ಬೆಂಗಳೂರು ವಿ.ವಿಯ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ತೀವ್ರ ಗಾಯಾಳುವಾದ ವಿದ್ಯಾರ್ಥಿನಿಯನ್ನು ಸದ್ಯ ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜ್ಞಾನಭಾರತಿ ಆವರಣದಲ್ಲಿ ಬೆಳಿಗ್ಗೆ 10.30ರ ಸಮಯದಲ್ಲಿ ಬಿಎಂಟಿಸಿ ಬಸ್ಗೆ (KA 57 F 0961) ಗಣಿತ ಶಾಸ್ತ್ರ ವಿಭಾಗದ ಶಿಲ್ಪಾ (22) ಎಂಬ ವಿದ್ಯಾರ್ಥಿನಿ ಹತ್ತುವಾಗ ಬಸ್ ಚಲಿಸಿದ್ದರಿಂದ ಈ ಅವಗಢ ಸಂಭವಿಸಿದೆ ಎನ್ನಲಾಗುತ್ತಿದೆ. ತಕ್ಷಣವೇ ತೀವ್ರ ಸ್ವರೂಪದ ಗಾಯಗಳಾಗಿದ್ದ ವಿದ್ಯಾರ್ಥಿನಿಯನ್ನು ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಾಗಿಲಿನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಾಗ ಹಿಂಭಾಗದ ಚಕ್ರ ಹರಿದಿದೆ, ಬಸ್ ಚಾಲಕ ಅಜಾಗರೂಕತೆಯಿಂತ ಚಾಲನೆ ಮಾಡಿದರಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಿರುವ ಬೆಂಗಳೂರು ವಿ.ವಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಿಎಂಟಿಸಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿವಿಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯ ಸಂಪೂರ್ಣ ಖರ್ಚು ವೆಚ್ಚವನ್ನು ಭರಿಸಲು ಒಪ್ಪಿಕೊಂಡಿದೆ ಎಂದು ವಿದ್ಯಾರ್ಥಿ ಮುಖಂಡರು ತಿಳಿಸಿದ್ದಾರೆ.
ಅಪಘಾತ ನಡೆದಾಗ ಭಯದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಓಡಿಹೋಗಿದ್ದರು. ಆನಂತರ ಅವರನ್ನು ಬಂಧಿಸಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಬೆಂಗಳೂರು ವಿವಿಯ ಒಳಗೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಬೇಕು. ವಿ.ವಿ ವತಿಯಿಂದಲೇ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ಓರ್ವ ಬಂಧನ