Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

- Advertisement -
- Advertisement -

ಕಲಬುರ್ಗಿ ಜಿಲ್ಲೆಯ ಅಫಜಲಪುರ ಅಷ್ಟೇನೂ ಅಭಿವೃದ್ಧಿ ಕಾಣದೆ, ಇಂದಿಗೂ ಮೂಲಭೂತ ಸೌಕರ‍್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಶುದ್ಧ ಕುಡಿಯುವ ನೀರನ್ನೇ ಕಾಣದ ಹತ್ತಾರು ಹಳ್ಳಿಗಳು ಇಂದಿಗೂ ಕ್ಷೇತ್ರದಲ್ಲಿವೆ. ಬಸ್ಸುಗಳೇ ಹೋಗದ, ರಸ್ತೆಗಳೇ ಇಲ್ಲದ ಹಳ್ಳಿಗಳೂ ಇವೆ. “ಉತ್ತಮ” ಶಿಕ್ಷಣ ಪಡೆಯಲು ಒಳ್ಳೆಯ ಸರ್ಕಾರಿ ಅಥವಾ ಖಾಸಗೀ ಸಂಸ್ಥೆಗಳೂ ಇಲ್ಲ. ಸೂರಿಲ್ಲ, ಉದ್ಯೋಗವಿಲ್ಲ ಹೀಗೆ ಇನ್ನೂ ಸಾಕಷ್ಟು ಸಮಸ್ಯೆಗಳಿವೆ. ಕಳೆದ 45 ವರ್ಷಗಳಿಂದ ಮಾಲೀಕಯ್ಯ ಗುತ್ತೇದಾರ್ ಮತ್ತು ಎಂ ವೈ ಪಾಟೀಲ್‌ರವರೇ ಕ್ಷೇತ್ರದ ಶಾಸಕರಾಗಿದ್ದು, ಜನರ ಕಷ್ಟಗಳಿಗೆ ಬೆನ್ನು ತಿರುಗಿಸಿರುವುದರಿಂದ ಈ ಸಮಸ್ಯೆಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಪರಿಹಾರ ಕಂಡುಕೊಳ್ಳಲು ಜನತೆ ಮುಂದಾಗಿದ್ದಾರೆ. ಇವರಿಬ್ಬರ ಆಡಳಿತದಿಂದ ಬೇಸೆತ್ತಿರುವ ಜನತೆ ಪಕ್ಷೇತರ ಅಭ್ಯರ್ಥಿ, ಹೊಸ ಮುಖ ನಿತಿನ್ ಗುತ್ತೇದಾರ್‌ ಕಡೆ ಮುಖ ಮಾಡಿದ್ದಾರೆ. ಇದರಿಂದ ಜನರ ಕಷ್ಟಗಳಿಗೆ ಪರಿಹಾರ ಸಿಗುತ್ತದೆಯೋ, ಬಿಡುತ್ತದೆಯೋ ಗೊತ್ತಿಲ್ಲ, ಆದರೆ ಜನರ ಸಿಟ್ಟಿಗೆ ಕ್ಷಣಿಕ ಪರಿಹಾರ ಸಿಗುವ ಸೂಚನೆಗಳು ಕಂಡುಬರುತ್ತಿವೆ.

ರಾಜಕೀಯ ಇತಿಹಾಸ

ಸಾಮಾನ್ಯ ಕ್ಷೇತ್ರವಾಗಿರುವ ಅಫಜಲಪುರ ಕಾಂಗ್ರೆಸ್‌ನ ಭದ್ರಕೋಟೆ ಅಂತಲೇ ಹೇಳಬಹುದು. ಇದುವರೆಗೆ ನಡೆದಿರುವ 15 ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ 10 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಜನತಾಪಕ್ಷದ ಇಬ್ಬರು, ಜೆಡಿಎಸ್ ಪಕ್ಷದಿಂದ ಇಬ್ಬರು ಮತ್ತು ಕೆಸಿಪಿಯಿಂದ ಒಬ್ಬ ಅಭ್ಯರ್ಥಿ ಜಯಗಳಿಸಿದ್ದಾರೆ. ವಿಶೇಷವೆಂದರೆ ಬಿಜೆಪಿ ಇಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಮೊದಲ ಚುನಾವಣೆಯಿಂದ 1978ರ ಚುನಾವಣೆವರೆಗೂ ಇಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಸತತವಾಗಿ ಜಯಗಳಿಸಿದ್ದರು. ಆದರೆ 1978ರಲ್ಲಿ ಮೊದಲ ಬಾರಿಗೆ ಲಿಂಗಾಯಿತ ಸಮುದಾಯದ ಎಂ ವೈ ಪಾಲೀಲ್ ಜನತಾ ಪಕ್ಷದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಹನುಮಂತರಾವ್ ದೇಸಾಯಿಯವರನ್ನು ಮಣಿಸಿ ಗೆಲುವು ಸಾಧಿಸಿದ್ದರು. ಆದರೆ ಮುಂದಿನ 1983ರ ಚುನಾವಣೆಯಲ್ಲಿ ಜನತಾ ಪಕ್ಷ ಸೇರಿದ್ದ ಹನುಮಂತರಾವ್ ದೇಸಾಯಿ ಕಾಂಗ್ರೆಸ್‌ನಿಂದ ಕಣಕ್ಕಿಳಿದ ಎಂ.ವೈ ಪಾಟೀಲ್‌ರನ್ನು ಮಣಿಸಿದರು.

ಮಾಲಿಕಯ್ಯ ಗುತ್ತೇದಾರ್ ಆಳ್ವಿಕೆ

1985 ರಿಂದ ಮಾಲಿಕಯ್ಯ ಗುತ್ತೇದಾರ್‌ರವರ ಪಾರುಪತ್ಯ ಆರಂಭವಾಯಿತು. ಕ್ಷೇತ್ರದಲ್ಲಿ ಹೆಚ್ಚಿನ ಮತದಾರರಿಲ್ಲದ ಈಡಿಗ ಸಮುದಾಯದ ಅವರು 85 ಮತ್ತು 89ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಶಾಸಕರಾದರು. ನಂತರ 1994ರಲ್ಲಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು 1999ರಲ್ಲಿ ಜೆಡಿಎಸ್‌ನಿಂದ ಗೆದ್ದು ಸತತ ನಾಲ್ಕು ಬಾರಿಗೆ ಶಾಸಕರಾದರು.

2004ರಲ್ಲಿ ಮಾಲಿಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರಿದರು. ಅದರಿಂದಾಗಿ ಎಂ.ವೈ ಪಾಟೀಲ್ ಜೆಡಿಎಸ್ ಸೇರಿದರು. ಆ ಚುನಾವಣೆಯಲ್ಲಿ ಎಂ.ವೈ ಪಾಟೀಲ್ ಗೆಲುವು ಸಾಧಿಸುವ ಮೂಲಕ ಮಾಲಿಕಯ್ಯ ಗುತ್ತೇದಾರ್‌ರವರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದರು.

ಆದರೆ 2008ರ ಚುನಾವಣೆ ವೇಳೆಗೆ ಮಾಲಿಕಯ್ಯ ಗುತ್ತೇದಾರ್ ಮತ್ತೆ ಕಾಂಗ್ರೆಸ್ ಸೇರಿದರೆ ಎಂ.ವೈ ಪಾಟೀಲ್ ಬಿಜೆಪಿ ಸೇರಿದರು. ಗೆಲುವಿನ ಹಳಿಗೆ ಮರಳಿದ ಮಾಲಿಕಯ್ಯ ಗುತ್ತೇದಾರ್ ಗೆಲುವು ಕಂಡರು. 2013ರಲ್ಲಿಯೂ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಕಂಡರೆ ಎಂ.ವೈ ಪಾಟೀಲ್ ಕೆಜೆಪಿ ಸೇರಿ ಸೋಲು ಕಂಡರು. ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ವಿರುದ್ಧ ಕಿಡಿಕಾರುತ್ತಿದ್ದ ಮಾಲಿಕಯ್ಯ ಗುತ್ತೇದಾರ್ 2018 ರ ಚುನಾವಣೆ ವೇಳೆಗೆ ಬಿಜೆಪಿ ಸೇರಿ ಸೋಲು ಕಂಡರು. ಅದೇ ಸಮಯಕ್ಕೆ ಎಂ.ವೈ ಪಾಟೀಲ್ ಕಾಂಗ್ರೆಸ್ ಸೇರಿ ಜಯ ಸಾಧಿಸಿದರು

ಅಂದಾಜು ಜಾತಿವಾರು ಮತಗಳು

ಅಫಜಲಪುರದಲ್ಲಿ ಒಟ್ಟು 2,25,000 ಮತಗಳಿವೆ. ಲಿಂಗಾಯಿತ ಸಮುದಾಯದ 48,000 ಮತಗಳಿದ್ದರೆ, 45,000 ದಷ್ಟು ಪ.ಜಾತಿಯ ಮತಗಳು ಕ್ಷೇತ್ರದಲ್ಲಿವೆ. ಕೋಲಿ/ಕಬ್ಬಲಿಗ ಸಮುದಾಯದ 44,000 ಮತಗಳು ಮತ್ತು ಮುಸ್ಲಿಂ ಸಮುದಾಯದ 40,000 ಮತಗಳಿದ್ದರೆ, ಕುರುಬ ಸಮುದಾಯದ 28,000 ಮತಗಳಿವೆ. ಇತರ ಸಮುದಾಯಗಳು ಸುಮಾರು 20,000 ದಷ್ಟು ಮತಗಳಿವೆ.

ಹಾಲಿ ಪರಿಸ್ಥಿತಿ

ಮೂರು ಬಾರಿ ಜಯ ಕಂಡಿರುವ ಲಿಂಗಾಯತ ಸಮುದಾಯದ ಎಂ.ವೈ ಪಾಟೀಲ್ ಜನತಾ ಪಕ್ಷ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಕೆಜೆಪಿ ಎಲ್ಲಾ ಪಕ್ಷಗಳನ್ನು ಸುತ್ತು ಹಾಕಿ ಸದ್ಯ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದಾರೆ. ಮತ್ತೆ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿಯಾಗಿದ್ದಾರೆ. ಇನ್ನು ಆರು ಬಾರಿ ವಿಜಯ ಪತಾಕೆ ಹಾರಿಸಿರುವ ಈಡಿಗ ಸಮುದಾಯದ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್, ಕೆಸಿಪಿ, ಜೆಡಿಎಸ್‌ನಿಂದ ಗೆದ್ದು ಬಿಜೆಪಿ ಸೇರಿ ಸೋತಿದ್ದಾರೆ. ಸದ್ಯ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಕಳೆದ 40 ವರ್ಷ ಇವರಿಬ್ಬರ ನಡುವೆಯೇ ಶಾಸಕ ಸ್ಥಾನ ಅದಲು ಬದಲಾಗುತ್ತಾ ಬಂದಿದೆ.

ಬಂಡಾಯಗಾರನ ಉದಯ

ಆದರೂ ಈ ಇಬ್ಬರಿಗೆ ಈ ಬಾರಿಯ ಚುನಾವಣೆ ಅಷ್ಟು ಸುಲಭವಲ್ಲ ಎನ್ನುವುದು ವಾಸ್ತವ. ಬಿಜೆಪಿಯೊಳಗಿನ ಬಂಡಾಯದ ಬಿಸಿ ಅಫಜಲಪುರಕ್ಕೂ ತಟ್ಟಿದೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರ ಸಹೋದರ ಮಾಜಿ ಜಿ.ಪಂ ಸದಸ್ಯ ನಿತಿನ್ ವಿ ಗುತ್ತೇದಾರ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ತೊಡೆ ತಟ್ಟಿದ್ದಾರೆ. ಮಾಲೀಕಯ್ಯ ಗುತ್ತೇದಾರ್‌ಗಿಂತಲೂ ಹೆಚ್ಚಿನ ಜನಪ್ರಿಯತೆ ಹೊಂದಿರುವ ನಿತಿನ್ ಗುತ್ತೇದಾರ್ ಪಕ್ಷೇತರರಾಗಿ ಕಣದಲ್ಲಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈಗಾಗಲೇ ಅಫಜಲಪುರ ಹಳ್ಳಿ-ಹಳ್ಳಿಗಳಲ್ಲಿ ನಿತಿನ್ ಗುತ್ತೇದಾರ್ ಪರವಾಗಿ ಜನರು ನೇರವಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಮತ್ತೊಂದು ಕಡೆ ಜೆಡಿಎಸ್ ಕೂಡ ತನ್ನ ಹಳೆಯ ಕ್ಷೇತ್ರವನ್ನು ಮರಳಿ ಗಳಿಸಿಕೊಳ್ಳುವ ಯತ್ನದಲ್ಲಿ ಗಟ್ಟಿಯಾಗಿ ನಿಂತಿದೆ. ಕೋಲಿ ಸಮುದಾಯದ ಶಿವಕುಮಾರ ನಾಟೀಕಾರ ಜೆಡಿಎಸ್ ಅಭ್ಯರ್ಥಿಯಾಗಿದ್ದು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಪಿಎಸ್‌ಐ ಹಗರಣದ ಆರೋಪಿಗಳಲ್ಲಿ ಒಬ್ಬರಾದ ಕೋಲಿ ಸಮುದಾಯದ ಆರ್ ಡಿ ಪಾಟೀಲ ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದಾರೆ. ಇವರಿಬ್ಬರಲ್ಲಿ ಯಾರು ಸಮುದಾಯದ ಮತಗಳನ್ನು ಸೆಳೆದುಕೊಳ್ಳಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದೆ.

2023ರ ಸಾಧ್ಯತೆಗಳು

82 ವರ್ಷದ ಶಾಸಕ ಎಂ.ವೈ ಪಾಟೀಲ್‌ರವರಿಗೆ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಆದರೆ ಜಾತಿ ಬಲ ಮತ್ತು ಬಿಜೆಪಿಯಲ್ಲಿನ ಒಳಜಗಳ ಬಂಡಾಯದ ಬಿಸಿ ಅವರಿಗೆ ವರವಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ಬಿಜೆಪಿ ಪಕ್ಷವು ಇಲ್ಲಿ ಮಾಲೀಕಯ್ಯ ಗುತ್ತೇದಾರ್ ಬದಲಾಗಿ ಅವರ ಸಹೋದರ ನಿತಿನ್ ಗುತ್ತೇದಾರ್‌ರವರಿಗೆ ಟಿಕೆಟ್ ನೀಡಿದ್ದಲ್ಲಿ ಗೆದ್ದು ಖಾತೆ ತೆರೆಯುವ ಸುವರ್ಣ ಅವಕಾಶವಿತ್ತು. ಆದರೆ ಮತ್ತೆ ಮಾಲೀಕಯ್ಯ ಗುತ್ತೇದಾರ್‌ರವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಬಂಡಾಯಕ್ಕೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಅಣ್ಣ ತಮ್ಮಂದಿರ ಮತ ವಿಭಜನೆಯ ಲಾಭ ಕಾಂಗ್ರೆಸ್‌ಗೆ ಗೆಲುವಿನ ಅವಕಾಶ ತೆರೆಯಬಲ್ಲದು ಎಂಬುದು ಜನರ ಅಭಿಮತವಾಗಿದೆ.

ಇದನ್ನೂ ಓದಿ: ವಿರಾಜಪೇಟೆ: ಕೊಡವ v/s ಅರೆಭಾಷೆಗೌಡ ದಾಳದಲ್ಲಿ ಕಾಂಗ್ರೆಸ್ ಅರಳುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...