ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ’ಯುವಕರಿಗೆ ಕೇವಲ ನಾಲ್ಕು ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯುವಕರು ಕೇವಲ ನಾಲ್ಕು ವರ್ಷಗಳಲ್ಲು ಅವರ ಜೀವನದುದ್ದಕ್ಕೂ ದೇಶಕ್ಕಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮಂಗಳವಾರ (ಜೂನ್.14) ಘೋಷಿಸಲಾದ ಅಗ್ನಿಪಥ್ ಯೋಜನೆ ಮೂಲಕ ನಾಲ್ಕು ವರ್ಷಗಳ ಅಲ್ಪಾವಧಿಯ ಒಪ್ಪಂದದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಸೈನಿಕರನ್ನು ನೇಮಿಸಿಕೊಳ್ಳ ಬಹುದಾಗಿದೆ. ಈ ಯೋಜನೆ ವಿರುದ್ಧ ಯುವಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ
सेना भर्ती में केंद्र सरकार की नई योजना का देश में हर तरफ़ विरोध हो रहा है। युवा बहुत नाराज़ हैं। उनकी माँग एकदम सही हैं।
सेना हमारे देश की शान है, हमारे युवा अपना पूरा जीवन देश को देना चाहते हैं, उनके सपनों को 4 साल में बांधकर मत रखिए।
1/2
— Arvind Kejriwal (@ArvindKejriwal) June 16, 2022
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಸೇನಾ ನೇಮಕಾತಿಯಲ್ಲಿ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ದೇಶದ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಯುವಕರು ತುಂಬಾ ಕೋಪಗೊಂಡಿದ್ದಾರೆ. ಆದರೆ, ಅವರ ಬೇಡಿಕೆಗಳು ಸರಿಯಾಗಿವೆ. ಸೇನೆ ನಮ್ಮ ದೇಶದ ಹೆಮ್ಮೆ, ನಮ್ಮ ಯುವಕರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ನೀಡಲು ಬಯಸುತ್ತಾರೆ, ಅವರ ಕನಸುಗಳನ್ನು ನಾಲ್ಕು ವರ್ಷಗಳಿಗೆ ಕಟ್ಟಬೇಡಿ” ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ “ಕೇಂದ್ರ ಸರ್ಕಾರಕ್ಕೆ ಮನವಿ: ಯುವಕರಿಗೆ ನಾಲ್ಕು ವರ್ಷ ಅಲ್ಲ, ಇಡೀ ಜೀವನ ದೇಶ ಸೇವೆ ಮಾಡುವ ಅವಕಾಶ ನೀಡಬೇಕು. ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ನಡೆಯದ ಕಾರಣ ವಯೋಮಿತಿ ಮೀರಿದವರಿಗೂ ಅವಕಾಶ ನೀಡಬೇಕು” ಎಂದು ಮನವಿ ಮಾಡಿದ್ದಾರೆ.
ದೇಶದಾದ್ಯಂತ ಉದ್ಯೋಗಾಕಾಂಕ್ಷಿಗಳು ಸರ್ಕರದ ನಿರ್ಧಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ.
ಇದೇ ವೇಳೆ ರಾಜ್ಯದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ. ಗುರುವಾರ ದೆಹಲಿಯ ನಾಂಗ್ಲೋಯ್ ರೈಲು ನಿಲ್ದಾಣದಲ್ಲಿ ಹಳಿಗಳ ಮೇಲೆ ಮಲಗಿ ರೈಲನ್ನು ನಿಲ್ಲಿಸಿ ಪ್ರತಿಭಟಿಸಿದ್ದಾರೆ.
ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ