ಆಂಧ್ರಪ್ರದೇಶ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಅನುಮತಿಸುವ ವಿವಾದಾತ್ಮಕ ಮೂರು ರಾಜಧಾನಿ ಮಸೂದೆಯನ್ನು (three-capital bill) ರದ್ದುಗೊಳಿಸಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸರ್ಕಾರ ಸೋಮವಾರ ನಿರ್ಧರಿಸಿದೆ. ಕಾನೂನನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಅಡ್ವೊಕೇಟ್ ಜನರಲ್ ಎಸ್ ಸುಬ್ರಮಣ್ಯಂ ಹೈಕೋರ್ಟ್ಗೆ ತಿಳಿಸಿದ್ದಾರೆ.
ಈ ಮಸೂದೆಗೆ ಹಲವು ವಲಯಗಳಿಂದ ಭಾರಿ ಪ್ರತಿಭಟನೆ ವ್ಯಕ್ತವಾಗಿತ್ತು. ಮೂರು ರಾಜಧಾನಿಗಳನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಕಾರ್ಯಕಾರಿ ರಾಜಧಾನಿ ವೈಜಾಗ್ (ವಿಶಾಕಾಪಟ್ಟಣಂ), ಶಾಸಕಾಂಗ ರಾಜಧಾನಿ ಅಮರಾವತಿ ಮತ್ತು ನ್ಯಾಯಾಂಗ ರಾಜಧಾನಿ ಕರ್ನೂಲ್ ಎಂದು ಸೂಚಿಸಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ಪಿ.ಕೆ ಮಿಶ್ರಾ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಈ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯ ವಿಧಾನಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ ಎಂದು ಅಡ್ವೊಕೇಟ್ ಜನರಲ್ ಎಸ್ ಸುಬ್ರಮಣ್ಯಂ ತಿಳಿಸಿದ್ದಾರೆ. ವಿವರವಾದ ಅಫಿಡವಿಟ್ ಸಲ್ಲಿಸುವಂತೆ ವಿಭಾಗೀಯ ಪೀಠ ಸೂಚಿಸಿದೆ.
ರಾಜ್ಯ ಸಚಿವ ಸಂಪುಟ ತುರ್ತು ಸಭೆ ನಡೆಸಿ ವಿಧಾನಮಂಡಲದಲ್ಲಿ ಮಂಡಿಸಲಿರುವ ರದ್ದತಿ ಮಸೂದೆಗೆ ಒಪ್ಪಿಗೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲಿಸಿದ ಆಂಧ್ರ ಪ್ರದೇಶ ಹೈಕೋರ್ಟ್
ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಸ್ಥಾಪಿಸುವ ಗುರಿಯೊಂದಿಗೆ ಕಳೆದ ವರ್ಷ ಅಂಗೀಕರಿಸಿದ ವಿವಾದಾತ್ಮಕ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರವನ್ನು ತುರ್ತು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಸೂದೆಯನ್ನು ಬದಲಾವಣೆಗಳೊಂದಿಗೆ ಮತ್ತೆ ತರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತಾವಿತ ಕಾನೂನಿನಿಂದ ರೈತರು ಮತ್ತು ಭೂಮಾಲೀಕರು ಅಸಮಾಧಾನಗೊಂಡಿದ್ದರು. ನವೆಂಬರ್ 1 ರಂದು ರೈತರು ಅಮರಾವತಿಯಿಂದ ತಿರುಪತಿಗೆ 45 ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದ್ದರು. ಅಮರಾವತಿಯಲ್ಲಿ ರಾಜ್ಯದ ರಾಜಧಾನಿ ಸ್ಥಾಪನೆಗೆ 34,000 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ಬಿಟ್ಟುಕೊಟ್ಟ ಸಾವಿರಾರು ರೈತರು, ಎರಡು ಕಾನೂನುಗಳನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದರು. ಈ ಕುರಿತು ಹೈಕೋರ್ಟ್ನಲ್ಲಿ ರೈತರಿಂದ 100ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು.