ದೆಹಲಿ ಗಡಿಗಳಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಒಕ್ಕೂಟ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
ರೈತರನ್ನು ಗಡಿಗಳಿಂದ ಹೊರ ಹಾಕಲು ಪ್ರಯತ್ನಿಸಿದರೆ, ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು “ಗಲ್ಲಾ ಮಂಡಿಗಳನ್ನಾಗಿ” (ಧಾನ್ಯ ಮಾರುಕಟ್ಟೆಗಳು) ಆಗಿ ಪರಿವರ್ತಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ರಾಕೇಶ್ ಟಿಕಾಯತ್ “ರೈತರನ್ನು ಗಡಿಯಿಂದ ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ, ಅವರು ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳನ್ನು ಗಲ್ಲಾ ಮಂಡಿಯನ್ನಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಟಿಕ್ರಿ ಗಡಿ ಬಳಿ ದುರ್ಘಟನೆ: ಲಾರಿ ಹರಿದು ಮೂವರು ರೈತ ಮಹಿಳೆಯರ ಸಾವು
किसानों को अगर बॉर्डरो से जबरन हटाने की कोशिश हुई तो वे देश भर में सरकारी दफ्तरों को गल्ला मंडी बना देंगे ।#FarmersProtest
— Rakesh Tikait (@RakeshTikaitBKU) October 31, 2021
ದೆಹಲಿ ಪೊಲೀಸರು ಗಾಜಿಪುರ ಮತ್ತು ಟಿಕ್ರಿ ಗಡಿಯಿಂದ ಸಿಮೆಂಟ್ ಬ್ಲಾಕ್ಗಳು ಮತ್ತು ಬ್ಯಾರಿಕೇಡ್ಗಳನ್ನು ತೆಗೆದ ಎರಡು ದಿನಗಳ ನಂತರ ಟಿಕಾಯತ್ ಅವರ ಪ್ರತಿಕ್ರಿಯೆ ಬಂದಿದೆ. ರೈತರನ್ನು ಹೊರಹಾಕಲು ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.
ರೈತರ ಆಂದೋಲನ ಪ್ರಾರಂಭವಾದಾಗಿನಿಂದ 11 ತಿಂಗಳ ಕಾಲ ಈ ಹೆದ್ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಹಲವು ಮಂದಿ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ಅನಾನುಕೂಲತೆಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅನಾನುಕೂಲತೆಗೆ ಅಧಿಕಾರಿಗಳೇ ಹೊರತು ಪ್ರತಿಭಟನಾನಿರತ ರೈತರಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಈ ಹಿಂದೆ ಹೇಳಿತ್ತು.
ಕಳೆದ ಹಲವು ದಿನಗಳಿಂದ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಬಿಕೆಯು ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದ್ದಾರೆ. ಆದರೆ ಇಂತಹ ಷಡ್ಯಂತ್ರಗಳಿಂದ ರೈತ ಚಳವಳಿಗೆ ಪರಿಹಾರ ಸಿಗುವುದಿಲ್ಲ. ನ.6ರಂದು ಸಿಂಘು ಗಡಿ ಭಾಗದ ರೈತರ ಬೃಹತ್ ಸಮಾವೇಶದಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್ ತೆರವುಗೊಳಿಸುತ್ತಿರುವ ಪೊಲೀಸರು


