Homeಮುಖಪುಟಪಶ್ಚಿಮ ಬಂಗಾಳದ ಸೋಲಿನ ಬಳಿಕ 'ಇಂಡಿಯಾದ ಆಸರೆ' ಬಯಸಿದ ಮಮತಾ

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

- Advertisement -
- Advertisement -

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ?

ದೀರ್ಘಕಾಲದವರೆಗೆ ಮಮತಾ ಬ್ಯಾನರ್ಜಿ ‘ಇಂಡಿಯಾ’ ಒಕ್ಕೂಟದ ಅಧಿಕೃತ ಸಭೆಗಳಿಂದ ಒಂದು ರೀತಿಯ ಅಂತರ ಕಾಯ್ದುಕೊಂಡಿದ್ದರು. ಆದರೆ ಮಮತ ಈಗ ಇಂಡಿಯಾ ಸಭೆಗಳಿಗೆ ಹಾಜರಾಗುತ್ತಿದ್ದಾರೆ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಹೊಸ ಉತ್ಸಾಹ ತೋರಿಸುತ್ತಿದ್ದಾರೆ.

ಇಲ್ಲಿ ಗಮನಿಸಬೇಕಾದ ಮುಖ್ಯ ವಿಷಯವೇನೆಂದರೆ, 2026ರ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಮತ್ತು ಕಾಂಗ್ರೆಸ್ ಪಕ್ಷದ ನಡುವೆ ಯಾವುದೇ ಮೈತ್ರಿ ಇರಲಿಲ್ಲ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಶುಭಂಕರ್ ಸರ್ಕಾರ್ ಅವರೇ ಇತ್ತೀಚೆಗೆ ಬಹಿರಂಗವಾಗಿ ಒಪ್ಪಿಕೊಂಡಂತೆ, ಅವರಿಗೆ ಮಮತಾ ಬ್ಯಾನರ್ಜಿ ಅವರೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ವೈಯಕ್ತಿಕ ಇಚ್ಛೆಯಿತ್ತು. ಬಂಗಾಳದ ಕಾಂಗ್ರೆಸ್ ನಾಯಕತ್ವವು ಮೈತ್ರಿಗೆ ಸಿದ್ಧವಿತ್ತಾದರೂ, ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ಇದಕ್ಕೆ ಆಸಕ್ತಿ ತೋರಿಸಿರಲಿಲ್ಲ. ಪ್ರಾಯಶಃ ಅಂದಿನ ಚುನಾವಣಾ ಫಲಿತಾಂಶ ಇಷ್ಟೊಂದು ಭೀಕರವಾಗಿ ಬರಬಹುದು ಎಂದು ಅವರು ಊಹಿಸಿರಲಿಲ್ಲ ಅನಿಸುತ್ತದೆ.

ಚುನಾವಣಾ ಹಿನ್ನಡೆಯ ನಂತರ ಈಗ ರಾಜಕೀಯ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ. ಮಮತಾ ಬ್ಯಾನರ್ಜಿ ಅವರು ದೆಹಲಿ ರಾಜಕಾರಣದತ್ತ ಗಮನ ಹರಿಸಲು ಮೊದಲ ಮತ್ತು ತಕ್ಷಣದ ಕಾರಣ ಬಂಗಾಳದ ಸದ್ಯದ ಪರಿಸ್ಥಿತಿಯೇ ಆಗಿದೆ.

2026ರ ಸೋಲಿನ ನಂತರ, ಸದ್ಯಕ್ಕೆ ಬಂಗಾಳದಲ್ಲಿ ಯಾವುದೇ ವಿಧಾನಸಭಾ ಚುನಾವಣೆ ಎದುರಿಗಿಲ್ಲ ಅಥವಾ ತಕ್ಷಣವೇ ಅಲ್ಲಿ ಸರ್ಕಾರ ಬದಲಾಗುವ ಸಾಧ್ಯತೆಯೂ ಇಲ್ಲ. ಆದರೆ ಅದೇ ಸಮಯದಲ್ಲಿ, ತೃಣಮೂಲ ಕಾಂಗ್ರೆಸ್ ವಿರುದ್ಧ ಬಿಜೆಪಿಯ ರಾಜಕೀಯ ವಾಗ್ದಾಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

ಟಿಎಂಸಿ ನಾಯಕರ ಮೇಲಿನ ಭ್ರಷ್ಟಾಚಾರದ ಆರೋಪಗಳು ರಾಜ್ಯ ರಾಜಕಾರಣದಲ್ಲಿ ಮುನ್ನೆಲೆಗೆ ಬರುತ್ತಿವೆ. ಹಲವು ಶಾಸಕರು (MLAs) ಈಗಾಗಲೇ ಪಕ್ಷ ತೊರೆದಿದ್ದಾರೆ. ಒಂದು ರೀತಿಯಲ್ಲಿ ತೃಣಮೂಲ ಕಾಂಗ್ರೆಸ್‌ನ ಆಂತರಿಕ ಶಾಸಕಾಂಗ ರಚನೆ ದುರ್ಬಲಗೊಂಡಿದೆ. ಕೋಲ್ಕತ್ತಾ ಮಹಾನಗರ ಪಾಲಿಕೆಯಲ್ಲೂ (KMC) ಹಲವು ಕೌನ್ಸಿಲರ್‌ಗಳು ರಾಜೀನಾಮೆ ನೀಡಿದ್ದಾರೆ ಅಥವಾ ನಾಯಕತ್ವದ ವಿರುದ್ಧ ಬಹಿರಂಗವಾಗಿ ಬಂಡಾಯವೆದ್ದಿದ್ದಾರೆ.

ಇಂತಹ ರಕ್ಷಣಾತ್ಮಕ (Defensive) ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಅವರು ರಾಜಕೀಯ ಚರ್ಚೆಯ ಕೇಂದ್ರಬಿಂದುವನ್ನು ಬಂಗಾಳದ ಆಡಳಿತ ವಿರೋಧಿ ಅಲೆಯಿಂದ ಹೊರಗೆ ತಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೆಚ್ಚು ಆಕ್ರಮಣಕಾರಿಯಾಗಿ ಗುರಿಯಾಗಿಸಬಹುದಾದ ದೊಡ್ಡ ರಾಷ್ಟ್ರೀಯ ವಿಷಯಗಳ ಕಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ.

ಇದು ರಾಜಕೀಯ ಕಾರ್ಯತಂತ್ರದ ನಡೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಕಟ್ಟಿಹಾಕಲು ನಿರುದ್ಯೋಗ, ಅಡುಗೆ ಅನಿಲ ಮತ್ತು ಇಂಧನ ಬೆಲೆ ಏರಿಕೆ, ಆರ್ಥಿಕ ಅನಿಶ್ಚಿತತೆ, ವಿದೇಶಾಂಗ ನೀತಿಯ ಮೇಲಿನ ಟೀಕೆಗಳು ಮತ್ತು ಅಮೆರಿಕದೊಂದಿಗಿನ ಪ್ರಮುಖ ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ವಿಳಂಬದಂತಹ ಹಲವು ಸೂಕ್ಷ್ಮ ವಿಷಯಗಳಿವೆ ಎಂದು ವಿರೋಧ ಪಕ್ಷಗಳು ನಂಬಿವೆ. ಮಮತಾ ಬ್ಯಾನರ್ಜಿ ಈಗ ಈ ವಿಶಾಲವಾದ ಜನವಿರೋಧಿ ಅಲೆಯಲ್ಲಿ ತಮಗೊಂದು ಪ್ರಮುಖ ಸ್ಥಾನವನ್ನು ಹುಡುಕಿಕೊಳ್ಳುತ್ತಿದ್ದಾರೆ.

ಮತ್ತೊಂದು ಮುಖ್ಯ ಅಂಶವೆಂದರೆ, ಇತ್ತೀಚಿನ ಚುನಾವಣೆಯ ಸಮಯದಲ್ಲಿ ಬಂಗಾಳವು ಎದುರಿಸಿದ ಆಡಳಿತಾತ್ಮಕ, ಚುನಾವಣಾ ಮತ್ತು ಎಸ್‌ಐಆರ್ ನ ಮತದಾರರ ನಿರ್ವಹಣೆಯ ವಿವಾದಗಳು ದೇಶದ ಪ್ರಜಾಪ್ರಭುತ್ವದ ದೊಡ್ಡ ಆತಂಕ ಎಂಬದನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಧ್ವನಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಬಂಗಾಳವನ್ನು ಒಂದು “ಮಾದರಿ ಪ್ರಕರಣ” (Model Case) ವನ್ನಾಗಿ ಮಾಡಿಕೊಂಡು ಬಿಜೆಪಿಯ ವಿರುದ್ಧ ಜಂಟಿ ದಾಳಿ ನಡೆಸಲು ಚರ್ಚೆಗಳು ಆರಂಭವಾಗಿವೆ. ಇದೇ ವೇಳೆ ಕಾಂಗ್ರೆಸ್ ಜೊತೆಗಿನ ಮಮತಾ ಅವರ ಸಂಬಂಧವೂ ಹೊಸ ಹಂತಕ್ಕೆ ಪ್ರವೇಶಿಸುತ್ತಿದೆ.

ಆದರೆ ಇಲ್ಲಿ ಒಂದು ಪ್ರಮುಖ ವಿಷಯವನ್ನು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಈ ಕ್ಷಣದಲ್ಲಿ ಮಮತಾ ಬ್ಯಾನರ್ಜಿ ಅವರು ಇಡೀ ವಿರೋಧ ಪಕ್ಷದ ಒಕ್ಕೂಟದ “ಏಕೈಕ ನಾಯಕಿ” ಎಂದು ತಮ್ಮನ್ನು ತಾವು ಬಿಂಬಿಸಿಕೊಳ್ಳಲು ಹಿಂದಿನಂತೆ ಪ್ರಯತ್ನಿಸುತ್ತಿಲ್ಲ. ಈ ಹಿಂದೆ, ಮಮತಾ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಲು ಬಯಸಿದ್ದಾರೆಯೇ ಎಂಬ ಚರ್ಚೆ ಪ್ರಾದೇಶಿಕ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿತ್ತು.

ಆದರೆ ಸದ್ಯದ ಮಟ್ಟಿಗಾದರೂ ಮಮತಾ ಅವರು ನೇರ ನಾಯಕತ್ವದ ಪೈಪೋಟಿಯಿಂದ ದೂರ ಉಳಿದಿದ್ದಾರೆ. ತಕ್ಷಣಕ್ಕೆ ಪ್ರಧಾನಿ ಅಭ್ಯರ್ಥಿಯಾಗುವ ಆಸೆಯನ್ನು ಪ್ರದರ್ಶಿಸುವ ಬದಲು, ವಿರೋಧ ಪಕ್ಷಗಳ ನಡುವೆ ಹೆಚ್ಚಿನ ಒಗ್ಗಟ್ಟನ್ನು ಮೂಡಿಸುವಲ್ಲಿ ಅವರು ಸಹಕರಿಸುತ್ತಿದ್ದಾರೆ.

ಮುಂದಿನ ಸಂಸತ್ತಿನ ಮುಂಗಾರು ಅಧಿವೇಶನ (Monsoon Session) ಹತ್ತಿರ ಬರುತ್ತಿರುವುದರಿಂದ ಈ ಸಮಯ ಅತ್ಯಂತ ಪ್ರಮುಖವಾಗಿದೆ. ಸಂಸತ್ತಿನ ಒಳಗೆ ಸಮನ್ವಯತೆ ಸುಧಾರಿಸಿದರೆ ಆರ್ಥಿಕ ಬಿಕ್ಕಟ್ಟು ಮತ್ತು ಹಣದುಬ್ಬರ ಸೇರಿದಂತೆ ಹಲವು ವಿಷಯಗಳ ಮೇಲೆ ಸರ್ಕಾರವನ್ನು ಕೋನರ್ ಮಾಡಬಹುದು ಎಂಬುದು ವಿರೋಧ ಪಕ್ಷಗಳ ಪ್ಲಾನ್ ಆಗಿದೆ. 2029ರ ಲೋಕಸಭಾ ಚುನಾವಣೆಯೇ ನಿಜವಾದ ಟಾರ್ಗೆಟ್ ಆಗಿದ್ದರೂ, ಮಮತಾ ಬ್ಯಾನರ್ಜಿ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮಮತಾ ಬ್ಯಾನರ್ಜಿ ಮೌನಕ್ಕೆ ಶರಣಾಗಿದ್ದರು. ಆದರೆ ಈಗ, ಅವರು ಪೂರ್ಣ ಪ್ರಮಾಣದ ‘ಡ್ಯಾಮೇಜ್ ಕಂಟ್ರೋಲ್’ (ಹಾನಿ ನಿಯಂತ್ರಣ) ಕಸರತ್ತಿಗೆ ಇಳಿದಿದ್ದಾರೆ. ಇದಕ್ಕೆ ಕಾರಣ ಸ್ಪಷ್ಟವಾಗಿದೆ; ಪಕ್ಷದೊಳಗೆ ಆರಂಭವಾಗಿರುವ ವಲಸೆ ರಾಜಕೀಯವು ಟಿಎಂಸಿ ನಾಯಕತ್ವದಲ್ಲಿ ತೀವ್ರ ಕಳವಳ ಮೂಡಿಸಿದೆ. ಶಾಸಕರ ನಡುವಿನ ಬಿರುಕಿನ ನಂತರ, ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರಲ್ಲೂ ಇಂತಹ ಒಡಕು ಮೂಡಬಹುದು ಎಂಬ ಆತಂಕ ಶುರುವಾಗಿದೆ.

ಸುಖೇಂದು ಶೇಖರ್ ರಾಯ್ ಅವರಂತಹ ಹಿರಿಯ ನಾಯಕರ ರಾಜೀನಾಮೆ ಮತ್ತು ನಟಿ ಕೋಯಲ್ ಮಲ್ಲಿಕ್ ರಾಜೀನಾಮೆ ನೀಡಲು ಬಯಸಿದ್ದಾರೆ ಎಂಬ ವರದಿಗಳು ಪಕ್ಷದೊಳಗಿನ ಅನಿಶ್ಚಿತತೆಯನ್ನು ಹೆಚ್ಚಿಸಿವೆ. ಈ ಕಠಿಣ ಪರಿಸ್ಥಿತಿಯಲ್ಲಿ, ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರು ವೈಯಕ್ತಿಕವಾಗಿ ಎಲ್ಲಾ ಸಂಸದರನ್ನು ಸಂಪರ್ಕಿಸಿ, ಧೈರ್ಯ ತುಂಬಿ ಸಂಘಟನೆಯನ್ನು ಒಟ್ಟಾಗಿ ಇಡಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಪಕ್ಷದ ಮೂಲಗಳ ಪ್ರಕಾರ, ಎಲ್ಲ ಸಂಸದರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಗುತ್ತಿಲ್ಲ. ಕೆಲವು ಸಂಸದರು ಫೋನ್ ಕರೆಗಳಿಗೂ ಸಿಗುತ್ತಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ಟಿಎಂಸಿ ವೋಟ್ ಬ್ಯಾಂಕ್ ಅಷ್ಟು ಸುಲಭವಾಗಿ ಕರಗುವುದಿಲ್ಲ, ಪರಿಸ್ಥಿತಿ ಮತ್ತೆ ಬಂಗಾಳದಲ್ಲಿ ನಮ್ಮ ಪರವಾಗಲಿದೆ ಎಂದು ಕೆಲವು ನಾಯಕರು ಆಶಾವಾದ ಹೊಂದಿದ್ದಾರೆ.

ಪ್ರಸ್ತುತ ತೃಣಮೂಲ ಕಾಂಗ್ರೆಸ್ ಮೂರು ಕಡೆಯಿಂದ ಒತ್ತಡ ಎದುರಿಸುತ್ತಿದೆ. ಒಂದೆಡೆ ಬಿಜೆಪಿ ಅವರ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಕೈಹಾಕುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಮತ್ತು ಎಡಪಕ್ಷಗಳು (Left) ಕಳೆದುಹೋದ ತಮ್ಮ ನೆಲೆಯನ್ನು ಮರಳಿ ಪಡೆಯಲು ಹೋರಾಡುತ್ತಿವೆ. ಇಂತಹ ಸಂದರ್ಭದಲ್ಲಿ ‘ಇಂಡಿಯಾ’ ಒಕ್ಕೂಟವನ್ನು ಪುನಶ್ಚೇತನಗೊಳಿಸುವುದು ಮಮತಾ ಬ್ಯಾನರ್ಜಿ ಅವರಿಗೆ ರಾಜಕೀಯ ಅನಿವಾರ್ಯತೆಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಒಕ್ಕೂಟದ ಧ್ವನಿ ಜೋರಾದರೆ, ಬಂಗಾಳದೊಳಗಿನ ಪಕ್ಷದ ಆಂತರಿಕ ಅಸ್ಥಿರತೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಬಹುದು ಎಂಬುದು ದೀದಿಯ ಮಾಸ್ಟರ್ ಪ್ಲಾನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...