Homeಮುಖಪುಟಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಈ ಹಿಂದೆ ಕ್ರಿಶ್ಚಿಯನ್ ಗುಂಪುಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, “ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ” ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪು ಮೇಲ್ನೋಟಕ್ಕೆ ಈ ಪ್ರಕರಣಕ್ಕೂ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಮಂಗಳವಾರ (ಫೆ.17) ವರದಿ ಮಾಡಿದೆ.

ನ್ಯಾಯಾಧೀಶರಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ಪೀಠವು ಫೆಬ್ರವರಿ 12ರಂದು ಇಬ್ಬರು ಅಧಿಕಾರಿಗಳ ವಿರುದ್ಧ ‘ನ್ಯಾಯಾಂಗ ನಿಂದನೆ ಕಾಯ್ದೆ 1971’ರ ಅಡಿಯಲ್ಲಿ ಕ್ರಮ ಜರುಗಿಸಿದೆ. ಇದೇ ವೇಳೆ ಅರ್ಜಿದಾರ ತಾರಿಕ್ ಖಾನ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 11ಕ್ಕೆ ನಿಗದಿಪಡಿಸಿರುವ ಹೈಕೋರ್ಟ್, ಅಧಿಕಾರಿಗಳಿಂದ ಪ್ರತಿಕ್ರಿಯೆಯನ್ನು ಕೋರಿದೆ ಎಂದು ವರದಿ ವಿವರಿಸಿದೆ.

ನಮ್ಮ ಸಂವಿಧಾನದ 25ನೇ ವಿಧಿ ಅಡಿಯಲ್ಲಿ ಖಾಸಗಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸುವುದು ನಾಗರಿಕರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಒತ್ತಿಹೇಳಿದೆ.

ಜನವರಿ 16ರಂದು ರೇಷ್ಮಾ ಖಾನ್ ಎಂಬುವವರಿಗೆ ಸೇರಿದ ಖಾಲಿ ಮನೆಯೊಳಗೆ ನಮಾಝ್ ಮಾಡಿದ ಗುಂಪನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು. ಪ್ರಾರ್ಥನೆಯು ಸಂಪೂರ್ಣವಾಗಿ ತನ್ನ ಖಾಸಗಿ ಆವರಣದೊಳಗೆ ನಡೆದಿದ್ದು, ಇದಕ್ಕೆ ತಾನು ಅನುಮತಿ ನೀಡಿರುವುದಾಗಿ ರೇಷ್ಮಾ ಖಾನ್ ತಿಳಿಸಿದ್ದರು.

ಪೊಲೀಸರ ಕ್ರಮದ ವಿರುದ್ದ ಈ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಂಬಂಧಿಸಿದ ‘ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಉತ್ತರ ಪ್ರದೇಶ ಸರ್ಕಾರ’ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ತಾರಿಖ್ ಖಾನ್ ನ್ಯಾಯಾಲಯದ ಮೊರೆ ಹೋಗಿದ್ದರು.

ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ ಪೊಲೀಸರಿಗೆ ತಿಳಿಸಬೇಕು ಮತ್ತು ಕಾನೂನಿನಡಿಯಲ್ಲಿ ಅಗತ್ಯವಿರುವ ಅನುಮತಿಯನ್ನು ಪಡೆಯಬೇಕು ಎಂದು ಹೇಳಿತ್ತು.

ಅರ್ಜಿದಾರ ತಾರಿಖ್ ಖಾನ್ ಪ್ರತಿಕ್ರಿಯಿಸಿ, “ಜನವರಿ 27ರಂದು ಹೊರಡಿಸಲಾದ ನ್ಯಾಯಾಲಯದ ಆದೇಶವು ಮತ್ತೊಂದು ಅಲ್ಪಸಂಖ್ಯಾತ ಸಮುದಾಯವಾದ ಕ್ರಿಶ್ಚಿಯನ್ನರಿಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಜಾಗದಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಅದು ಸ್ಪಷ್ಟವಾಗಿ ತಿಳಿಸಿದೆ. ನಾವೂ ಸಹ ಅಲ್ಪಸಂಖ್ಯಾತ ಸಮುದಾಯದವರೇ ಆಗಿರುವುದರಿಂದ, ಅದೇ ನಿಯಮ ನಮಗೂ ಅನ್ವಯಿಸಬೇಕು. ಇಲ್ಲಿಯವರೆಗೆ ನ್ಯಾಯಾಲಯದ ತಡೆಯಾಜ್ಞೆಯು ನಮಗೆ ರಕ್ಷಣೆ ನೀಡಿದೆ, ಆ ಕಾರಣಕ್ಕಾಗಿಯೇ ನಾವು ಮನೆಯಲ್ಲಿ ನಮ್ಮ ಪ್ರಾರ್ಥನೆಯನ್ನು ಪುನರಾರಂಭಿಸಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಹಿರಿಯ ಹೈಕೋರ್ಟ್ ವಕೀಲರಾದ ಎಸ್‌ಎಫ್‌ಎ ನಖ್ವಿ ಅವರು ನ್ಯಾಯಾಲಯದ ಆದೇಶ ಮತ್ತು ಹಿಂದೂ ನಿವಾಸಿಗಳ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ತೀರ್ಪು ಯಾವುದೇ ಗೊಂದಲಕ್ಕೆ ಅವಕಾಶ ನೀಡಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಈ ಆದೇಶವು ಸ್ವಯಂ ವಿವರಣಾತ್ಮಕವಾಗಿದೆ. ಒಂದು ಕಡೆ, ಖಾಸಗಿ ಜಾಗದಲ್ಲಿ ಪ್ರಾರ್ಥನೆ ನಡೆಸುವ ಅರ್ಜಿದಾರರ ಸಾಂವಿಧಾನಿಕ ಹಕ್ಕನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಮತ್ತೊಂದು ಕಡೆ, ಈ ವಿಷಯದಲ್ಲಿ ಯಾವುದೇ ನಿಷೇಧಾಜ್ಞೆ ಹೊರಡಿಸಿಲ್ಲ ಎಂದು ಸ್ವತಃ ರಾಜ್ಯ ಸರ್ಕಾರವೇ ನ್ಯಾಯಾಲಯಕ್ಕೆ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಈ ಕ್ರಮವು ಕಾನೂನುಬಾಹಿರ ಎಂದು ಹೇಗೆ ಪ್ರತಿಪಾದಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಆಡಳಿತಾತ್ಮಕ ಜವಾಬ್ದಾರಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯೇ ಹೊರತು ಖಾಸಗಿ ವ್ಯಕ್ತಿಗಳದ್ದಲ್ಲ. ಒಂದು ವೇಳೆ ಪ್ರಾರ್ಥನೆ ನಡೆಸುವುದರ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೆ, ಸರ್ಕಾರವು ಅದನ್ನು ಕಾನೂನಿನ ಚೌಕಟ್ಟಿನಲ್ಲಿ ನಿರ್ವಹಿಸಬೇಕು. ಸಂವಿಧಾನಬದ್ಧ ಹಕ್ಕನ್ನು ಚಲಾಯಿಸುತ್ತಿರುವ ವ್ಯಕ್ತಿಗಳ ಬದಲಿಗೆ, ಕಾನೂನುಬದ್ಧ ಧಾರ್ಮಿಕ ಆಚರಣೆಯನ್ನು ವಿರೋಧಿಸುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ನಖ್ವಿ ಅವರು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಲಯದ ಆದೇಶದ ನಡುವೆ ಮೊಹಮ್ಮದ್‌ಗಂಜ್‌ನಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಮನೆಯಲ್ಲಿ ಶುಕ್ರವಾರದ ನಮಾಝ್ ಪುನರಾರಂಭಿಸುವುದಕ್ಕೆ ಕೆಲವು ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾರದ ಪ್ರಾರ್ಥನಾ ಸಭೆಗಳನ್ನು ಬೇರೆ ಬೇರೆ ಖಾಸಗಿ ಮನೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಆರೋಪಿಸಿರುವ ಐದು ಕುಟುಂಬಗಳು, ಈ ವಸತಿ ಆಸ್ತಿಯು ಕಾಲಾನಂತರದಲ್ಲಿ ಶಾಶ್ವತ ಪ್ರಾರ್ಥನಾ ಮಂದಿರವಾಗಿ ಮಾರ್ಪಡಬಹುದು ಎಂಬ ಆತಂಕ ವ್ಯಕ್ತಪಡಿಸಿ ತಮ್ಮ ಮನೆಗಳ ಹೊರಗೋಡೆಗಳ ಮೇಲೆ “ಮನೆ ಮಾರಾಟಕ್ಕಿದೆ” ಎಂದು ಬರೆದಿದ್ದಾರೆ. ಅಲ್ಲದೆ, ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಮೊಹಮ್ಮದ್‌ಗಂಜ್‌ ಗ್ರಾಮವು ಸುಮಾರು 100 ಮನೆಗಳನ್ನು ಹೊಂದಿದ್ದು, ಎರಡೂ ಸಮುದಾಯಗಳ ಸುಮಾರು 600 ಜನರು ಅಕ್ಕಪಕ್ಕದಲ್ಲೇ ವಾಸಿಸುತ್ತಿದ್ದಾರೆ. ಭಿನ್ನಾಭಿಪ್ರಾಯಗಳು ಸಾರ್ವಜನಿಕ ಪ್ರತಿಭಟನೆಯಾಗಿ ಬದಲಾದ ಕಾರಣ, ಈ ವಾರದ ಆರಂಭದಲ್ಲಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತನ್ನು ಹೆಚ್ಚಿಸಲಾಗಿದೆ.

ಗ್ರಾಮಸ್ಥರಾದ ಕಮಲ್ ಕಿಶೋರ್ ಅವರು ಪ್ರತಿಕ್ರಿಯಿಸಿ, “ಕಳೆದ ಬಾರಿ ಅವರನ್ನು ತಡೆಯಲಾಗಿತ್ತು, ಆದರೆ ಈಗ ಮತ್ತೆ ಅದೇ ಮನೆಯಲ್ಲಿ ನಮಾಝ್ ಮಾಡುವುದನ್ನು ಆರಂಭಿಸಿದ್ದಾರೆ. ಆ ಮನೆ ಮದರಸಾ ಅಥವಾ ಮಸೀದಿಯಾಗಿ ಬದಲಾಗುವ ಮೊದಲೇ ಅದನ್ನು ಕೆಡವಬೇಕು ಎಂಬುದು ನಮ್ಮ ಆಗ್ರಹ” ಎಂದಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿ ಆರ್ಯ ತಿಳಿಸಿದ್ದಾರೆ. “ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಸ್ಥಾಪಿತ ನಿಯಮಗಳನ್ನು ಉಲ್ಲಂಘಿಸದ ಹೊರತು ನಾವು ಧಾರ್ಮಿಕ ಆಚರಣೆಗಳಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ವಸತಿ ಆಸ್ತಿಯನ್ನು ಸೂಕ್ತ ಪ್ರಕ್ರಿಯೆಯಿಲ್ಲದೆ ರಹಸ್ಯವಾಗಿ ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿ ಪರಿವರ್ತಿಸದಂತೆ ನೋಡುವುದಷ್ಟೇ ನಮ್ಮ ಕಾಳಜಿಯಾಗಿದೆ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...