Homeಮುಖಪುಟ'ಸಿಎಂ ಹುದ್ದೆಗೆ 500 ಕೋಟಿ' : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

- Advertisement -
- Advertisement -

“ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ” ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ ಎಎಪಿ ಮತ್ತು ಬಿಜೆಪಿ ಪಕ್ಷಗಳು ಕಾಂಗ್ರೆಸ್‌ ಅನ್ನು ಒತ್ತಾಯಿಸಿವೆ.

ಶನಿವಾರ (ಡಿಸೆಂಬರ್ 6) ಚಂಡೀಗಢದಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವಜೋತ್ ಕೌರ್, ಚರ್ಚೆ ಕಾರಣವಾದ ಹೇಳಿಕೆ ನೀಡಿದ್ದಾರೆ.

“ನನ್ನ ಪತಿ ಕಾಂಗ್ರೆಸ್ ಜೊತೆ ಬಲವಾಗಿ ನಿಂತಿದ್ದಾರೆ. ಪಕ್ಷ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ, ಅವರು ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ” ಎಂದು ಮಾಜಿ ಶಾಸಕಿಯೂ ಆದ ನವಜೋತ್ ಕೌರ್ ಮಾಧ್ಯಮಗಳ ಮುಂದೆ ಹೇಳಿದ್ದರು.

“ಆದರೂ, ಸಿಧು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ನಿರೀಕ್ಷೆ ನನಗಿಲ್ಲ. ಏಕೆಂದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಐದು ಮಂದಿ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಅವರೆಲ್ಲ ಕಾಂಗ್ರೆಸ್ ಅನ್ನು ಸೋಲಿಸಲು ಪಣತೊಟ್ಟು ನಿಂತಿದ್ದಾರೆ. ಇದನ್ನು ಕಾಂಗ್ರೆಸ್ ಹೈಕಮಾಂಡ್ ಅರ್ಥ ಮಾಡಿಕೊಂಡರೆ, ಅದು ಬೇರೆ ವಿಷಯ” ಎಂದಿದ್ದರು.

“ನಾವು ಯಾವಾಗಲೂ ಪಂಜಾಬ್ ಪರವಾಗಿ ಮಾತನಾಡುತ್ತೇವೆ. ಆದರೆ, ಮುಖ್ಯಮಂತ್ರಿ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ನಮ್ಮಲ್ಲಿ 500 ಕೋಟಿ ರೂಪಾಯಿ ಹಣವಿಲ್ಲ” ಎಂದು ಇದೇ ವೇಳೆ ನವಜೋತ್ ಕೌರ್ ಹೇಳಿದ್ದರು.

ಈ ವೇಳೆ ವರದಿಗಾರರು, “ನಿಮ್ಮಲ್ಲಿ ಯಾರಾದರೂ ಹಣ ಕೇಳಿದ್ದಾರೆಯೇ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ನವಜೋತ್ ಕೌರ್, “ಇಲ್ಲ ಹಣ ಕೇಳಿಲ್ಲ, ಆದರೆ 500 ಕೋಟಿ ರೂಪಾಯಿಯ ಸೂಟ್ ಕೇಸ್ ಕೊಟ್ಟವನೇ ಮುಖ್ಯಮಂತ್ರಿಯಾಗುತ್ತಾನೆ” ಎಂದಿದ್ದರು.

2027ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಪ್ರಸ್ತುತ ಅಲ್ಲಿ ಎಎಪಿ ಪಕ್ಷದ ಆಡಳಿತವಿದೆ.

ನವಜೋತ್ ಕೌರ್ ಸಿಧು “ಸತ್ಯವನ್ನೇ ಹೇಳಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಲದೀಪ್ ಸಿಂಗ್ ಧಲಿವಾಲ್ ಹೇಳಿದ್ದಾರೆ. ಕೌರ್ ಅವರ ಹೇಳಿಕೆಗಳು ಕಾಂಗ್ರೆಸ್ ದೇಶದ “ಅತ್ಯಂತ ಭ್ರಷ್ಟ ಪಕ್ಷ” ಎಂಬುದನ್ನು ಸ್ಪಷ್ಟವಾಗಿ ತೋರಿಸಿವೆ ಎಂದಿದ್ದಾರೆ.

“ಗೆಲ್ಲುವುದು ಬಿಡ, ಕನಿಷ್ಠ ಅಭ್ಯರ್ಥಿಯಾಗಲು 500 ಕೋಟಿ ರೂಪಾಯಿ ಕೊಡಬೇಕು. ಹೀಗಿರುವಾಗ ಆ ಪಕ್ಷದ (ಕಾಂಗ್ರೆಸ್) ಪರಿಸ್ಥಿತಿ ಊಹಿಸಿ. ಪಂಜಾಬ್ ಕಾಂಗ್ರೆಸ್‌ನಲ್ಲಿ ಐವರು ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ” ಎಂದು ಧಲಿವಾಲ್ ಟೀಕಿಸಿದ್ದಾರೆ.

“ರಾಜ್ಯದ ವಿರೋಧ ಪಕ್ಷ ಎಷ್ಟು ವಿಭಜಿತ ಮತ್ತು ದುರ್ಬಲವಾಗಿದೆ ಎಂಬುದನ್ನು ಇದು ತೋರಿಸಿದೆ. ಹಲವರು ಸಿಎಂ ಅಭ್ಯರ್ಥಿಗಳು ಎಂದು ಹೇಳಿಕೊಂಡು ಓಡಾಡುತ್ತಿರುವುದರಿಂದ ಕಾಂಗ್ರೆಸ್‌ಗೆ ದೊಡ್ಡ ಹಾನಿ ಉಂಟಾಗಿದೆ” ಎಂದು ಧಲಿವಾಲ್ ಹೇಳಿದ್ದಾರೆ.

“ಕಾಂಗ್ರೆಸ್ ಹೇಗೆ ಕಾರ್ಯನಿರ್ವಹಿಸುತ್ತದೆ, ನಾಯಕತ್ವವನ್ನು ಹೇಗೆ ನಿರ್ಧರಿಸಲಾಗುತ್ತದೆ ಮತ್ತು ವೈಯಕ್ತಿಕ ಮಹತ್ವಾಕಾಂಕ್ಷೆಗಳು ಮತ್ತು ಹಣಕಾಸಿನ ವ್ಯವಹಾರಗಳಿಗಾಗಿ ಪಂಜಾಬ್‌ನ ಹಿತಾಸಕ್ತಿಗಳನ್ನು ಹೇಗೆ ಬದಿಗಿಡಲಾಗುತ್ತದೆ ಎಂಬುದರ ಕೊಳಕು ಸತ್ಯವನ್ನು ನವಜೋತ್ ಕೌರ್ ಸಿಧು ಅವರ ಹೇಳಿಕೆ ಬಹಿರಂಗಪಡಿಸಿದೆ” ಎಂದು ಆಮ್ ಆದ್ಮಿ ಪಕ್ಷದ ಪಂಜಾಬ್ ಪ್ರಧಾನ ಕಾರ್ಯದರ್ಶಿ ಬಲ್ತೇಜ್ ಪನ್ನು ಬರೆದುಕೊಂಡಿದ್ದಾರೆ.

“ಕೌರ್ ಅವರ ಹೇಳಿಕೆ ತೀವ್ರ ಗೊಂದಲ ಸೃಷ್ಟಿಸುವಂತದ್ದು. ಈ ಬಗ್ಗೆ ಕಾಂಗ್ರೆಸ್‌ನಿಂದ ಉತ್ತರ ಪಡೆಯಲು ಪಂಜಾಬ್‌ನ ಜನರು ಅರ್ಹರು ಎಂದಿದ್ದಾರೆ.

“ಪಂಜಾಬ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ಅದನ್ನು ಭರಿಸಲು ನನ್ನ ಪತಿ ನವಜೋತ್ ಸಿಂಗ್ ಸಿಧುಗೆ ಸಾಧ್ಯವಿಲ್ಲ” ಎಂದು ನವಜೋತ್ ಕೌರ್ ಸಿಧು ಸಾರ್ವಜನಿಕವಾಗಿ ಹೇಳುವ ಮೂಲಕ ಕಾಂಗ್ರೆಸ್‌ನಲ್ಲಿನ ‘ಹಣದ ಚೀಲ’ಗಳ ರಾಜಕೀಯವನ್ನು ಬಹಿರಂಗಪಡಿಸಿದ್ದಾರೆ ಎಂದು ಬಿಜೆಪಿ ನಾಯಕ ತರುಣ್ ಚುಗ್ ಹೇಳಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರ ಪತ್ನಿಯೇ ಮುಖ್ಯಮಂತ್ರಿ ಸ್ಥಾನವನ್ನು ಒಪ್ಪಂದದ ಮೂಲಕ ‘ಖರೀದಿಸಬಹುದು ಎಂದು ಹೇಳಿರುವುದು, ಪಕ್ಷದಲ್ಲಿ ಸಂಪೂರ್ಣ ನೈತಿಕ ಕುಸಿತವನ್ನು ತೋರಿಸಿದೆ ಎಂದು ತರುಣ್ ಚುಗ್ ಟೀಕಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಆಂತರಿಕ ಕಾರ್ಯಚಟುವಟಿಕೆಯು ಪಂಜಾಬ್‌ನ ರಾಜಕೀಯವನ್ನು ಪ್ರಜಾಪ್ರಭುತ್ವ ನಾಯಕತ್ವ ಪ್ರಕ್ರಿಯೆಯ ಬದಲು ಹಣ-ಚಾಲಿತ ಹರಾಜು ವ್ಯವಸ್ಥೆಗೆ ಇಳಿಸಿದೆ ಎಂಬುವುದನ್ನು ಕೌರ್ ಅವರ ಹೇಳಿಕೆ ತೋರಿಸಿದೆ ಎಂದು ತರುಣ್ ಚುಗ್ ಹೇಳಿದ್ದಾರೆ.

ಸಿಧು ಕುಟುಂಬವು ಯಾವುದೋ ಉದ್ದೇಶಕ್ಕಾಗಿ ಪಕ್ಷಕ್ಕೆ ಸೇರಿದೆ ಎಂದು ತೋರುತ್ತಿದೆ. ಈಗ ಅವರು ತಮ್ಮ ಉದ್ದೇಶ ಪೂರ್ಣಗೊಂಡಿದೆ ಎಂದು ನಂಬಿದ್ದಾರೆ. ಪಂಜಾಬ್‌ನ ಜನರಿಗೆ ಸಿಧು ಕುಟುಂಬದ ಕ್ರಮಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಸುಖಜಿಂದರ್ ಸಿಂಗ್ ರಾಂಧವ ತಿಳಿಸಿದ್ದಾರೆ.

“ಅವರು [ಸಿಧು ಕುಟುಂಬ] ಮುಖ್ಯಮಂತ್ರಿಯ ಸ್ಥಾನಕ್ಕೆ ಸಮಾನವಾದ ಹುದ್ದೆಯಾದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಾಗ, ಯಾರಿಗೆ ಅವರು ಸೂಟ್‌ಕೇಸ್ ಹಸ್ತಾಂತರಿಸಿದ್ದರು ಮತ್ತು ಎಷ್ಟು ಬೆಲೆಗೆ?” ಎಂದು ರಾಂಧವ ಪ್ರಶ್ನಿಸಿದ್ದಾರೆ.

“ಯಾರಾದರೂ ಹಿಂತಿರುಗಿ ಹೋಗಿ ಈ ಕುಟುಂಬದ ಹಳೆಯ ಸಂದರ್ಶನಗಳು ಮತ್ತು ಪತ್ರಿಕೆಗಳ ಹೇಳಿಕೆಗಳನ್ನು ಓದಿದರೆ, ಅವರು ಕಾಂಗ್ರೆಸ್ ಅನ್ನು ಉಳಿಸಲು ಬಂದಿದ್ದಾರೋ ಅಥವಾ ಅದನ್ನು ಸಂಪೂರ್ಣವಾಗಿ ನಾಶಮಾಡಲು ಬಂದಿದ್ದಾರೋ ಎಂಬುದು ಸ್ಪಷ್ಟವಾಗುತ್ತದೆ ಎಂದು” ಎಂದು ರಾಂಧವ ಕಿಡಿಕಾರಿದ್ದಾರೆ.

“ಅವರು ಬೇರೆ ಪಕ್ಷದ ಶಾಖೆಯಲ್ಲಿ ಕುಳಿತುಕೊಂಡು ಇಂತಹ ಹೇಳಿಕೆಗಳನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಜನರು ನಾಟಕವನ್ನು ಇನ್ನಷ್ಟು ಆನಂದಿಸಬಹುದಿತ್ತು. ಆದರೆ ಈಗ, ಅವರು ಹೊರಡುವಾಗ ಪಕ್ಷದ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ” ಎಂದು ರಾಂಧವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನವಜೋತ್ ಸಿಂಗ್ ಸಿಧು ಸ್ವತಃ [ಬಿಜೆಪಿಗೆ] ಮನೆಗೆ ಮರಳುವ ಮುನ್ನ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಸಂತೋಷದಿಂದ ವಿದಾಯ ಹೇಳಿ ಆ ಕಡೆಯ ಬಾಗಿಲು ತೋರಿಸಬೇಕು” ಎಂದು ರಾಂಧವ ಹೇಳಿದ್ದಾರೆ.

ನವಜೋತ್ ಸಿಂಗ್ ಸಿಧು 2004ರಲ್ಲಿ ಬಿಜೆಪಿಯೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಆದರೆ 2016 ರಲ್ಲಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದರು. ಒಂದು ವರ್ಷದ ನಂತರ ಅವರು ಕಾಂಗ್ರೆಸ್ ಸೇರಿದರು.

2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಎಪಿ ವಿರುದ್ಧ ಸೋತ ನಂತರ, ಸಿಧು ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಅವರು ಅಮೃತಸರ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿಯ ಜೀವನ್ ಜ್ಯೋತ್ ಕೌರ್ ವಿರುದ್ಧ ಸೋತಿದ್ದರು.

ತನ್ನ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾದ ಬಳಿಕ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನವಜೋತ್ ಕೌರ್ ಸಿಧು “ನಮ್ಮ ಕಾಂಗ್ರೆಸ್ ಪಕ್ಷ ನಮ್ಮಿಂದ ಎಂದಿಗೂ ಏನನ್ನೂ ಕೇಳಿಲ್ಲ ಎಂಬ ನನ್ನ ಹೇಳಿಕೆಯನ್ನು ತಿರುಚಿದ್ದು ನೋಡಿ ನನಗೆ ಆಘಾತವಾಯಿತು” ಎಂದಿದ್ದಾರೆ.

“ನವಜೋತ್ ಸಿಂಗ್ ಸಿಂಧು ಬೇರೆ ಯಾವುದೇ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಬಗ್ಗೆ ಕೇಳಿದಾಗ, ಮುಖ್ಯಮಂತ್ರಿ ಹುದ್ದೆಗೆ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾನು ಹೇಳಿದ್ದೆ. ಎಚ್ಚರಿಕೆಯಿಂದ ಆಲಿಸಿ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...