Homeಮುಖಪುಟಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

- Advertisement -
- Advertisement -

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ) ಶಾಸಕ ರೋಹಿತ್ ಪವಾರ್ ಆರೋಪಿಸಿದ್ದಾರೆ.

ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ.

ಹಾಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರು ಟಿಡಿಪಿ ಪಕ್ಷದ ಸಂಸದರು. ಟಿಡಿಪಿ ಪಕ್ಷ ಮತ್ತು ವಿಎಸ್ಆರ್ ವೆಂಚರ್ಸ್ ನಡುವೆ ಆರ್ಥಿಕ ಮತ್ತು ರಾಜಕೀಯ ಸಂಬಂಧಗಳಿವೆ. ಹೀಗಿರುವಾಗ ಅಜಿತ್ ಪವಾರ್ ವಿಮಾನ ಪತನದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲ ಎಂದು ರೋಹಿತ್ ಪವಾರ್ ಹೇಳಿದ್ದಾರೆ. ರಾಮ್ ಮೋಹನ್ ನಾಯ್ಡು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ವಿಎಸ್ಆರ್ ವೆಂಚರ್ಸ್‌ಗೆ ಸಾಲ ನೀಡಿದವರಲ್ಲಿ ಒಬ್ಬರು ಹೆರಿಟೇಜ್ ಫಿನ್‌ಲೀಸ್ ಲಿಮಿಟೆಡ್. ಬ್ಯಾಂಕೇತರ ಹಣಕಾಸು ಕಂಪನಿಯಾದ (ಎನ್‌ಬಿಎಫ್‌ಸಿ) ಇದರ ಸ್ಥಾಪಕರು ಟಿಡಿಪಿ ಪಕ್ಷದ ನಾಯಕ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಂದು ರೋಹಿತ್ ಪವಾರ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಮತ್ತು ಸೊಸೆ ಬ್ರಾಹ್ಮಣಿ ಕೂಡ ಹೆರಿಟೇಜ್ ಫಿನ್‌ಲೀಸ್ ಲಿಮಿಟೆಡ್‌ನ ನಿರ್ದೇಶಕ ಮಂಡಳಿಯಲ್ಲಿದ್ದಾರೆ. ಹಾಗಾಗಿ, ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ತನಿಖೆಯ ಪಾರದರ್ಶಕತೆಯನ್ನು ಕುಂದಿಸಬಹುದು ಎಂದು ರೋಹಿತ್ ಪವಾರ್ ತಿಳಿಸಿದ್ದಾರೆ.

ಟಿಡಿಪಿ ಮತ್ತು ವಿಎಸ್‌ಆರ್ ವೆಂಚರ್ಸ್ ಕಂಪನಿಯ ನಡುವೆ ಅತ್ಯಂತ ಆಪ್ತ ಸಂಬಂಧವಿದೆ. ಇದಕ್ಕೆ ಸಾಕ್ಷಿಯಾಗಿ, ಕಳೆದ ವರ್ಷ ಜೈಪುರದಲ್ಲಿ ನಡೆದ ಕಂಪನಿಯ ನಿರ್ದೇಶಕರಲ್ಲಿ ಒಬ್ಬರಾದ ರೋಹಿತ್ ಸಿಂಗ್ ಅವರ ವಿವಾಹ ಸಮಾರಂಭದಲ್ಲಿ ಅನೇಕ ಟಿಡಿಪಿ ನಾಯಕರು ಭಾಗವಹಿಸಿದ್ದರು ಎಂದು ರೋಹಿತ್ ಪವಾರ್ ವಿವರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಪವಾರ್, ಅಜಿತ್ ಪವಾರ್ ವಿಮಾನ ಪತನದ ಕುರಿತು ವಿವರವಾದ ವರದಿ ಎಂದು ಹೇಳಿ ಮಾಹಿತಿ ನೀಡಿದ್ದು, ಅಜಿತ್ ಪವಾರ್ ಸಾವು ‘ರಾಜಕೀಯ ಅಥವಾ ವಾಣಿಜ್ಯ ಪಿತೂರಿ’ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಎಸ್‌ಆರ್ ವೆಂಚರ್ಸ್ ಕಂಪನಿಯನ್ನು ‘ಅತ್ಯಂತ ಪ್ರಭಾವಿ’ ರಾಜಕೀಯ ಮತ್ತು ವ್ಯಾಪಾರ ಹಿತಾಸಕ್ತಿಗಳು ರಕ್ಷಿಸುತ್ತಿವೆ ಎಂದಿರುವ ಅವರು, ಕಂಪನಿಯ ಕೆಲವು ಹಣಕಾಸುದಾರರು ಟಿಡಿಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ವಿಮಾನ ಅಪಘಾತ ಸಂಭವಿಸಿದ ಬೆನ್ನಲ್ಲೇ ವಿಮಾನಯಾನ ಸಚಿವರು ವಿಎಸ್‌ಆರ್ ವೆಂಚರ್ಸ್ ಕಂಪನಿಗೆ ‘ಕ್ಲೀನ್ ಚಿಟ್’ ಕೊಟ್ಟಂತೆ ತೋರುವ ಹೇಳಿಕೆಗಳನ್ನು ಏಕೆ ನೀಡಿದ್ದರು ಎಂದು ಪ್ರಶ್ನಿಸಿದ ರೋಹಿತ್ ಪವಾರ್, “ನಾವು ಈ ಪ್ರಕರಣದ ಆಳಕ್ಕೆ ಹೋದಷ್ಟೂ, ಆ ಕಂಪನಿಗೆ ಅತ್ಯಂತ ಪ್ರಭಾವಿ ವ್ಯಕ್ತಿಗಳ ಬೆಂಬಲವಿದೆ ಎಂಬುವುದು ಸ್ಪಷ್ಟವಾಗುತ್ತಿದೆ. ಈಗ ಕೇವಲ ಪ್ರಧಾನಮಂತ್ರಿ ಮತ್ತು ಗೃಹ ಸಚಿವರು ಮಾತ್ರ ಅಜಿತ್ ದಾದಾ ಅವರಿಗೆ ನ್ಯಾಯ ಕೊಡಿಸಲು ಸಾಧ್ಯ” ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಹಂಚಿಕೊಂಡ ಸಹಿ ಇಲ್ಲದ ಹೇಳಿಕೆಯಲ್ಲಿ ಟಿಡಿಪಿ ಪಕ್ಷವು, ರೋಹಿತ್ ಪವಾರ್ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿದೆ. ಸಚಿವ ರಾಮ್ ಮೋಹನ್ ನಾಯ್ಡು ಅಥವಾ ಟಿಡಿಪಿ ಪಕ್ಷವು ವಿಮಾನ ಅಪಘಾತಕ್ಕೆ ಸಂಬಂಧಿಸಿದವರನ್ನು ರಕ್ಷಿಸುತ್ತಿದೆ ಎಂಬ ಆರೋಪಗಳು ‘ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿದ್ದು, ಇವು ರಾಜಕೀಯ ಪ್ರೇರಿತವಾಗಿವೆ’ ಎಂದಿದೆ.

ವಿಮಾನ ಅಪಘಾತದ ತನಿಖೆಗಳನ್ನು ಸ್ಥಾಪಿತ ಅಂತಾರಾಷ್ಟ್ರೀಯ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಪ್ರೋಟೋಕಾಲ್‌ಗಳು ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯ (ಐಸಿಎಒ) ಮಾನದಂಡಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುತ್ತದೆ. ಈ ವಿಚಾರಣೆಗಳು ತಾಂತ್ರಿಕವಾಗಿರುತ್ತವೆ, ಪಾರದರ್ಶಕವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಪುರಾವೆ ಆಧಾರಿತವಾಗಿರುತ್ತವೆ ಎಂದು ಟಿಡಿಪಿ ಹೇಳಿದೆ.

ಒಬ್ಬ ಗೌರವಾನ್ವಿತ ರಾಜಕೀಯ ನಾಯಕನ ದುರಂತ ಅಂತ್ಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿರುವುದು ಅತ್ಯಂತ ದುರದೃಷ್ಟಕರ. ಟಿಡಿಪಿ ಯಾವಾಗಲೂ ಅಜಿತ್ ಪವಾರ್ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದೆ. ಸತ್ಯ ಹೊರಬರುವಂತೆ ನೋಡಿಕೊಳ್ಳಲು ಮತ್ತು ಒಂದು ವೇಳೆ ಯಾರಾದರೂ ತಪ್ಪಿತಸ್ಥರಿದ್ದರೆ ಅವರನ್ನು ಹೊಣೆಗಾರರನ್ನಾಗಿ ಮಾಡಲು ನಾವು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ತಿಳಿಸಿದೆ.

ವಿಮಾನ ಅಪಘಾತ ತನಿಖಾ ಸಂಸ್ಥೆಯಾದ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಅಜಿತ್ ಪವಾರ್ ವಿಮಾನ ಪತನದ ತಾಂತ್ರಿಕ ತನಿಖೆಯ ನೇತೃತ್ವ ವಹಿಸಿದೆ. ಈ ತನಿಖೆಯ ಪ್ರಾಥಮಿಕ ವರದಿಯು ಫೆಬ್ರವರಿ 27 ಅಥವಾ 28 ರೊಳಗೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ತಿಳಿಸಿದ್ದಾರೆ.

ವಿಮಾನ ಪತನಗೊಂಡ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ವಿಎಸ್ಆರ್ ವೆಂಚರ್ಸ್‌ನ ನಿರ್ದೇಶಕ ವಿಜಯ್ ಕುಮಾರ್ ಸಿಂಗ್, ಪತನಗೊಂಡ ಲಿಯರ್ಜೆಟ್ 45 ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷಗಳಿರಲಿಲ್ಲ ಎಂದು ಖಚಿತವಾಗಿ ಹೇಳಿದ್ದರು.

ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ರೋಹಿತ್ ಪವಾರ್ (ಇದರ ಪ್ರತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕಳುಹಿಸಿದ್ದಾರೆ), ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಮತ್ತು ವಿಎಸ್‌ಆರ್ ವೆಂಚರ್ಸ್ ನಡುವಿನ ಸಂಬಂಧದ ಬಗ್ಗೆ ಸ್ವತಂತ್ರ ಮತ್ತು ಸಮರ್ಥ ಪ್ರಾಧಿಕಾರದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ತನಿಖೆಯು ಪೂರ್ಣಗೊಳ್ಳುವವರೆಗೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನೀವು ಯಾವಾಗಲೂ ಅಜಿತ್ ದಾದಾ ಮತ್ತು ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಗೌರವವನ್ನು ತೋರಿಸಿದ್ದೀರಿ. ಈ ಹಿನ್ನೆಲೆಯಲ್ಲಿ, ತನಿಖೆ ಪೂರ್ಣಗೊಳ್ಳುವವರೆಗೆ ಸಚಿವ ರಾಮಮೋಹನ್ ನಾಯ್ಡು ಅವರನ್ನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ವಿಎಸ್‌ಆರ್ ಕಂಪನಿಗೆ ಸಂಬಂಧಿಸಿದಂತೆ ಡಿಜಿಸಿಎ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಂಡಿಲ್ಲ ಅಥವಾ ಕಂಪನಿ ತನಿಖೆಯ ಮೇಲೆ ಪ್ರಭಾವ ಬೀರಿಲ್ಲ ಎಂದು ಖಚಿತಪಡಿಸಿಕೊಳ್ಳಲು ಇದು ಅಗತ್ಯವಾಗಿದೆ. ಈ ವಿಷಯದಲ್ಲಿ ನೀವು ಸೂಕ್ತ ಕ್ರಮ ಕೈಗೊಳ್ಳುತ್ತೀರಿ ಎಂದು ನಾನು ನಂಬುತ್ತೇನೆ” ಎಂಬುವುದಾಗಿ ರೋಹಿತ್ ಪವಾರ್ ಪತ್ರದಲ್ಲಿ ಹೇಳಿದ್ದಾರೆ.

“ಈ ಪ್ರಕರಣವನ್ನು ಕೇವಲ ‘ಆಕಸ್ಮಿಕ ಸಾವು’ ಎಂದು ಪರಿಗಣಿಸದೆ, ಇದನ್ನು ‘ಅಪರಾಧ ಸದೃಶ ನರಹತ್ಯೆ’ ಎಂದು ಪರಿಗಣಿಸಬೇಕು. ಅಲ್ಲದೆ, ವಿಎಸ್‌ಆರ್ ವೆಂಚರ್ಸ್ ಮಾಲೀಕರ ವಿರುದ್ಧ ಹಾಗೂ ವಿಮಾನದ ಹಾರಾಟದ ಅರ್ಹತೆಯನ್ನು ದೃಢೀಕರಿಸಿದ ತಾಂತ್ರಿಕ ಸಿಬ್ಬಂದಿಯ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಬೇಕು” ಎಂದು ರೋಹಿತ್ ಪವಾರ್ ಒತ್ತಾಯಿಸಿದ್ದಾರೆ.

“ಈ ಅಪಘಾತವು ಸಾಂವಿಧಾನಿಕ ಹುದ್ದೆಯಲ್ಲಿದ್ದ ಒಬ್ಬ ಉನ್ನತ ವ್ಯಕ್ತಿಗೆ ಸಂಬಂಧಿಸಿದ್ದು ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿರುವ ವಿಮಾನಯಾನ ಕ್ಷೇತ್ರಕ್ಕೆ ಒಳಪಟ್ಟಿರುವುದರಿಂದ, ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು. ರಾಜ್ಯ ಸಿಐಡಿ ತಂಡಕ್ಕೆ ಈ ಬಗ್ಗೆ ತಾಂತ್ರಿಕ ಪರಿಣತಿ ಹಾಗೂ ರಾಜಕೀಯ ಸ್ವತಂತ್ರದ ಕೊರತೆ ಇರುವುದರಿಂದ, ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ರೋಹಿತ್ ಪವಾರ್ ಅವರು ತಾಂತ್ರಿಕ ದತ್ತಾಂಶಗಳು ನಾಪತ್ತೆಯಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ವಿಮಾನದ ಟ್ರಾನ್ಸ್‌ಪಾಂಡರ್ ಅನ್ನು ಹಾರಾಟದ ಕೊನೆಯ ನಿಮಿಷದಲ್ಲಿ ಆಫ್ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಹ್ಯಾಂಗರ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಮತ್ತು ಕಂಪನಿಯನ್ನು ರಕ್ಷಿಸಲು ಹಳೆಯ ದಿನಾಂಕದ ಆಡಿಟ್ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮತ್ತಷ್ಟು ಗಂಭೀರ ಆರೋಪ ಮಾಡಿದ್ದಾರೆ.

ಈ ವಿಷಯದಲ್ಲಿ ಸತ್ಯ ಮರೆಮಾಚದಂತೆ ನೋಡಿಕೊಳ್ಳಲು ಮತ್ತು ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಲು ರೋಹಿತ್ ಪವಾರ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.

ಜನವರಿ 28,2026 ರಂದು ಬಾರಾಮತಿಯಲ್ಲಿ ನಡೆದ ಈ ಅಪಘಾತವು ಲಿಯರ್‌ಜೆಟ್ 45 ವಿಮಾನಕ್ಕೆ ಸಂಬಂಧಿಸಿದ್ದಾಗಿದೆ. ಅಂದಿನಿಂದ ರೋಹಿತ್ ಪವಾರ್ ಅವರು ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ತಾಂತ್ರಿಕ ವ್ಯತ್ಯಾಸಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ವಿಮಾನದಲ್ಲಿ ಹೆಚ್ಚುವರಿ ಇಂಧನ ಟ್ಯಾಂಕ್‌ಗಳ ಬಳಕೆ ಮತ್ತು ಕೊನೆಯ ಕ್ಷಣದಲ್ಲಿ ಮುಖ್ಯ ಪೈಲಟ್ ಅನ್ನು ಬದಲಾಯಿಸಿರುವುದು ಸೇರಿದಂತೆ ಹಲವು ಸಂಶಯಾಸ್ಪದ ಅಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...