Homeಮುಖಪುಟಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿ ರ್‍ಯಾಲಿ; ‘ನಾಳೆ ನಿಮ್ಮ ಸರದಿ’ ಎಂದು ಎಚ್ಚರಿಸಿದ ಕೇಜ್ರೀವಾಲ್

- Advertisement -
- Advertisement -

ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ, ದೆಹಲಿ ಸರ್ಕಾರವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ವಿರೋಧಿಸಿ ಇಂದು ದೆಹಲಿಯ ರಾಮ್‌ ಲೀಲಾ ಮೈದಾನದಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ರ್‍ಯಾಲಿಯನ್ನು ನಡೆಸಿತು.

ರ್‍ಯಾಲಿಯಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, “ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಇದು ಸಂಭವಿಸಬಹುದು” ಎಂದು ಎಚ್ಚರಿಸಿದರು.

“ಸುಗ್ರೀವಾಜ್ಞೆ ಏನು ಹೇಳುತ್ತದೆ? ಮೋದಿಜಿಯವರ ಸುಗ್ರೀವಾಜ್ಞೆಯು ದೆಹಲಿಯಲ್ಲಿ ಪ್ರಜಾಪ್ರಭುತ್ವ ಇರುವುದಿಲ್ಲ ಎಂದು ಹೇಳುತ್ತದೆ. ಸರ್ವಾಧಿಕಾರವಿದೆ. ಜನರು ಇಲ್ಲಿ ಸರ್ವೋಚ್ಚ ಅಲ್ಲ, ಇಲ್ಲಿ ಲೆಫ್ಟನೆಟ್‌ ಜನರಲ್‌ ಸರ್ವೋಚ್ಚರಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಜನರು ಯಾರನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ, ನಾನು ದೆಹಲಿಯನ್ನು ನಡೆಸುತ್ತೇನೆ ಎನ್ನುತ್ತಾರೆ ಮೋದಿ. ಇದು ದೆಹಲಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಭಾವಿಸಬೇಡಿ. ದೇಶದ ಇತರ ಭಾಗಗಳಲ್ಲೂ ಇದೇ ರೀತಿಯ ಸುಗ್ರೀವಾಜ್ಞೆಯನ್ನು ತರಲು ಅವರು ಯೋಜಿಸುತ್ತಿದ್ದಾರೆ ಎಂದು ನಾನು ಕೇಳಿದ್ದೇನೆ. ದೆಹಲಿಗೆ ಬಂದಂತಹ ಸುಗ್ರೀವಾಜ್ಞೆ ಸರ್ವಾಧಿಕಾರದ ಘೋಷಣೆಯಂತಿದೆ. ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶದಲ್ಲಿ ಇದನ್ನು ತರಲಾಗುತ್ತದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆಯು ಚುನಾಯಿತ ಸರ್ಕಾರವನ್ನು ದುರ್ಬಲಗೊಳಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಯನ್ನು ಸೋಲಿಸಬೇಕೆಂದು ಬೆಂಬಲವನ್ನು ಕೋರಿ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಜ್ರಿವಾಲ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ರ್‍ಯಾಲಿ ನಡೆದಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದರಾದ ಸಂಜಯ್ ಸಿಂಗ್, ಸಂದೀಪ್ ಪಾಠಕ್, ಸುಶೀಲ್ ಗುಪ್ತಾ, ಶಾಸಕರಾದ ಗೋಪಾಲ್ ರೈ, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹಾಜರಿದ್ದರು.

2012ರಲ್ಲಿ ರಾಮಲೀಲಾ ಮೈದಾನದಲ್ಲಿ ಎಎಪಿ ಹುಟ್ಟಿದ್ದನ್ನು ಸ್ಮರಿಸಿದ ಕೇಜ್ರಿವಾಲ್, “ಹನ್ನೆರಡು ವರ್ಷಗಳ ಹಿಂದೆ ಭ್ರಷ್ಟಾಚಾರದ ವಿರುದ್ಧ ಇಲ್ಲಿ ಒಟ್ಟುಗೂಡಿದ್ದೆವು. ಇದೊಂದು ಪವಿತ್ರ ವೇದಿಕೆ. ಇಂದು ನಾವು ಸರ್ವಾಧಿಕಾರಿಯನ್ನು ದೇಶದಿಂದ ಕಿತ್ತೊಗೆಯಲು ಒಟ್ಟುಗೂಡಿದ್ದೇವೆ. ಆ ಸಮಯದಲ್ಲಿ ನಮ್ಮ ಚಳವಳಿ ಯಶಸ್ವಿಯಾಗಿತ್ತು. ಇದು ಸರ್ವಾಧಿಕಾರವನ್ನು ಕೊನೆಗೊಳಿಸಿ ಪ್ರಜಾಪ್ರಭುತ್ವವನ್ನು ಮರಳಿ ತರುವ ಆಂದೋಲನವಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ ವಕೀಲ ಅಭಿಷೇಕ್ ಮನು ಸಿಂಘ್ವಿ, ನಮಗಾಗಿ, ನಿಮಗಾಗಿ ವಾದಿಸಿ ಗೆದ್ದಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ.

“ನಾನು ಸುಪ್ರೀಂ ಕೋರ್ಟ್ ಅನ್ನು ಗೌರವಿಸುವುದಿಲ್ಲ ಎಂದು ಪ್ರಧಾನಿ ಹೇಳುತ್ತಾರೆ. ಪ್ರಧಾನಿಯೊಬ್ಬರು ಈ ರೀತಿ ನಡೆದುಕೊಳ್ಳುತ್ತಿರುವುದು ಇದೇ ಮೊದಲು. ದೇಶದ ಜನತೆ ಬೆಚ್ಚಿಬಿದ್ದಿದ್ದಾರೆ. ತಮ್ಮ ಪ್ರಧಾನಿ ತುಂಬಾ ದುರಹಂಕಾರಿ ಎಂಬುದನ್ನು ಅವರು ಒಪ್ಪಲ್ಲ. ಪ್ರಜಾಪ್ರಭುತ್ವವೇ ಸರ್ವೋಚ್ಚ ಎಂದು ಸುಪ್ರೀಕೋರ್ಟ್ ಹೇಳಿದೆ. ಜನರ ಇಚ್ಛೆಯೇ ಸರ್ವಶ್ರೇಷ್ಠ. ಚುನಾಯಿತ ಸರ್ಕಾರಕ್ಕೆ ಯಾವುದೇ ಪಕ್ಷ ಭೇದವಿಲ್ಲದೇ ಕೆಲಸ ಮಾಡುವ ಹಕ್ಕು ಇರಬೇಕು. ನಾನು ಕೇಳಲು ಬಯಸುತ್ತೇನೆ, ಸುಪ್ರೀಂಕೋರ್ಟ್‌ನಿಂದ ತಪ್ಪಾಗಿದೆಯೇ? ಪ್ರಧಾನಿ ಆದೇಶಕ್ಕೆ ಬದ್ಧರಾಗಬೇಕೇ?” ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದೇನು?

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿತ್ತು. ದೆಹಲಿ ಸರ್ಕಾರದ ಎಲ್ಲ ನಿರ್ಧಾರಗಳಲ್ಲಿಯೂ ಕೇಂದ್ರ ಸರ್ಕಾರ ಮೂಗು ತೂರಿಸುವಂತಿಲ್ಲ ಎಂದು ಸೂಚಿಸಿತ್ತು.

ಕೇಂದ್ರದಿಂದ ನೇಮಕವಾಗುವ ಲೆಫ್ಟಿನೆಂಟ್ ಗವರ್ನರ್‌ಗೆ ಖಡಕ್ ಸೂಚನೆಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ, “ದೆಹಲಿ ಸರ್ಕಾರವು ಸೇವೆಗಳ ಮೇಲೆ ನಿಯಂತ್ರಣ ಹೊಂದಿರಬೇಕು, ಲೆಫ್ಟಿನೆಂಟ್ ಗವರ್ನರ್ ಸರ್ಕಾರದ ನಿಯಂತ್ರಣಕ್ಕೆ ಬದ್ಧರಾಗಿರಬೇಕು” ಎಂದು ನಿರ್ದೇಶಿಸಿದೆ.

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕಾರದ ತಿಕ್ಕಾಟ ನಡೆಯುತ್ತಿರುವಾಗ ಈ ತೀರ್ಪು ಹೊರಬಿದ್ದಿದೆ. “ಜನರ ಇಚ್ಛೆಯನ್ನು ಪ್ರತಿನಿಧಿಸಿ ಕಾನೂನು ರೂಪಿಸುವ ಅಧಿಕಾರವನ್ನು ದೆಹಲಿ ವಿಧಾನಸಭೆಗೆ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

“ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ನಿಜವಾದ ಅಧಿಕಾರವು ಚುನಾಯಿತ ಸರ್ಕಾರದ ತೋಳಿನ ಮೇಲೆ ನಿಂತಿರಬೇಕು” ಎಂದು ಪೀಠವು ಅಭಿಪ್ರಾಯಪಟ್ಟಿದೆ. ಕೇಂದ್ರ ಮತ್ತು ರಾಜ್ಯಗಳೆರಡೂ ಸೇರಿ ಕಾನೂನು ರಚಿಸಬಹುದಾದ ವಿಷಯಗಳಲ್ಲಿ ಕೇಂದ್ರ ಸರ್ಕಾರವು ದೆಹಲಿ ಚುನಾಯಿತ ಸರ್ಕಾರದೊಂದಿಗೆ ಚರ್ಚಿಸಬಹುದು. ‘ಸದರಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಮೀರಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲಷ್ಟೇ ಇದು ಸೀಮಿತವಾಗಿರುತ್ತದೆ’ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಆಡಳಿತ ಸೇವೆಗಳ ಮೇಲೆ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಒಪ್ಪದ ನ್ಯಾಯಾಧೀಶರು, “ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ವಿಷಯಗಳನ್ನಷ್ಟೇ ಅದರ (ದೆಹಲಿ) ಅಧಿಕಾರ ವ್ಯಾಪ್ತಿಯಿಂದ ಹೊರಗಿಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

“ಅಧಿಕಾರಿಗಳು ಮಂತ್ರಿಗಳಿಗೆ ವರದಿ ಮಾಡುವುದನ್ನು ನಿಲ್ಲಿಸಿದರೆ ಅಥವಾ ಅವರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಸಾಮೂಹಿಕ ಜವಾಬ್ದಾರಿಯ ತತ್ವದಲ್ಲಿ ಪರಿಣಾಮ ಕಂಡುಬರುತ್ತದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಆದೇಶಿಸಿದ್ದಾರೆ.

ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಶಾಹಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮೇಲೆ ಆಡಳಿತಾತ್ಮಕ ನಿಯಂತ್ರಣವನ್ನು ಯಾರು ಹೊಂದಿದ್ದಾರೆ ಎಂಬ ಪ್ರಶ್ನೆ ಕೋರ್ಟ್ ಮುಂದಿತ್ತು. ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣವನ್ನು ಆಲಿಸಿತ್ತು.

ದೆಹಲಿ ಸರ್ಕಾರದಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್, ಆಡಳಿತ ಸೇವೆಗಳ ವಿಚಾರದಲ್ಲಿ ಚುನಾಯಿತ ಸರ್ಕಾರದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮಂತ್ರಿಮಂಡಲದ ಸಹಾಯ ಮತ್ತು ಸಲಹೆಗೂ ಲೆಫ್ಟಿನೆಂಟ್ ಗವರ್ನರ್ ಬದ್ಧರಾಗಿರುತ್ತಾರೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...