Homeಮುಖಪುಟಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕ್ರಿಶ್ಚಿಯನ್ ಗುಂಪುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, “ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪು ಮೇಲ್ನೋಟಕ್ಕೆ ಈ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ (ಫೆ.17) ವರದಿ ಮಾಡಿದೆ.

ನ್ಯಾಯಾಧೀಶರಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು ಫೆಬ್ರವರಿ 12ರಂದು ಇಬ್ಬರು ಅಧಿಕಾರಿಗಳ ವಿರುದ್ಧ ‘ನ್ಯಾಯಾಂಗ ನಿಂದನೆ ಕಾಯ್ದೆ 1971’ರ ಅಡಿಯಲ್ಲಿ ಕ್ರಮ ಜರುಗಿಸಿದೆ. ಇದೇ ವೇಳೆ ಅರ್ಜಿದಾರ ತಾರಿಕ್ ಖಾನ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಿರುವ ಹೈಕೋರ್ಟ್, ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಕೋರಿದೆ ಎಂದು ವರದಿ ವಿವರಿಸಿದೆ.

ನಮ್ಮ ಸಂವಿಧಾನದ 25ನೇ ವಿಧಿ ಅಡಿಯಲ್ಲಿ ಖಾಸಗಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದು ನಾಗರಿಕರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಒತ್ತಿಹೇಳಿದೆ.

ಜನವರಿ 16ರಂದು ರೇಷ್ಮಾ ಖಾನ್ ಎಂಬುವವರಿಗೆ ಸೇರಿದ ಖಾಲಿ ಮನೆಯೊಳಗೆ ನಮಾಝ್ ಮಾಡಿದ ಗುಂಪನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಪ್ರಾರ್ಥನೆಯು ಸಂಪೂರ್ಣವಾಗಿ ತನ್ನ ಖಾಸಗಿ ಆವರಣದೊಳಗೆ ನಡೆದಿದ್ದು, ಇದಕ್ಕೆ ತಾನು ಅನುಮತಿ ನೀಡಿರುವುದಾಗಿ ರೇಷ್ಮಾ ಖಾನ್ ತಿಳಿಸಿದ್ದರು.

ಪೊಲೀಸರ ಕ್ರಮದ ವಿರುದ್ದ ಈ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಂಬಂಧಿಸಿದ ‘ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಉತ್ತರ ಪ್ರದೇಶ ಸರ್ಕಾರ’ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ತಾರಿಖ್ ಖಾನ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ ಪೊಲೀಸರಿಗೆ ತಿಳಿಸಬೇಕು ಮತ್ತು ಕಾನೂನಿನಡಿಯಲ್ಲಿ ಅಗತ್ಯವಿರುವ ಅನುಮತಿಯನ್ನು ಪಡೆಯಬೇಕು ಎಂದು ಹೇಳಿತ್ತು.

ಅರ್ಜಿದಾರ ತಾರಿಖ್ ಖಾನ್ ಪ್ರತಿಕ್ರಿಯಿಸಿ, “ಜನವರಿ 27ರಂದು ಹೊರಡಿಸಲಾದ ನ್ಯಾಯಾಲಯದ ಆದೇಶವು ಮತ್ತೊಂದು ಅಲ್ಪಸಂಖ್ಯಾತ ಸಮುದಾಯವಾದ ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ನಾವೂ ಸಹ ಅಲ್ಪಸಂಖ್ಯಾತ ಸಮುದಾಯದವರೇ ಆಗಿರುವುದರಿಂದ, ಅದೇ ನಿಯಮ ನಮಗೂ ಅನ್ವಯಿಸಬೇಕು. ಇಲ್ಲಿಯವರೆಗೆ ನ್ಯಾಯಾಲಯದ ತಡೆಯಾಜ್ಞೆಯು ನಮಗೆ ರಕ್ಷಣೆ ನೀಡಿದೆ, ಆ ಕಾರಣಕ್ಕಾಗಿಯೇ ನಾವು ಮನೆಯಲ್ಲಿ ನಮ್ಮ ಪ್ರಾರ್ಥನೆಯನ್ನು ಪುನರಾರಂಭಿಸಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಹಿರಿಯ ಹೈಕೋರ್ಟ್ ವಕೀಲರಾದ ಎಸ್‌ಎಫ್‌ಎ ನಖ್ವಿ ಅವರು ನ್ಯಾಯಾಲಯದ ಆದೇಶ ಮತ್ತು ಹಿಂದೂ ನಿವಾಸಿಗಳ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ತೀರ್ಪು ಯಾವುದೇ ಗೊಂದಲಕ್ಕೆ ಅವಕಾಶ ನೀಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಈ ಆದೇಶವು ಸ್ವಯಂ ವಿವರಣಾತ್ಮಕವಾಗಿದೆ. ಒಂದು ಕಡೆ, ಖಾಸಗಿ ಜಾಗದಲ್ಲಿ ಪ್ರಾರ್ಥನೆ ನಡೆಸುವ ಅರ್ಜಿದಾರರ ಸಾಂವಿಧಾನಿಕ ಹಕ್ಕನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಮತ್ತೊಂದು ಕಡೆ, ಈ ವಿಷಯದಲ್ಲಿ ಯಾವುದೇ ನಿಷೇಧಾಜ್ಞೆ ಹೊರಡಿಸಿಲ್ಲ ಎಂದು ಸ್ವತಃ ರಾಜ್ಯ ಸರ್ಕಾರವೇ ನ್ಯಾಯಾಲಯಕ್ಕೆ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಈ ಕ್ರಮವು ಕಾನೂನುಬಾಹಿರ ಎಂದು ಹೇಗೆ ಪ್ರತಿಪಾದಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಆಡಳಿತಾತ್ಮಕ ಜವಾಬ್ದಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯೇ ಹೊರತು ಖಾಸಗಿ ವ್ಯಕ್ತಿಗಳದ್ದಲ್ಲ. ಒಂದು ವೇಳೆ ಪ್ರಾರ್ಥನೆ ನಡೆಸುವುದರ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೆ, ಸರ್ಕಾರವು ಅದನ್ನು ಕಾನೂನಿನ ಚೌಕಟ್ಟಿನಲ್ಲಿ ನಿರ್ವಹಿಸಬೇಕು. ಸಂವಿಧಾನಬದ್ಧ ಹಕ್ಕನ್ನು ಚಲಾಯಿಸುತ್ತಿರುವ ವ್ಯಕ್ತಿಗಳ ಬದಲಿಗೆ, ಕಾನೂನುಬದ್ಧ ಧಾರ್ಮಿಕ ಆಚರಣೆಯನ್ನು ವಿರೋಧಿಸುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ನಖ್ವಿ ಅವರು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ನಡುವೆ ಮೊಹಮ್ಮದ್‌ಗಂಜ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಮನೆಯಲ್ಲಿ ಶುಕ್ರವಾರದ ನಮಾಝ್ ಪುನರಾರಂಭಿಸುವುದಕ್ಕೆ ಕೆಲವು ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾರದ ಪ್ರಾರ್ಥನಾ ಸಭೆಗಳನ್ನು ಬೇರೆ ಬೇರೆ ಖಾಸಗಿ ಮನೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿರುವ ಐದು ಕುಟುಂಬಗಳು, ಈ ವಸತಿ ಆಸ್ತಿಯು ಕಾಲಾನಂತರದಲ್ಲಿ ಶಾಶ್ವತ ಪ್ರಾರ್ಥನಾ ಮಂದಿರವಾಗಿ ಮಾರ್ಪಡಬಹುದು ಎಂಬ ಆತಂಕ ವ್ಯಕ್ತಪಡಿಸಿ ತಮ್ಮ ಮನೆಗಳ ಹೊರಗೋಡೆಗಳ ಮೇಲೆ “ಮನೆ ಮಾರಾಟಕ್ಕಿದೆ” ಎಂದು ಬರೆದಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮೊಹಮ್ಮದ್‌ಗಂಜ್‌ ಗ್ರಾಮವು ಸುಮಾರು 100 ಮನೆಗಳನ್ನು ಹೊಂದಿದ್ದು, ಎರಡೂ ಸಮುದಾಯಗಳ ಸುಮಾರು 600 ಜನರು ಅಕ್ಕಪಕ್ಕದಲ್ಲೇ ವಾಸಿಸುತ್ತಿದ್ದಾರೆ. ಭಿನ್ನಾಭಿಪ್ರಾಯಗಳು ಸಾರ್ವಜನಿಕ ಪ್ರತಿಭಟನೆಯಾಗಿ ಬದಲಾದ ಕಾರಣ, ಈ ವಾರದ ಆರಂಭದಲ್ಲಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತನ್ನು ಹೆಚ್ಚಿಸಲಾಗಿದೆ.

ಗ್ರಾಮಸ್ಥರಾದ ಕಮಲ್ ಕಿಶೋರ್ ಅವರು ಪ್ರತಿಕ್ರಿಯಿಸಿ, “ಕಳೆದ ಬಾರಿ ಅವರನ್ನು ತಡೆಯಲಾಗಿತ್ತು, ಆದರೆ ಈಗ ಮತ್ತೆ ಅದೇ ಮನೆಯಲ್ಲಿ ನಮಾಝ್ ಮಾಡುವುದನ್ನು ಆರಂಭಿಸಿದ್ದಾರೆ. ಆ ಮನೆ ಮದರಸಾ ಅಥವಾ ಮಸೀದಿಯಾಗಿ ಬದಲಾಗುವ ಮೊದಲೇ ಅದನ್ನು ಕೆಡವಬೇಕು ಎಂಬುದು ನಮ್ಮ ಆಗ್ರಹ” ಎಂದಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿ ಆರ್ಯ ತಿಳಿಸಿದ್ದಾರೆ. “ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಸ್ಥಾಪಿತ ನಿಯಮಗಳನ್ನು ಉಲ್ಲಂಘಿಸದ ಹೊರತು ನಾವು ಧಾರ್ಮಿಕ ಆಚರಣೆಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ವಸತಿ ಆಸ್ತಿಯನ್ನು ಸೂಕ್ತ ಪ್ರಕ್ರಿಯೆಯಿಲ್ಲದೆ ರಹಸ್ಯವಾಗಿ ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿ ಪರಿವರ್ತಿಸದಂತೆ ನೋಡುವುದಷ್ಟೇ ನಮ್ಮ ಕಾಳಜಿಯಾಗಿದೆ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...