ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ, ಸಾಕಾರಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಅದೇ ರೀತಿ ಅಂತರ ರಾಜ್ಯ ನದೀ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಎಲ್ಲ ಕ್ರಮ ಕೈಗೊಳ್ಳಲಾಗವುದು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.
ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಮತ್ತು ಇತರರು ಪ್ರಸ್ತಾಪಿಸಿದ ಅಲ್ಪ ಕಾಲಾವಧಿ ಚರ್ಚೆಗೆ ಉತ್ತರ ನೀಡುತ್ತಾ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರಡಿ 2013ರಿಂದ ಇಲ್ಲಿಯವರೆಗೆ ಮಾಡಲಾದ ವೆಚ್ಚದ ವಿವರಗಳನ್ನು ನೀಡಿದರು.
2013ರಿಂದ 2018ರವರೆಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 7728.80 ಕೋಟಿ ರೂಪಾಯಿ ಮಾತ್ರ ವೆಚ್ಚ ಮಾಡಲಾಗಿದೆ. 2018ರಿಂದ 2019ರ ಜುಲೈವರೆಗಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 1295.50 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಜುಲೈ 2019ರಿಂದ ಪ್ರಸಕ್ತ ಸರ್ಕಾರದ ಅವಧಿಯಲ್ಲಿ 3326.70 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಒಂದು ಸವಾಲಾಗಿದೆ. ಏಕೆಂದರೆ ಇಲ್ಲಿ ಬಹುದೊಡ್ಡ ಪ್ರಮಾಣದ ಭೂಸ್ವಾಧೀನ ಆಗಬೇಕಾಗಿದೆ. 2013ರ ಹೊಸ ಭೂಸ್ವಾಧೀನ ಕಾಯಿದೆಯಿಂದ ಭೂಸ್ವಾಧೀನದ ದರ ಹೆಚ್ಚಾಗಿದೆ. 1,34,000 ಎಕರೆ ಭೂಮಿ ಭೂಸ್ವಾಧೀನವಾಗಬೇಕಾಗಿದೆ. ಇದರಿಂದಾಗಿ ಒಟ್ಟು 78,000 ಕೋಟಿ ರೂಪಾಯಿಗಳ ಒಟ್ಟು ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಕೇಂದ್ರ ಸಚಿವರು, ಸಿಎಂ ಬಸವರಾಜ ಬೊಮ್ಮಾಯಿ ಭೇಟಿ: ಎತ್ತಿನಹೊಳೆ, ಮೇಕೆದಾಟು ಬಗ್ಗೆ ಚರ್ಚೆ
ಅಂತರರಾಜ್ಯ ಜಲವಿವಾದಗಳ ಕಾಯಿದೆಯನ್ವಯ ರಚಿತವಾಗಿದ್ದ ಕೃಷ್ಣಾ ನ್ಯಾಯಾಧಿಕರಣ-2 (ಬ್ರಿಜೇಷ್ ಕುಮಾರ್ ಆಯೋಗ) ತನ್ನ ಅಂತಿಮ ಐತೀರ್ಪನ್ನು 2010ರಲ್ಲಿ ನೀಡಿದ ಮೇಲೆ 2011-12ರಲ್ಲಿಯೇ ಒಂದು ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಿ 130 ಟಿ.ಎಂ.ಸಿ. ನೀರನ್ನು ಬಳಕೆ ಮಾಡಿಕೊಳ್ಳಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಆದಾದ ನಂತರ ಹೆಚ್ಚು ಪ್ರಗತಿ ಆಗಲೇ ಇಲ್ಲ. ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ ಒಬ್ಬರೇ ಒಬ್ಬರು ಸಂತ್ರಸ್ತರು ಉಳಿಯಬಾರದು ಎಂಬ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಕಳೆದ ಹಲವಾರು ವರ್ಷಗಳಲ್ಲಿ ಯಾವುದೇ ಪ್ರಗತಿ ಸಾಧಿಸಲಾಗಿಲ್ಲದಿರುವುದರಿಂದ ನಮ್ಮ ಸರ್ಕಾರದ ಜವಾಬ್ದಾರಿ ದ್ವಿಗುಣವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಗೆ ವಾರ್ಷಿಕ 10 ಸಾವಿರ ಕೋಟಿ ರೂಪಾಯಿ ಖರ್ಚುಮಾಡುವುದಾಗಿ ಅಂದಿನ ನೀರಾವರಿ ಸಚಿವರು ಘೋಷಿಸಿದ್ದರು. ಆದರೆ ಆ ಸರ್ಕಾರದ ಅವಧಿಯಲ್ಲಿ ಕೇವಲ 7,728.80 ಕೋಟಿ ರೂಪಾಯಿಗಳನ್ನು ಮಾತ್ರ ವೆಚ್ಚ ಮಾಡಲಾಗಿದೆ ಎಂದರು.
ಎತ್ತಿನಹೊಳೆ ಯೋಜನೆಯ ಬಗ್ಗೆ ಪ್ರಸ್ತಾಪಿಸಿದ್ದ ಸದಸ್ಯರ ಪ್ರಶ್ನೆಗಳಿಗೆ ಉತ್ತರವಾಗಿ ಎತ್ತಿನಹೊಳೆ ಯೋಜನೆಯ ವಿವರಗಳನ್ನು ಒದಗಿಸಿದರು. ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ಅಡೆತಡೆಗಳೆಲ್ಲಾ ನಿವಾರಣೆಯಾಗುತ್ತಿದ್ದು, ಭೈರಗೊಂಡು ಜಲಾಶಯದ ನಿರ್ಮಾಣದ ಭೂಸ್ವಾಧೀನ ಪ್ರಕ್ರಿಯೆಗೆ ಏಕರೂಪದ ಪರಿಹಾರ ನೀಡಲು ಸಾಧ್ಯವಿಲ್ಲ. ಆದ್ದರಿಂದ ಕೆಲವು ಬದಲಾವಣೆಗಳನ್ನು ಅನಿವಾರ್ಯವಾಗಿದೆ ಎಂದು ಸಚಿವರು ಸದನದ ಗಮನಕ್ಕೆ ತಂದರು.
ಇದನ್ನೂ ಓದಿ: ವಿಧಾನಸಭೆ ಅಧಿವೇಶನದ ಲೈವ್ ನಾನುಗೌರಿ.ಕಾಂ ಫೇಸ್ಬುಕ್ನಲ್ಲಿ ನೋಡಿ