Homeಕರ್ನಾಟಕರೈತ ಹೋರಾಟಕ್ಕೆ ಒಂದು ವರ್ಷ; ಕಾಫಿ ಬೋರ್ಡ್ ನಿಷ್ಕ್ರಿಯಗೊಂಡ ಉದಾಹರಣೆಯಲ್ಲಿ ಎಪಿಎಂಸಿ ತಿದ್ದುಪಡಿಯ ಅಪಾಯ

ರೈತ ಹೋರಾಟಕ್ಕೆ ಒಂದು ವರ್ಷ; ಕಾಫಿ ಬೋರ್ಡ್ ನಿಷ್ಕ್ರಿಯಗೊಂಡ ಉದಾಹರಣೆಯಲ್ಲಿ ಎಪಿಎಂಸಿ ತಿದ್ದುಪಡಿಯ ಅಪಾಯ

- Advertisement -
- Advertisement -

ವಿವಾದಿತ ಕೃಷಿ ಕಾಯಿದೆಗಳ ವಿರುದ್ಧದ ರೈತರ ಹೋರಾಟಕ್ಕೆ ಒಂದು ವರ್ಷವಾಯಿತು. ಸುಮಾರು ಏಳುನೂರು ಜನ ರೈತರು ಪ್ರಾಣತೆತ್ತರು. ಶಾಂತಿಯುತವಾದ ಚಳವಳಿ ನಿರತ ರೈತರ ಮೇಲೆ ಜೀಪು ಹರಿಸಲಾಯಿತು. ಇಷ್ಟೆಲ್ಲ ಆದನಂತರ ಪ್ರಧಾನಿ ಈ ವಿವಾದಿತ ಕಾಯಿದೆಗಳನ್ನು ಹಿಂಪಡೆಯಲಾಗಿದೆ ಎಂದು ಘೋಷಿಸಿದ್ದಾರೆ. ಸಂಸತ್ತಿನಲ್ಲಿ 29 ನವೆಂಬರ್‌ನಂದು ಹಿಂಪಡೆಯಲಾಗಿದೆ ಕೂಡ. ಈ ಘೋಷಣೆಯ ಸಂದರ್ಭ ಮತ್ತು ರೀತಿ ಕೂಡಾ ಒಕ್ಕೂಟ ಸರ್ಕಾರದ ಮುಂದಿನ ನಡೆಯ ಬಗ್ಗೆ ಅನುಮಾನ ಹುಟ್ಟಿಸುವಂತಿದೆ. ಯಾಕೆಂದರೆ ಪ್ರಧಾನಿ ರೈತರಿಗೆ ಲಾಭದಾಯಕವಾದ ಕಾಯಿದೆಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲು ನಾವು ವಿಫಲರಾಗಿದ್ದೇವೆ ಎಂಬ ಕಾರಣಕ್ಕಾಗಿ ದೇಶದ ಜನರ ಕ್ಷಮೆ ಯಾಚಿಸಿದ್ದಾರೆಯೇ ಹೊರತು, ಈ ಒಂದು ವರ್ಷ ಕಾಲ ರೈತ ಹೋರಾಟವನ್ನು ಕಡೆಗಣಿಸಿದ್ದಕ್ಕಾಗಲೀ, ಪ್ರಾಣ ಕಳೆದುಕೊಂಡ ರೈತರ ಬಗ್ಗೆಯಾಗಲೀ ಅಲ್ಲ. ಅಂದರೆ ಒಕ್ಕೂಟ ಸರ್ಕಾರ ಮಾನಸಿಕವಾಗಿ ಈಗಲೂ ಈ ಕಾಯಿದೆಗಳ ಪರವಾಗಿಯೇ ಇದೆ. ರೈತ ಹೋರಾಟಗಾರರೂ ಸಹ ಸಂಸತ್ತಿನಲ್ಲಿ ಈ ಕಾಯಿದೆಗಳನ್ನು ಹಿಂಪಡೆಯುವವರೆಗೂ, ಹಾಗೂ ಕನಿಷ್ಠ ಬೆಂಬಲ ಬೆಲೆ ಮಸೂದೆಯನ್ನು ಜಾರಿ ಮಾಡುವವರೆಗೂ ತಮ್ಮ ಹೋರಾಟಗಳನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.

ನಿಯಂತ್ರಿತ ಮಾರುಕಟ್ಟೆಯ ಮೂಲಕ ರೈತನ ಬೆಳೆಗೆ ಸೂಕ್ತ ಬೆಲೆ ದೊರಕಿಸಿಕೊಡುವುದು, ರೈತನನ್ನು ದಲ್ಲಾಳ್ಳಿಗಳಿಂದ ರಕ್ಷಿಸುವುದು, ಸರ್ಕಾರಕ್ಕೆ ಬರಬೇಕಾದ ತೆರಿಗೆ ಸೋರಿಕೆಯಾಗದಂತೆ ನೋಡಿಕೊಳ್ಳುವುದೂ ಅಲ್ಲದೆ ಮಾರುಕಟ್ಟೆಗಳ ಅಭಿವೃದ್ಧಿ, ರೈತಭವನಗಳ ನಿರ್ಮಾಣ, ಮಾರುಕಟ್ಟೆಗಳಿಗೆ ಸಂಪರ್ಕ ಸಾಧಿಸುವ ರಸ್ತೆಗಳನ್ನು ಮಾಡುವುದು ಹೀಗೆ ಕೃಷಿವಲಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾರ್ಯಗಳು ಎ.ಪಿ.ಎಂ.ಸಿಯ ಕಾರ್ಯವ್ಯಾಪ್ತಿಯಲ್ಲಿ ಇದೆ. ಎ.ಪಿ.ಎಂ.ಸಿ. ಕಾಯಿದೆ ಜಾರಿಯಾಗಿ ದೇಶದ ಎಲ್ಲ ಕಡೆಗಳಲ್ಲಿ ಮಾರುಕಟ್ಟೆಗಳ ನಿರ್ಮಾಣವಾದವು. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಇಂದು ಹೆಚ್ಚಿನ ಎಲ್ಲ ತಾಲ್ಲೂಕುಗಳಲ್ಲಿ ಎ.ಪಿ.ಎಂ.ಸಿ. ಮಾರುಕಟ್ಟೆ ಇದೆ. ಕಾಲ ಕಾಲಕ್ಕೆ ಚುನಾವಣೆಗಳು ನಡೆಯುತ್ತವೆ. ಮಾರುಕಟ್ಟೆ ಸಮಿತಿಗಳಿವೆ. ಕಾಯಿದೆಯ ಪ್ರಕಾರ ರೈತರು, ವ್ಯಾಪಾರಿಗಳು ಯಾರೂ ಈ ಮಾರುಕಟ್ಟೆಗಳ ಹೊರಗೆ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿತ್ತು.

ಈಗ ಹಲವು ದಶಕಗಳ ನಂತರ ಮತ್ತೆ ರೈತನಿಗೆ ಉತ್ತಮ ಬೆಲೆ ದೊರಕಿಸಿಕೊಡುವ ನೆಪ ಹೇಳಿ ರೈತನಿಗೆ ತನ್ನ ಉತ್ಪನ್ನಗಳನ್ನು ಮಾರುಕಟ್ಟೆಗಳ ಹೊರಗೂ ಮಾರುವ ಸ್ವಾತಂತ್ರ್ಯವನ್ನು ನೀಡಲಾಗಿದೆ. ಇದರಿಂದ ರೈತ ತಾನು ಬೆಳೆದ ಬೆಳೆಗೆ ಉತ್ತಮ ಬೆಲೆಯನ್ನು ಪಡೆಯುವ ಚೌಕಾಸಿಯ ಬಲ ಹೆಚ್ಚುವುದೆಂದೂ ಹೇಳಲಾಗಿದೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಇಷ್ಟು ವರ್ಷಗಳ ಕಾಲ ನಡೆಸಿದ ನಿಯಂತ್ರಿತ ಮಾರುಕಟ್ಟೆಯ ಪ್ರಯೋಗದಿಂದ ರೈತನಿಗೆ ಯೋಗ್ಯ ಬೆಲೆ ಕೊಡಿಸಲು ಸಾಧ್ಯವಾಗಿಲ್ಲ. ಮತ್ತು ಇತರ ಉದ್ದೇಶಗಳು ನಿರೀಕ್ಷಿತ ಮಟ್ಟದಲ್ಲಿ ಈಡೇರಿಲ್ಲ. ವ್ಯಾಪಾರಿಗಳು ಎ.ಪಿ.ಎಂ.ಸಿಯ ಕಣ್ಣು ತಪ್ಪಿಸುವ ಹಲವು ದಾರಿಗಳನ್ನು ಕಂಡುಕೊಂಡರು. ರೈತರು ದಲ್ಲಾಳಿಗಳ ಹಿಡಿತದಲ್ಲಿ ನರಳಿದರು.

ಕೆಲವು ಕಡೆಗಳ ಎ.ಪಿ.ಎಂ.ಸಿ ಸಮಿತಿಗಳಲ್ಲಿ ದಕ್ಷರೂ ಸೇವಾಮನೋಭಾವದವರೂ ಇರುವಾಗ ಮಾತ್ರ ರೈತರಿಗೆ ಕೆಲವು ಅನುಕೂಲಗಳಾದುವು. ಒಂದು ವ್ಯವಸ್ಥೆಯಾಗಿ ಈ ಸಮಿತಿಗಳು ರೈತರಲ್ಲಿ ಒಳ್ಳೆಯ ಭಾವನೆಯನ್ನೇನೂ ಮೂಡಿಸಲಿಲ್ಲ. ಆದ್ದರಿಂದ ಎಷ್ಟೋ ಕಡೆಗಳಲ್ಲಿ ರೈತರೂ ಎ.ಪಿ.ಎಂ.ಸಿ.ಯ ಹೊರಗೇ ವ್ಯವಹಾರ ನಡೆಸುತ್ತಾರೆ. ವಾಣಿಜ್ಯ ಬೆಳೆಗಳಲ್ಲಿ ಇದು ಎದ್ದು ಕಾಣುವಂತಿದೆ.

ಈಗ ಸರ್ಕಾರ ಈ ಸಮಿತಿಗಳನ್ನೇನೂ ರದ್ದು ಮಾಡುತ್ತಿಲ್ಲ. ಬದಲಿಗೆ ವಹಿವಾಟನ್ನು ರೈತನ ಆಯ್ಕೆಗೆ ಬಿಟ್ಟಿದೆ. ಆ ದೃಷ್ಟಿಯಿಂದ ರೈತ ಸ್ವತಂತ್ರ. ಆದರೆ ಇದು ಅರ್ಧ ಸತ್ಯ. ವ್ಯಾಪಾರಿಯೂ, ದಳ್ಳಾಳಿಯೂ ಆಮಟ್ಟಿಗೆ ಸ್ವತಂತ್ರನೇ ಆಗಿದ್ದಾನೆ. ಅಂದರೆ ಅವರಿಗೆ ಎ.ಪಿ.ಎಂ.ಸಿ.ಯ ನಿಯಂತ್ರಣ ಮುಕ್ತಾಯಗೊಂಡಿದೆ.

ಈಗ ನಾವು ಈ ಹಿನ್ನೆಲೆಯಲ್ಲಿ ಮುಂದಿನ ಸಾಧ್ಯತೆಗಳನ್ನು ಗಮನಿಸಬೇಕು. ಮುಕ್ತ ವ್ಯಾಪಾರ ಎಂದರೇನು ಎನ್ನುವುದನ್ನು ನಾವು ಇತ್ತೀಚಿನ ವರ್ಷಗಳಲ್ಲಿ ಚೆನ್ನಾಗಿ ಅರಿತಿದ್ದೇವೆ. ಎ.ಪಿ.ಎಂ.ಸಿ ಕಾಯಿದೆ ತಿದ್ದುಪಡಿಯ ಜೊತೆಗೆ ಸರ್ಕಾರ ಕೃಷಿ ಭೂಮಿಯ ಖರೀದಿಗಿದ್ದ ನಿರ್ಬಂಧಗಳನ್ನು ತೆಗೆದು ಹಾಕಿದೆ. ಇದರ ಮುಂದಿನ ಹೆಜ್ಜೆಯೇ ದೊಡ್ಡ ಪ್ರಮಾಣದ ಕಾರ್ಪೊರೆಟ್ ಕೃಷಿ. ಮತ್ತು ಈಗ ಎ.ಪಿ.ಎಂ.ಸಿ.ಯ ನಿರ್ಬಂಧವಿಲ್ಲದ ಕಾರ್ಪೊರೆಟ್ ವ್ಯಾಪಾರ. ಇದು ಆರಂಭದ ದಿನಗಳಲ್ಲಿ ಖಂಡಿತ ರೈತನಿಗೆ ಲಾಭದಾಯಕವಾಗಿ ಕಾಣಿಸುತ್ತದೆ. ನಿಯಂತ್ರಿತ ಮಾರುಕಟ್ಟೆಯೇ ರೈತನ ಶತ್ರು ಎಂಬ ಭಾವನೆ ಬರುವಂತೆ ಪ್ರಾರಂಭದ ದಿನಗಳಲ್ಲಿ ಒಳ್ಳೆಯ ಬೆಲೆ ಬರುವ ಸಾಧ್ಯತೆ ಇದೆ.

ಇದಕ್ಕೆ ಬಹಳ ಉತ್ತಮ ಉದಾಹರಣೆಯೆಂದರೆ ಕಾಫಿ ಬೆಳೆ. ಅಲ್ಲಿ ಭೂಮಿತಿ ಮೊದಲೇ ಇರಲಿಲ್ಲ. ಆದರೆ ಎಲ್ಲ ಬೆಳೆಗಳಿಗೂ ಮಾದರಿ ಎನ್ನಿಸುವಂತಹ ಉತ್ತಮ ನಿಯಂತ್ರಿತ ಮಾರುಕಟ್ಟೆ ಇತ್ತು. ಆದರೆ ಕಾಫಿ ಕೃಷಿ ಮತ್ತು ಮಾರಾಟದ ಬಗೆಗಿನ ನಿಯಂತ್ರಣ ಸಂಪೂರ್ಣ ತೆಗೆದ ನಂತರ ಈಗ ಏನಾಗಿದೆ ಎನ್ನುವುದು ಇತಿಹಾಸ.

ಕಾಫಿ ಬೆಳೆಯ ಅಭಿವೃದ್ಧಿ ಮತ್ತು ಮಾರಾಟಕ್ಕಾಗಿ ಬ್ರಿಟಿಷರ ಕಾಲದಲ್ಲೇ ಪ್ರಾರಂಭವಾದ ’ಕಾಫಿ ಬೋರ್ಡ್’, ದೇಶ ಸ್ವತಂತ್ರವಾದ ನಂತರ ಉಳಿದುಕೊಂಡು ಇನ್ನಷ್ಟು ಶಕ್ತವಾಗಿ ಮುಂದುವರಿಯಿತು. ಕಾಫಿ ಬೆಳೆಯ ಸಂಪೂರ್ಣ ನಿಯಂತ್ರಣ ಕಾಫಿ ಬೋರ್ಡಿನ ಕೈಯಲ್ಲಿತ್ತು. ಕಾಫಿ ಬೆಳೆಯುವ ಪ್ರದೇಶದ ವಿಸ್ತೀರ್ಣದ ನಿಯಂತ್ರಣ, ಲೆಕ್ಕ ಪತ್ರಗಳನ್ನಿಡುವುದು, ಸಂಗ್ರಹ ಮತ್ತು ಮಾರಾಟ ಅಷ್ಟೇ ಅಲ್ಲದೇ ಸಂಶೋಧನೆಗಳು ಕೂಡಾ ಕಾಫಿಬೋರ್ಡಿನ ಸಂಪೂರ್ಣ ಸ್ವಾಮ್ಯದಲ್ಲಿತ್ತು. ಕೃಷಿಕನಿಗೆ ಸರ್ಕಾರ ಅನುಮತಿಯೊಂದಿಗೆ ಕಾಫಿ ಬೆಳೆದು ಕಾಫಿ ಬೋರ್ಡಿನ ಗೋದಾಮಿಗೆ ತಂದು ಸುರಿಯುವುದಷ್ಟೇ ಕೆಲಸವಾಗಿತ್ತು. ಆಂತರಿಕ ಬಳಕೆಗೆ ಬೇಕಾದಷ್ಟನ್ನು ಬಿಡುಗಡೆಮಾಡಿ ಉಳಿದ ಎಲ್ಲ ಕಾಫಿಯನ್ನು ಕಾಫಿಬೋರ್ಡ್ ತಾನೇ ರಫ್ತು ಮಾಡಿ ಬೆಳಗಾರರಿಗೆ ಕಂತುಕಂತಾಗಿ ಹಣ ಪಾವತಿ ಮಾಡುತ್ತಿತ್ತು. ಈ ಕಂತಿನ ಹಣ ನಾಲ್ಕೈದು ವರ್ಷಗಳಿಗೂ ಚಾಚಿಕೊಂಡಿರುತ್ತಿದ್ದು ಪ್ರತಿ ವರ್ಷವೂ ನಿರಂತರವಾಗಿ ಹಣದ ಹರಿವಿರುತ್ತಿತ್ತು. ಇದರಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತವಾದಾಗಲೂ ಅದು ಬೆಳೆಗಾರರನ್ನು ಅಷ್ಟಾಗಿ ಬಾಧಿಸದೆ ಒಂದು ರೀತಿ ಬೆಲೆ ಸ್ಥಿರತೆಯ ಅನುಕೂಲ ದೊರೆಯುತ್ತಿತ್ತು. ಉಳಿದೆಲ್ಲಾ ಬೆಳೆಗಳು ಕಷ್ಟ ನಷ್ಟ ಅನುಭವಿಸುತ್ತಿದ್ದಾಗಲೂ ಕಾಫಿ ಬೆಳೆಗಾರ ಸದೃಢವಾಗಿದ್ದ.

ಈ ಕಾರಣಕ್ಕಾಗಿಯೇ ಎಂಬತ್ತರ ದಶಕದಲ್ಲಿ ಅನೇಕ ಬೆಳೆಗಾರರು ನಮಗೂ ಕಾಫಿ ಬೋರ್ಡಿನಂತಹ ವ್ಯವಸ್ಥೆ ಬೇಕೆಂದು ಕೇಳತೊಡಗಿದ್ದರು. ರೈತ ಸಂಘ ಕೂಡಾ ಎಲ್ಲ ಕೃಷಿ ಉತ್ಪನ್ನಗಳಿಗೆ ಕಾಫಿಬೋರ್ಡಿನಂತಹ ವ್ಯವಸ್ಥೆ ಸೂಕ್ತವೆಂದು ಹೇಳುತ್ತಿತ್ತು.

ಹಾಗಾದರೆ ಈ ಸಂತೃಪ್ತಿಯ ಭಾವದಲ್ಲಿದ್ದ ಕಾಫಿಗೆ ಬಂದ ವಿಪತ್ತೇನು?

ನಮ್ಮೆಲ್ಲ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳಂತೆ ಕಾಫಿ ಬೋರ್ಡ್ ಕೂಡಾ ಜಡವಾಗುತ್ತ ಹೋಯಿತು. ನಮ್ಮ ರಫ್ತು ಚೆನ್ನಾಗಿದ್ದುದರಿಂದ ಆಂತರಿಕ ಮಾರುಕಟ್ಟೆಯನ್ನು ವಿಸ್ತರಿಸುವ ವಿಚಾರವನ್ನೇ ಮಾಡಲಿಲ್ಲ. ಎಲ್ಲಾ ಸಂಸ್ಥೆಗಳಂತೆ ಕಾಫಿ ಬೋರ್ಡಿನಲ್ಲೂ ಕೆಟ್ಟ ರಾಜಕಾರಣ ಪ್ರವೇಶಿಸಿತು. ಕಾಫಿ ಬೆಳೆಯ ಜ್ಞಾನವಿಲ್ಲದ ರಾಜಕಾರಣಿಗಳು ಕಾಫಿಬೋರ್ಡಿನ ನಿಯಂತ್ರಣ ಪಡೆದು ಅವರೇ ಐಷಾರಾಮಿಗಳಾದರು. ಕಾಫಿ ಬೋರ್ಡು ಬೆಳೆಗಾರರ ಸಂಸ್ಥೆಯಾಗಿ ಉಳಿದಿಲ್ಲ ಎಂಬ ಅತೃಪ್ತಿ ಬೆಳೆಗಾರರಲ್ಲಿ ಮೂಡಿತು. ಅದೇ ವೇಳೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಒಂದೇಸಮನೆ ಏರುತ್ತಿತ್ತು. ಅದರ ಫಲ ನಮಗೆ ಸಿಗುತ್ತಿಲ್ಲ ಎಂಬ ಕೂಗೆದ್ದಿತು.

ಎಲ್ಲ ಕಡೆ ಜಾಗತೀಕರಣದ ಗಾಳಿ ಬೀಸುತ್ತಿತ್ತು. ದೊಡ್ಡ ವ್ಯಾಪಾರಿಗಳು ಕಾಫಿ ವ್ಯಾಪಾರಕ್ಕಿಳಿಯಲು ಹೊಂಚುಹಾಕಿ ಕಾದಿದ್ದರು.

ಇದೇ ಸಮಯದಲ್ಲಿ ಕಾಫಿಯನ್ನು ಕಾಫಿ ಬೋರ್ಡಿನ ನಿಯಂತ್ರಣದಿಂದ ಬಿಡಿಸಿ ಮುಕ್ತ ಮಾರುಕಟ್ಟೆಗೆ ಅವಕಾಶ ನೀಡಬೇಕೆಂಬ ಕೂಗೆದ್ದಿತು.

ಮೊದಲೇ ಖಾಸಗೀಕರಣದತ್ತ ವಾಲಿದ್ದ ಅಂದಿನ ಸರ್ಕಾರ ಬಹಳ ಜಾಣತನದಿಂದ ಇದನ್ನು ಸಾಧಿಸಿತು. ಮೊದಲಿಗೆ ಶೇ.ಮೂವತ್ತರಷ್ಟು ಕಾಫಿಯನ್ನು ಬೆಳೆಗಾರರು ಯಾರಿಗೆ ಬೇಕಾದರೂ ಮುಕ್ತವಾಗಿ ಮಾರಬಹುದೆಂದು ಅನುಮತಿ ನೀಡಿತು. (30% ಎಫ್.ಎಸ್.ಕ್ಯು. ಅಂದರೆ ಫ್ರೀ ಸೇಲ್ ಕೋಟಾ). ಇದು ಕೋಟೆ ಬಾಗಿಲು ತೆಗೆದಂತಾಯಿತು. ಯಾರೂ ಈ ನಿಯಮವನ್ನು ಪಾಲಿಸಲಿಲ್ಲ. ಯಾಕೆಂದರೆ ಕಾಫಿಗೆ ಮುಕ್ತ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಕೊಟ್ಟ ಬೆಲೆ ಬೆಳೆಗಾರರು ಕನಸಿನಲ್ಲಿಯೂ ಊಹಿಸದಂತಿತ್ತು. ಬೆಳೆಗಾರರು ಸರ್ಕಾರವನ್ನು ಲೆಕ್ಕಿಸದೆ ತಮಗೆ ಬೇಕಾದಂತೆ ಮಾರಿದರು. ಇದನ್ನೇ ಕಾಯುತ್ತಿದ್ದಂತೆ ಇದ್ದ ಸರ್ಕಾರ ಎರಡೇ ವರ್ಷವಾಗುವುದರೊಳಗೆ ಸರ್ಕಾರ ಕಾಫಿಯ ಎಲ್ಲ ನಿಯಂತ್ರಣವನ್ನು ಕಿತ್ತುಹಾಕಿ ಸಂಪೂರ್ಣ ಮುಕ್ತವಾಗಿಸಿತು.

ಮುಂದಿನ ಎರಡು ವರ್ಷಗಳಲ್ಲಿ ಸಂಪೂರ್ಣವಾಗಿ ಖಾಸಗಿಯವರು ಕಾಫಿ ಉದ್ಯಮದ ಮೇಲೆ ಹಿಡಿತ ಸಾಧಿಸಿದರು.

ಈಗ ಕಾಫಿ ಬೆಳೆಗಾರರು ದಿಕ್ಕೆಟ್ಟು ಕುಳಿತಿದ್ದಾರೆ. ಕಾಫಿಯ ಮಾರುಕಟ್ಟೆ ಸಂಪೂರ್ಣ ಖಾಸಗಿಯವರ ಕೈಯಲ್ಲಿದೆ. ಎಲ್ಲ ರೀತಿಯಿಂದಲೂ ಅತ್ಯಂತ ವೈಜ್ಞಾನಿಕವಾದ ವ್ಯವಸ್ಥೆಯಾಗಿದ್ದ ಆದರೆ ಕೆಟ್ಟ ರಾಜಕಾರಣಕ್ಕೆ ಬಲಿಯಾಗಿ ನಾಶವಾದ ಕಾಫಿ ಬೋರ್ಡಿನಂತಹ ಸಂಸ್ಥೆಯನ್ನು ಹೋರಾಡಿ ಉಳಿಸಿಕೊಳ್ಳುವ ಬದಲಿಗೆ ಅದರ ಅಂತ್ಯಕ್ಕೆ ಕೈ ಜೋಡಿಸಿದ ಫಲವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ವಿದ್ಯಮಾನಗಳು ಕೃಷಿಯಲ್ಲಿ ನಿಯಂತ್ರಿತ ಮಾರುಕಟ್ಟೆಯ ಅಗತ್ಯವನ್ನು ಮತ್ತೆ ಮತ್ತೆ ಹೇಳುತ್ತಿದೆ. ಆದರೆ ಈಗ ಇರುವ ಸರ್ಕಾರವೂ ಕೂಡಾ ನಿಯಂತ್ರಿತ ಮಾರುಕಟ್ಟೆ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುತ್ತಿಲ್ಲವೆಂದು ಅದನ್ನು ಸರಿಪಡಿಸುವ ಬದಲಿಗೆ ಅದನ್ನು ಸಂಪೂರ್ಣವಾಗಿ ಖಾಸಗಿಯವರ ಕೈಗೆ ಒಪ್ಪಿಸುವ ಹಾದಿಯಲ್ಲಿ ಇದೆ.

ಈ ಕಾಯಿದೆಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಎ.ಪಿ.ಎಂ.ಸಿ ಅಪ್ರಸ್ತುತವೆನಿಸಿ ಅಂತ್ಯಕಾಣಲಿದೆ. ಆಗ ದೊರೆಯುವ ’ಸ್ವಾತಂತ್ರ್ಯ’ ರೈತನಿಗೆ ಗುತ್ತಿಗೆ ಕೃಷಿಯೂ ಸೇರಿದಂತೆ ಹಲವು ಸಾಧ್ಯತೆಗಳನ್ನು ತೆರೆದಿಡುತ್ತದೆ. ಈಗಾಗಲೇ ಶುಂಠಿಯಂತಹ ಕೆಲವು ವಾಣಿಜ್ಯ ಬೆಳೆಗಳಲ್ಲಿ ಕಂಡಿದ್ದೇವೆ. ಕಾಫಿ ಬೆಳೆಯಲ್ಲಿಯೂ ಈ ಕ್ರಮ ಈಗ ಪ್ರಾರಂಭವಾಗಿದೆ. ಹವಾಮಾನ ಬದಲಾವಣೆ, ಕಾಡುಪ್ರಾಣಿಗಳ ಜೊತೆಗೆ ಸಂಘರ್ಷ, ಕುಸಿದ ಬೆಲೆ ಮುಂತಾದ ಸಮಸ್ಯೆಗಳಿಂದ ಕಾಫಿ ಕೃಷಿಕರು ಒಂದು ಎಕರೆಗೆ ವರ್ಷಕ್ಕೆ ಕೇವಲ ಹತ್ತು ಸಾವಿರ ರೂಪಾಯಿಗಳಷ್ಟು ಕಡಿಮೆ ಹಣಕ್ಕೆ ತೋಟಗಳನ್ನು ಗುತ್ತಿಗೆ ನೀಡುತ್ತಿದ್ದಾರೆ.

ಈ ಕಾಯಿದೆಗಳಿಂದ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಬಹುದಾಗಿದೆ ಎಂದು ಹೇಳಲಾಗುತ್ತಿತ್ತು. ಇದು ಮೊದಲೂ ಇತ್ತು. ಸರ್ಕಾರ ಹೇಳುವ ಇನ್ನೊಂದು ವಿಷಯವೆಂದರೆ ಕೃಷಿ ಉತ್ಪನ್ನಗಳ ಬ್ರಾಂಡಿಂಗ್. ಇದು ಸಣ್ಣ ರೈತರ ಮಟ್ಟಿಗೆ ಕಷ್ಟದ ಕೆಲಸ. ರೈತರಿಗೆ ಲಾಭದಾಯಕವಾದ ಈ ಕಾನೂನಿನ ಬಗ್ಗೆ ಮನವರಿಕೆ ಮಾಡಿಕೊಡಲು ನಾವು ವಿಫಲರಾಗಿದ್ದೇವೆ ಎಂದು ಪ್ರಧಾನಿ ಈಗ ಹೇಳಿದ್ದಾರೆ. ವಿಫಲರಾದದ್ದು ಯಾರಿಗೆ ಮನವರಿಕೆ ಮಾಡಿಕೊಡಲು?

ರೈತ ಹೋರಾಟಗಾರರಲ್ಲಿ ಅತ್ಯಂತ ಸುಶಿಕ್ಷಿತರಿದ್ದಾರೆ, ಕಾನೂನು ತಿಳಿದವರಿದ್ದಾರೆ. ಇಂದಿನ ರೈತಾಪಿ ನಾಲ್ಕು ದಶಕಗಳ ಹಿಂದಿನ ಪೀಳಿಗೆ ಅಲ್ಲ. ವಿದ್ಯೆ ಸಾರ್ವತ್ರಿಕವಾಗಿ ಇದೆ. ಹಾಗಾದರೆ ಮನವರಿಕೆ ಮಾಡಿಕೊಡುವುದು ಎಂದರೇನು? ಕಾನೂನು ತನ್ನ ಪರವಿದ್ದರೆ ಅದನ್ನು ಅರಿಯುವಷ್ಟು ಜ್ಞಾನ ಇಂದಿನ ರೈತರಿಗೆ ಇದೆ. ಆದ್ದರಿಂದ ‘ಮನವರಿಕೆ ಮಾಡಿಕೊಡಲು ವಿಫಲರಾಗಿದ್ದೇವೆ’ ಎಂಬುದೊಂದು ರಾಜಕೀಯ ಹೇಳಿಕೆಯೇ ಹೊರತು ಇನ್ನೇನೂ ಅಲ್ಲ.

ಸುಗ್ರೀವಾಜ್ಞೆಗಳ ಮೂಲಕ ಕಾನೂನನ್ನು ತಂದುದಲ್ಲದೆ, ದೇಶದ ಸರ್ವೋಚ್ಚ ವೇದಿಕೆಯಾದ ಸಂಸತ್ತಿನಲ್ಲೇ ಇದನ್ನೇ ಚರ್ಚಿಸಲು ಅವಕಾಶ ಕಲ್ಪಿಸಲಿಲ್ಲ. ಆದ್ದರಿಂದ ಸರ್ಕಾರ ವಿಫಲವಾದದ್ದು ತನ್ನ ರೈತವಿರೋಧಿ ನೀತಿಯನ್ನು ಜಾರಿಗೊಳಿಸುವ ಪ್ರಯತ್ನದಲ್ಲಿ ಎನ್ನಬಹುದಷ್ಟೇ.

ಈಗ ನಾವು ಏನೇ ಹೇಳಲಿ ಸರ್ಕಾರ ಈಗ ಹಿಂದಿಟ್ಟ ಹೆಜ್ಜೆಯ ಬದಲಿಗೆ ಹಲವು ಒಳದಾರಿಗಳನ್ನು ಬಳಸುವ ಸಾಧ್ಯತೆ ಇದ್ದೇ ಇದೆ. ಆಗ ರೈತರ ಪಾಲಿಗೆ ಉಳಿಯುವುದು ಕಾರ್ಪೊರೆಟ್ ಸಂಸ್ಥೆಗಳ ಜೊತೆ ಸ್ಪರ್ಧಿಸುವ ‘ಅವಕಾಶ’ ಮಾತ್ರ. ಇದರ ಬಗ್ಗೆ ಎಚ್ಚರ ಅಗತ್ಯವಾಗಿ ಇರಬೇಕಿದೆ.

ರೈತ ಹೋರಾಟಕ್ಕೆ ಒಂದು ಸಣ್ಣ ಮುನ್ನಡೆಯಂತೂ ಆಗಿದೆ. ಇದನ್ನು ವಿಸ್ತಾರವಾಗಿ ಬಳಸಿಕೊಂಡು ಮುನ್ನಡೆದು ದೇಶದ ಸಮಗ್ರ ಕೃಷಿ ನೀತಿಯ ನಿರೂಪಣೆಗೆ ಮತ್ತು ಜಾರಿಗೆ ಪ್ರಯತ್ನಿಸುವ ಅಗತ್ಯ ಕೂಡಾ ಈಗ ರೈತರ ಮೇಲಿದೆ. ನಮ್ಮನ್ನು ನಾವೇ ಕಾಪಾಡಿಕೊಳ್ಳಬೇಕು.

ಪ್ರಸಾದ್ ರಕ್ಷಿದಿ

ಪ್ರಸಾದ್ ರಕ್ಷಿದಿ
ಪ್ರಸಾದ್ ಸಕಲೇಶಪುರದ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಂದಲೂ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದಾರೆ. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಆಸಕ್ತಿಯ ಕ್ಷೇತ್ರಗಳು. ಅವರ ‘ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಪುಸ್ತಕ.


ಇದನ್ನೂ ಓದಿ: ಕಾಫಿ ಭಾರತಕ್ಕೆ ಬಂದ ಕತೆ: ಕಳೆದು ಹೋದ ದಿನಗಳು ಭಾಗ -2, ಅಧ್ಯಾಯ -18

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...