ದೇಶದ ಇತಿಹಾಸದಲ್ಲೇ ವಿರೋಧ ಪಕ್ಷದ ನಾಯಕನಿಲ್ಲದೇ ಜಂಟಿ ಅಧಿವೇಶನವೊಂದು ಇಂದು ಮುಕ್ತಾಯವಾಗುತ್ತಿದೆ. ಈ ಕೆಟ್ಟ ಇತಿಹಾಸ ಬರೆದಿರುವುದು ರಾಜ್ಯ ಬಿಜೆಪಿಯಾಗಿದೆ. ಈ ಬಗ್ಗೆ ಆಡಳಿತ ಪಕ್ಷ ಎಷ್ಟೇ ಟೀಕೆ ಮಾಡಿದರೂ ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲಿಲ್ಲ.
ಚುನಾವಣಾ ಫಲಿತಾಂಶ ಬಂದಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿತು. ಕ್ಯಾಬಿನೆಟ್ ರಚನೆ ಕೂಡ ಆಯಿತು. ಚುನಾವಣೆ ವೇಳೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಕೂಡ ಜಾರಿ ಮಾಡುತ್ತಿದೆ. ಆದರೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಮಾತ್ರ ಹಿಂದೆಬಿದ್ದಿದೆ. ಸರ್ಕಾರ ರಚನೆಯಾದ ಬಳಿಕ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವುದು ವಾಡಿಕೆ ಇದೆ. ಆದರೆ ಬಿಜೆಪಿ ಮಾತ್ರ ಸಾಕಷ್ಟು ವಿಳಂಬ ಮಾಡಿದೆ.
”ವಿಧಾನಸಭಾ ಕಲಾಪ ಆರಂಭವಾಗುವುದಕ್ಕೆ ಮುನ್ನ, ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ” ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಸಮಾಲೋಚನೆ ನಡೆಸಿದ್ದರು. ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈ ವರೆಗೂ ನಾಯಕನ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಲೇ ಇಲ್ಲ.
ಬಿಜೆಪಿ ಹೈಕಮಾಂಡ್ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲು ವೀಕ್ಷಕರನ್ನು ನೇಮಿಸಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಯಕನ ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದರು. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಎದುರಿಸುವ ಸಮರ್ಥ ವಿರೋಧಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ನಾಯಕರು ಸೋತಿದ್ದಾರೆ.
ವಿಧಾನಸಭೆಯ ಜಂಟಿ ಅಧಿವೇಶನಕ್ಕೆ ಇಂದು ಕೊನೆಯ ದಿನವಾಗಿದ್ದು, ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ಸಾಕಷ್ಟು ಮುಜುಗರ ಅನುಭವಿಸಿದೆ. ಮತ್ತೊಂದೆಡೆ, ಬಿಜೆಪಿಯು ಜೆಡಿಎಸ್ನೊಂದಿಗೆ ಕೈಜೋಡಿಸಿ ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅದೇ ಕಾರಣಕ್ಕೆ ಬಿಜಿಪಿಯು ವಿಪಕ್ಷನಾಯಕ ಆಯ್ಕೆಗೆ ವಿಳಂಭ ಮಾಡಿದೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಬಂದಿದೆ.
ಇದನ್ನೂ ಓದಿ: ವಿಪಕ್ಷ ನಾಯಕನನ್ನು ನೇಮಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ