ಅಕ್ಟೋಬರ್ 3 ರ ಭಾನುವಾರದಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ(ನಾಳೆ) ವಿಚಾರಣೆ ನಡೆಸಲಿದೆ. ಹತ್ಯಾಕಾಂಡದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು ಅಕ್ಟೋಬರ್ 8 ರಂದು, ಎಂಟು ಜನರ “ಕ್ರೂರ” ಹತ್ಯೆಯ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ನಡೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು, ಈ ಪ್ರಕರಣದ ವಿಚಾರಣೆಯನ್ನುಅದು ನಡೆಸಲಿದೆ.
ಇದನ್ನೂ ಓದಿ: ಲಖಿಂಪುರ್ ಖೇರಿ ರೈತರ ಹತ್ಯೆ: ಬಿಜೆಪಿ ಮುಖಂಡ ಸೇರಿ ಮತ್ತೆ ನಾಲ್ವರ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ.
ಘಟನೆಯ ಕುರಿತು ಸಿಬಿಐ ಒಳಗೊಂಡಂತೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯನ್ನು ಕೋರಿ ಇಬ್ಬರು ವಕೀಲರು ಸಿಜೆಐಗೆ ಪತ್ರ ಬರೆದ ನಂತರ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಗೆ ಕೈಗೆತ್ತಿಕೊಂಡಿದೆ.
ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ಮಾಡುತ್ತಿದ್ದ ಗುಂಪು, ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದಾಗ, ಲಖಿಂಪುರ್ ಖೇರಿಯಲ್ಲಿ ನಾಲ್ಕು ರೈತರ ಮೇಲೆ ಕಾರನ್ನು ಹರಿಸಲಾಗಿತ್ತು.
ಇದನ್ನೂ ಓದಿ: ಲಖಿಂಪುರ್ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ