Homeಮುಖಪುಟಕುಸ್ತಿಪಟುಗಳ ಕುರಿತ ಸಾಲು ಸಾಲು ಸುಳ್ಳುಗಳಿಗೆ ಉತ್ತರಗಳು

ಕುಸ್ತಿಪಟುಗಳ ಕುರಿತ ಸಾಲು ಸಾಲು ಸುಳ್ಳುಗಳಿಗೆ ಉತ್ತರಗಳು

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್‌ನನ್ನು ಬಂಧಿಸಬೇಕೆಂದು ದೇಶದ ಪ್ರಖ್ಯಾತ ಕುಸ್ತಿಪಟುಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ಮುಜುಗರಕ್ಕೆ ಈಡು ಮಾಡಿದ್ದು, ಅದನ್ನು ಮರೆಮಾಚಲು ಕುಸ್ತಿಪಟುಗಳ ಚಾರಿತ್ರ್ಯ ಹರಣ ಮಾಡುವಂತಹ ಪೋಸ್ಟ್‌ಗಳನ್ನು ಹರಿಬಿಡಲಾಗುತ್ತಿದೆ.

ಹೋರಾಟಕ್ಕೆ ಕುಳಿತವರನ್ನು ದೇಶ ವಿರೋಧಿಗಳೆನ್ನುವುದು, ಖಲಿಸ್ತಾನಿಗಳೆನ್ನುವುದು ಇದೇ ಮೊದಲೇನೂ ಅಲ್ಲ. ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷ ಕಾಲ ದೆಹಲಿಯಲ್ಲಿ ಚಳವಳಿ ನಡೆಸಿದ ರೈತರ ವಿರುದ್ಧವೂ ಇಂತಹದ್ದೇ ಅಪಪ್ರಚಾರವನ್ನು ‘ಫೇಕ್‌ ಪಡೆ’ ಮಾಡಿತ್ತು. ಈಗ ಕುಸ್ತಿಪಟುಗಳ ವಿರುದ್ಧವೂ ಇದೇ ತಂತ್ರವನ್ನು ಬಳಸುತ್ತಾ, ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿ ಚಿತ್ರಿಸಿ, ಆರೋಪಿ ಪರ ನಿಲ್ಲುವ ಪಿತೂರಿ ನಡೆಯುತ್ತಿದೆ.

“ರೈತ ಹೋರಾಟದಲ್ಲಿ ಕೇವಲ ಪಂಜಾಬ್‌, ಹರಿಯಾಣ ರೈತರಷ್ಟೇ ಯಾಕೆ ಇದ್ದಾರೆ? ದೇಶದ ಇತರೆ ರಾಜ್ಯಗಳಲ್ಲಿ ಏಕೆ ಹೋರಾಟ ನಡೆಯುತ್ತಿಲ್ಲ?” ಎಂಬಂತಹ ಸುಳ್ಳುಗಳನ್ನು ಹರಿಬಿಡಲಾಗಿತ್ತು. ಆದರೆ ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿದ್ದನ್ನು ಗಮನಿಸಬಹುದು. ಹೀಗೆಯೇ ದೇಶದ ಪ್ರಜ್ಞಾವಂತ ನಾಗರಿಕರು ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದರೂ ‘ಇದು ಕೆಲವೇ ಕೆಲವರ ಹೋರಾಟ’ ಎಂದು ಬಿಂಬಿಸಲು ನಕಲಿ ಸುದ್ದಿಗಳನ್ನು ಹರಡಲಾಗುತ್ತಿದೆ.

‘ಫೇಕ್‌ ಪಡೆ’ಯ ಪ್ರಶ್ನಾವಳಿ

“ಕುಸ್ತಿಪಟುಗಳ ಹೋರಾಟ ಒಂದು ಟೂಲ್‌ಕಿಟ್ ಆಗಿದೆ. ಹೋರಾಟದಲ್ಲಿ ಕೇವಲ ಹರಿಯಾಣದ 3 ಕುಸ್ತಿ ಪಟುಗಳು ಯಾಕಿದ್ದಾರೆ? ಬೇರೆ ರಾಜ್ಯದ ಕುಸ್ತಿ ಪಟುಗಳು ಯಾಕೆ ಇವರ ಜೊತೆ ಭಾಗವಹಿಸುತ್ತಿಲ್ಲ? ಕಣ್ಣಿಗೆ ಕಾಣಿಸದೆ ಇದೆಲ್ಲವನ್ನೂ ನಡೆಸುತ್ತಿರುವ ದೀಪೇಂದರ್‌‌ ಹೂಡಾ ಯಾರು? ಆತನಿಗೂ ಈಗ ಪೋಕ್ಸೋ ಕೇಸ್ ಎದುರಿಸುತ್ತಿರುವ ಬ್ರಿಜ್‌ ಭೂಷಣ್ ಶರಣ್ ಸಿಂಗ್‌ಗೂ ಇರುವ ವೈರತ್ವವೇನು? ಜಂತರ್ ಮಂತರ್‌ಗೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೋಗಿ, ಲೈಂಗಿಕ ದೌರ್ಜನ್ಯ ಆರೋಪಗಳ ಸಂಬಂಧ ಪರಿಶೀಲನಾ ಸಮಿತಿಯನ್ನು ಮಾಡಿದರೂ ಯಾಕೆ ಧರಣಿ ಹಿಂತೆಗೆದುಕೊಳ್ಳುತ್ತಿಲ್ಲ? ನಾವು ನ್ಯಾಷನಲ್ ಲೆವೆಲ್‌ನ ಅರ್ಹತಾ ರೌಂಡ್‌‌ನಲ್ಲಿ ಭಾಗವಹಿಸುವುದಿಲ್ಲ, ನಾವು ಡೈರೆಕ್ಟ್ ಆಗಿ ಒಲಂಪಿಕ್‌ನಲ್ಲಿ ಭಾಗವಹಿಸುತ್ತೇವೆ ಎಂದು ಕುಸ್ತಿಪಟುಗಳು ಹೇಳಿದ್ಯಾಕೆ? ಆದ ಲೈಂಗಿಕ ದೌರ್ಜನ್ಯದ ಕುರಿತು ಸಮಿತಿಗೆ ತಿಳಿಸದೆ ದೆಹಲಿ ಪೊಲೀಸ್‌ ಸ್ಟೇಷನ್‌ಗೆ ಹೋದದ್ಯಾಕೆ?  ಭಾರತೀಯ ಒಲಿಂಪಿಕ್ ಸಂಸ್ಥೆ ಚೇರ್ಮನ್, ದೇಶದ ಹೆಮ್ಮೆಯ ಮಗಳು ಪಿ.ಟಿ.ಉಷಾ ಅವರು ಕುಸ್ತಿಪಟುಗಳ ಕಷ್ಟ ಕೇಳಲು ಬಂದಾಗ ಅವರನ್ನು ಅವಮಾನಿಸಿ ಓಡಿಸಿದ್ಯಾಕೆ?” – ಈ ರೀತಿಯ ಪ್ರಶ್ನೆಗಳನ್ನು ತೇಲಿಬಿಡಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಇವು ವೈರಲ್ ಕೂಡ ಆಗುತ್ತಿವೆ.

ಸುಳ್ಳು 1: ಹರಿಯಾಣದ ಕುಸ್ತಿಪಟುಗಳಷ್ಟೆ ಹೋರಾಟ ನಡೆಸುತ್ತಿದ್ದಾರೆ, ಉಳಿದವರು ಇಲ್ಲ

ಇಂತಹದ್ದೇ ಪ್ರಶ್ನೆಯನ್ನು ರೈತ ಹೋರಾಟದ ಸಂದರ್ಭದಲ್ಲೂ ‘ಫೇಕ್‌’ಗಳು ಹರಿಬಿಟ್ಟಿದ್ದರು. ರೈತ ಹೋರಾಟದಲ್ಲಿ ಪಂಜಾಬ್‌, ಹರಿಯಾಣ ರೈತರಷ್ಟೇ ಇದ್ದಾರೆಂದು ಬಿಂಬಿಸಲಾಗಿತ್ತು. ಈಗ ನಡೆಯುತ್ತಿರುವ ಹೋರಾಟದ ಮುಂಚೂಣಿಯಲ್ಲಿರುವುದು ದೇಶಕ್ಕೆ ಒಲಂಪಿಕ್ ಪದಕಗಳನ್ನು ತಂದುಕೊಟ್ಟ ಬಜರಂಜ್ ಪೂನಿಯಾ, ಸಾಕ್ಷಿ ಮಲ್ಲಿಕ್‌, ರವಿ ದಹಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಎಂಬುದನ್ನು ಗಮನಿಸಬೇಕು. ಅವರು ಯಾವ ರಾಜ್ಯದವರಾದರೇನು ಅಲ್ಲವೇ? ಸಂತ್ರಸ್ತ ಹೆಣ್ಣುಮಕ್ಕಳ ಪರವಾಗಿ ಯಾರೂ ದನಿ ಎತ್ತಬಾರದು ಎಂಬಂತೆ ‘ಫೇಕ್‌’ಗಳು ಮನೋವಿಕೃತಿ ಮೆರೆಯುತ್ತಿದ್ದಾರೆ. ಈ ಕುಸ್ತಿಪಟುಗಳೊಂದಿಗೆ ಇತರ ಕ್ರೀಡಾಪಟುಗಳು ಇದ್ದಾರೆಂಬುದನ್ನು ಗಮನಿಸಬಹುದು. ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ, ಅಭಿನವ್ ಬಿಂದ್ರಾ, ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಮತ್ತು ಮಾಜಿ ಕ್ರಿಕೆಟಿಗರಾದ ಅನಿಲ್‌ ಕುಂಬ್ಳೆ, ಇರ್ಫಾನ್ ಪಠಾಣ್ ಅವರು ಕುಸ್ತಿಪಟುಗಳಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ. ನ್ಯಾಯಕ್ಕಾಗಿ ಹೋರಾಡುತ್ತಿರುವ ಅವರ ಪರ ದನಿ ಎತ್ತಿದ್ದಾರೆ. ಕುಸ್ತಿಪಟುಗಳನ್ನು ಪೊಲೀಸರು ನಡೆಸಿಕೊಂಡ ರೀತಿಯ ಕುರಿತು ಖಂಡನೆ ವ್ಯಕ್ತಪಡಿಸಿದ್ದಾರೆ. ಕೆಲವೇ ಕೆಲವು ಕುಸ್ತಿಪಟುಗಳಷ್ಟೇ ಯಾಕೆ ಹೋರಾಟ ನಡೆಸುತ್ತಿದ್ದಾರೆ ಎಂಬುದು ಪ್ರಶ್ನೆಯಲ್ಲ; “ಈ ಹೋರಾಟಕ್ಕೆ ದೇಶದ ಪ್ರಖ್ಯಾತ ಕ್ರಿಕೆಟಿಗರು, ಇತರೆ ಕ್ರೀಡೆಗಳ ಆಟಗಾರರು ಏಕೆ ಬೆಂಬಲಿಸುತ್ತಿಲ್ಲ?” ಎಂದು ಕೇಳುವುದು ಸರಿಯಾದ ಪ್ರಶ್ನೆಯಾಗುತ್ತದೆ. “ಅಧಿಕಾರಶಾಹಿಯ ವಿರುದ್ಧ ದನಿ ಎತ್ತುವ ಕೆಚ್ಚು ಈ ಕೆಲವೇ ಕೆಲವು ಹೋರಾಟಗಾರರಿಗೆ ಬಿಟ್ಟರೆ ಬೇರೆಯವರಿಗೆ ಏಕಿಲ್ಲ?” ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ.

ಸುಳ್ಳು 2: ಹೋರಾಟದ ಹಿಂದೆ ದೀಪೇಂದರ್‌ ಹೂಡಾ ಇದ್ದಾರೆ, ಬ್ರಿಜ್‌ಭೂಷಣ್‌ಗೂ ಇವರಿಗೂ ಏನು ಸಂಬಂಧ?

ದೀಪೇಂದರ್‌ ಹೂಡಾ ಯಾರೆಂದು ಕೇಳುವುದೇ ದಿಕ್ಕು ತಪ್ಪಿಸುವ ಪ್ರಶ್ನೆ. ನಿಜ, ಅವರು ಕಾಂಗ್ರೆಸ್ ನಾಯಕ ಮತ್ತು ಸಂಸದರು. ಇಂತಹ ಸಂದರ್ಭದಲ್ಲಿ ಸಂತ್ರಸ್ತರ ಪರ ನಿಲ್ಲುವುದು ಯಾವುದೇ ವಿರೋಧ ಪಕ್ಷಗಳ ಕರ್ತವ್ಯ. ಹೂಡಾ ಅವರಾಗಲೀ, ಇನ್ನ್ಯಾರೇ ಆಗಲಿ ಸಂತ್ರಸ್ತರ ಪರ ದನಿ ಎತ್ತಬಾರದು ಎನ್ನುವುದು ಅಸಾಂವಿಧಾನಿಕ. ಹೂಡಾ ಅಥವಾ ಇನ್ನ್ಯಾವುದೇ ರಾಜಕಾರಣಿಗಳಿಗೆ ರಾಜಕೀಯ ಕಾರಣಗಳಿದ್ದೀತು. ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಬೇಕಾದದ್ದು ಅವರ ಹೊಣೆಗಾರಿಕೆ. ಪೋಕ್ಸೋ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಮೇಲಿವೆ. ಆತನ ಅಪರಾಧ ಕೃತ್ಯಗಳು ಈಗ ಜನಜನಿತವಾಗಿವೆ. ಅಷ್ಟಕ್ಕೂ ಪ್ರತಿಪಕ್ಷಗಳು ಹೋರಾಟಗಾರರಲ್ಲಿ ಹೋಗುವ ಮೊದಲೇ ಪ್ರಧಾನಿ ಮೋದಿ ಅಲ್ಲಿಗೆ ಹೋಗಿ, ಸಮಸ್ಯೆಯನ್ನು ಆಲಿಸಿದ್ದರೆ ಸಮಸ್ಯೆ ಬಗೆಹರಿಯುತ್ತಿತ್ತು ಅಲ್ಲವೇ? ಮೋದಿ ಬಾರದಿದ್ದಾಗ ಸ್ಥಳಕ್ಕೆ ಹೋದ ಪ್ರತಿಪಕ್ಷಗಳನ್ನು ಹೋರಾಟಗಾರರು ಅವಲಂಬಿಸುವುದು ಅನಿವಾರ್ಯವಾಗುತ್ತದೆ. ಪ್ರಶ್ನೆ ಕೇಳಬೇಕಾದದ್ದು ದೀಪೇಂದರ್‌‌ ಹೂಡರಿಗೋ ಪ್ರಧಾನಿ ಮೋದಿಗೋ? ಸಂತ್ರಸ್ತರನ್ನೇ ತಪ್ಪಿತಸ್ಥರ ಸ್ಥಾನದಲ್ಲಿ ನಿಲ್ಲಿಸುವ ಈ ವಿಕೃತಿಗೆ ಮಿತಿ ಇಲ್ಲವೇ?

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಒಮ್ಮೆ ಯೋಗೋದ್ಯಮಿ ರಾಮದೇವ್‌ ವಿರುದ್ಧ ಬ್ರಿಜ್‌ ವಾಗ್ದಾಳಿ ನಡೆಸಿದ್ದನು. “ರಾಮದೇವ್‌ ಕಂಪನಿ ಪತಂಜಲಿ ನಕಲಿ ತುಪ್ಪವನ್ನು ಮಾರಾಟ ಮಾಡುತ್ತಿದೆ. ಪತಂಜಲಿ ಉತ್ಪನ್ನಗಳ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ ನಡೆಸುತ್ತೇನೆ. ರಾಮ್‌ದೇವ್ ಒಬ್ಬ ‘ಕಲಬೆರಕೆ ರಾಜ’” ಎಂದಿದ್ದನು. ಈಗ ರಾಮದೇವ್‌, ಬ್ರಿಜ್‌ ವಿರುದ್ಧ ಮಾತನಾಡಿದ್ದಾರೆ. ಸ್ವಹಿತಾಸಕ್ತಿ, ವೈಯಕ್ತಿಕ ದ್ವೇಷ ರಾಮ್‌ದೇವ್‌ಗೂ ಬ್ರಿಜ್‌ ಭೂಷಣ್ ಮೇಲೆ ಇರಬಹುದು. ಹಾಗೆಂದು ರಾಮದೇವ್‌ ಹೇಳಿದ್ದು ತಪ್ಪು ಎಂದು ‘ಫೇಕ್‌’ ಪಡೆ ಹೇಳಿಬಿಟ್ಟರೆ ಮುಗಿಯಿತೇ?

ಸುಳ್ಳು 3: ಲೈಂಗಿಕ ದೌರ್ಜನ್ಯದ ಕುರಿತು ಪರಿಶೀಲಿಸಲು ಅನುರಾಗ್ ಠಾಕೂರ್ 6 ಜನರ ಸಮಿತಿ ಮಾಡಿದರೂ ಹೋರಾಟ ಹಿಂತೆಗೆದುಕೊಳ್ಳುತ್ತಿಲ್ಲ. ಲೈಂಗಿಕ ದೌರ್ಜನ್ಯದ ಕುರಿತು ಸಮಿತಿಗೆ ತಿಳಿಸದೆ ದೆಹಲಿ ಪೊಲೀಸ್‌ ಸ್ಟೇಷನ್‌ಗೆ ಹೋಗಿದ್ದಾರೆ

-ಹೀಗೆ ಕೇಳುವವರು ಕುಸ್ತಿಪಟುಗಳನ್ನೇ ಅಪರಾಧಿಗಳನ್ನಾಗಿ ನೋಡುತ್ತಿದ್ದಾರೆ ಎಂಬುದು ಸ್ಪಷ್ಟ. ಸಮಿತಿ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿಲ್ಲ ಎಂದೆನಿಸಿದಾಗ, ಅನುರಾಗ್ ಠಾಕೂರ್‌ ತಾವು ನೀಡಿದ ಭರವಸೆಯನ್ನು ಈಡೇರಿಸದಿದ್ದಾಗ ಈ ಹೋರಾಟ ಪುನಾರಂಭವಾಗಿದ್ದು ಅಲ್ಲವೇ? ಬ್ರಿಜ್‌ ಭೂಷಣ್‌ನನ್ನು ಕುಸ್ತಿ ಫೆಡರೇಷನ್‌ನಿಂದ ಇಳಿಸುವುದಾಗಿ ಹೇಳಿ, ಅನುರಾಗ್ ಮಾತು ತಪ್ಪಿದ್ದೇಕೆ?

“ನಾವು ಕೇಂದ್ರ ಕ್ರೀಡಾ ಸಚಿವ (ಅನುರಾಗ್ ಠಾಕೂರ್) ಅವರೊಂದಿಗೆ ಮಾತನಾಡಿದ ನಂತರ ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಎಲ್ಲಾ ಅಥ್ಲೀಟ್‌ಗಳು ಲೈಂಗಿಕ ಕಿರುಕುಳದ ಬಗ್ಗೆ ಅವರಿಗೆ ತಿಳಿಸಿದ್ದರು. ಸಮಿತಿಯನ್ನು ರಚಿಸುವ ಮೂಲಕ ಅವರು ವಿಷಯವನ್ನು ಹತ್ತಿಕ್ಕಲು ಪ್ರಯತ್ನಿಸಿದರು; ಆ ಸಮಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಕುಸ್ತಿಪಟುಗಳು ಹೇಳುತ್ತಿರುವುದು ‘ಫೇಕ್‌’ಗಳಿಗೆ ಕೇಳಿಸುತ್ತಿಲ್ಲವೇಕೆ?

ಸುಳ್ಳು 4: ‘ನಾವು ನ್ಯಾಷನಲ್ ಲೆವೆಲ್‌ನ ಅರ್ಹತಾ ರೌಂಡ್‌‌ನಲ್ಲಿ ಭಾಗವಹಿಸುವುದಿಲ್ಲ. ನಾವು ಡೈರೆಕ್ಟ್ ಆಗಿ ಒಲಂಪಿಕ್‌ನಲ್ಲಿ ಭಾಗವಹಿಸುತ್ತೇವೆ’ ಎಂದು ಕುಸ್ತಿಪಟುಗಳು ಹೇಳಿದ್ದಾರೆ

ಈ ರೀತಿಯ ಯಾವುದೇ ಅವಕಾಶ ಇರಲು ಸಾಧ್ಯವಿಲ್ಲ. ಇಂತಹ ಹೇಳಿಕೆಯನ್ನು ಕ್ರೀಡಾಪಟುಗಳು ಹೇಳಿರುವ ಸಂಬಂಧ ಯಾವುದೇ ವರದಿಯಾಗಿಲ್ಲ. ಅಲ್ಲದೇ ಈ ಹೋರಾಟದಿಂದಾಗಿ ತಮ್ಮ ಭವಿಷ್ಯ ಡೋಲಾಯಮಾನವಾಗಿದೆ ಎಂದು ಕುಸ್ತಿಪಟುಗಳು ಆತಂಕ ವ್ಯಕ್ತಪಡಿಸಿದ್ದಾರೆಯೇ ಹೊರತು ಈ ರೀತಿಯ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಗಮನಿಸಬೇಕಾದ ವಿಚಾರವೆಂದರೆ- ಒಲಂಪಿಕ್ ವಿಚಾರವಾಗಿ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವನ್ನು ಬ್ರಿಜ್ ವಿರೋಧಿಸಿದ್ದಾನೆ. ಮುಂದಿನ ಒಲಿಂಪಿಕ್ಸ್‌ಗೆ ಕ್ರೀಡಾಪಟುಗಳನ್ನು ತಯಾರಿ ಮಾಡಲು ಕೇಂದ್ರ ಸರ್ಕಾರ ರೂಪಿಸಿದ ‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ (ಟಾಪ್)’ ಯೋಜನೆ ವಿರುದ್ಧ ಆತ ಮಾತನಾಡಿದ್ದಾನೆ. ಈ ಯೋಜನೆಯಡಿ ಕ್ರೀಡಾಪಟುಗಳನ್ನು ನೇರವಾಗಿ ಸಂಪರ್ಕಿಸದಂತೆ ಸರ್ಕಾರಕ್ಕೆ ಹೇಳಿದ್ದಾನೆ.

ಕಳೆದ ವರ್ಷ ಟೋಕಿಯೊ ಒಲಿಂಪಿಕ್‌ ನಂತರ ನೀಡಿದ ಹೇಳಿಕೆ ಹೀಗಿತ್ತು: “ಕುಸ್ತಿಪಟುಗಳನ್ನು ಬೆಂಬಲಿಸುವ ಖಾಸಗಿ ಹಾಗೂ ಲಾಭೋದ್ದೇಶವಿಲ್ಲದ ಸಂಸ್ಥೆಗಳ ಮೇಲೆ ಫೆಡರೇಷನ್ ಕಣ್ಣಿಡುತ್ತದೆ.”

ಸುಳ್ಳು 5: ಕಷ್ಟ ಕೇಳಲು ಹೋದಾಗ ಪಿ.ಟಿ. ಉಷಾ ಅವರನ್ನು ಕುಸ್ತಿಪಟುಗಳು (ಸ್ಥಳದಿಂದ) ಓಡಿಸಿದ್ದಾರೆ

ಭಾರತೀಯ ಒಲಂಪಿಕ್ ಅಸೋಸಿಯೇಷನ್‌ ಅಧ್ಯಕ್ಷೆ ಪಿ.ಟಿ.ಉಷಾ ಅವರನ್ನು ಹೋರಾಟನಿರತ ಕುಸ್ತಿಪಟುಗಳು ಓಡಿಸಿದ್ದಾರೆಂಬುದು ಸುಳ್ಳು. ಇದಕ್ಕಿಂತ ಮುಖ್ಯವಾಗಿ ಪಿ.ಟಿ.ಉಷಾ ಅವರೇ ವ್ಯತಿರಿಕ್ತ ಹೇಳಿಕೆ ನೀಡಿದ್ದರು. “ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಅವರು ಮಾಡಿರುವುದು ಆಟಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದಿದ್ದರು. ಆದರೆ ಟೀಕೆಗಳು ವ್ಯಕ್ತವಾದ ಬಳಿಕ ಯೂಟರ್ನ್ ಹೊಡೆದಿದ್ದರು. ಕುಸ್ತಿಪಟುಗಳ ಹೋರಾಟದ ಸ್ಥಳಕ್ಕೆ ಪಿ.ಟಿ.ಉಷಾ ಭೇಟಿ ನೀಡಿ, ಅವರೊಂದಿಗೆ ಮಾತನಾಡಿದ್ದರು. ಆದರೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿರಲಿಲ್ಲ.

ಕುಸ್ತಿಪಟು ಬಜರಂಗ್ ಪುನಿಯಾ ಅವರು, ತಮ್ಮೊಂದಿಗೆ ಪಿ.ಟಿ.ಉಷಾ ಅವರು ಆಡಿರುವ ಮಾತುಗಳನ್ನು ಹಂಚಿಕೊಂಡಿದ್ದರು. “ಆಟಗಾರರಿಗೆ ಸಹಾಯ ಮಾಡುವ ಭರವಸೆಯನ್ನು ಅವರು ನೀಡಿದ್ದಾರೆ. ಉಷಾ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ. ನಾನು ಮೊದಲು ಕ್ರೀಡಾಪಟು ಮತ್ತು ನಂತರ ಅಧಿಕಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮೊಂದಿಗಿರುವುದಾಗಿ ಭರವಸೆ ನೀಡಿದ್ದಾರೆ. ನಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ನಮಗೆ ನ್ಯಾಯ ದೊರಕಿಸಲು ಪ್ರಯತ್ನಿಸಲಿದ್ದಾರೆ’’ ಎಂದು ಪುನಿಯಾ ವಿವರಿಸಿದ್ದರು.

ಕುಸ್ತಿಪಟುಗಳ ಫೋಟೋಗಳನ್ನು ತಿರುಚಿ ಹರಿಬಿಟ್ಟಿರುವುದು, ಹೋರಾಟ ಮಾಡುವುದೇ ತಪ್ಪೆಂದು ಬಿಂಬಿಸುವುದು ಎಗ್ಗಿಲ್ಲದೆ ನಡೆಯುತ್ತಿದೆ. ಪ್ರಶ್ನೆ ಕೇಳುವವರನ್ನೇ ಬಾಯಿ ಮುಚ್ಚಿಸುವ ವಿಕೃತಿ ಮತ್ತು ಸರ್ವಾಧಿಕಾರಿ ಧೋರಣೆಯನ್ನು ತೋರಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಫೇಕ್‌ ಅಕೌಂಟ್‌ಗಳ ಮೂಲಕ ಕುಸ್ತಿಪಟುಗಳ ವಿರುದ್ಧ ವಿಷಕಾರಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...