Homeಮುಖಪುಟಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

- Advertisement -
- Advertisement -

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ) ಶಾಸಕ ರೋಹಿತ್ ಪವಾರ್ ಆರೋಪಿಸಿದ್ದಾರೆ.

ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ.

ಹಾಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರು ಟಿಡಿಪಿ ಪಕ್ಷದ ಸಂಸದರು. ಟಿಡಿಪಿ ಪಕ್ಷ ಮತ್ತು ವಿಎಸ್ಆರ್ ವೆಂಚರ್ಸ್ ನಡುವೆ ಆರ್ಥಿಕ ಮತ್ತು ರಾಜಕೀಯ ಸಂಬಂಧಗಳಿವೆ. ಹೀಗಿರುವಾಗ ಅಜಿತ್ ಪವಾರ್ ವಿಮಾನ ಪತನದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲ ಎಂದು ರೋಹಿತ್ ಪವಾರ್ ಹೇಳಿದ್ದಾರೆ. ರಾಮ್ ಮೋಹನ್ ನಾಯ್ಡು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ವಿಎಸ್ಆರ್ ವೆಂಚರ್ಸ್‌ಗೆ ಸಾಲ ನೀಡಿದವರಲ್ಲಿ ಒಬ್ಬರು ಹೆರಿಟೇಜ್ ಫಿನ್‌ಲೀಸ್ ಲಿಮಿಟೆಡ್. ಬ್ಯಾಂಕೇತರ ಹಣಕಾಸು ಕಂಪನಿಯಾದ (ಎನ್‌ಬಿಎಫ್‌ಸಿ) ಇದರ ಸ್ಥಾಪಕರು ಟಿಡಿಪಿ ಪಕ್ಷದ ನಾಯಕ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎಂದು ರೋಹಿತ್ ಪವಾರ್ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಮತ್ತು ಸೊಸೆ ಬ್ರಾಹ್ಮಣಿ ಕೂಡ ಹೆರಿಟೇಜ್ ಫಿನ್‌ಲೀಸ್ ಲಿಮಿಟೆಡ್‌ನ ನಿರ್ದೇಶಕ ಮಂಡಳಿಯಲ್ಲಿದ್ದಾರೆ. ಹಾಗಾಗಿ, ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ತನಿಖೆಯ ಪಾರದರ್ಶಕತೆಯನ್ನು ಕುಂದಿಸಬಹುದು ಎಂದು ರೋಹಿತ್ ಪವಾರ್ ತಿಳಿಸಿದ್ದಾರೆ.

ಟಿಡಿಪಿ ಮತ್ತು ವಿಎಸ್‌ಆರ್ ವೆಂಚರ್ಸ್ ಕಂಪನಿಯ ನಡುವೆ ಅತ್ಯಂತ ಆಪ್ತ ಸಂಬಂಧವಿದೆ. ಇದಕ್ಕೆ ಸಾಕ್ಷಿಯಾಗಿ, ಕಳೆದ ವರ್ಷ ಜೈಪುರದಲ್ಲಿ ನಡೆದ ಕಂಪನಿಯ ನಿರ್ದೇಶಕರಲ್ಲಿ ಒಬ್ಬರಾದ ರೋಹಿತ್ ಸಿಂಗ್ ಅವರ ವಿವಾಹ ಸಮಾರಂಭದಲ್ಲಿ ಅನೇಕ ಟಿಡಿಪಿ ನಾಯಕರು ಭಾಗವಹಿಸಿದ್ದರು ಎಂದು ರೋಹಿತ್ ಪವಾರ್ ವಿವರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಪವಾರ್, ಅಜಿತ್ ಪವಾರ್ ವಿಮಾನ ಪತನದ ಕುರಿತು ವಿವರವಾದ ವರದಿ ಎಂದು ಹೇಳಿ ಮಾಹಿತಿ ನೀಡಿದ್ದು, ಅಜಿತ್ ಪವಾರ್ ಸಾವು ‘ರಾಜಕೀಯ ಅಥವಾ ವಾಣಿಜ್ಯ ಪಿತೂರಿ’ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಎಸ್‌ಆರ್ ವೆಂಚರ್ಸ್ ಕಂಪನಿಯನ್ನು ‘ಅತ್ಯಂತ ಪ್ರಭಾವಿ’ ರಾಜಕೀಯ ಮತ್ತು ವ್ಯಾಪಾರ ಹಿತಾಸಕ್ತಿಗಳು ರಕ್ಷಿಸುತ್ತಿವೆ ಎಂದಿರುವ ಅವರು, ಕಂಪನಿಯ ಕೆಲವು ಹಣಕಾಸುದಾರರು ಟಿಡಿಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ವಿಮಾನ ಅಪಘಾತ ಸಂಭವಿಸಿದ ಬೆನ್ನಲ್ಲೇ ವಿಮಾನಯಾನ ಸಚಿವರು ವಿಎಸ್‌ಆರ್ ವೆಂಚರ್ಸ್ ಕಂಪನಿಗೆ ‘ಕ್ಲೀನ್ ಚಿಟ್’ ಕೊಟ್ಟಂತೆ ತೋರುವ ಹೇಳಿಕೆಗಳನ್ನು ಏಕೆ ನೀಡಿದ್ದರು ಎಂದು ಪ್ರಶ್ನಿಸಿದ ರೋಹಿತ್ ಪವಾರ್, “ನಾವು ಈ ಪ್ರಕರಣದ ಆಳಕ್ಕೆ ಹೋದಷ್ಟೂ, ಆ ಕಂಪನಿಗೆ ಅತ್ಯಂತ ಪ್ರಭಾವಿ ವ್ಯಕ್ತಿಗಳ ಬೆಂಬಲವಿದೆ ಎಂಬುವುದು ಸ್ಪಷ್ಟವಾಗುತ್ತಿದೆ. ಈಗ ಕೇವಲ ಪ್ರಧಾನಮಂತ್ರಿ ಮತ್ತು ಗೃಹ ಸಚಿವರು ಮಾತ್ರ ಅಜಿತ್ ದಾದಾ ಅವರಿಗೆ ನ್ಯಾಯ ಕೊಡಿಸಲು ಸಾಧ್ಯ” ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಹಂಚಿಕೊಂಡ ಸಹಿ ಇಲ್ಲದ ಹೇಳಿಕೆಯಲ್ಲಿ ಟಿಡಿಪಿ ಪಕ್ಷವು, ರೋಹಿತ್ ಪವಾರ್ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿದೆ. ಸಚಿವ ರಾಮ್ ಮೋಹನ್ ನಾಯ್ಡು ಅಥವಾ ಟಿಡಿಪಿ ಪಕ್ಷವು ವಿಮಾನ ಅಪಘಾತಕ್ಕೆ ಸಂಬಂಧಿಸಿದವರನ್ನು ರಕ್ಷಿಸುತ್ತಿದೆ ಎಂಬ ಆರೋಪಗಳು ‘ಸಂಪೂರ್ಣ ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿದ್ದು, ಇವು ರಾಜಕೀಯ ಪ್ರೇರಿತವಾಗಿವೆ’ ಎಂದಿದೆ.

ವಿಮಾನ ಅಪಘಾತದ ತನಿಖೆಗಳನ್ನು ಸ್ಥಾಪಿತ ಅಂತಾರಾಷ್ಟ್ರೀಯ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಪ್ರೋಟೋಕಾಲ್‌ಗಳು ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯ (ಐಸಿಎಒ) ಮಾನದಂಡಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುತ್ತದೆ. ಈ ವಿಚಾರಣೆಗಳು ತಾಂತ್ರಿಕವಾಗಿರುತ್ತವೆ, ಪಾರದರ್ಶಕವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಪುರಾವೆ ಆಧಾರಿತವಾಗಿರುತ್ತವೆ ಎಂದು ಟಿಡಿಪಿ ಹೇಳಿದೆ.

ಒಬ್ಬ ಗೌರವಾನ್ವಿತ ರಾಜಕೀಯ ನಾಯಕನ ದುರಂತ ಅಂತ್ಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿರುವುದು ಅತ್ಯಂತ ದುರದೃಷ್ಟಕರ. ಟಿಡಿಪಿ ಯಾವಾಗಲೂ ಅಜಿತ್ ಪವಾರ್ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದೆ. ಸತ್ಯ ಹೊರಬರುವಂತೆ ನೋಡಿಕೊಳ್ಳಲು ಮತ್ತು ಒಂದು ವೇಳೆ ಯಾರಾದರೂ ತಪ್ಪಿತಸ್ಥರಿದ್ದರೆ ಅವರನ್ನು ಹೊಣೆಗಾರರನ್ನಾಗಿ ಮಾಡಲು ನಾವು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ತಿಳಿಸಿದೆ.

ವಿಮಾನ ಅಪಘಾತ ತನಿಖಾ ಸಂಸ್ಥೆಯಾದ ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಅಜಿತ್ ಪವಾರ್ ವಿಮಾನ ಪತನದ ತಾಂತ್ರಿಕ ತನಿಖೆಯ ನೇತೃತ್ವ ವಹಿಸಿದೆ. ಈ ತನಿಖೆಯ ಪ್ರಾಥಮಿಕ ವರದಿಯು ಫೆಬ್ರವರಿ 27 ಅಥವಾ 28 ರೊಳಗೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ತಿಳಿಸಿದ್ದಾರೆ.

ವಿಮಾನ ಪತನಗೊಂಡ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ವಿಎಸ್ಆರ್ ವೆಂಚರ್ಸ್‌ನ ನಿರ್ದೇಶಕ ವಿಜಯ್ ಕುಮಾರ್ ಸಿಂಗ್, ಪತನಗೊಂಡ ಲಿಯರ್ಜೆಟ್ 45 ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷಗಳಿರಲಿಲ್ಲ ಎಂದು ಖಚಿತವಾಗಿ ಹೇಳಿದ್ದರು.

ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ರೋಹಿತ್ ಪವಾರ್ (ಇದರ ಪ್ರತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕಳುಹಿಸಿದ್ದಾರೆ), ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಮತ್ತು ವಿಎಸ್‌ಆರ್ ವೆಂಚರ್ಸ್ ನಡುವಿನ ಸಂಬಂಧದ ಬಗ್ಗೆ ಸ್ವತಂತ್ರ ಮತ್ತು ಸಮರ್ಥ ಪ್ರಾಧಿಕಾರದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಈ ತನಿಖೆಯು ಪೂರ್ಣಗೊಳ್ಳುವವರೆಗೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನೀವು ಯಾವಾಗಲೂ ಅಜಿತ್ ದಾದಾ ಮತ್ತು ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಗೌರವವನ್ನು ತೋರಿಸಿದ್ದೀರಿ. ಈ ಹಿನ್ನೆಲೆಯಲ್ಲಿ, ತನಿಖೆ ಪೂರ್ಣಗೊಳ್ಳುವವರೆಗೆ ಸಚಿವ ರಾಮಮೋಹನ್ ನಾಯ್ಡು ಅವರನ್ನು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ವಿಎಸ್‌ಆರ್ ಕಂಪನಿಗೆ ಸಂಬಂಧಿಸಿದಂತೆ ಡಿಜಿಸಿಎ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಂಡಿಲ್ಲ ಅಥವಾ ಕಂಪನಿ ತನಿಖೆಯ ಮೇಲೆ ಪ್ರಭಾವ ಬೀರಿಲ್ಲ ಎಂದು ಖಚಿತಪಡಿಸಿಕೊಳ್ಳಲು ಇದು ಅಗತ್ಯವಾಗಿದೆ. ಈ ವಿಷಯದಲ್ಲಿ ನೀವು ಸೂಕ್ತ ಕ್ರಮ ಕೈಗೊಳ್ಳುತ್ತೀರಿ ಎಂದು ನಾನು ನಂಬುತ್ತೇನೆ” ಎಂಬುವುದಾಗಿ ರೋಹಿತ್ ಪವಾರ್ ಪತ್ರದಲ್ಲಿ ಹೇಳಿದ್ದಾರೆ.

“ಈ ಪ್ರಕರಣವನ್ನು ಕೇವಲ ‘ಆಕಸ್ಮಿಕ ಸಾವು’ ಎಂದು ಪರಿಗಣಿಸದೆ, ಇದನ್ನು ‘ಅಪರಾಧ ಸದೃಶ ನರಹತ್ಯೆ’ ಎಂದು ಪರಿಗಣಿಸಬೇಕು. ಅಲ್ಲದೆ, ವಿಎಸ್‌ಆರ್ ವೆಂಚರ್ಸ್ ಮಾಲೀಕರ ವಿರುದ್ಧ ಹಾಗೂ ವಿಮಾನದ ಹಾರಾಟದ ಅರ್ಹತೆಯನ್ನು ದೃಢೀಕರಿಸಿದ ತಾಂತ್ರಿಕ ಸಿಬ್ಬಂದಿಯ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಬೇಕು” ಎಂದು ರೋಹಿತ್ ಪವಾರ್ ಒತ್ತಾಯಿಸಿದ್ದಾರೆ.

“ಈ ಅಪಘಾತವು ಸಾಂವಿಧಾನಿಕ ಹುದ್ದೆಯಲ್ಲಿದ್ದ ಒಬ್ಬ ಉನ್ನತ ವ್ಯಕ್ತಿಗೆ ಸಂಬಂಧಿಸಿದ್ದು ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿರುವ ವಿಮಾನಯಾನ ಕ್ಷೇತ್ರಕ್ಕೆ ಒಳಪಟ್ಟಿರುವುದರಿಂದ, ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು. ರಾಜ್ಯ ಸಿಐಡಿ ತಂಡಕ್ಕೆ ಈ ಬಗ್ಗೆ ತಾಂತ್ರಿಕ ಪರಿಣತಿ ಹಾಗೂ ರಾಜಕೀಯ ಸ್ವತಂತ್ರದ ಕೊರತೆ ಇರುವುದರಿಂದ, ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ರೋಹಿತ್ ಪವಾರ್ ಅವರು ತಾಂತ್ರಿಕ ದತ್ತಾಂಶಗಳು ನಾಪತ್ತೆಯಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ವಿಮಾನದ ಟ್ರಾನ್ಸ್‌ಪಾಂಡರ್ ಅನ್ನು ಹಾರಾಟದ ಕೊನೆಯ ನಿಮಿಷದಲ್ಲಿ ಆಫ್ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಹ್ಯಾಂಗರ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಮತ್ತು ಕಂಪನಿಯನ್ನು ರಕ್ಷಿಸಲು ಹಳೆಯ ದಿನಾಂಕದ ಆಡಿಟ್ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮತ್ತಷ್ಟು ಗಂಭೀರ ಆರೋಪ ಮಾಡಿದ್ದಾರೆ.

ಈ ವಿಷಯದಲ್ಲಿ ಸತ್ಯ ಮರೆಮಾಚದಂತೆ ನೋಡಿಕೊಳ್ಳಲು ಮತ್ತು ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಲು ರೋಹಿತ್ ಪವಾರ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.

ಜನವರಿ 28,2026 ರಂದು ಬಾರಾಮತಿಯಲ್ಲಿ ನಡೆದ ಈ ಅಪಘಾತವು ಲಿಯರ್‌ಜೆಟ್ 45 ವಿಮಾನಕ್ಕೆ ಸಂಬಂಧಿಸಿದ್ದಾಗಿದೆ. ಅಂದಿನಿಂದ ರೋಹಿತ್ ಪವಾರ್ ಅವರು ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದು, ತಾಂತ್ರಿಕ ವ್ಯತ್ಯಾಸಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ವಿಮಾನದಲ್ಲಿ ಹೆಚ್ಚುವರಿ ಇಂಧನ ಟ್ಯಾಂಕ್‌ಗಳ ಬಳಕೆ ಮತ್ತು ಕೊನೆಯ ಕ್ಷಣದಲ್ಲಿ ಮುಖ್ಯ ಪೈಲಟ್ ಅನ್ನು ಬದಲಾಯಿಸಿರುವುದು ಸೇರಿದಂತೆ ಹಲವು ಸಂಶಯಾಸ್ಪದ ಅಂಶಗಳನ್ನು ಅವರು ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...