾಯಿತು. ಇದರ ನಂತರ 1976ರಲ್ಲಿ ಒಲಿಂಪಿಕ್ಸ್ ಮಾದರಿಯಲ್ಲಿ ಚಳಿಗಾಲದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಕೂಡ ಪ್ರಾರಂಭವಾಯಿತು. ಅದುವರೆಗೂ ಗಾಲಿ ಕುರ್ಚಿಯಲ್ಲಿರುವ ಕ್ರೀಡಾಳುಗಳಿಗೆ ಮಾತ್ರ ಅವಕಾಶ ಇದ್ದ ಕ್ರೀಡಾಕೂಟವು, ಬೇರೆ ರೀತಿಯ ವಿಕಲಚೇತನರನ್ನೂ ಅದು ಒಳಗೊಂಡಿತು.

1988ರ ನಂತರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಗಳು ಒಂದೇ ದೇಶದಲ್ಲಿ ಆಯೋಜನೆಗೊಳ್ಳಲು ಪ್ರಾರಂಭವಾಯಿತು. ಜೊತೆಗೆ ಕ್ರೀಡಾಕೂಟಕ್ಕೆ ’ಪ್ಯಾರಾಲಿಂಪಿಕ್ಸ್’ ಎಂಬ ಹೆಸರನ್ನು ಅಧಿಕೃತಗೊಳಿಸಲಾಯಿತು.

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ

ಭಾರತವು 1968ರಿಂದ ಈವರೆಗೆ ಒಟ್ಟು ಹನ್ನೆರೆಡು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿದೆ. ಆದರೆ ಈ ವರ್ಷದ ಕ್ರೀಡಾಕೂಟದಲ್ಲಿ ಅಭೂತಪೂರ್ವ ಸಾಧನೆ ಮೆರೆದು ಒಟ್ಟು 19 ಪದಕವನ್ನು ಪಡೆದುಕೊಂಡಿದೆ. ಇಲ್ಲಿಯವರೆಗೆ ದೇಶದ ಪಾಲಿಗೆ ಕೇವಲ 12 ಪ್ಯಾರಾಲಿಂಪಿಕ್ಸ್ ಪದಕಗಳಿದ್ದವು. ಅಷ್ಟೆ ಅಲ್ಲದೆ ಈ ವರ್ಷದ ಕ್ರೀಡಾಕೂಟದಲ್ಲಿ ದೇಶದಿಂದ ಒಟ್ಟು 54 ಜನ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದು ಇದುವೆರೆಗೂ ಪ್ಯಾರಾಲಿಂಪಿಕ್ಸ್‌ಗೆ ತೆರಳಿದ ಭಾರತದ ಅತೀ ದೊಡ್ಡ ತಂಡವಾಗಿದೆ.

ಚಳಿಗಾಲದ ಪ್ಯಾರಾಲಿಂಪಿಕ್ಸ್ 1976ರಿಂದ ಪ್ರಾರಂಭವಾದರೂ ಭಾರತ ಇದುವರೆಗೂ ಯಾವುದೇ ಚಳಿಗಾಲದ ಕ್ರೀಡಾಕೂಟದಲ್ಲಿ ಭಾಗವಹಿಸಿಲ್ಲ. ಮುರಳಿಕಾಂತ್ ಪೆಟ್ಕರ್ ಈಜು ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ 1972ರ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತನ್ನ ಮೊದಲ ಪದಕವನ್ನು ಗೆದ್ದುಕೊಂಡಿತು.

ಮುರಳಿಕಾಂತ್ ಪೆಟ್ಕರ್

1984ರಲ್ಲಿ ಜೋಗಿಂದರ್ ಸಿಂಗ್ ಬೇಡಿ ಪುರುಷರ ಶಾಟ್ ಪುಟ್‌ನಲ್ಲಿ ಬೆಳ್ಳಿ, ಡಿಸ್ಕಸ್ ಮತ್ತು ಜಾವೆಲಿನ್ ಥ್ರೋಗಳಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡು ಪ್ಯಾರಾಲಿಂಪಿಕ್ಸ್‌ನಲ್ಲಿ ಬಹುಪದಕ ಪಡೆದ ಭಾರತದ ಕ್ರೀಡಾಪಟುವಾಗಿ ದಾಖಲೆ ಬರೆದಿದ್ದಾರೆ.

ವಿಶೇಷವಾಗಿ ಈ ವರ್ಷದ ಪದಕ ವಿಜೇತರಲ್ಲಿ ಕನ್ನಡಿಗ, ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾ ಜಿಲ್ಲಾ ಮ್ಯಾಜಿಸ್ಟ್ರೆಟ್ ಆಗಿರುವ, ಸುಹಾಸ್ ಲಾಳನಕೆರೆ ಯತಿರಾಜ್ ಅವರು ಇರುವುದು ನಾಡಿಗೆ ಹೆಮ್ಮೆಯ ವಿಷಯವಾಗಿದೆ. ಹಾಸನ ಮೂಲದ ಸುಹಾಸ್ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ, ದೇಶದ ಮೊದಲ ನಾಗರಿಕ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಅವರು ’ಪುರುಷರ ಸಿಂಗಲ್ಸ್ ಎಸ್‌ಎಲ್4’ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಳ್ಳಿ ಗೆದ್ದಿದ್ದಾರೆ.

ಈ ಬಗ್ಗೆ ಸುಹಾಸ್ ಅವರ ತಾಯಿ ಜಯಶ್ರೀ ಅವರು ನ್ಯಾಯಪಥದೊಂದಿಗೆ ಮಾತನಾಡಿದ್ದಾರೆ. ತಮ್ಮ ಮಗನ ಬಗ್ಗೆ ಹೆಮ್ಮೆ ಪಟ್ಟ ಅವರು, “ಸುಹಾಸ್ ಛಲವಾದಿಯಾಗಿದ್ದಾನೆ, ಸಾಧನೆ ಮಾಡಬೇಕು ಎಂದು ತುಂಬಾ ಕಷ್ಟಪಟ್ಟಿದ್ದಾನೆ. ಅದಕ್ಕೆ ಈಗ ಫಲ ಸಿಕ್ಕಿದೆ. ಈ ಸಾಧನೆ ಬಗ್ಗೆ ತುಂಬಾ ಖುಷಿಯಾಗುತ್ತಿದೆ, ಇಡೀ ದೇಶ ಮೆಚ್ಚುವಂತಹ ಕೆಲಸವನ್ನು ನನ್ನ ಮಗ ಮಾಡಿದ್ದಾನೆ” ಎಂದು ಹೇಳಿದ್ದಾರೆ.

ಪ್ಯಾರಾಲಿಂಪಿಕ್ಸ್ ಕ್ರೀಡಾಳುಗಳ ಕಷ್ಟಗಳೇನು?

ಮೊದಲೆ ಹೇಳಿದಂತೆ ಪ್ಯಾರಾಲಿಂಪಿಕ್ಸ್ ಅಂದರೆ ಒಲಿಂಪಿಕ್‌ಗೆ ಸಮಾನವಾದುದು ಎಂದರ್ಥ. ಆದರೆ ವಾಸ್ತವದಲ್ಲಿ ಭಾರಿ ಸುದ್ದಿಯಲ್ಲಿರುವ ಒಲಿಂಪಿಕ್ಸ್‌ನಷ್ಟು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಸುದ್ದಿ ಆಗಲೇ ಇಲ್ಲ. ಹಾಗೆ ನೋಡಿದರೆ ಪ್ಯಾರಾಲಿಂಪಿಕ್ಸ್‌ಗೆ ಒಲಿಂಪಿಕ್ಸ್‌ಗೆ ಹಾಕುವ ಶ್ರಮದ ಹಲವು ಪಟ್ಟು ಶ್ರಮವನ್ನು ಕ್ರೀಡಾಳುಗಳು ಹಾಕಬೇಕಾಗುತ್ತದೆ. ಮೊದಲೆ ಅಂಗ ಸಮಸ್ಯೆಯಿರುವ ಕ್ರೀಡಾಪಟುಗಳು ಅದನ್ನು ಮೆಟ್ಟಿ ನಿಲ್ಲಬೇಕು ಮತ್ತು ಪದಕ ಗೆಲ್ಲಲು ಹೆಚ್ಚಿನ ಶ್ರಮವೂ ಬೇಕಾಗುತ್ತದೆ.

ಹೋರಾಟಗಾರ ಜಿಎನ್ ನಾಗರಾಜ್ ಹೇಳುವಂತೆ, “ಸರ್ಕಾರವು ಒಲಿಂಪಿಕ್ಸ್‌ನ ಕ್ರೀಡಾಳುಗಳಿಗೆ ನೀಡುವ ಪ್ರೋತ್ಸಾಹವನ್ನು ಪ್ಯಾರಾಲಿಂಪಿಕ್ಸ್‌ನ ಕ್ರೀಡಾಳುಗಳಿಗೆ ನೀಡುವುದಿಲ್ಲ. ಸ್ಪರ್ಧಿಗಳು ಅಂತಾರಾಷ್ಟ್ರೀಯ ಹಂತಕ್ಕೆ ತಲುಪುವವರೆಗೂ ಅವರ ಎಲ್ಲಾ ಖರ್ಚುಗಳನ್ನು ಸ್ವತಃ ಅವರೇ ನೋಡಿಬೇಕಾಗುತ್ತದೆ. ಅಷ್ಟೇ ಅಲ್ಲದೆ ಒಲಿಂಪಿಕ್ಸ್‌ನ ಕ್ರೀಡಾಳುಗಳಿಗಿಂತಲೂ ಹೆಚ್ಚಿನ ಖರ್ಚು ಪ್ಯಾರಾಲಿಂಪಿಕ್ಸ್ ಕ್ರೀಡಾಳುಗಳಿಗೆ ಬೇಕಾಗುತ್ತದೆ. ಅವರ ಪ್ರತೀ ಕೆಲಸಗಳಿಗೂ ಒಬ್ಬ ಸಹಾಯಕ ಬೇಕಾಗುತ್ತದೆ. ಆದರೆ ಸರ್ಕಾರ ಒಲಿಂಪಿಕ್ಸ್‌ಗೆ ಮಾತ್ರ ಹೆಚ್ಚಿನ ದುಡ್ಡು
ಸುರಿಸುತ್ತದೆಯೆ ಹೊರತು ಪ್ಯಾರಾಲಿಂಪಿಕ್ಸ್‌ಗೆ ಅಲ್ಲ. ಕಾರ್ಪೊರೆಟ್‌ಗಳು ಕೂಡಾ ಒಲಿಂಪಿಕ್ಸ್ ಕ್ರೀಡಾಳುಗಳ ಹಿಂದೆ ಇರುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ತಮ್ಮ ಅಂಗವೈಕಲ್ಯಗಳನ್ನು ಮೆಟ್ಟಿ ವ್ಯಕ್ತಿಗಳು ಹೊರಬರುವುದೇ ಅಪರೂಪವಾಗಿರುವಾಗ, ಅದನ್ನು ಮೀರಿ ಅವರು ಪ್ಯಾರಾಲಿಂಪಿಕ್ಸ್‌ವರೆಗೂ ತಲುಪುವುದು, ಅಲ್ಲಿ ಪದಕ ಪಡೆಯುವುದಕ್ಕಿಂತ ಮೂರು ಪಟ್ಟು ದೊಡ್ಡ ಸಾಧನೆ” ಎಂದು ಅವರು ಹೇಳುತ್ತಾರೆ.

ಒಬ್ಬ ಸಾಮಾನ್ಯ ಕ್ರೀಡಾಳು ಫಿಟ್ ಇರಲು ಸಾಮಾನ್ಯವಾದ ವ್ಯಾಯಾಮದ ಸಲಕರಣೆಗಳು ಸಾಕಾಗುತ್ತದೆ. ಆದರೆ ಪ್ಯಾರಾಲಿಂಪಿಕ್ಸ್ ಕ್ರೀಡಾಳುಗಳಿಗೆ ವಿಶೇಷವಾದ ಸಲಕರಣೆಗಳು, ವಿಶೇಷ ಆರೈಕೆಗಳು ಬೇಕಾಗುತ್ತವೆ.

PC : Kannada News (ಸುಹಾಸ್ ಲಾಳನಕೆರೆ ಯತಿರಾಜ್)

“ಸಾಮಾನ್ಯವಾಗಿ, ಒಲಿಂಪಿಕ್ಸ್‌ನಲ್ಲಿ ಪದಕ ಪಡೆದವರಿಗೆ ಸರ್ಕಾರಿ ಉದ್ಯೋಗ ಸ್ಪೋರ್ಟ್ ಕೋಟಾದಡಿಯಲ್ಲಿ ಸುಲಭವಾಗಿ ಸಿಗುತ್ತದೆ. ಆದರೆ ಈ ಸೌಲಭ್ಯ ಪ್ಯಾರಾಲಿಂಪಿಕ್ಸ್‌ನ ವಿಜೇತರಿಗೆ ಸಿಗುವುದಿಲ್ಲ. ಅಲ್ಲದೆ ಸರ್ಕಾರಿ ಉದ್ಯೋಗಿಯೊಬ್ಬ ಒಲಿಂಪಿಕ್ಸ್‌ನಲ್ಲಿ ಪದಕೆ ಗೆದ್ದರೆ, ಐದು ಇಂಕ್ರಿಮಂಟ್ ಸಿಗುತ್ತದೆ. ಆದರೆ ಈ ಸೌಲಭ್ಯ ಪ್ಯಾರಾಲಿಂಪಿಕ್ಸ್‌ನವರಿಗೆ 2018ವರೆಗೂ ಸಿಗುತ್ತಿರಲಿಲ್ಲ” ಎನ್ನುತ್ತಾರೆ ಜಿಎನ್ ನಾಗರಾಜ್. “ಸಾಧನೆ ಮಾಡಿದ ನಂತರ ಫೋನ್ ಮಾಡಿ ಅವರಿಗೆ ಅಭಿನಂದನೆ ಹೇಳುವ ಪ್ರದರ್ಶನಕ್ಕಿಂತ, ಈ ಕ್ರೀಡಾಪಟುಗಳು ಸಾಧನೆಯ ಹಾದಿಯಲ್ಲಿ ನಡೆಯುತ್ತಾ ಇರಬೇಕಾದರೆ ಅವರಿಗೆ ಬಲನೀಡಬೇಕು” ಎನ್ನತ್ತಾರವರು.

“ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಸಾಮಾನ್ಯ ಆಟಗಾರರಿಗೆ ನೀಡುವ ಹಾಗೆಯೆ ಪ್ಯಾರಾಲಿಂಪಿಕ್ಸ್ ಆಟಗಾರರಿಗೆ ಒಂದಿಷ್ಟು ಪಾಲನ್ನು ತೆಗೆದಿಡುತ್ತದೆ. ಆದರೆ ಇದು ಬದಲಾಗಬೇಕು, ಪ್ಯಾರಾಲಿಂಪಿಕ್ಸ್ ಆಟಗಾರರಿಗೆ ಬೇರೆಯದೇ ಆದ ಅನುದಾನವನ್ನು ಬಿಡುಗಡೆ ಮಾಡಿ, ಅವರ ಸಾಧನೆಗೆ ನೆರವಾಗಬೇಕು” ಎಂದು ಅವರು ಹೇಳುತ್ತಾರೆ.

“ಅಷ್ಟೇ ಅಲ್ಲದೆ ಒಲಿಂಪಿಕ್ಸ್ ಆಟಗಾರ ಟ್ರೇನಿಂಗ್‌ಗೆ ವಿಶ್ವ ಮಟ್ಟದ ತರಬೇತಿಯನ್ನು, ಕೋಚ್‌ಗಳನ್ನೂ ನೀಡಲಾಗುತ್ತದೆ. ಆದರೆ ಪ್ಯಾರಾಲಿಂಪಿಕ್ಸ್‌ಗೆ ಈ ರೀತಿಯ ಯಾವುದೆ ಪ್ರೋತ್ಸಾಹ ಇಲ್ಲ” ಎನ್ನುತ್ತಾರೆ ನಾಗರಾಜ್ ಅವರು.

ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟು, ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಡಲಿದ್ದಾರೆ ಎಂದಾಗಷ್ಟೇ ಅವರಿಗೆ ಸರ್ಕಾರ ಸಹಾಯ ಮಾಡುತ್ತದೆ. ಅಲ್ಲಿವರೆಗೂ ಪ್ಯಾರಾಲಿಂಪಿಕ್ಸ್ ಸಾಧಕರು ಹೋರಾಡಬೇಕಾಗುತ್ತದೆ. ಆದರೆ ಈ ಎಲ್ಲಾ ಅಡೆತಡೆಗಳನ್ನು ಮೀರಿ ಈ ವರ್ಷದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಬೃಹತ್ ಸಾಧನೆ ಮಾಡಿ ದೇಶದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸಿದ್ದಾರೆ.


ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್‌: ಶೂಟರ್‌ ಮನೀಶ್‌ಗೆ ಚಿನ್ನ, ಸಿಂಗ್‌ ರಾಜ್‌ಗೆ ಬೆಳ್ಳಿ ಪದಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...