ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ದೆಹಲಿ ಪೊಲೀಸರು ಆರೋಪಿಗಳ ಕಸ್ಟಡಿ (ರಿಮಾಂಡ್) ಕೋರುವಾಗ, ಅವರು ನೇಪಾಳದಲ್ಲಿ ನಡೆದ ಪ್ರತಿಭಟನೆಯ ಮಾದರಿಯಲ್ಲೇ ಇಲ್ಲೂ ಪ್ರತಿಭಟನೆ ನಡೆಸಿದ್ದಾರೆ. ಇದು ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಿಸುವ ಪಿತೂರಿಯಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.
ಭಾರತ- ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸುವ ವೇಳೆ ಆರೋಪಿಗಳು ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಸಂದೇಶಗಳಿದ್ದ ಟಿ-ಶರ್ಟ್ಗಳನ್ನು ಧರಿಸಿದ್ದರು ಎಂದು ಸಾರ್ವಜನಿಕ ಅಭಿಯೋಜಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ಪ್ರತಿಭಟನೆಯ ಹಿಂದೆ ದೊಡ್ಡ ಪಿತೂರಿ ಅಡಗಿದೆ. ಇತರ ಕೆಲ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣದ ಸಮಗ್ರ ತನಿಖೆಗಾಗಿ ಬಂಧಿತರ ಕಸ್ಟಡಿ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಪ್ರತಿಭಟನೆ ತಡೆಯುವ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಪ್ರತಿಭಟನೆಗೆ ಹಣಕಾಸಿನ ನೆರವು ಎಲ್ಲಿಂದ ಬಂದಿದೆ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಆರೋಪಿಗಳ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವ ಅಗತ್ಯವಿದೆ ಎಂದಿರುವ ಪೊಲೀಸರು, ನಾಲ್ಕು ವಿಭಿನ್ನ ಸ್ಥಳಗಳಿಂದ ಬಂದ ನಾಲ್ವರು ವ್ಯಕ್ತಿಗಳು ಒಟ್ಟಾಗಿ ಈ ಟಿ-ಶರ್ಟ್ಗಳನ್ನು ಮುದ್ರಿಸಿದ್ದರು ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ ಎಂದು ವರದಿಗಳು ಹೇಳಿವೆ.
ಈ ನಡುವೆ ಆರೋಪಿಗಳ ಪರ ವಕೀಲರು, ಆರೋಪಿಗಳು ವಿರೋಧ ಪಕ್ಷಕ್ಕೆ ಸೇರಿದವರಾಗಿರುವುದರಿಂದ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಗಳು ಎಲ್ಲೆಡೆ ನಡೆಯುತ್ತಿವೆ ಮತ್ತು ಪ್ರತಿಭಟನೆ ಮಾಡುವುದು ಅವರ ಹಕ್ಕು ಎಂದು ವಾದಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯವನ್ನು ಈ ರೀತಿ ಹತ್ತಿಕ್ಕಬಾರದು ಎಂದು ಹೇಳಿದ್ದಾರೆ.
ಸುಮಾರು 15 ಜನರು ಎಐ ಶೃಂಗಸಭೆಯ ಹಾಲ್ ಸಂಖ್ಯೆ 5ರ ಲಾಬಿ ಪ್ರದೇಶಕ್ಕೆ ಪ್ರವೇಶಿಸಿ, ಶರ್ಟ್ಗಳ ಒಳಗೆ ಧರಿಸಿದ್ದ ಟಿ-ಶರ್ಟ್ಗಳನ್ನು ತೆಗೆದು ಘೋಷಣೆಗಳನ್ನು ಕೂಗಿದ್ದಾರೆ ಎಂದು ಎಸಿಪಿ (ನವದೆಹಲಿ) ದೇವೇಶ್ ಮಹ್ಲಾ ಹೇಳಿದ್ದಾರೆ. ಪ್ರತಿಭಟನೆಯ ನಂತರ ದೆಹಲಿ ಪೊಲೀಸರು ಆರಂಭದಲ್ಲಿ ಸುಮಾರು 10 ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು.
ಬಂಧಿತ ನಾಲ್ವರು ಆರೋಪಿಗಳನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು; ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದ್ದು, ಅದರಲ್ಲಿ ಹಲವು ಗಂಭೀರ ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.
ಅಪರಾಧಿಗಳು ಕಾರ್ಯಕ್ರಮದ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಸುದೀರ್ಘವಾದ ಸಂಘರ್ಷ ಅಥವಾ ನೂಕಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.


