Homeಮುಖಪುಟಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

- Advertisement -
- Advertisement -

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ) ಶಾಸಕ ರೋಹಿತ್ ಪವಾರ್ ಆರೋಪಿಸಿದ್ದಾರೆ.

ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ.

ಹಾಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರು ಟಿಡಿಪಿ ಪಕ್ಷದ ಸಂಸದರು. ಟಿಡಿಪಿ ಪಕ್ಷ ಮತ್ತು ವಿಎಸ್ಆರ್ ವೆಂಚರ್ಸ್ ನಡುವೆ ಆರ್ಥಿಕ ಮತ್ತು ರಾಜಕೀಯ ಸಂಬಂಧಗಳಿವೆ. ಹೀಗಿರುವಾಗ ಅಜಿತ್ ಪವಾರ್ ವಿಮಾನ ಪತನದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲ ಎಂದು ರೋಹಿತ್ ಪವಾರ್ ಹೇಳಿದ್ದಾರೆ. ರಾಮ್ ಮೋಹನ್ ನಾಯ್ಡು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ವಿಎಸ್ಆರ್ ವೆಂಚರ್ಸ್‌ಗೆ ಸಾಲ ನೀಡಿದವರಲ್ಲಿ ಒಬ್ಬರು ಹೆರಿಟೇಜ್ ಫಿನ್‌ಲೀಸ್ ಲಿಮಿಟೆಡ್. ಬ್ಯಾಂಕೇತರ ಹಣಕಾಸು ಕಂಪನಿಯಾದ (ಎನ್‌ಬಿಎಫ್‌ಸಿ) ಇದರ ಸ್ಥಾಪಕರು ಟಿಡಿಪಿ ಪಕ್ಷದ ನಾಯಕ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಂದು ರೋಹಿತ್ ಪವಾರ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಮತ್ತು ಸೊಸೆ ಬ್ರಾಹ್ಮಣಿ ಕೂಡ ಹೆರಿಟೇಜ್ ಫಿನ್‌ಲೀಸ್ ಲಿಮಿಟೆಡ್‌ನ ನಿರ್ದೇಶಕ ಮಂಡಳಿಯಲ್ಲಿದ್ದಾರೆ. ಹಾಗಾಗಿ, ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ತನಿಖೆಯ ಪಾರದರ್ಶಕತೆಯನ್ನು ಕುಂದಿಸಬಹುದು ಎಂದು ರೋಹಿತ್ ಪವಾರ್ ತಿಳಿಸಿದ್ದಾರೆ.

ಟಿಡಿಪಿ ಮತ್ತು ವಿಎಸ್‌ಆರ್ ವೆಂಚರ್ಸ್ ಕಂಪನಿಯ ನಡುವೆ ಅತ್ಯಂತ ಆಪ್ತ ಸಂಬಂಧವಿದೆ. ಇದಕ್ಕೆ ಸಾಕ್ಷಿಯಾಗಿ, ಕಳೆದ ವರ್ಷ ಜೈಪುರದಲ್ಲಿ ನಡೆದ ಕಂಪನಿಯ ನಿರ್ದೇಶಕರಲ್ಲಿ ಒಬ್ಬರಾದ ರೋಹಿತ್ ಸಿಂಗ್ ಅವರ ವಿವಾಹ ಸಮಾರಂಭದಲ್ಲಿ ಅನೇಕ ಟಿಡಿಪಿ ನಾಯಕರು ಭಾಗವಹಿಸಿದ್ದರು ಎಂದು ರೋಹಿತ್ ಪವಾರ್ ವಿವರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಪವಾರ್, ಅಜಿತ್ ಪವಾರ್ ವಿಮಾನ ಪತನದ ಕುರಿತು ವಿವರವಾದ ವರದಿ ಎಂದು ಹೇಳಿ ಮಾಹಿತಿ ನೀಡಿದ್ದು, ಅಜಿತ್ ಪವಾರ್ ಸಾವು ‘ರಾಜಕೀಯ ಅಥವಾ ವಾಣಿಜ್ಯ ಪಿತೂರಿ’ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಎಸ್‌ಆರ್ ವೆಂಚರ್ಸ್ ಕಂಪನಿಯನ್ನು ‘ಅತ್ಯಂತ ಪ್ರಭಾವಿ’ ರಾಜಕೀಯ ಮತ್ತು ವ್ಯಾಪಾರ ಹಿತಾಸಕ್ತಿಗಳು ರಕ್ಷಿಸುತ್ತಿವೆ ಎಂದಿರುವ ಅವರು, ಕಂಪನಿಯ ಕೆಲವು ಹಣಕಾಸುದಾರರು ಟಿಡಿಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ವಿಮಾನ ಅಪಘಾತ ಸಂಭವಿಸಿದ ಬೆನ್ನಲ್ಲೇ ವಿಮಾನಯಾನ ಸಚಿವರು ವಿಎಸ್‌ಆರ್ ವೆಂಚರ್ಸ್ ಕಂಪನಿಗೆ ‘ಕ್ಲೀನ್ ಚಿಟ್’ ಕೊಟ್ಟಂತೆ ತೋರುವ ಹೇಳಿಕೆಗಳನ್ನು ಏಕೆ ನೀಡಿದ್ದರು ಎಂದು ಪ್ರಶ್ನಿಸಿದ ರೋಹಿತ್ ಪವಾರ್, “ನಾವು ಈ ಪ್ರಕರಣದ ಆಳಕ್ಕೆ ಹೋದಷ್ಟೂ, ಆ ಕಂಪನಿಗೆ ಅತ್ಯಂತ ಪ್ರಭಾವಿ ವ್ಯಕ್ತಿಗಳ ಬೆಂಬಲವಿದೆ ಎಂಬುವುದು ಸ್ಪಷ್ಟವಾಗುತ್ತಿದೆ. ಈಗ ಕೇವಲ ಪ್ರಧಾನಮಂತ್ರಿ ಮತ್ತು ಗೃಹ ಸಚಿವರು ಮಾತ್ರ ಅಜಿತ್ ದಾದಾ ಅವರಿಗೆ ನ್ಯಾಯ ಕೊಡಿಸಲು ಸಾಧ್ಯ” ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಹಂಚಿಕೊಂಡ ಸಹಿ ಇಲ್ಲದ ಹೇಳಿಕೆಯಲ್ಲಿ ಟಿಡಿಪಿ ಪಕ್ಷವು, ರೋಹಿತ್ ಪವಾರ್ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿದೆ. ಸಚಿವ ರಾಮ್ ಮೋಹನ್ ನಾಯ್ಡು ಅಥವಾ ಟಿಡಿಪಿ ಪಕ್ಷವು ವಿಮಾನ ಅಪಘಾತಕ್ಕೆ ಸಂಬಂಧಿಸಿದವರನ್ನು ರಕ್ಷಿಸುತ್ತಿದೆ ಎಂಬ ಆರೋಪಗಳು ‘ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿದ್ದು, ಇವು ರಾಜಕೀಯ ಪ್ರೇರಿತವಾಗಿವೆ’ ಎಂದಿದೆ.

ವಿಮಾನ ಅಪಘಾತದ ತನಿಖೆಗಳನ್ನು ಸ್ಥಾಪಿತ ಅಂತಾರಾಷ್ಟ್ರೀಯ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಪ್ರೋಟೋಕಾಲ್‌ಗಳು ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯ (ಐಸಿಎಒ) ಮಾನದಂಡಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುತ್ತದೆ. ಈ ವಿಚಾರಣೆಗಳು ತಾಂತ್ರಿಕವಾಗಿರುತ್ತವೆ, ಪಾರದರ್ಶಕವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಪುರಾವೆ ಆಧಾರಿತವಾಗಿರುತ್ತವೆ ಎಂದು ಟಿಡಿಪಿ ಹೇಳಿದೆ.

ಒಬ್ಬ ಗೌರವಾನ್ವಿತ ರಾಜಕೀಯ ನಾಯಕನ ದುರಂತ ಅಂತ್ಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿರುವುದು ಅತ್ಯಂತ ದುರದೃಷ್ಟಕರ. ಟಿಡಿಪಿ ಯಾವಾಗಲೂ ಅಜಿತ್ ಪವಾರ್ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದೆ. ಸತ್ಯ ಹೊರಬರುವಂತೆ ನೋಡಿಕೊಳ್ಳಲು ಮತ್ತು ಒಂದು ವೇಳೆ ಯಾರಾದರೂ ತಪ್ಪಿತಸ್ಥರಿದ್ದರೆ ಅವರನ್ನು ಹೊಣೆಗಾರರನ್ನಾಗಿ ಮಾಡಲು ನಾವು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ತಿಳಿಸಿದೆ.

ವಿಮಾನ ಅಪಘಾತ ತನಿಖಾ ಸಂಸ್ಥೆಯಾದ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಅಜಿತ್ ಪವಾರ್ ವಿಮಾನ ಪತನದ ತಾಂತ್ರಿಕ ತನಿಖೆಯ ನೇತೃತ್ವ ವಹಿಸಿದೆ. ಈ ತನಿಖೆಯ ಪ್ರಾಥಮಿಕ ವರದಿಯು ಫೆಬ್ರವರಿ 27 ಅಥವಾ 28 ರೊಳಗೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ತಿಳಿಸಿದ್ದಾರೆ.

ವಿಮಾನ ಪತನಗೊಂಡ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ವಿಎಸ್ಆರ್ ವೆಂಚರ್ಸ್‌ನ ನಿರ್ದೇಶಕ ವಿಜಯ್ ಕುಮಾರ್ ಸಿಂಗ್, ಪತನಗೊಂಡ ಲಿಯರ್ಜೆಟ್ 45 ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷಗಳಿರಲಿಲ್ಲ ಎಂದು ಖಚಿತವಾಗಿ ಹೇಳಿದ್ದರು.

ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ರೋಹಿತ್ ಪವಾರ್ (ಇದರ ಪ್ರತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕಳುಹಿಸಿದ್ದಾರೆ), ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಮತ್ತು ವಿಎಸ್‌ಆರ್ ವೆಂಚರ್ಸ್ ನಡುವಿನ ಸಂಬಂಧದ ಬಗ್ಗೆ ಸ್ವತಂತ್ರ ಮತ್ತು ಸಮರ್ಥ ಪ್ರಾಧಿಕಾರದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ತನಿಖೆಯು ಪೂರ್ಣಗೊಳ್ಳುವವರೆಗೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನೀವು ಯಾವಾಗಲೂ ಅಜಿತ್ ದಾದಾ ಮತ್ತು ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಗೌರವವನ್ನು ತೋರಿಸಿದ್ದೀರಿ. ಈ ಹಿನ್ನೆಲೆಯಲ್ಲಿ, ತನಿಖೆ ಪೂರ್ಣಗೊಳ್ಳುವವರೆಗೆ ಸಚಿವ ರಾಮಮೋಹನ್ ನಾಯ್ಡು ಅವರನ್ನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ವಿಎಸ್‌ಆರ್ ಕಂಪನಿಗೆ ಸಂಬಂಧಿಸಿದಂತೆ ಡಿಜಿಸಿಎ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಂಡಿಲ್ಲ ಅಥವಾ ಕಂಪನಿ ತನಿಖೆಯ ಮೇಲೆ ಪ್ರಭಾವ ಬೀರಿಲ್ಲ ಎಂದು ಖಚಿತಪಡಿಸಿಕೊಳ್ಳಲು ಇದು ಅಗತ್ಯವಾಗಿದೆ. ಈ ವಿಷಯದಲ್ಲಿ ನೀವು ಸೂಕ್ತ ಕ್ರಮ ಕೈಗೊಳ್ಳುತ್ತೀರಿ ಎಂದು ನಾನು ನಂಬುತ್ತೇನೆ” ಎಂಬುವುದಾಗಿ ರೋಹಿತ್ ಪವಾರ್ ಪತ್ರದಲ್ಲಿ ಹೇಳಿದ್ದಾರೆ.

“ಈ ಪ್ರಕರಣವನ್ನು ಕೇವಲ ‘ಆಕಸ್ಮಿಕ ಸಾವು’ ಎಂದು ಪರಿಗಣಿಸದೆ, ಇದನ್ನು ‘ಅಪರಾಧ ಸದೃಶ ನರಹತ್ಯೆ’ ಎಂದು ಪರಿಗಣಿಸಬೇಕು. ಅಲ್ಲದೆ, ವಿಎಸ್‌ಆರ್ ವೆಂಚರ್ಸ್ ಮಾಲೀಕರ ವಿರುದ್ಧ ಹಾಗೂ ವಿಮಾನದ ಹಾರಾಟದ ಅರ್ಹತೆಯನ್ನು ದೃಢೀಕರಿಸಿದ ತಾಂತ್ರಿಕ ಸಿಬ್ಬಂದಿಯ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಬೇಕು” ಎಂದು ರೋಹಿತ್ ಪವಾರ್ ಒತ್ತಾಯಿಸಿದ್ದಾರೆ.

“ಈ ಅಪಘಾತವು ಸಾಂವಿಧಾನಿಕ ಹುದ್ದೆಯಲ್ಲಿದ್ದ ಒಬ್ಬ ಉನ್ನತ ವ್ಯಕ್ತಿಗೆ ಸಂಬಂಧಿಸಿದ್ದು ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿರುವ ವಿಮಾನಯಾನ ಕ್ಷೇತ್ರಕ್ಕೆ ಒಳಪಟ್ಟಿರುವುದರಿಂದ, ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು. ರಾಜ್ಯ ಸಿಐಡಿ ತಂಡಕ್ಕೆ ಈ ಬಗ್ಗೆ ತಾಂತ್ರಿಕ ಪರಿಣತಿ ಹಾಗೂ ರಾಜಕೀಯ ಸ್ವತಂತ್ರದ ಕೊರತೆ ಇರುವುದರಿಂದ, ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ರೋಹಿತ್ ಪವಾರ್ ಅವರು ತಾಂತ್ರಿಕ ದತ್ತಾಂಶಗಳು ನಾಪತ್ತೆಯಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ವಿಮಾನದ ಟ್ರಾನ್ಸ್‌ಪಾಂಡರ್ ಅನ್ನು ಹಾರಾಟದ ಕೊನೆಯ ನಿಮಿಷದಲ್ಲಿ ಆಫ್ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಹ್ಯಾಂಗರ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಮತ್ತು ಕಂಪನಿಯನ್ನು ರಕ್ಷಿಸಲು ಹಳೆಯ ದಿನಾಂಕದ ಆಡಿಟ್ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮತ್ತಷ್ಟು ಗಂಭೀರ ಆರೋಪ ಮಾಡಿದ್ದಾರೆ.

ಈ ವಿಷಯದಲ್ಲಿ ಸತ್ಯ ಮರೆಮಾಚದಂತೆ ನೋಡಿಕೊಳ್ಳಲು ಮತ್ತು ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಲು ರೋಹಿತ್ ಪವಾರ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.

ಜನವರಿ 28,2026 ರಂದು ಬಾರಾಮತಿಯಲ್ಲಿ ನಡೆದ ಈ ಅಪಘಾತವು ಲಿಯರ್‌ಜೆಟ್ 45 ವಿಮಾನಕ್ಕೆ ಸಂಬಂಧಿಸಿದ್ದಾಗಿದೆ. ಅಂದಿನಿಂದ ರೋಹಿತ್ ಪವಾರ್ ಅವರು ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ತಾಂತ್ರಿಕ ವ್ಯತ್ಯಾಸಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ವಿಮಾನದಲ್ಲಿ ಹೆಚ್ಚುವರಿ ಇಂಧನ ಟ್ಯಾಂಕ್‌ಗಳ ಬಳಕೆ ಮತ್ತು ಕೊನೆಯ ಕ್ಷಣದಲ್ಲಿ ಮುಖ್ಯ ಪೈಲಟ್ ಅನ್ನು ಬದಲಾಯಿಸಿರುವುದು ಸೇರಿದಂತೆ ಹಲವು ಸಂಶಯಾಸ್ಪದ ಅಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...