Homeಕರ್ನಾಟಕಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಮಹಿಳಾ ಆಯೋಗಕ್ಕೆ ಎಎಪಿ ದೂರು

ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ ಮಹಿಳಾ ಆಯೋಗಕ್ಕೆ ಎಎಪಿ ದೂರು

ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಈಗಾಗಲೇ ಕ್ಷಮೆ ಕೇಳಿದ್ದು, ಸ್ಪಷ್ಟನೆಯನ್ನೂ ನೀಡಿದ್ದಾರೆ.

- Advertisement -
- Advertisement -

ಯುವತಿಯರು ಸರಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆಗಸ್ಟ್‌ 12, 2022ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ಮಾತನಾಡಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದ್ದಾರೆ.

ಕ್ಷಮೆ ಕೇಳಿರುವ ಪ್ರಿಯಾಂಕ್ ಖರ್ಗೆ

ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆಯವರು ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಕ್ಷಮೆಯನ್ನೂ ಯಾಚಿಸಿದ್ದಾರೆ. “ರಾಜ್ಯ ಸರಕಾರವನ್ನು ಲಂಚ-ಮಂಚ ಸರ್ಕಾರ ಎಂದು ಕರೆದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಕೇಳಲು ಸಿದ್ದನಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ಈ ಕುರಿತು ಫೇಸ್‌ಬುಕ್‌ ಖಾತೆಯಲ್ಲಿ ಸ್ಪಷ್ಟನೆಯನ್ನು ನೀಡಿರುವ ಅವರು, “ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದ್ದೇನೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ದನಿದ್ದೇನೆ. ಆದರೆ ಬಿಜೆಪಿ, ಹೆಣ್ಣು ಮಕ್ಕಳಿಗೆ ನಿಜವಾಗಿ ಅಪಮಾನ ಮಾಡಿರುವ ತನ್ನೆಲ್ಲಾ ನಾಯಕರ ಬಳಿ ರಾಜೀನಾಮೆ ಪಡೆದು ರಾಜ್ಯದ ಮಹಿಳಾ ಸಮುದಾಯಕ್ಕೆ ಎಸಗಿದ ಅವಮಾನಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಕೆಲಸ ಮಾಡಲಿದೆಯಾ? ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಬಿಜೆಪಿಯಿಂದ ಉತ್ತರವನ್ನು ನಿರೀಕ್ಷಿಸಬಹುದೇ?” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ದಿನಂಪ್ರತಿ ಬೆಳಕಿಗೆ ಬರುತ್ತಲೇ ಇವೆ. ಇದು ಈ ಸರ್ಕಾರದ ಭ್ರಷ್ಟಾಚಾರದ ವಿರಾಟ್ ರೂಪ ಹಾಗೂ ಲಂಚಕೋರ ಆಡಳಿತಕ್ಕೆ ಹಿಡಿದ ಕೈಗನ್ನಡಿ. ವಿಶೇಷವಾಗಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ರಾಜ್ಯದ ಸಾವಿರಾರು ಯುವಕರ ಕಣ್ಣಲ್ಲಿ ನೀರು ತರಿಸುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇತ್ತೀಚಿಗೆ ನಡೆದ KPTCL ಪರೀಕ್ಷೆಯಲ್ಲಿ ಆಗಿರುವ ಅಕ್ರಮಕ್ಕೆ ಯಾವುದೇ ಶಿಕ್ಷೆ ನೀಡಿದರೂ ಕಮ್ಮಿಯೇ. ಸರ್ಕಾರಿ ಕೆಲಸ ಒಂದಿಡೀ ಕುಟುಂಬವನ್ನೇ ಬಡತನದಿಂದ ಮೇಲೆತ್ತುವ, ಸುಭದ್ರ ಭವಿಷ್ಯ ಕಟ್ಟಿಕೊಡುವ ಅವಕಾಶ. ಲಂಚ ಪಡೆದು ಪರೀಕ್ಷೆಯಲ್ಲಿ ಅಕ್ರಮವಾಗಿ ಉತ್ತೀರ್ಣರಾಗುವ ಮೂಲಕ ವ್ಯವಸ್ಥಿತವಾಗಿ ಬಡವರ್ಗದ ಹಾಗೂ ಯೋಗ್ಯ ಯುವ ಜನರ ಕೈಯಿಂದ ಆ ಅವಕಾಶವನ್ನು ಕಿತ್ತುಕೊಳ್ಳುವುದನ್ನು ಈ ಭ್ರಷ್ಟ ಬಿಜೆಪಿ ಸರ್ಕಾರ ಸಕ್ರಮಗೊಳಿಸಿಬಿಟ್ಟಿದೆ. ಇದನ್ನು ವಿರೋಧಿಸಿ ನಾನು ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಈ ಸರ್ಕಾರವನ್ನು ಲಂಚ-ಮಂಚದ ಸರ್ಕಾರವೆಂದು ಕರೆದಿದ್ದೆ. ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು, ತನ್ನ ಭ್ರಷ್ಟ ರೂಪವನ್ನು ರಕ್ಷಿಸಿಕೊಳ್ಳಲು, ಹಾಗೂ ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿ KPTCL ಅಕ್ರಮವನ್ನು ಈ ಮೂಲಕ ಮುಚ್ಚಿ ಹಾಕಲು ಬಿಜೆಪಿ ಹೊರಟು ನಿಂತಿದೆ” ಎಂದು ಟೀಕಿಸಿದ್ದಾರೆ.

“ಕೆಲಸಕ್ಕಾಗಿ ಬಂದ ಯುವತಿಯನ್ನು ಈ ಸರ್ಕಾರದ ಮಂತ್ರಿ ಮೋಸ ಮಾಡಿ, ಸಿಕ್ಕಿ ಬಿದ್ದು ರಾಜೀನಾಮೆ ನೀಡಬೇಕಾಯಿತು. ಆದರೆ ಅವರ ಬಳಿ ಕ್ಷಮೆಯನ್ನು ಬಿಜೆಪಿಯ ಯಾರೊಬ್ಬರೂ ಕೇಳಲಿಲ್ಲ. ಕೇಂದ್ರ ಮಂತ್ರಿಯೊಬ್ಬರು ಅಶ್ಲೀಲವಾಗಿ ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ವಿಡಿಯೋ ವೈರಲ್ ಆದಾಗ ಹೆಣ್ಣನ್ನು ತೃಣವಾಗಿ ಕಂಡಿದ್ದ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ. ಸದನದಲ್ಲಿ ಕೂತು ಪಾರ್ನ್ ವೀಕ್ಷಿಸಿ ಇಡೀ ರಾಜ್ಯದ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರ ಬಳಿ ಕ್ಷಮೆಗೆ ಆಗ್ರಹಿಸಲಿಲ್ಲ, ಬದಲಾಗಿ ಮತ್ತೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬಂದರು, ಸೋತವರನ್ನು MLC ಮಾಡಿ DCM ಮಾಡಿದ್ದು ಇದೇ BJP ಪಕ್ಷ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿರಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

ಈ ಸರ್ಕಾರದ ಮಂತ್ರಿಯೊಬ್ಬರು ‘ಈ ರಾಜ್ಯದ ಯಾವ ಶಾಸಕ ಏಕ ಪತ್ನಿವೃತಸ್ಥ?’ ಎಂಬ ಪ್ರಶ್ನೆ ಬಿಜೆಪಿಗೆ ಈ ನಾಡಿನ ಹೆಣ್ಣು ಮಕ್ಕಳ ಅವಮಾನದಂತೆ ಕಂಡುಬರಲಿಲ್ಲ. ಈ ನಾಡಿನ ಹೆಣ್ಣು ಮಕ್ಕಳು ಕೆಲಸಕ್ಕಾಗಿ ಹೋದಾಗ ಅಶ್ಲೀಲವಾಗಿ ವರ್ತಿಸಿ ‘ಮೀ ಟೂ’ ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ಸಂಸದರು ಸಿಕ್ಕಿ ಬಿದ್ದಾಗ ಬಿಜೆಪಿ ಅವರ ಬಳಿ ಕ್ಷಮೆ ಕೇಳಲಿಲ್ಲ. ಈ ರಾಜ್ಯದ ಸಚಿವ ಸಂಪುಟದ ಸಚಿವರ ‘ಮಂಚದ ವಿಚಾರ’ಕ್ಕೆ ಹೆದರಿ ಹೈಕೋರ್ಟ್ ನಿಂದ ಸ್ಟೇ ತಂದಾಗ ಬಿಜೆಪಿ ಇವರ್ಯಾರ ಬಳಿಯೂ ಕ್ಷಮೆ ಕೇಳಲಿಲ್ಲ ಎಂದಿದ್ದಾರೆ.

ಈ ಸರ್ಕಾರದ ಅನಿಷ್ಟ ಆಡಳಿತಕ್ಕೆ ಇವರ ಕಾರ್ಯಕರ್ತರೇ ‘ಜನಾಕ್ರೋಶ’ ರೂಪಿಸಿ ಇವರ ಜನೋತ್ಸವಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನು ಈಗಷ್ಟೆ ಬಿಜೆಪಿ ಸರ್ಕಾರದ ಮಂತ್ರಿಯೊಬ್ಬರು, ‘ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿಲ್ಲ, ಬದಲಿಗೆ ಮ್ಯಾನೇಜ್ಮೆಂಟ್ ನಡೆಸುತ್ತಿದ್ದೇವೆ’ ಎಂದು ಮಾತನಾಡಿರುವ ಆಡಿಯೋ ವೈರೆಲ್ ಆಗುತ್ತಿದೆ. ಈ ಸರ್ಕಾರದಲ್ಲಿ ಆಗಿರುವ ಹಾಗೂ ಈಗಲೂ ಘಟಿಸುತ್ತಿರುವ ಮಂಚ-ಲಂಚದ ಪ್ರಕರಣಗಳಿಗೆ ಕನ್ನಡಿಯಾಗಿ ಮಾತನಾಡುವುದು ವಿರೋಧ ಪಕ್ಷವಾಗಿ ನಮ್ಮ ಆದ್ಯ ಕರ್ತವ್ಯ. ಆ ಕೆಲಸವನ್ನು ಇಂದು ನಾವು ಸರಿಯಾಗಿ ನಿರ್ವಹಿಸುತ್ತಿರುವದರಿಂದಲೇ ಬಿಜೆಪಿ ನಾಯಕರು ಇಂದು ವಿಚಲಿತರಾಗಿ ಹೇಳಿಕೆ ನೀಡುತ್ತಿರುವುದು ಎಂದು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...