Homeಮುಖಪುಟಅಭಿವ್ಯಕ್ತಿ ಸ್ವಾತಂತ್ರ್ಯ: ಆತಂಕ ಹುಟ್ಟಿಸುವ ಶರಣಾಗತಿ ಪ್ರವೃತ್ತಿ- ಎ. ನಾರಾಯಣ

ಅಭಿವ್ಯಕ್ತಿ ಸ್ವಾತಂತ್ರ್ಯ: ಆತಂಕ ಹುಟ್ಟಿಸುವ ಶರಣಾಗತಿ ಪ್ರವೃತ್ತಿ- ಎ. ನಾರಾಯಣ

- Advertisement -
- Advertisement -

 

ಎ. ನಾರಾಯಣ

ಕನ್ನಡ ಪತ್ರಿಕೆಯ ಓದುಗರು ಬಹುವಾಗಿ ಮೆಚ್ಚಿಕೊಳ್ಳುತ್ತಿರುವ ಅಂಕಣಕಾರರಲ್ಲಿ ಒಬ್ಬರಾದ ಎ.ನಾರಾಯಣ ಅವರು ಕಾಸರಗೋಡಿನವರು. ಇಂಗ್ಲೆಂಡಿನ ಸಸೆಕ್ಸ್ ವಿವಿಯಲ್ಲಿ ಪಿಎಚ್‍ಡಿ ಮಾಡುವಮುನ್ನ ಡೆಕ್ಕನ್ ಹೆರಾಲ್ಡ್‍ನಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ್ದರು. ಪ್ರಸ್ತುತ ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯದಲ್ಲಿ ರಾಜಕೀಯ ತತ್ವಶಾಸ್ತ್ರ ಮತ್ತು ಆಡಳಿತ ವಿಭಾಗದಲ್ಲಿ ಬೋಧಿಸುತ್ತಾರೆ. ಪ್ರಜಾವಾಣಿ ಪತ್ರಿಕೆಯ ಅಂಕಣಕಾರರಾಗಿ ರಾಜಕೀಯ, ಸಾಮಾಜಿಕ ವಿಷಯಗಳ ಕುರಿತಂತೆ ಭಿನ್ನ ರೀತಿಯ ಹರಿತ, ವಸ್ತುನಿಷ್ಠ ವಿಶ್ಲೇಷಣೆಗಳ ಬರಹಗಳನ್ನು ಬರೆಯುತ್ತಿದ್ದಾರೆ.

ಸಮಸ್ಯೆ ಇರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎನ್ನುವುದರಿಂದ ಮಾತ್ರವಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎಲ್ಲಾ ಕಾಲದಲ್ಲೂ ಎಲ್ಲಾ ಆಳುವ ಸರಕಾರಗಳೂ ಹತ್ತಿಕ್ಕುವ ಕೆಲಸವನ್ನು ಮಾಡುತ್ತಲೇ ಬಂದಿವೆ. ಈಗ ಅದು ಇನ್ನೂ ಹೆಚ್ಚಾಗಿದೆ ಅಥವಾ ತೀರಾ ಹೆಚ್ಚಾಗಿದೆ ಅಂತ ಬೇಕಾದರೆ ಹೇಳಬಹುದು. ನಮ್ಮ ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎದುರಾಗಿರುವ ಇನ್ನೂ ಮುಖ್ಯವಾದ ಆತಂಕ ಏನು ಎಂದರೆ ಈ ಸಂವಿಧಾನದತ್ತ ಹಕ್ಕನ್ನು ಬಳಸಿಕೊಳ್ಳುವಲ್ಲಿ ಇಡೀ ದೇಶವು ಒಂದು ರೀತಿಯ ಶಸ್ತ್ರಸನ್ಯಾಸವನ್ನು ಘೋಷಿಸಿಕೊಂಡಿದೆ ಎನ್ನುವುದು. ಯಾರ್ಯಾರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂರಕ್ಷಿಸುವಲ್ಲಿ ಮುಂಚೂಣಿಯಲ್ಲಿರಬೇಕಿತ್ತೋ ಅವರೆಲ್ಲರೂ ಸೇರಿ ಅದನ್ನು ಅಧಿಕಾರಸ್ಥರ ಕಾಲಬುಡದಲ್ಲಿ ಒತ್ತೆಯಿಟ್ಟು ಒಂದು ರೀತಿಯ ಬಹುಪರಾಕು ಸಂಸ್ಕೃತಿಯನ್ನು ಅಳವಡಿಸಿಕೊಂಡಿದ್ದಾರೆ.

ಈಗ ನಡೆಯುತ್ತಿರುವ ಮಾಧ್ಯಮ ದಮನ, ತುರ್ತುಪರಿಸ್ಥಿತಿಯ ಕಾಲದಲ್ಲಿ ಏನೇನಾಯಿತೋ ಅದಕ್ಕಿಂತ ಭಿನ್ನವಾಗಿ ಏನೂ ಇಲ್ಲ ಎನ್ನುವ ಅಭಿಪ್ರಾಯವೊಂದಿದೆ. ಅದನ್ನೇ ಇನ್ನೊಂದು ರೀತಿಯಲ್ಲಿ ಹೇಳಬಹುದು: ಮಾಧ್ಯಮಗಳು ತುರ್ತುಪರಿಸ್ಥಿತಿಯ ಕಾಲದಲ್ಲಿ ತಗ್ಗಿಬಗ್ಗಿ ನಡೆದದ್ದಕ್ಕಿಂತಲೂ ಹೆಚ್ಚಿನ ರೀತಿಯಲ್ಲಿ ಈಗ ದಾಸ್ಯವನ್ನು ಒಪ್ಪಿಕೊಂಡಿವೆ. ಅಂದಿನ ಮಾಧ್ಯಮ ರಂಗದ ಬಗ್ಗೆ ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅದ್ವಾಣಿ ಅವರು ಹೇಳಿದ್ದಾರೆ ಎನ್ನಲಾದ ಒಂದು ಮಾತು ಬಹಳ ಚಿರಪರಿಚಿತ. “ಮಾಧ್ಯಮಗಳನ್ನು ಸರಕಾರ ಬಗ್ಗುವಂತೆ ಸೂಚಿಸಿತ್ತು. ಆದರೆ ಮಾಧ್ಯಮಗಳು ಅಕ್ಷರಶಃ ನೆಲಕ್ಕೆ ಒರಗಿ ತೆವಳಿದವು” ಅಂತ. ಈಗ ಅವರ ಮಾತು ಅವರೇ ಕಟ್ಟಿರುವ ಪಕ್ಷ ಅಧಿಕಾರದಲ್ಲಿರುವಾಗ ಇನ್ನೂ ಹೆಚ್ಚು ಅರ್ಥಪೂರ್ಣವಾಗುತ್ತಿದೆ ಎನ್ನುವುದು ಇತಿಹಾಸದ ಒಂದು ಕ್ರೂರ ವ್ಯಂಗ್ಯ.

ತೀರಾ ಇತ್ತೀಚೆಗಿನ ಉದಾಹರಣೆ ಕಾಶ್ಮೀರದ ವಿಚಾರದಲ್ಲಿ ಭಾರತೀಯ ಮಾಧ್ಯಮಗಳು ಅನುಸರಿಸುತ್ತಿರುವ ನೀತಿ. ಕೇಂದ್ರ ಸರಕಾರ ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೆಯ ವಿಧಿಯನ್ನು ಅಸಿಂಧುಗೊಳಿಸಿದ ಬಳಿಕ ಆ ರಾಜ್ಯದ ಜನಜೀವನದ ಮೇಲೆ ಹೇರಿರುವ ಭೀಕರ ನಿರ್ಬಂಧಗಳ ಕುರಿತು ಭಾರತೀಯ ಮಾಧ್ಯಮಗಳು ಸಂಪೂರ್ಣ ಕುರುಡಾಗಿ ವರ್ತಿಸುತ್ತಿವೆ. ಅಲ್ಲಿ ಜನಜೀವನ ಸಹಜ ಸ್ಥಿತಿಯಲ್ಲಿದೆ ಎಂದೂ, ನಿರ್ಬಂಧಗಳು ಅನಿವಾರ್ಯ ಎಂದೂ ಸರಕಾರ ಹೇಳುತ್ತಿರುವುದನ್ನು ಮುಖ್ಯವಾಹಿನಿ ಮಾಧ್ಯಮಗಳು ಏನೊಂದೂ ಚಿಕಿತ್ಸಕ ದೃಷ್ಟಿಯನ್ನು ಇಟ್ಟುಕೊಳ್ಳದೆ ಗಿಳಿಪಾಠ ಒಪ್ಪಿಸುತ್ತಿವೆ. ಅಂತಾರಾಷ್ಟ್ರೀಯ ಮಾಧ್ಯಮಗಳು ಮಾತ್ರ ಮಾಧ್ಯಮಗಳಿಗೆ ವಿಧಿಸಲಾದ ಎಲ್ಲಾ ನಿರ್ಬಂಧಗಳನ್ನು ಮೀರಿ ಆ ರಾಜ್ಯದಲ್ಲಿ ಆಗುತ್ತಿರುವ ದೈನಂದಿನ ಅನಾಹುತಗಳನ್ನು ಜಗತ್ತಿನ ಮುಂದಿಡುತ್ತಿವೆ. ಭಾರತೀಯ ಮಾಧ್ಯಮಗಳು ಇದನ್ನು ಮಾಡುತ್ತಿಲ್ಲ ಎನ್ನುವುದಕ್ಕಿಂತ ಹೆಚ್ಚಾಗಿ ಈ ವಿಚಾರದಲ್ಲಿ ಅವುಗಳು ಸರ್ಕಾರದ ಮುಖವಾಣಿಗಳಾಗಿ ಹೋಗಿರುವುದು ದುರಂತದ ಸಂಗತಿ. ಆಳುವ ಪಕ್ಷಗಳ ಅಥವಾ ಅಧಿಕಾರಸ್ಥ ರಾಜಕಾರಣಿಗಳ ಸ್ವಂತ ಬಂಡವಾಳದಲ್ಲಿ ನಡೆಯುವ ಅಥವಾ ಅವರನ್ನು ಓಲೈಸಲೆಂದೇ ಹುಟ್ಟಿಕೊಂಡಿರುವ ಮಾಧ್ಯಮಗಳು ಮಾತ್ರವೇ ಹೀಗೆ ನಡೆದುಕೊಳ್ಳುತ್ತವೆ ಎಂದಾಗಿದ್ದರೆ ಅದರಲ್ಲಿ ವಿಶೇಷವೇನಿರಲಿಲ್ಲ. ಆದರೆ ಇಂದು ಈ ಪ್ರವೃತ್ತಿ ಇಂತಹ ಮಾಧ್ಯಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಅದು ಇಡೀ ಮುಖ್ಯವಾಹಿನಿ ಮಾಧ್ಯಮ ರಂಗವನ್ನು ಬಹುತೇಕ ಆವರಿಸಿಬಿಟ್ಟಿದೆ. ಕಾಶ್ಮೀರದ ವಿಚಾರದಲ್ಲೇನೋ ‘ದೇಶಭಕ್ತಿ’ ಮಾಧ್ಯಮಗಳ ಕೈಕಟ್ಟಿಹಾಕಿತು ಎನ್ನೋಣ. ಆದರೆ ಗುಂಪು ಹತ್ಯೆಗಳ ವಿಚಾರದಲ್ಲಿ ಮಾಧ್ಯಮಗಳು ಎತ್ತಬೇಕಾದ ಪ್ರಶ್ನೆಗಳನ್ನು ಎತ್ತದಿರುವುದನ್ನು ಏನೆಂದು ಕರೆಯೋಣ? ಬರಬರುತ್ತಾ ಗುಂಪು ಹತ್ಯೆಗಳ ಕುರಿತಾದ ಸುದ್ದಿಗಳು ಏನೋ ಮಾಮೂಲಿ ಘಟನೆಗಳ ವರದಿ ಎನ್ನುವಂತೆ ಒಳಪುಟಗಳಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಸುಪ್ರೀಂಕೋರ್ಟ್ ಆದೇಶದ ಬಳಿಕವೂ ಸರಕಾರ ಈ ವಿಚಾರದಲ್ಲಿ ತೋರುತ್ತಿರುವ ಉದಾಸೀನ ಪ್ರವೃತ್ತಿಯನ್ನು ದೊಡ್ಡ ಧ್ವನಿಯಲ್ಲಿ ಪ್ರಶ್ನಿಸದೆ ಇರುವ ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರವನ್ನು ಎಷ್ಟರಮಟ್ಟಿಗೆ ಬಳಸಿಕೊಳ್ಳುತ್ತಿವೆ ಎನ್ನುವ ಪ್ರಶ್ನೆ ಮೂಡುವುದಿಲ್ಲವೇ? ಇಂತಹ ಸಾವಿರ ಉದಾಹರಣೆಗಳಿವೆ. “ಇದರಲ್ಲಿ ಹೊಸದೇನಿಲ್ಲ, ಇಂತಹ ಪರಿಸ್ಥಿತಿ ಬಂದಾಗಲೆಲ್ಲಾ ಭಾರತೀಯ ಮಾಧ್ಯಮಗಳು ಹೀಗೆಯೇ ನಡೆದುಕೊಂಡಿರುವುದು – ಮತ್ತೊಂದು ಸಂದಿಗ್ಧತೆ ಎದುರಾಗಿದೆ, ಮಾಧ್ಯಮಗಳು ಮತ್ತದೇ ಪ್ರವೃತ್ತಿಯನ್ನು ತೋರುತ್ತಿವೆ. ಇದು ಒಂಥರಾ ಪಾವಲೋವನ ಪ್ರಯೋಗದ ನಾಯಿಯ ಕತೆ” ಅಂತ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಇತ್ತೀಚಿಗೆ ಬರೆದರು (ಮನಶಾಸ್ತ್ರದ ವಿದ್ಯಾರ್ಥಿಗಳು ಕಲಿಯುವ ಪಾವಲೋವನ ಪ್ರಯೋಗದಲ್ಲಿ ಒಂದು ನಿರ್ದಿಷ್ಟ ಸಂಜ್ಞೆಗೆ ಒಂದೇ ರೀತಿ ಪ್ರತಿಕ್ರಿಯಿಸುವ ಪ್ರವೃತ್ತಿ ತೋರಿಸುತ್ತದೆ).

ಭಾರತೀಯ ಮಾಧ್ಯಮಗಳು ಹೀಗೆ ಆಳುವ ಸರಕಾರಗಳ ತಾಳಕ್ಕೆ ಸರಿಯಾಗಿ ಕುಣಿಯುವುದು ಅವುಗಳಿಗೆ ಒಪ್ಪಿಗೆಯಾಗಿ ಅಲ್ಲ, ಅವುಗಳು ಹಾಗೆ ಮಾಡುವುದು ಸರಕಾರ ಅನುಸರಿಸುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ ನೀತಿಯ ಪರಿಣಾಮವಾಗಿ ಅಂತ ವಾದಿಸಬಹುದು. ಯಾಕೆಂದರೆ ಭಾರತದ ಮಾಧ್ಯಮ ಒಂದು ಉದ್ಯಮವಾಗಿ ಸದಾ ಸರಕಾರದ ಮರ್ಜಿಯಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಸರಕಾರದ ಜತೆ ನಿಷ್ಠುರವಾಗಿ ನಡೆದುಕೊಂಡರೆ ಮಾಧ್ಯಮಗಳನ್ನು ಸರಕಾರ ವಿವಿಧ ರೀತಿಯಲ್ಲಿ ಬಗ್ಗುಬಡಿಯಬಹುದು. ಸರಕಾರೀ ಜಾಹೀರಾತುಗಳನ್ನು ನಿಲ್ಲಿಸಬಹುದು, ಖಾಸಗಿ ಜಾಹೀರಾತುಗಳೂ ಸಿಗದೇ ಹೋಗುವಂತೆ ತಂತ್ರ ಹೂಡಬಹುದು. ಪತ್ರಿಕೆಯ ಮಾಲೀಕರ, ಅದರ ಹಿರಿಯ ಪತ್ರಕರ್ತರ ಮೇಲೆ ತನಿಖಾ ಸಂಸ್ಥೆಗಳನ್ನು ಛೂ ಬಿಡಬಹುದು. ಇದೆಲ್ಲಾ ಈ ದೇಶದಲ್ಲಿ ಹಿಂದೆ ಆಗಿಹೋಗಿದೆ. ಆದುದರಿಂದ ಮಾಧ್ಯಮೋದ್ಯಮ ಆರ್ಥಿಕವಾಗಿ ಅತ್ಯಂತ ಸೊರಗಿಹೋಗಿರುವ ಈ ಕಾಲದಲ್ಲಿ ಯಾರು ತಾನೇ ಸರಕಾರದ ದ್ವೇಷ ಕಟ್ಟಿಕೊಳ್ಳಲು ತಯಾರಿದ್ದಾರೆ? ಸಹಜವಾಗಿಯೇ ಮಾಧ್ಯಮಗಳು ಸರಕಾರವನ್ನು ಪ್ರಶ್ನಿಸುವುದನ್ನು ಬಿಟ್ಟು ಅದರ ಹೊಗಳುಭಟ್ಟರಾಗಿಬಿಟ್ಟಿವೆ. ಅಂದಮೇಲೆ ಅವುಗಳಿಗೇನು ಅಭಿವ್ಯಕ್ತಿ ಸ್ವಾತಂತ್ರ್ಯದ ಹಂಗು ಎನ್ನುವ ವಾದ ಒಪ್ಪತಕ್ಕದ್ದೇ. ಇಲ್ಲೇ ಇರುವುದು ಮಹತ್ವದ ವಿಚಾರ. ಒಂದು ವೇಳೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಬಲವಾಗಿ ಉಳಿಸಿಕೊಳ್ಳಬೇಕು ಎನ್ನುವ ತುಡಿತವೊಂದು ಭಾರತದ ಸಮಾಜದಲ್ಲಿ ಆಳವಾಗಿ ನೆಲೆಸಿದ್ದರೆ ಇಷ್ಟೊತ್ತಿಗೆ ಸರಕಾರೀ ಮತ್ತು ಖಾಸಗೀ ಜಾಹೀರಾತುಗಳ ಹಂಗಿಲ್ಲದೆ ನಡೆಯಬಹುದಾದ ಮಾಧ್ಯಮೋದ್ಯಮದ ಮಾದರಿಯೊಂದು ಈ ದೇಶದಲ್ಲಿ ಸೃಷ್ಟಿಯಾಗುತಿತ್ತು. ಒಂದೋ ಸಹಕಾರೀ ತತ್ವದ ಆಧಾರದ ಮೇಲೆ ಅಥವಾ ದೊಡ್ಡ ಮಟ್ಟದ ದತ್ತಿಯೊಂದನ್ನು ಸ್ಥಾಪಿಸಿ ಅದರಿಂದ ಹುಟ್ಟುವ ಆದಾಯದ ಮೇಲೆ ಅವಲಂಬಿಸಿ ಸ್ವತಂತ್ರವಾಗಿ ನಡೆಯುವ ಮಾಧ್ಯಮ ಸಂಸ್ಥೆಯೊಂದು ಹುಟ್ಟಬಹುದಾಗಿತ್ತು. ಅಂತಹದ್ದೊಂದು ಪ್ರಯೋಗ ಸರಿಯಾಗಿ ಆಗಿಲ್ಲ ಅಥವಾ ಆದರೂ ಬಹುಕಾಲ ಉಳಿಯಲಿಲ್ಲ (ಉದಾಹರಣೆಗೆ ತೆಹೆಲ್ಕಾ) ಎಂಬುದು ಏನನ್ನು ಸೂಚಿಸುತ್ತದೆ? ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಾಗರಿಕ ಸಮಾಜ ಯಾಕೆ ಹೋರಾಟ ನಡೆಸುತಿಲ್ಲ. ವಾಸ್ತವದಲ್ಲಿ, ಈಗ್ಗೆ ನಾಲ್ಕು ವರ್ಷಗಳ ಹಿಂದೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರವೃತ್ತಿಯನ್ನು ಖಂಡಿಸಿ ನಡೆದ ‘ಪ್ರಶಸ್ತಿ ವಾಪಸಾತಿ ಚಳವಳಿ’ ಬಹಳ ಅರ್ಥಪೂರ್ಣವಾಗಿತ್ತು. ಆದರೆ ಅದು ಅಷ್ಟೇ ಬೇಗ ನಿಂತುಹೋಯಿತು. ಅದರ ವಿಚಾರದಲ್ಲಿ ಹುಟ್ಟಿಕೊಂಡ ಅಪಪ್ರಚಾರವನ್ನು ಮೆಟ್ಟಿ ನಿಲ್ಲಲು ಅದಕ್ಕೆ ಸಾಧ್ಯವಾಗಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚಿಂತೆ ಮತ್ತು ಅದನ್ನು ಬಳಸಿಕೊಳ್ಳುವ ಧಾವಂತ ಏನಿದ್ದರೂ ಕೆಲವೇ ಕೆಲ ವ್ಯಕ್ತಿಗಳದ್ದು ಮತ್ತು ಕೆಲ ಪರ್ಯಾಯ ಮಾಧ್ಯಮಗಳದ್ದು ಎಂಬಂತ ಸ್ಥಿತಿಯೇ ಎಲ್ಲಾ ಕಾಲದಲ್ಲೂ ಇದ್ದದ್ದು.

ಇಡೀ ಭಾರತೀಯ ಸಮಾಜಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿ ಅಧಿಕಾರಸ್ಥರನ್ನು ಹದ್ದುಬಸ್ತಿನಲ್ಲಿಡಬೇಕು ಎನ್ನುವುದರ ಬಗ್ಗೆ ವಿಶೇಷವಾದ ಕಾಳಜಿ ಇನ್ನೂ ಮೂಡಿಲ್ಲ ಅನ್ನಿಸುತ್ತದೆ. ಅರ್ಥಾತ್ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಇರುವ ಉದಾಸೀನ ಎರಡೂ ಕೂಡಾ ಭಾರತದ ಪ್ರಜಾತಂತ್ರದ ಇನ್ನೊಂದು ದೊಡ್ಡ ಸವಾಲಿನ ಭಾಗಗಳು. ಆ ಸವಾಲು ಏನು ಅಂತ ಅಂದರೆ ಭಾರತೀಯ ಮನಸ್ಸುಗಳು ಪ್ರಜಾತಂತ್ರದ ಸಂಸ್ಕೃತಿಗೆ ತಯಾರಾಗುವ ಮುನ್ನವೇ ಈ ದೇಶಕ್ಕೆ ಪ್ರಜಾತಂತ್ರ ಬಂದದ್ದು. ಇದನ್ನೇ ಅಲ್ಲವೇ ಬಿ.ಆರ್.ಅಂಬೇಡ್ಕರ್ ಅಂದೇ ಎಚ್ಚರಿಸಿದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...