Homeಕರ್ನಾಟಕಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ನಾಡು, ನುಡಿ, ಸಂಶೋಧನೆಯ ವಿಷಯದಲ್ಲಿ ತನ್ನದೇ ಆದ ಘನತೆಯನ್ನು ಹೊಂದಿರುವ ಹಂಪಿ ವಿಶ್ವವಿದ್ಯಾನಿಲಯ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ವಿವಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಮಾಧ್ಯಮಗಳು ನಿರಂತರವಾಗಿ ವರದಿ ಮಾಡುತ್ತವೇ ಇವೆ. ಈ ನಿಟ್ಟಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

“ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯನವರ ಪತ್ರ:

ಮಾನ್ಯ ಬಸವರಾಜ ಬೊಮ್ಮಾಯಿಯವರೇ,

1991ರಲ್ಲಿ ಹಂಪಿಯಲ್ಲಿರುವ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ ಸ್ಥಾಪಿಸಲಾಗಿದೆ. ನಾಡಿನ ಎಲ್ಲ ವಿಶ್ವವಿದ್ಯಾಲಯಗಳು ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಕಲಿಸುವ ಕೆಲಸ ಮಾಡುತ್ತವೆ ಆದರೆ ಹಂಪಿಯಲ್ಲಿರುವ ಈ ವಿಶ್ವ ವಿದ್ಯಾಲಯವನ್ನು “ಜ್ಞಾನ ಸೃಷ್ಟಿಯ” ಕೆಲಸ ಮಾಡುವ ವಿಶಿಷ್ಟ ಉದ್ದೇಶದಿಂದ ಸ್ಥಾಪಿಸಲಾಗಿದೆ. 1991ರಿಂದ ಈ ವಿಶ್ವವಿದ್ಯಾಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂಸರು ಕೆಲಸ ಮಾಡಿದ್ದಾರೆ. ಹಾಗಾಗಿ ಈ ವಿವಿಯಲ್ಲಿ ಅತ್ಯುತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯ ಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿವಿ ಮಾಡಿದೆ.

ಇಡೀ ದೇಶದ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಯ ಗುಣಮಟ್ಟ ಕುಸಿದು ಹೋಗುತ್ತಿದೆ ಎಂಬ ಗಂಭೀರ ಆರೋಪ ವಿದ್ವತ್ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಅಪವಾದವೆಂಬಂತೆ ಕನ್ನಡ ವಿಶ್ವವಿದ್ಯಾಲಯವು ಮೌಲ್ಯಯುತ ಸಂಶೋಧನಾ ಕೆಲಸಗಳನ್ನು ಮಾಡುತ್ತಿದೆ. ಆದರೆ ಹಂಪಿಯ ಕನ್ನಡ ವಿಶ್ವ ವಿದ್ಯಾಲಯವೂ ಸೇರಿದಂತೆ ನಾಡಿನ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಗುಣಮಟ್ಟದ ನೇಮಕಾತಿಗಳು ನಡೆಯದ ಕಾರಣದಿಂದ ಉತ್ತಮ ವಿದ್ವಾಂಸರುಗಳು, ಬೋಧಕರು ಲಭ್ಯವಾಗುತ್ತಿಲ್ಲ. ಉನ್ನತ ಶಿಕ್ಷಣವು ತನ್ನ ಗುಣಮಟ್ಟವನ್ನು ಕಳೆದುಕೊಂಡರೆ, ನಾಡಿನ ಸಮಸ್ತ ವಿಭಾಗಗಳೂ ಕುಸಿದು ಬೀಳುತ್ತವೆ. ಉನ್ನತ ಶಿಕ್ಷಣ ಸರಿಯಾಗಿದ್ದರೆ ಮಾತ್ರ ಉತ್ತಮ ಪ್ರಾಥಮಿಕ, ಪ್ರೌಢ ಶಿಕ್ಷಣ ಸಿಗಲು ಸಾಧ್ಯ. ಜ್ಞಾನವಂತ, ಸೂಕ್ಷ್ಮ ಮತ್ತು ಮಾನವೀಯ ಸಂವೇದನೆಯ ಸಮಾಜದ ನಿರ್ಮಾಣದಲ್ಲಿ ಉನ್ನತ ಶಿಕ್ಷಣದ ಪಾತ್ರ ಬಹಳ ದೊಡ್ಡದು.


ಇದನ್ನೂ ಓದಿರಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ


ಆದರೆ ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ;

1.ಇತ್ತೀಚೆಗೆ ವಿವಿಯಲ್ಲಿ ಕೆಲವು ಬೋಧಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪತ್ರಿಕೆಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿ, ಹರಾಜು ಮಾಡಲಾಗುತ್ತಿದೆಯೆಂದು ವರದಿ ಮಾಡಲಾಗಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮುನ್ನವೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆಯೆಂದು ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡತನದ ಹಿನ್ನೆಲೆಗಳಿಂದ ಬರುವ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ? ಪ್ರತಿಭಾವಂತರು ವಿವಿ ಗಳಲ್ಲಿ ಇಲ್ಲವಾದರೆ ಯಾವ ದೇಶವೂ ಉದ್ಧಾರವಾಗಲು ಸಾಧ್ಯವೆ?

2.ಕನ್ನಡ ವಿವಿಯು ವಿವಿಧ ಹುದ್ದೆಗಳನ್ನು ತುಂಬಿಸಲು ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜೊತೆಗೆ ಹಿಂದೆ ನೇಮಕವಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ಪ್ರೊಬೆಷನರಿ ಅವಧಿಯನ್ನು ಘೋಷಿಸಲೂ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಆದ್ದರಿಂದ ಕೂಡಲೆ ನೇಮಕಾತಿ ಪ್ರಕ್ರಿಯೆಯನ್ನು ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ‌ ತಪ್ಪಿತಸ್ಥರ ವಿರುದ್ಧ ಕ್ರಮವಹಿಸಬೇಕು. ರಾಜ್ಯದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಅವರುಗಳನ್ನು ಯುಜಿಸಿ ನಿಯಮಾವಳಿಗಳಂತೆ ವಿಶ್ವವಿದ್ಯಾಲಯಗಳಿಗೆ ಕರೆತರುವ ಕೆಲಸ ಮಾಡಬೇಕು.

3.ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು, ಪಿಂಚಣಿ ಬಿಡುಗಡೆ ಮಾಡಲೂ ಕಮಿಷನ್ ನಿಗಧಿಗೊಳಿಸಲಾಗಿದೆ, ಕಮಿಷನ್ ನೀಡದೆ ಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರುಗಳು ವಿಶ್ವ ವಿದ್ಯಾಲಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.


ಇದನ್ನೂ ಓದಿರಿ: ಅಕಾಲಿಕ ಮಳೆಯಿಂದ ರೈತರ ಬೆಳೆಯಲ್ಲಿ ಶೇ. 60 ರಷ್ಟು ನಷ್ಟ, ತಕ್ಷಣ ಪರಿಹಾರ ನೀಡಿ: ಸಿದ್ದರಾಮಯ್ಯ


4.ನಿವೃತ್ತರಾದ ಕೆಲವು ಪ್ರೊಫೆಸರುಗಳ ಪಿಂಚಣಿಯನ್ನು ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

5.ವಿಶ್ವವಿದ್ಯಾಲಯದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳೂ ನೀಡುತ್ತಿದ್ದ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು 2-3 ವರ್ಷಗಳಿಂದ ನಿಲ್ಲಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳೂ ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೆ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ವಿಶ್ವವಿದ್ಯಾಲಯದ ಹಗರಣಗಳ ಕುರಿತು ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈಗ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆಯ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ವಿಶ್ವವಿದ್ಯಾಲಯಕ್ಕೆ ಅಗತ್ಯವಾಗಿರುವ ಅನುದಾನವನ್ನು ಕೂಡಲೆ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯದ ಆಡಳಿತವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ.

ವಂದನೆಗಳೊಂದಿಗೆ,
ತಮ್ಮ ವಿಶ್ವಾಸಿ,
ಸಿದ್ದರಾಮಯ್ಯ


ಇದನ್ನೂ ಓದಿರಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...