ಮಧ್ಯಪ್ರದೇಶದ ಪ್ರಸಿದ್ಧ ದೇವಸ್ಥಾನದ ಬಳಿಯ ಕಾಡಿನಲ್ಲಿ 11 ವರ್ಷದ ಬಾಲಕಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಬಾಲಕಿಯ ದೇಹದಾದ್ಯಂತ ಕಚ್ಚಿದ ಗುರುತುಗಳಿದ್ದು, ರಕ್ತದ ಮಡುವಿನಲ್ಲಿ ಬಿದ್ದಿರುವುದು ಶುಕ್ರವಾರ ಬೆಳಗ್ಗೆ ಕಂಡುಬಂದಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಮತ್ತು ಆರೋಪಿಗಳಲ್ಲಿ ಒಬ್ಬರು ದೇವಾಲಯದ ಆಡಳಿತ ಸಮಿತಿಯು ನಡೆಸುತ್ತಿರುವ ಗೋಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಸಂತ್ರಸ್ತ ಬಾಲಕಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಗುರುವಾರ ಸಂಜೆ ಬಾಲಕಿ ನಾಪತ್ತೆಯಾಗಿದ್ದು, ತಡರಾತ್ರಿಯಾದರೂ ಮನೆಗೆ ಬಾರದೆ ಇದ್ದಾಗ ಆಕೆಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿ ಹುಡುಕಾಟ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ತನ್ನ ಮನೆಯಿಂದ ಒಂದು ಕಿಲೋಮೀಟರ್ ದೂರದ ಕಾಡಿನಲ್ಲಿ ಆಕೆ ಪತ್ತೆಯಾಗಿದ್ದಾಳೆ.
ಈ ಕಾಡು ಮೈಹಾರ್ ಪಟ್ಟಣದಲ್ಲಿರುವ ಶಾರದಾ ದೇವಿಯ ದೇವಸ್ಥಾನಕ್ಕೆ ಸಮೀಪದಲ್ಲಿದೆ, ಇಲ್ಲಿಗೆ ದೇಶದಾದ್ಯಂತ ಯಾತ್ರಾರ್ಥಿಗಳ ಬರುತ್ತಾರೆ.
”ಬಾಲಕಿ ಪತ್ತೆಯಾಗಿರುವ ಬಗ್ಗೆ ಇಂದು ಬೆಳಗ್ಗೆ ನಮಗೆ ಮಾಹಿತಿ ಲಭಿಸಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ನಮ್ಮ ತನಿಖೆಯಿಂದ ದೃಢಪಟ್ಟಿದೆ. ಇಬ್ಬರು ಶಂಕಿತರನ್ನು ಬಂಧಿಸಿ ಪೊಲೀಸರ ವಶದಲ್ಲಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಬಾಲಕಿಯನ್ನು ರೇವಾ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಗಿದೆ” ಎಂದು ಮೈಹಾರ್ ಉಪವಿಭಾಗದ ಪೊಲೀಸ್ ಅಧಿಕಾರಿ ಲೋಕೇಶ್ ದಬರ್ ಹೇಳಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
”ಮೈಹಾರ್ನಲ್ಲಿ ಅಪ್ರಾಪ್ರ ಬಾಲಕಿ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆದಿರುವ ಸುದ್ದಿ ತಿಳಿದು ತುಂಬಾ ನೋವಾಯಿತು. ಪೊಲೀಸರು ಅಪರಾಧಿಗಳನ್ನು ಬಂಧಿಸಿದ್ದಾರೆ, ಬಾಲಕಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಯಾವುದೇ ಅಪರಾಧಿಯನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಮಲ್ ನಾಥ್ ಅವರು, ”ಮೈಹಾರ್ನಲ್ಲಿ ಪುಟ್ಟ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ಘಟನೆಯು ಅತ್ಯಂತ ಖಂಡನೀಯವಾಗಿದೆ. ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮಾಡಿದಂತೆ ಹುಡುಗಿಯೊಂದಿಗೆ ಅಮಾನವೀಯ ವರ್ತನೆಯ ವರದಿಗಳು ಹೊರಹೊಮ್ಮುತ್ತಿವೆ. ಇಂತಹ ಘಟನೆಗಳು, ನಿಯಮಿತವಾಗಿ ನಡೆಯುತ್ತಿವೆ. ರಾಜ್ಯದ ಹೆಣ್ಣುಮಕ್ಕಳೇ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
”ಮುಖ್ಯಮಂತ್ರಿಗಳು ಬಾಲಕಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಮತ್ತು ತಕ್ಷಣವೇ ₹ 1 ಕೋಟಿ ಆರ್ಥಿಕ ನೆರವು ನೀಡುಬೇಕು” ಕಮಲ್ ನಾಥ್ ಒತ್ತಾಯಿಸಿದರು.
ಇದನ್ನೂ ಓದಿ: ಸೌಜನ್ಯ ಪ್ರಕರಣದ ನೈಜ ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ: ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ