Homeಮುಖಪುಟಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ 'ಜೈ ಭೀಮ್'...

ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಎಲ್ಲರಿಗೂ ಸಮಾನ ನ್ಯಾಯಕ್ಕೆ ನಿಲ್ಲಬೇಕಿದ್ದ ಪ್ರಭುತ್ವದ ಸಂಸ್ಥೆಗಳು ಶಿಥಿಲಗೊಂಡಾದ ಅದಕ್ಕೆ ಮುಖ್ಯವಾಗಿ ಕಾರಣವಾಗಿರುವ ಶೋಷಕ ಸಮುದಾಯದ ವ್ಯಕ್ತಿಗಳ ಹಾದಿ ಯಾವುದಾಗಿರಬೇಕು ಎಂದು ಎಚ್ಚರಿಸುವ ಸಿನಿಮಾ ಜೈ ಭೀಮ್

- Advertisement -
- Advertisement -

1871 ರಲ್ಲಿ ಬ್ರಿಟಿಷರು ಜಾರಿಗೆ ತಂದ ಕ್ರಿಮಿನಲ್ ಟ್ರೈಬ್ಸ್ ಆಕ್ಟ್‌‍ಗೆ (ಸಿಟಿಎ- ಅಪರಾಧಿ ಬುಡಕಟ್ಟು ಕಾಯ್ದೆಗೆ) 2021ಕ್ಕೆ 150 ವರ್ಷ ತುಂಬುತ್ತದೆ. ಮುಖ್ಯವಾಗಿ 1857ರ ದಂಗೆಯನ್ನು ಹತ್ತಿಕ್ಕಲು, ಯಾವುದೇ ಗಂಭೀರ ಅಧ್ಯಯನ ಇಲ್ಲದೆ, ಬ್ರಿಟಿಷ್ ಅಧಿಕಾರಿ ಜನರಲ್ ವಿಲಿಯಮ್ ಹೆನ್ರಿ ಸ್ಲೀಮನ್ ಸೇರಿದಂತೆ ಅಂದಿನ ಹಲವು ಅಧಿಕಾರಿಗಳು ನೂರಾರು ಅಲೆಮಾರಿ ಸಮುದಾಯಗಳನನ್ನು ಸಿಟಿಎ ಅಡಿ ತಂದು, ಅವರನ್ನು ಅಪರಾಧಿಗಳು ಎಂದು ಹಣೆಪಟ್ಟಿ ಕಟ್ಟಿ, ಅವರನ್ನು ಬಂಧಿಸುವುದರಿಂದ ಹಿಡಿದು, ‘ಸುಧಾರಣಾ’ ಶಿಬಿರಗಳಲ್ಲಿ ಕೂಡಿ ಹಾಕಿ ಕಿರುಕುಳ, ಹಿಂಸೆಗೆ ಗುರಿಯಾಗುವಂತೆ ಮಾಡಿದ್ದು ಇತಿಹಾಸವಷ್ಟೇ ಅಲ್ಲ! ಸ್ವತಂತ್ರಾ ನಂತರವು ಆ ಸಮುದಾಯಗಳ ಬಗ್ಗೆ ಅದೇ ಮನಸ್ಥಿತಿ ಬೇರೆಬೇರೆ ರೂಪಗಳಲ್ಲಿ ಉಳಿದುಕೊಳ್ಳುವುದಕ್ಕೆ ಕಾರಣವಾಯಿತು. 1952ರಲ್ಲಿ ಈ ಸಿಟಿಎಗೆ ಇತಿಶ್ರೀ ಹಾಡಲಾಯಿತಾದರೂ, ಅದರ ಬದಲು ಹ್ಯಾಬಿಚುವಲ್ ಆಫೆಂಡರ್ ಆಕ್ಟ್‍ಅನ್ನು (ರೂಢಿಗತ ಅಪರಾಧಿಗಳ ಕಾಯಿದೆ) ತಂದು, ಈ ಅಲೆಮಾರಿ ಸಮುದಾಯಗಳ ವ್ಯಕ್ತಿಗಳನ್ನು ಗುರಿಯಾಗಿಸಲಾಯಿತು. ಇದು ಇಂದಿಗೂ ಕೂಡ ಮುಂದುವರೆದಿರುವುದು ದುರಂತವಷ್ಟೇ!

ಕೆಲವೇ ಕೆಲವು ವರ್ಷಗಳ ಹಿಂದೆ ಇಂತಹ “ರೂಡಿಗತ ಅಪರಾಧಿ”ಗಳನ್ನು ಯಾವ ರೀತಿ ನಿಯಂತ್ರಿಸಬೇಕು ಎನ್ನುವ ಬಗ್ಗೆ ಹಲವು ರಾಜ್ಯಗಳಲ್ಲಿ ಪೊಲೀಸ್ ತರಬೇತಿ ಇತ್ತು ಎನ್ನುವುದು ದಾಖಲಾಗಿದೆ. ಕಪೋಲಕಲ್ಪಿತ ಆಧಾರದಡಿಯಲ್ಲಿ ಅಲೆಮಾರಿ ಸಮುದಾಯದ ಲಕ್ಷಾಂತರ ಜನ ಕಳಂಕ ಹೊತ್ತು ಬದುಕುತ್ತಿರುವುದಲ್ಲದೆ, ತಾವು ಮಾಡಿರದ ಅಪರಾಧವನ್ನು ಹೊರಿಸಿಕೊಳ್ಳುವ ಹಿಂಸೆಗೆ ಭ್ರಷ್ಟ ಪೊಲೀಸ್ ವ್ಯವಸ್ಥೆಯಿಂದ ಗುರಿಯಾಗಿದ್ದಾರೆ. ಈ ಕಥೆಗಳು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಅಥವಾ ಕಥಾಜಗತ್ತಿನಲ್ಲಿ ಮೂಡಿಬಂದದ್ದು ಅಪರೂಪ. ಸೆಡಿಶನ್ ರೀತಿಯಲ್ಲಿಯೇ ಇಂಥಹ ದೌರ್ಜನ್ಯದ ವಸಾಹತುಶಾಹಿಯ ಪಳೆಯುಳಿಕೆ ಕಾನೂನುಗಳು ಭಾರತೀಯ ಸಮಾಜದಲ್ಲಿ ಒಪ್ಪಿಗೆ ಪಡೆದು ಮುಂದುವರೆದಿವೆ.

ಹೆಚ್ಚಾಗಿ ತಮಿಳುನಾಡಿನಲ್ಲಿ ಇರುವ (ಕರ್ನಾಟಕ, ಕೇರಳ, ಪುದುಚೆರಿಯಲ್ಲೂ ಇದ್ದಾರೆ) ಇರುಳರು ಕೂಡ ಒಂದು ಅಂತಹ ಅರೆ ಅಲೆಮಾರಿ ಸಮುದಾಯ. ರಾಜಾಕಣ್ಣು (ಕೆ ಮಣಿಗಂಡನ್) ಮತ್ತು ಸೆಂಗಿಣಿ (ಲಿಜೋಮೋಲ್ ಜೋಸ್) ತಾವು ಅಕ್ಷರಸ್ಥರಾಗಿಲ್ಲದೆ ಇದ್ದರೂ, ವಯಸ್ಕರ ಶಿಕ್ಷಣದಲ್ಲಿ ಕಲಿಯುತ್ತಿರುವ, ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿರುವ, ಗುಡಿಸಲಿನ ಬದಲು ಇಟ್ಟಿಗೆ ಗೋಡೆಯ ಮನೆ ಕಟ್ಟಿಕೊಳ್ಳಲು ಕನಸು ಕಾಣುತ್ತಿರುವ ಪುಟ್ಟ ಕುಟುಂಬ. ಹೊಲ ಗದ್ದೆಗಳಲ್ಲಿ, ಮಿಲ್ ಗಳಲ್ಲಿ, ಇಟ್ಟಿಗೆ ಬೇಯಿಸುವಲ್ಲಿ ಕೂಲಿ ಕೆಲಸ ಮಾಡುವ, ಹಾವು ಹಿಡಿಯುವ, ಹಾವು ಕಚ್ಚಿದವರಿಗೆ ಪಾರಂಪರಿಕ ಚಿಕಿತ್ಸೆ ನೀಡುವ, ಗದ್ದೆಗಳ ಬದುಗಳಲ್ಲಿ ಇಲಿ ಹಿಡಿದು ತಿನ್ನುವ ಇರುಳ ಸಮುದಾಯ ಸಿಟಿಎ ಕಾಯ್ದೆ ತೊಲಗಿ ಅರ್ಧ ದಶಕ ಕಳೆದಿದ್ದರೂ, ವ್ಯವಸ್ಥಿತ ನೆಲೆ ಇಲ್ಲದೆ, ರೇಶನ್ ಕಾರ್ಡ್ ಸೇರಿದಂತೆ ಯಾವುದೇ ಗುರುತಿನ ಚೀಟಿ ಇಲ್ಲದೆ, ಪರಿಶಿಷ್ಟ ವರ್ಗದ ಪ್ರಮಾಣಪತ್ರ ಪಡೆಯಲು ಸೋತಿರುವ ಸಮುದಾಯ. ಈ ಸಮುದಾಯವನ್ನು ಶೋಷಿಸುವ ಕಥೆ ಆಯ್ದುಕೊಂಡಿರುವ ‘ಜೈಭೀಮ್’ ಸಿನಿಮಾದ ಆರಂಭಿಕ ದೃಶ್ಯವೇ ಪ್ರೇಕ್ಷಕನನ್ನು ತನ್ನೊಳಗೆ ಎಳೆದುಕೊಳ್ಳುತ್ತದೆ.

ತಮ್ಮ ಜೈಲುವಾಸ ಮುಗಿಸಿ ಬಿಡುಗಡೆಯಾಗುತ್ತಿರುವ ವ್ಯಕ್ತಿಗಳ ಜಾತಿ ಕೇಳುತ್ತಾ ಹೋಗುವ ಪೊಲೀಸ್ ಅಧಿಕಾರಿ, ಮೇಲ್ಜಾತಿ ಜನರನ್ನೆಲ್ಲಾ ಕಳುಹಿಸಿ, ಪರಿಶಿಷ್ಟ ಜಾತಿ, ಪಂಗಡ ಮತ್ತು ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಗಳನ್ನು ಪ್ರತ್ಯೇಕವಾಗಿ ನಿಲ್ಲಿಸುತ್ತಾನೆ. ಅವರನ್ನೆಲ್ಲಾ ಇಲ್ಲಿಯವರೆಗೂ ಬಗೆಹರಿಯದ ಪ್ರಕರಣಗಳಲ್ಲಿ ಫಿಟ್ ಮಾಡಲು ಮತ್ತೆ ಎಳೆದುಕೊಂಡು ಹೋಗಲಾಗುತ್ತದೆ. ಅಪರಾಧೀಕರಣಗೊಂಡಿರುವ, ಕೊಳೆತು ನಾರುವ ವ್ಯವಸ್ಥೆಯ ಕಥೆಯನ್ನು ಹೇಳುವೆ ಎಂದು ನಿರ್ದೇಶಕ ಟಿ ಜ್ಞಾನವೇಲು ಬೋಲ್ಡ್ ಆಗಿ ಆರಂಭದಲ್ಲಿಯೇ ಘೋಷಿಸಿಕೊಳ್ಳುತ್ತಾರೆ.

ಇರುಳ ಸಮುದಾಯದ ಬದುಕನ್ನು, ಜೀವನ ದೃಷ್ಟಿಯನ್ನು ಕಟ್ಟಿಕೊಡುವ ದೃಶ್ಯಗಳಿಂದ ಸಿನಿಮಾ ಮುಂದುವರೆಯುತ್ತದೆ. ‘ಸಾವುಕಾರ’ನೊಬ್ಬನ ಮನೆಯಲ್ಲಿ ನಾಗರಹಾವನ್ನು ಹಿಡಿಯುವ ರಾಜಾಕಣ್ಣುವಿಗೆ ಅದನ್ನು ಸಾಯಿಸುವಂತೆ ಹೇಳಿದಾಗ, ಅದನ್ನು ನಿರಾಕರಿಸಿ ಅದನ್ನು ರಕ್ಷಿಸಿ ಕಾಡಿಗೆ ಬಿಡುತ್ತಾನೆ. ಮನುಷ್ಯರಿಂದ ದೂರವಿರುವಂತೆ ಹಾವಿಗೆ ತಿಳಿಹೇಳುತ್ತಾನೆ. ‘ಮುಖ್ಯವಾಹಿನಿ’ ಎಂದು ಹೇಳಿಕೊಳ್ಳುವ ಸಮುದಾಯ ಯಾವೆಲ್ಲಾ ಸ್ಥರಗಳಲ್ಲಿ ಭ್ರಷ್ಟಗೊಂಡಿದೆ, ಸ್ವಾರ್ಥಿಯಾಗಿದೆ ಎಂಬುದನ್ನು ಈ ಸಣ್ಣಪುಟ್ಟ ದೃಶ್ಯಗಳೇ ನಿರೂಪಿಸುತ್ತಾ ಮುಂದುವರೆಯುತ್ತವೆ. ಅಲೆಮಾರಿ ಸಮುದಾಯದ ಅಲೆಮಾರಿತನವನ್ನೇ ಅಪರಾಧೀಕರಣಗೊಳಿಸಲು ಪ್ರಭುತ್ವ ಪ್ರಯತ್ನಿಸಿದ್ದನ್ನು ಮೆಟ್ಟಿ ಈಗ ಆ ಸಮುದಾಯ ನೆಲೆ ನಿಲ್ಲಲು ಪ್ರಯತ್ನಿಸುವಾಗ ಅದಕ್ಕೆ ಅಡ್ಡಗಾಲು ಹಾಕುತ್ತಿರುವುದು ಕೂಡ ಅದೇ ಪ್ರಭುತ್ವವೇ. ಅದಕ್ಕೆ ಶ್ರೇಣೀಕೃತ ಸಮಾಜ ಕೂಡ ಕೈಜೋಡಿಸಿದೆ. ತಮ್ಮ ಹೊಲಗದ್ದೆಗಳಲ್ಲಿ ಮತ್ತು ಇತರ ವ್ಯವಹಾರಗಳಲ್ಲಿ ಕೂಲಿಗಾಗಿ ದುಡಿಯುವ ಈ ದುಡಿವ ವರ್ಗದ ಸ್ವಾವಲಂಬನೆಗೆ ಅಡ್ಡಗಾಲು ಹಾಕಲು ಆರ್ಥಿಕ ಕಾರಣವೂ ಅಲ್ಲಿ ಸೇರಿದೆ.

ಹೀಗೆ, ಸ್ವಾವಲಂಬನೆಗೆ ಹವಣಿಸುತ್ತಿರುವ ರಾಜಾಕಣ್ಣುನನ್ನು ಪೊಲೀಸರು ಕಳ್ಳತನದ ಕೇಸಿನಲ್ಲಿ ಸಿಕ್ಕಿಸುತ್ತಾರೆ. ನ್ಯಾಯಯುತವಾಗಿ ಬದುಕಗೊಡಬಿಡದ ಆಡಳಿತ ವ್ಯವಸ್ಥೆಯ ದೌರ್ಜನ್ಯದ ದೃಶ್ಯಗಳು, ಪೊಲೀಸರು ನೀಡುವ ಚಿತ್ರಹಿಂಸೆಯ ದೃಶ್ಯಗಳು ವೆಟ್ರಿಮಾರನ್ ನಿರ್ದೇಶನದ ‘ವಿಸಾರಣೈ’ ಸಿನಿಮಾವನ್ನು ನೆನಪಿಸುತ್ತವೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕನ್ನು ನೀಡುವ, ಎಲ್ಲರಿಗೂ ಸಮಾನ ನ್ಯಾಯದ ಹಕ್ಕನ್ನು ನೀಡುವ ಸಂವಿಧಾನದ ಆಶಯವನ್ನು ಮಣ್ಣುಗೂಡಿಸಿ ಹೆಮ್ಮರವಾಗಿ ಬೆಳೆದ ಆಡಳಿತ ವ್ಯವಸ್ಥೆಯ ಕ್ರೌರ್ಯವನ್ನು ಪ್ರೇಕ್ಷಕರಿಗೆ ದಾಟಿಸಲು ನಿರ್ದೇಶಕ ಪ್ರತ್ನಿಸಿದ್ದಾರೆ. ಎಸ್ ಐ ಗುರುಮೂರ್ತಿ ನೀಡುವ ಚಿತ್ರಹಿಂಸೆಯನ್ನು ತಾಳಲಾರದೆ, ರಾಜಾಕಣ್ಣುವಿನ ಜೊತೆಗೆ ಬಂಧಿತನಾಗಿರುವ ಸಂಬಂಧಿ, ನಾವು ತಪ್ಪು ಮಾಡದೆ ಇದ್ದರೂ ಒಪ್ಪಿಕೊಳ್ಳೋಣ ಎಂದಾಗ, “ಗಾಯಗಳು ವಾಸಿಯಾಗುತ್ತವೆ, ಆದರೆ ಕಳ್ಳ ಎಂಬ ಹಣೆಪಟ್ಟಿ ಉಳಿದುಕೊಂಡುಬಿಡುತ್ತದೆ” ಎಂದು ರಾಜಾಕಣ್ಣು ಹೇಳುವ ಮಾತುಗಳು ಪ್ರಭುತ್ವದ ಜೊತೆಗೆ ಬೆಸೆದುಹೋಗಿರುವ ಮುಖ್ಯವಾಹಿನಿ ಸಮಾಜದ ಮುಖಕ್ಕೆ ಬಾರಿಸಿದಂತೆ ಭಾಸವಾಗುತ್ತದೆ. ಆದರೆ ಪ್ರಭುತ್ವದ ಹಿಂಸೆಗೆ ತಡೆಯಿದೆಯೇ?

ಮುಂದಿನ ಘಟ್ಟದಲ್ಲಿ, ಚಂದ್ರು ಎಂಬ ವಕೀಲ ಸೆಂಗಿಣಿಯ ಮೂಲಕ ತನ್ನ ಗಂಡನನ್ನು ಹಾಜರುಪಡಿಸುವಂತೆ ಹಾಕುವ ಹೇಬಿಯಸ್ ಕಾರ್ಪಸ್ ಪ್ರಕರಣದ ವಿಚಾರಣೆಯಿಂದ ಸಿನಿಮಾ ಮುಂದುವರೆಯುತ್ತದೆ. ತಮಿಳುನಾಡಿನ ಖ್ಯಾತ ನಟ ಸೂರ್ಯ ತನ್ನ ಸೆಲೆಬ್ರಿಟಿ ಸ್ಟೇಟಸ್ ನಿಂದ ಹೊರಬಂದು ಇಂಥಹ ಒಂದು ಪಾತ್ರವನ್ನು ನಿರ್ವಹಿಸಿದ್ದಾರೆ. ಅಲ್ಲದೆ ಚಂದ್ರು ಎಂಬ ನಿಜ ಜೀವನದ ಹೋರಾಟಗಾರ ವಕೀಲನ ಕಥೆಯೂ ಇದಾಗಿರುವುದರಿಂದ, ಈ ಪಾತ್ರ ಕಟ್ಟುವಲ್ಲಿ ಏಕತಾನತೆ ಎದ್ದು ಕಾಣುತ್ತದೆ. ಮೊದಲಿನಿಂದಲೂ ಶೋಷಿತರ ಪರವಾಗಿ ಕೆಲಸ ಮಾಡುವ ವಕೀಲನಾಗಿ ಕಟ್ಟಿರುವ ಪಾತ್ರದ ಒಟ್ಟಾರೆ ಹರವಿನಲ್ಲಿ ಸಿನಿಮಾದುದ್ದಕ್ಕೂ ಯಾವುದೇ ಬದಲಾವಣೆ ಮೂಡುವುದಿಲ್ಲ. ಆ ನಿಟ್ಟಿನಲ್ಲಿ ಭಾರತೀಯ ಸಿನಿಮಾಗಳ ಸಿದ್ಧಸೂತ್ರದ ಪಾತ್ರದಂತೆ ಇದು ಕೂಡ ಒಂದಾಗಿ ಉಳಿದುಕೊಳ್ಳುತ್ತದೆ. ಆದರೆ ಆ ಪಾತ್ರದ ಮೂಲಕ ಕಟ್ಟಿಕೊಡುವ ಆಶಯ ಪ್ರೇಕ್ಷಕನ ಮನಸ್ಸಿನಲ್ಲಿ ಉಳಿದುಕೊಳ್ಳುತ್ತದೆ.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ, ಪ್ರಜಾಪ್ರಭುತ್ವವನ್ನು ಎಲ್ಲರ ಒಳಿತಿಗಾಗಿ ಕಟ್ಟಿಕೊಂಡಿದ್ದರೂ, ಹಳೆಯ ಶೋಷಣೆಯ ವ್ಯವಸ್ಥೆ ಆಧುನಿಕ ಪ್ರಜಾಪ್ರಭುತ್ವದ ಸಂಸ್ಥೆಗಳಲ್ಲಿಯೂ ಉಳಿದುಹೋಗಿರುವುದರಿಂದ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ತುಳಿಯಬೇಕಿರುವ ಹಾದಿಯಂತೆ ಚಂದ್ರು ಪಾತ್ರ ನಿಲ್ಲುತ್ತದೆ. ಅಂಬೇಡ್ಕರ್ ಅವರು ಸಮಾಜದಲ್ಲಿ ಪ್ರಜಾಪ್ರಭುತ್ವ ಸಾಧಿಸದೆ ಹೋದರೆ ರಾಜಕೀಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ಕೂಡ ಕಷ್ಟ ಎಂದು ಊಹಿಸಿದ್ದರು. ಇದಕ್ಕೆ ಅವರು ಭ್ರಾತೃತ್ವದ ಮಹತ್ವವನ್ನು ಒತ್ತಿ ಹೇಳಿದ್ದರು. ಈ ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ಭಾರತೀಯ ಸಮಾಜ ಸೋತಿದ್ದೆಲ್ಲಿ? ಇದನ್ನು ಇನ್ನಾದರೂ ಸರಿಪಡಿಸಿಕೊಳ್ಳಬಹುದೇ? ನಿಜ ಜೀವನದ ಚಂದ್ರು ಮತ್ತು ಸಿನಿಮಾದ ಚಂದ್ರು ಪಾತ್ರ ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯಂತೆ ಭಾಸವಾಗುತ್ತದೆ. ಪ್ರಭುತ್ವದ ಸಂಸ್ಥೆಗಳು ವಿಪರೀತವಾಗಿ ಬೆಳೆದಿರುವುದನ್ನು ಸರಿಪಡಿಸುವ ಕರ್ತವ್ಯ ಯಾರದ್ದು ಎಂಬುದನ್ನು ನೆನಪಿಸುತ್ತವೆ. ಅದೇ ಸಮಯದಲ್ಲಿ ತನ್ನ ಪ್ರಿವಿಲೆಜ್ ಅನ್ನು ಅರ್ಥ ಮಾಡಿಕೊಂಡು ಅದು ‘ದಾನ-ದಾಕ್ಷಿಣ್ಯ’ವಾಗದಂತೆ ಎಚ್ಚರಿಕೆ ವಹಿಸುವುದೂ ಮುಖ್ಯವಾಗುತ್ತದೆ. ‘ನಿನ್ನ ಫೀಸ್ ಕೊಡಲು ನನ್ನ ಬಳಿ ಹಣವಿಲ್ಲ’ ಎಂದು ಸೆಂಗಿಣಿ ವಕೀಲ ಚಂದ್ರುವಿಗೆ ಹೇಳಿದಾಗ, ‘ಹಾವು ಕಚ್ಚಿಸಿಕೊಂಡು ನಿನ್ನ ಬಳಿ ಚಿಕಿತ್ಸೆಗೆ ಬಂದಾಗ ಹೇಗೆ ನೀನು ಹಣ ಕೇಳುವುದಿಲ್ಲವೋ ಅದೇ ರೀತಿ ನನ್ನದು’ ಎಂದು ತನ್ನ ಹೆಚ್ಚುಗಾರಿಕೆಯೇನಿಲ್ಲ ಎಂಬುದನ್ನು ತನಗೇ ತಾನೇ ಧೃಢಪಡಿಸಿಕೊಳ್ಳುವ ದೃಶ್ಯ ಬಂದುಹೋಗುತ್ತದೆ. ಆಗ ಸೆಂಗಿಣಿ, ತನಗೆ ದೌರ್ಜನ್ಯ ಎಸಗಿದ ಪೊಲೀಸ್ ಗೆ ಹಾವು ಕಚ್ಚಿದರೂ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಹೇಳುವ ಮಾತುಗಳು ಮನಸ್ಸಿನಲ್ಲಿ ಉಳಿದುಕೊಳ್ಳುತ್ತವೆ!

ಪೊಲೀಸ್ ಟಾರ್ಚರ್ ಬಗ್ಗೆ ವಿಚಾರಣೆ ನಡೆಸಲು ಕೋರ್ಟ್ ಒಂದು ಸಮಿತಿ ಮಾಡಿದಾಗ ಅದನ್ನು ಮುನ್ನಡೆಸಲು ಬರುವ ಐಜಿ ಪೆರುಮಾಳ್ ಸ್ವಾಮಿ (ಪ್ರಕಾಶ್ ರೈ) ಪಾತ್ರದಲ್ಲಿ ಆಗುವ ಚಲನೆಯನ್ನು ತೋರಿಸುವ ಸಿನಿಮಾ ಆಶಯ ಸದುದ್ದೇಶದ್ದಾಗಿದ್ದರೂ, ಆ ದೃಶ್ಯಗಳು ಬಹಳ ಆತುರದಲ್ಲಿ ಮೂಡಿಹೋಗುವ ಪರಿಣಾಮ, ಅದು ಸರಿಯಾಗಿ ಪ್ರೇಕ್ಷಕನಲ್ಲಿ ದಾಖಲಾಗುತ್ತದೆಯೇ ಎಂಬ ಸಂದೇಹ ಉಳಿಯುತ್ತದೆ. ಯಾವುದೇ ಒಂದು ಪ್ರಕರಣದಲ್ಲಿ ಕಾನೂನಿನಾಚೆಗೆ ಆರೋಪಿಯೊಬ್ಬನ ಬೆರಳು ಮುರಿದ ಉದಾಹರಣೆ ಹೇಳಿ, ಪೊಲೀಸರು ಕೆಲವೊಮ್ಮೆ ‘ಸರ್ವಾಧಿಕಾರಿ’ಗಳಾಗಿದ್ದರೆ ಮಾತ್ರ ನ್ಯಾಯ ಸಾಧ್ಯ ಎಂಬ ನಂಬಿಕೆಯುಳ್ಳ ಪೊಲೀಸ್ ಅಧಿಕಾರಿ, ತನ್ನ ಮೇಲಧಿಕಾರಿಗಳ ಆಜ್ಞೆಯನ್ನೂ ಧಿಕ್ಕರಿಸಿ, ತನ್ನದೇ ಇಲಾಖೆಯ ದೌರ್ಜನ್ಯವನ್ನು ಕೋರ್ಟ್ ಮುಂದೆ ಬಯಲು ಮಾಡುತ್ತಾನೆ. ಈ ಬದಲಾವಣೆಯನ್ನು ಹಿಡಿದಿಡುವ ಈ ಭಾಗವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಅಗತ್ಯವಿತ್ತು ಎನ್ನಿಸದೆ ಇರದು.

ಎಲ್ಲರಿಗೂ ಸಮಾನ ನ್ಯಾಯಕ್ಕೆ ನಿಲ್ಲಬೇಕಿದ್ದ ಪ್ರಭುತ್ವದ ಸಂಸ್ಥೆಗಳು ಶಿಥಿಲಗೊಂಡಾದ ಅದಕ್ಕೆ ಮುಖ್ಯವಾಗಿ ಕಾರಣವಾಗಿರುವ ಶೋಷಕ ಸಮುದಾಯದ ವ್ಯಕ್ತಿಗಳ ಹಾದಿ ಯಾವುದಾಗಿರಬೇಕು ಎಂದು ಪ್ರಶ್ನಿಸಿಕೊಂಡು ಅದನ್ನು ಅನ್ವೇಷಿಸುವಂತೆ ಮುಂದುವರೆದಿರುವ ‘ಜೈ ಭೀಮ್’ ಸಿನಿಮಾ, ಡಾ. ಬಿ ಆರ್ ಅಂಬೇಡ್ಕರ್ ಅವರ ಕನಸನ್ನು ಸಾಕಾರಗೊಳಿಸಲು ನಿರಾಕರಿಸಿ ನಿರ್ಮಿಸಿಕೊಂಡಿರುವ ತೊಡರುಗಳನ್ನು ಹೆಚ್ಚು ನೆನಪಿಸುತ್ತದೆ. ಇಂತಹ ಕ್ರೂರ ಪ್ರಭುತ್ವದಿಂದ ವಿಮೋಚನೆಗೊಳ್ಳಲು ಪ್ರಿವೆಲೆಜ್ ಹೊಂದಿರುವ ವ್ಯಕ್ತಿಗಳ ಕರ್ತವ್ಯವನ್ನು ಕೂಡ ನೆನಪಿಸುತ್ತದೆ. ಈ ನಿಟ್ಟಿನಲ್ಲಿ ಈ ಕಾಲಕ್ಕೆ ಸ್ಪಂದಿಸಿರುವ ಪ್ರಮುಖ ಚಲನಚಿತ್ರವಾಗಿ ‘ಜೈ ಭೀಮ್’ ಕಾಣಿಸಿಕೊಳ್ಳುತ್ತದೆ.

  • ಗುರುಪ್ರಸಾದ್ ಡಿ ಎನ್

(ಸಂಪಾದಕರು, ನ್ಯಾಯಪಥ ವಾರಪತ್ರಿಕೆ)


ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸ್ವಾತಂತ್ರ್ಯ ಬಂದು 70 ವರ್ಷ ಕಳೆದು ಕೊಳೆತು ನಾರುತ್ತಿರುವ ಸಮಾಜ ಎಂದು ಹೆಡ್ಡಿಂಗ್ ನೀಡುತ್ತಾರೆ ಅಂದರೆ ಈ ಲೇಖಕ ಇಂಥ ಫ್ಯೂಡಲಿಜಮ್ ನಿಂದ ಸಾಗುತ್ತಿದ್ದಾನೆ ಎಂದು ತಿಳಿಯುತ್ತೆ…75 ವರ್ಷವಳಲ್ಲಿ ಲೂಟಿ ವಂಚನೆ ಗರಿಬಿ ಹಟವೋ 20 ಅಂಶ ಕಾರ್ಯಕ್ರಮ, ಪಂಚ್ ವಾರ್ಷಿಕ ಯೋಜನೆ ಎನ್ನುವ ಬಿಳಿ ಆನೆ ಇದರಲ್ಲೇ ಕಾಲ ಕಳೆದ ಆಪ್ಪರ್ ಕ್ಯಾಸ್ಟ್ ಬ್ರಾಹ್ಮಣ ಪಂಡಿತ್ ನೆಹರು ವಂಶ ದೇಶವನ್ನು ಅರಾಜಕತೆ ಕೋಮು ವೈಷಮ್ಯ ಇದೆ ಮಾಡಿದೆ..ಈಗ 2014 ರಿಂದ ಸ್ವಲ್ಪ ಬದಲಾವಣೆ ಗಾಳಿ ಆರಂಭ ಆಗಿದ್ದು ಇದು ಒಬ್ಬ ಹಿಂದುಳಿದ ಸಮಾಜದ ನಾಯಕ ನಿಂದ ಎನ್ನುವುದು ಸತ್ಯ…ಇದೆ ರೀತಿ ಬ್ರಾಹ್ಮಣ ಶಾಹಿ ಪಂಡಿತ್ ನೆಹರು ವಂಶ ಅಳಿದು ಮೂಲೆ ಸೇರಲಿ..

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...