ರಾಜ್ಯ ಸರ್ಕಾರದ ಮಹತ್ವದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಸೇವಾಸಿಂಧು ಸರ್ವರ್ಗೆ ಓವರ್ ಲೋಡ್ ಆಗುತ್ತಿದೆ. ಅಪ್ಡೇಟ್ ಆದರೂ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ. ಸಂಪುಟ ಸಭೆಯಲ್ಲಿ ಆ್ಯಪ್ನ ಸ್ವರೂಪ, ಕಾರ್ಯವಿಧಾನ ಕುರಿತು ಮುಖ್ಯಮಂತ್ರಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಶುಕ್ರವಾರ ಸುದೀರ್ಘ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ನಿರ್ಧಾರ ಮಾಡುತ್ತೇವೆ. ಜೂನ್ 27 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಗೃಹ ಲಕ್ಷ್ಮಿ ಯೋಜನೆ ವಿಳಂಬವಾಗುವುದಿಲ್ಲ. ಇನ್ನು ಅರ್ಜಿ ಸಲ್ಲಿಸುವಾಗ ಯಾರೂ ನೀಡಬಾರದು. ಒಂದು ವೇಳೆ ಯಾರಾದರೂ ಹಣಕ್ಕಾಗಿ ಒತ್ತಾಯಿಸಿದರೆ ಪೊಲೀಸರ ಗಮನಕ್ಕೆ ತನ್ನಿ ಎಂದು ಅವರು ಹೇಳಿದ್ದಾರೆ.
ಕಂದಾಯ ಸಚಿವ ಕೃಷ್ಣಭೈರೇಗೌಡ ನಾಡಕಚೇರಿ, ತಹಶೀಲ್ದಾರರ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಗೆ ಪ್ರಜಾಪ್ರತಿನಿಧಿ ಆಯ್ಕೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಪ್ರಜಾಪ್ರತಿನಿಧಿ ಆಯ್ಕೆ ಅಂತಿಮ ನಿರ್ಧಾರ ಆಗುತ್ತದೆ. ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿ ಆಯ್ಕೆ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಅರ್ಜಿ ಸಲ್ಲಿಕೆಗೆ ಕಾಲಮಿತಿಯಿಲ್ಲ. ಆದುದರಿಂದ, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ