ಕರ್ನಾಟಕದಲ್ಲಿ ಬಹುತೇಕ ಲಾಕ್ ಡೌನ್ ಸಡಿಲಿಕೆ ಮಾಡಿದ್ದು ಖಾಸಗಿ ಮತ್ತು ಸರ್ಕಾರಿ ಬಸ್, ಆಟೋ, ಟ್ಯಾಕ್ಸಿಗಳ ಓಡಾಟಕ್ಕೆ ನಾಳೆಯಿಂದಲೇ ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಮಹಾರಾಷ್ಟ್ರ, ತಮಿಳುನಾಡು, ಕೇರಳ ರಾಜ್ಯಗಳಿ ಬಸ್ಗಳಿಗೆ ಮೇ 31ರವರೆಗೆ ಅವಕಾಶವಿಲ್ಲ ಎಂದಿದ್ದಾರೆ. ರಾಜ್ಯದ ಬಸ್ಗಳಲ್ಲಿ ಒಂದು ಬಸ್ ನಲ್ಲಿ 30 ಜನ ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಇತರ ಪ್ರದೇಶಗಳಿಗೆ ಬಿಎಂಟಿಸಿ ಬಸ್ಗಳ ಸಂಚಾರವೂ ಇರಲಿದೆ. ಕೌಂಟರ್ ಗಳಲ್ಲಿ ಟಿಕೆಟ್ ಪಡೆದು ದೈಹಿಕ ಅಂತರ ಕಾಪಾಡಿಕೊಂಡು ಪ್ರಯಾಣಿಸಬೇಕು. ಪ್ರಯಾಣದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಬ್ಬನ್ ಪಾರ್ಕ್, ಲಾಲ್ ಬಾಗ್ ನಲ್ಲಿ ಬೆಳಗ್ಗೆ 7 ರಿಂದ 9 ಮತ್ತು ಸಂಜೆ 5 ರಿಂದ 7 ಗಂಟೆಯವರೆಗೆ ಸಾರ್ವಜನಿಕರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ರೈಲು ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಮೆಟ್ರೊ, ಮಾಲ್ ಮತ್ತು ಸಿನಿಮಾ ಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಮದುವೆ ಸಮಾರಂಭಗಳಿಗೆ ಕೇವಲ 50 ಮಂದಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಹೆಚ್ಚಿನ ಜನ ಸೇರುವ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ಗಟ್ಸ್ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್!