ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಫೋಟೋವನ್ನು ಗಣರಾಜ್ಯೋತ್ಸವ ಆಚರಣೆಯಂದು ರಾಯಚೂರು ಜಿಲ್ಲಾ ನ್ಯಾಯಾಧೀಶರು ತೆರವುಗೊಳಿಸಿದ ಸಂಬಂಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ವೇಳೆ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವಿವಿಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಬೆಂಗಳೂರು ವಿವಿಯ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಎಬಿವಿಪಿ ಸಂಘಟನೆ ಬೇರೆ ವಿಚಾರದ ಕುರಿತು ಪ್ರತಿಭಟನೆ ನಡೆಸಲು ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.
ಅಂಬೇಡ್ಕರ್ ರವರ ಫೋಟೋ ತೆರವು ವಿರೋಧಿಸಿ ನಡೆಯುತ್ತಿದ್ದ ಹೋರಾಟಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್ ಮಾತನಾಡಿ, “ರಾಯಚೂರಿನಲ್ಲಿ ಆದ ಘಟನೆಯನ್ನು ಖಂಡಿಸಿ, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟದ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಬೇಕು ಎಂದು ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ, ಕೋಮುಗಲಭೆ ಸೃಷ್ಟಿಸಲು ವಿಶ್ವವಿದ್ಯಾನಿಲಯಕ್ಕೆ ಬಂದಿತ್ತು” ಎಂದರು.
“ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಎಬಿವಿಪಿಯವರ ವಿರುದ್ಧ ಪ್ರತಿಭಟಿಸಲಾಗಿದೆ. ಅಂಬೇಡ್ಕರ್ ಫೋಟೋ ಸಂಬಂಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಎಬಿವಿಪಿಗಳು ಯತ್ನಿಸಿದ್ದಾರೆ. ಎಚ್ಚೆತ್ತುಕೊಂಡ ಪೊಲೀಸರು ಲಾಠಿ ಜಾರ್ಜ್ ಮಾಡಿ ಅವರನ್ನು ತಡೆದರು. ಇದನ್ನೆಲ್ಲ ಬಗೆಹರಿಸಿ ಎಬಿವಿಪಿಗಳನ್ನು ಹೊರಗೆ ಕಳುಹಿಸಿದ ಮೇಲೆ ಎಬಿವಿಪಿ ಕಾರ್ಯಕರ್ತರು ಜ್ಞಾನಭಾರತಿ ಪೊಲೀಸ್ ಠಾಣೆಯ ಮುಂದೆ ಜಮಾಸಿದ್ದಾರೆ. ಪೊಲೀಸ್ ಇಲಾಖೆಯ ಕರೆಯಂತೆ ಕೆಲವು ವಿದ್ಯಾರ್ಥಿ ಮುಖಂಡರು ಠಾಣೆಗೆ ಭೇಟಿ ನೀಡಿದ್ದರು” ಎಂದು ಹೇಳಿದರು.
ವಿದ್ಯಾರ್ಥಿ ಮುಖಂಡ ಮನೋಜ್ ಮಾತನಾಡಿ, “ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಸಂಘಟನೆ ಪ್ರತಿಭಟನೆಗೆ ಬಂದಿತ್ತು. ಮೂರು ದಿನಗಳಿಂದ ನಡೆಯುತ್ತಿದ್ದ ನಮ್ಮ ಹೋರಾಟವನ್ನು ಹಾಳು ಮಾಡುವುದು ಅವರ ಉದ್ದೇಶವಾಗಿತ್ತು. ಮಾರ್ಕ್ ಕಾರ್ಡ್ ಸಮಸ್ಯೆ, ಹಾಸ್ಟೆಲ್ ಸಮಸ್ಯೆ ನೆಪದಲ್ಲಿ ಕ್ಯಾಂಪಸ್ಗೆ ಅವರು ಆಗಮಿಸಿದ್ದರು. ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ನೀವು ಬರುವ ಅಗತ್ಯವಿಲ್ಲ ಎಂದು ಮೊದಲೇ ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಎಬಿವಿಪಿ ಸಂಘಟನೆ ಅದನ್ನು ತಿರಸ್ಕರಿಸಿತ್ತು” ಎಂದು ಮಾಹಿತಿ ನೀಡಿದರು.
ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್
ಮನುವಾದಿಗಳ ಬಣ್ಣ ಮತ್ತೊಮ್ಮೆ ಬಯಲಾಗಿದೆ.