Homeಮುಖಪುಟತಮಿಳು ನಾಡು: ಕೋಮುವಾದ ಬಿತ್ತಿದರೂ ಫಲ ನೀಡದ ಬಿಜೆಪಿಗರ ಸಂಕಟ

ತಮಿಳು ನಾಡು: ಕೋಮುವಾದ ಬಿತ್ತಿದರೂ ಫಲ ನೀಡದ ಬಿಜೆಪಿಗರ ಸಂಕಟ

- Advertisement -
- Advertisement -

ಕೋಮವಾದವನ್ನು ಬಿತ್ತಿ ಕೋಮು ಧ್ರುವೀಕರಣದ ಬೆಳೆ ತೆಗೆವ ಬಿಜೆಪಿ ಪಕ್ಷ ಆ ಯೋಜನೆಗಳ ಮೂಲಕವೇ ದೇಶದ ಹಲವೆಡೆ ಅಧಿಕಾರದ ಚುಕ್ಕಾಣಿ ಹಿಡಿದಿರುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. 1990 ಸೆಪ್ಟೆಂಬರ್ 25ರಂದು ಲಾಲ್ ಕೃಷ್ಣ ಅಡ್ವಾನಿ ಸೋಮನಾಥದಿಂದ ಅಯೋಧ್ಯೆಯವರೆಗೆ ರಥಯಾತ್ರೆ ಆರಂಭಿಸಿದ್ದರು. ಆ ರಥಯಾತ್ರೆ ನಡೆದ ದಾರಿಯಲ್ಲೆಲ್ಲ ರಕ್ತದ ಕಲೆಗಳಿವೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ರಥಯಾತ್ರೆಯ ಬೆನ್ನಿಗೆ 1992ರ ಬಾಬರಿ ಮಸೀದಿ ಧ್ವಂಸ ಹಾಗೂ ನಂತರ ನಡೆದ ಗಲಭೆಗಳ ರಕ್ತಪಾತದಲ್ಲಿ ಮೃತಪಟ್ಟವರ ಸಂಖ್ಯೆ 10,000ಕ್ಕೂ ಹೆಚ್ಚು ಎನ್ನುತ್ತವೆ ಹಲವು ವರದಿಗಳು. ಇನ್ನು ಗಾಯಗೊಂಡವರ ಮತ್ತು ಆಸ್ತಿಪಾಸ್ತಿ ಕಳೆದುಕೊಂಡವರ ಸಂಖ್ಯೆ ಅಸಂಖ್ಯಾತ.

2002ರ ಗುಜರಾತಿನ ಗೋದ್ರಾ ಹತ್ಯಾಕಾಂಡವನ್ನು ಈ ದೇಶ ಅಷ್ಟು ಸುಲಭಕ್ಕೆ ಮರೆಯಲು ಸಾಧ್ಯವೇ? ಈ ಎರಡೂ ಹತ್ಯಾಕಾಂಡಕ್ಕೆ ಕಾರಣವಾದದ್ದು ಬಿಜೆಪಿಯ ಕೋಮುವಾದ ಎಂಬ ಏಕೈಕ ಅಜೆಂಡ ಮತ್ತು ಈ ಅಜೆಂಡ ನೀಡಿದ ಫಲವೇ ಇಂದು ಉತ್ತರಪ್ರದೇಶ ಮತ್ತು ಗುಜರಾತಿನಲ್ಲಿ ದೀರ್ಘಾವಧಿಯ ಅಧಿಕಾರದ ಚುಕ್ಕಾಣಿ. 2017ರ ಉತ್ತರಪ್ರದೇಶ ಚುನಾವಣೆಗೆ ಪೂರ್ವಭಾವಿಯಾಗಿ 2013ರಲ್ಲೇ ಬಿಜೆಪಿಯಿಂದ ಪ್ರಯೋಜಿಸಲ್ಪಟ್ಟಿದ್ದ, 80 ಜನರ ಸಾವಿಗೆ ಕಾರಣವಾಗಿದ್ದ ಮುಜಫರ್ ನಗರದ ಕೋಮುಗಲಭೆಯನ್ನೂ ಇಲ್ಲಿ ಸ್ಮರಿಸಬಹುದು.

ಇನ್ನು ಕರ್ನಾಟಕದಲ್ಲೂ ಹುಬ್ಬಳ್ಳಿಯ ಈದ್ಗಾ ಮೈದಾನದ ಗಲಾಟೆ, ಚಿಕ್ಕಮಗಳೂರಿನ ದತ್ತಪೀಠ ವಿವಾದ ಬಿಜೆಪಿ ಪಾಲಿಗೆ ಚಿನ್ನದ ಗಣಿ ಎನ್ನಲು ಅಡ್ಡಿ ಇಲ್ಲ. ಈ ವಿವಾದಗಳು ಹುಟ್ಟಿದ ವರ್ಷಗಳನ್ನೂ ಹಾಗೂ ಕರ್ನಾಟಕದಲ್ಲಿ ಬಿಜೆಪಿಯ ಅಧಿಕಾರದ ಹಿಡಿದು ಗಟ್ಟಿಯಾಗುತ್ತಾ ಸಾಗಿದ್ದನ್ನು ತುಲನೆ ಮಾಡಿ ಗಮನಿಸಿದರೆ ಕೋಮುಗಲಭೆ ಮತ್ತು ಅಧಿಕಾರದ ಜೊತೆಗಿನ ಬಿಜೆಪಿಯ ನಯವಾದ ಆಟ ಸ್ಪಷ್ಟವಾಗಿ ಅರ್ಥವಾಗುತ್ತದೆ. ಬಿಜೆಪಿಯ ಈ ತಂತ್ರಗಾರಿಕೆ ಹಲವು ರಾಜ್ಯಗಳಲ್ಲಿ ಅವರ ಕೈಹಿಡಿದಿದೆ ನಿಜ. ಆದರೆ, ತಮಿಳುನಾಡು ಮಾತ್ರ ಜಪ್ಪಯ್ಯ ಎಂದರೂ ಇವರ ಆಟಕ್ಕೆ ಜಗ್ಗುತ್ತಿಲ್ಲ.

2020ರಲ್ಲಿ ಅಣ್ಣಾಮಲೈ ಎಂಬ ಮಾಜಿ ಐಪಿಎಸ್ ಅಧಿಕಾರಿಯನ್ನು ತಮಿಳುನಾಡಿನ ಬಿಜೆಪಿಗೆ ರಾಜ್ಯಾದ್ಯಕ್ಷನನ್ನಾಗಿ ನೇಮಕ ಮಾಡಲಾಗಿತ್ತು. ಬಿಜೆಪಿಯ ಸಾಂಪ್ರದಾಯಿಕ ಅಸ್ತ್ರವನ್ನೇ ಅಲ್ಲೂ ಪ್ರಯೋಗಿಸಿದ್ದ ಅಣ್ಣಾಮಲೈ 2021ರಲ್ಲಿ ಕ್ರೈಸ್ತರ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನೇ ಮುಂದಿಟ್ಟು, ಇದೊಂದು ಕೊಲೆ ಎಂದು ಜನಾಭಿಪ್ರಾಯ ರೂಪಿಸಿ ಧ್ರುವೀಕರಣ ಮಾಡಲು ಮುಂದಾಗಿ ಕೊನೆಗೆ ಜನರಿಂದಲೇ ಛೀಮಾರಿ ಹಾಕಿಸಿಕೊಂಡಿದ್ದರು. ಇದರ ಬೆನ್ನಿಗೆ ಸಾಲುಸಾಲು ಕೋಮುವಾದಿ ಗಲಭೆಗಳಿಗೆ ಅವರು ಬೀಜ ಬಿತ್ತಿದ್ದರೇನೋ ನಿಜ; ಆದರೆ, ಅದ್ಯಾವುದೂ ನಿರೀಕ್ಷಿತ ಫಲ ಕೊಡಲಿಲ್ಲ. ಪರಿಣಾಮ ಅಣ್ಣಾಮಲೈ ಇದೀಗ ಬಿಜೆಪಿಯ ಮತ್ತೊಂದು ಪ್ರಮುಖ ಅಸ್ತ್ರವಾದ ಸುಳ್ಳು ಸುದ್ದಿಯ ಮೊರೆ ಹೋಗಿದ್ದಾರೆ. ತಮಿಳರಿಂದ ಬಿಹಾರಿ ಕಾರ್ಮಿಕರ ಮೇಲೆ ದಾಳಿ ಎಂಬ ಬುರುಡೆ (ಸುಳ್ಸುದ್ದಿ) ಬಿಟ್ಟು ತಮಿಳರ ಸ್ವಾಭಿಮಾನವನ್ನು ಕೆಣಕಿ ಪೇಚಿಗೆ ಸಿಲುಕಿದ್ದಾರೆ. ಪರಿಣಾಮ ಇದೀಗ ಅವರ ರಾಜಕೀಯ ಭವಿಷ್ಯವೇ ಡೋಲಾಯಮಾನವಾಗಿದೆ.

ಏನಿದು ಸುಳ್ಳು ಸುದ್ದಿ ಪ್ರಕರಣ?

ಮಾರ್ಚ್ 1 ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು.

ಆದರೆ, ಇದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು.

ಇದರ ಬೆನ್ನಿಗೆ “ಮನೀಶ್ ಕಶ್ಯಪ್” (Manish Kashyap Son of Bihar) ಎಂಬ ವ್ಯಕ್ತಿಯಂತು ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಬಾಯಿಗೆ ಬಂದಂತೆ ಬಡಬಡಿಸತೊಡಗಿದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ನೋಡನೋಡುತ್ತಿದ್ದಂತೆ ಆ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು. ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಗಿದ್ದರು. “ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ” ಎಂದು ಜನರನ್ನು ಪ್ರಚೋದಿಸಿದ್ದರು.

ಇನ್ನೂ ಟಿಆರ್‌ಪಿ ಗೀಳಿಗೆ ಬಿದ್ದ ದೃಶ್ಯ ಮಾಧ್ಯಮಗಳ ಬಗ್ಗೆ ಕೇಳಬೇಕೆ! ಬಿಜೆಪಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರಿ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳಿಸಿದ್ದರು.

ವಿಡಿಯೋ ಅಸಲಿ ಕಥೆ, ಅಣ್ಣಾಮಲೈ ಎಂಬ ಮತಿಗೇಡಿ

ಈ ಸುಳ್ಳು ಸುದ್ದಿಯ ಬಿಸಿ ಬಿಹಾರದಿಂದ ಅಷ್ಟೇ ಶೀಘ್ರವಾಗಿ ತಮಿಳುನಾಡನ್ನೂ ಮುಟ್ಟಿತ್ತು. ಆದರೆ, ವಿಷಯದ ಸತ್ಯಾಸತ್ಯತೆಯನ್ನು ಪರಿಶೀಲಿಸದ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಹಾರಿಗಳ ಮೇಲಿನ ದಾಳಿಯ ’ಸುಳ್ಳು’ ವಿಡಿಯೋವನ್ನು ಹಂಚಿಕೊಂಡಿದ್ದರು. ಅಲ್ಲದೆ, “ಹಿಂದಿ ಭಾಷಿಕರ ಮತ್ತು ಉತ್ತರ ಭಾರತೀಯರ ವಿರುದ್ಧ ತಮಿಳರಲ್ಲಿ ಆಕ್ರೋಶ ಮನೆಮಾಡಲು ಡಿಎಂಕೆ ಪಕ್ಷ ಕಾರಣ” ಎಂದು ಆರೋಪಿಸಿದ್ದರು. ಈ ಬಗ್ಗೆ ಸಾಲುಸಾಲು ಟ್ವೀಟ್ ಮಾಡುತ್ತಾ ಡಿಎಂಕೆ ಪಕ್ಷದ ವಿರುದ್ಧ ದ್ವೇಷ ಪ್ರಚಾರದಲ್ಲಿ ತೊಡಗಿದ್ದರು.

ಮನೀಶ್ ಕಶ್ಯಪ್

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸುಳ್ಳಿನ ಚರ್ಮ ಸುಲಿದಿದ್ದರು, “ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು. ಒಂದೇ ಸುಳ್ಳು ಸುದ್ದಿಯ ಮೂಲಕ ಬಿಹಾರದಲ್ಲಿ ನಿತೀಶ್ ಕುಮಾರ್ ವಿರುದ್ಧ ಜನಾಭಿಪ್ರಾಯ ರೂಪಿಸುವುದು, ಮತ್ತು ಬಿಜೆಪಿಯೇತರ ಸರ್ಕಾರವಿರುವ ತಮಿಳುನಾಡಿನ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ಮಾಡುವುದು ಬಿಜೆಪಿಯ ಗುರಿಯಾಗಿತ್ತು. ಇದಕ್ಕೆ ಅವರು ಸಿಎಂ ಸ್ಟಾಲಿನ್ ಹುಟ್ಟುದಿನ ಮತ್ತು ತೇಜಸ್ವಿ ಯಾದವ್ ಭೇಟಿಯನ್ನೇ ಬಳಸಿಕೊಂಡು ಒಂದು ಅದ್ಭುತವಾದ ಚಿತ್ರಕಥೆಯನ್ನು ಸಿದ್ಧಪಡಿಸಿದ್ದರು ಎಂಬ ಅಂಶ ಬಟಾಬಯಲಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರೇನೋ ನಿಜ. ಆದರೆ, “ಹಿಂದಿ ಭಾಷಿಕರ ವಿರುದ್ಧ ತಮಿಳರಲ್ಲಿ ಆಕ್ರೋಶ ಇದೆ, ಇದಕ್ಕೆ ಕಾರಣ ಡಿಎಂಕೆ ಪಕ್ಷ” ಎಂಬ ತಮ್ಮ ನಿಲುವನ್ನು ಮತ್ತೆ ಮತ್ತೆ ಸರಣಿ ಟ್ವೀಟ್ ಮೂಲಕ ಸಮರ್ಥಿಸಿಕೊಂಡಿದ್ದರು.

ಬಿಜೆಪಿ ಪ್ರಾಯೋಜಿತ ರಾಷ್ಟ್ರೀಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಹೀಗೆ ವಿಷಕಾರುವುದು ಹೊಸದೇನಲ್ಲ. ತಮಿಳರಿಗೆ ಅದು ಅಭ್ಯಾಸವಾಗಿಹೋಗಿದೆ. ಆದರೆ, ಈ ಸುಳ್ಳನ್ನೇ ಸತ್ಯ ಎಂದು ಅಲ್ಲಿನ ಜನರನ್ನು ನಂಬಿಸಲು ಸ್ವತಃ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮುಂದಾದದ್ದು ಮತ್ತು ತಮಿಳರ ವಿರುದ್ಧವೇ ಅಪಪ್ರಚಾರ ಮಾಡಿದ್ದು, ಇದೀಗ ತಮಿಳರ ಆಕ್ರೋಶಕ್ಕೆ ಕಾರಣವಾಗಿದೆ.

ಸುಳ್ಳು ಸುದ್ದಿಯ ಪರಿಣಾಮವೇನು?

ತಮಿಳುನಾಡು ಬಿಜೆಪಿಯಲ್ಲೇ ಅಣ್ಣಾಮಲೈ ಓರ್ವ ವಿವಾದಿತ ವ್ಯಕ್ತಿಯಾಗಿ ಛಾಪು ಮೂಡಿಸಿದ್ದಾರೆ. ಪಕ್ಷದಲ್ಲಿ ತನಗೆ ಪೈಪೋಟಿಯಾಗಿದ್ದ ಹಿರಿಯ ನಾಯಕ ಕೆ.ಟಿ ರಾಘವನ್ ಎಂಬುವವರನ್ನು ಅಶ್ಲೀಲ ಸಿಡಿ ಕೇಸ್‌ನಲ್ಲಿ ಸಿಲುಕಿಸಿ ಅವರ ರಾಜಕೀಯ ಜೀವನವನ್ನೇ ಮುಗಿಸಿದ ಆರೋಪ ಅಣ್ಣಾಮಲೈ ಮೇಲಿದೆ. ಇದಲ್ಲದೆ, ಪಕ್ಷದಲ್ಲಿ ತನಗೆ ಪೈಪೋಟಿಯಾಗಿರುವ ಇತರೆ ಹಿರಿಯ ನಾಯಕರದ್ದೂ ಅಶ್ಲೀಲ ವಿಡಿಯೋ ಮತ್ತು ಆಡಿಯೋ ಮಾಡಿಟ್ಟುಕೊಂಡಿದ್ದಾರೆ ಎನ್ನಲಾಗಿದೆ.

“ಅಣ್ಣಾಮಲೈ ತನ್ನ ವಿಡಿಯೋ ಮಾಡಿಟ್ಟುಕೊಂಡು ಸಾಮಾಜಿಕ ಜಾಲತಾಣ ಪಡೆಯ ಮೂಲಕ ನನ್ನ ಮೇಲೆ ವ್ಯಯಕ್ತಿಕ ದಾಳಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ಪಕ್ಷದ ಕಲೆ ಸಾಂಸ್ಕೃತಿಕ ವಿಭಾಗದ ಅಧ್ಯಕ್ಷೆ ಮಾಜಿ ನಟಿ ಗಾಯತ್ರಿ ರಘುರಾಮ್ ಕಳೆದ ವರ್ಷ ಪಕ್ಷದಿಂದಲೇ ಹೊರ ನಡೆದಿದ್ದರು. ಇದೇ ಆರೋಪವನ್ನು ಮುಂದಿಟ್ಟು ಸೂರ್ಯ ಶಿವ ಎಂಬ ಮತ್ತೊಬ್ಬ ಬಿಜೆಪಿ ನಾಯಕನೂ ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಬ್ಬರೂ ಅಣ್ಣಾಮಲೈ ವಿರುದ್ಧ ಸಾರ್ವಜನಿಕವಾಗಿ ಕಿಡಿಕಾರಿದ್ದರು. ಅಂದಿನಿಂದ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು “ಆಡಿಯೋ ವಿಡಿಯೋ ಪಕ್ಷ” ಎಂದೇ ಕರೆಯಲಾಗುತ್ತಿದೆ.

ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆ ಎನ್ನಲಾದ ನಕಲಿ ವಿಡಿಯೋ

ಈ ನಡುವೆ ಬಿಹಾರಿ ಕಾರ್ಮಿಕರ ಮೇಲಿನ ದಾಳಿ ಸಂಬಂಧಿಸಿದ ಸುದ್ದಿ ಸುಳ್ಳು ಎಂಬುದು ಜಗಜ್ಜಾಹೀರಾಗುತ್ತಿದ್ದಂತೆ ತಮಿಳುನಾಡಿನ ಬಿಜೆಪಿ ಐಟಿ ವಿಂಗ್ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಸೇರಿದಂತೆ 11 ಜನ ನಿರ್ವಾಹಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ “ಎಡಿಎಂಕೆ” ಪಕ್ಷಕ್ಕೆ ಸೇರಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ನಿರ್ಮಲ್ ಕುಮಾರ್ ಬಿಡುಗಡೆ ಮಾಡಿರುವ ಹೇಳಿಕೆಯೊಂದು ತಮಿಳುನಾಡು ರಾಜಕೀಯದಲ್ಲಿ ಪ್ರಸ್ತುತ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಅಣ್ಣಾಮಲೈ ಪಕ್ಷದ ಅನೇಕ ಹಿರಿಯ ನಾಯಕರ ವಿರುದ್ಧ ಗೂಢಚರ್ಯೆ ನಡೆಸುತ್ತಿದ್ದಾರೆ. ಅಶ್ಲೀಲ ಆಡಿಯೋ ವಿಡಿಯೋ ಮೂಲಕ ಹಲವರನ್ನು ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ತಾನೊಬ್ಬನೇ ಏಕಮೇವ ಬಿಜೆಪಿ ನಾಯಕನಾಗಲು ಅವರು ಹೊರಟಿದ್ದು, ಸುಳ್ಳು ಹರಡುವುದೊಂದೆ ಅಣ್ಣಾಮಲೈ ಹಾಗೂ ಬಿಜೆಪಿ ಪಕ್ಷದ ಅಜೆಂಡವಾಗಿದೆ. ಇಂತಹ ಪಕ್ಷ ತಮಿಳರಿಗೆ ಮತ್ತು ತಮಿಳುನಾಡಿಗೆ ಅಪಾಯಕಾರಿಯಾದದ್ದು” ಎಂಬ ಅಂಶಗಳು ನಿರ್ಮಲ್ ಕುಮಾರ್ ಹೇಳಿಕೆಯಲ್ಲಿದ್ದು, ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಪಕ್ಷದ ರಾಜ್ಯಾಧ್ಯಕ್ಷನ ವಿರುದ್ಧ ಅದೇ ಪಕ್ಷದವರು ಬಿಡುಗಡೆ ಮಾಡಿರುವ ಅತ್ಯಂತ ಆಘಾತಕಾರಿ ಹೇಳಿಕೆ ಇದಾಗಿದೆ ಎಂದು ತಮಿಳುನಾಡಿನ ಮಾಧ್ಯಮಗಳು ವಿಶ್ಲೇಷಿಸುತ್ತಿವೆ.

ಒಟ್ಟಿನಲ್ಲಿ ದೇಶದ ಹಲವೆಡೆ ಕೆಲಸ ಮಾಡುವ ಬಿಜೆಪಿ ಪಕ್ಷದ ಸುಳ್ಳಿನ ತಂತ್ರಗಾರಿಕೆ ತಮಿಳು ನಾಡಿನಲ್ಲಿ ಕೈಕೊಟ್ಟಿರುವುದು ದೇಶದಲ್ಲಿಂದು ಚರ್ಚೆಗೆ ಗ್ರಾಸವಾಗಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...