ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು, ತಮ್ಮ ಹೊಸ ಘೋಷಿಸಿದ್ದಾರೆ. ಪಕ್ಷಕ್ಕೆ ಪಂಜಾಬ್ ಲೋಕ್ ಕಾಂಗ್ರೆಸ್ ಎಂದು ಹೆಸರಿಟ್ಟಿದ್ದಾರೆ.
ಅಮರಿಂದರ್ ಸಿಂಗ್ ತಮ್ಮ ಟ್ವಿಟರ್ ಖಾತೆಯ ಪೋಸ್ಟ್ನಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಿದ್ದಾರೆ. ಪಕ್ಷದ ನೋಂದಣಿಗೆ ಅನುಮೋದನೆಯು ಭಾರತದ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದ್ದು, ನಂತರ ಪಕ್ಷದ ಚುನಾವಣಾ ಚಿಹ್ನೆಯನ್ನು ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ.
ಪಂಜಾಬ್ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಒಂದೂವರೆ ತಿಂಗಳ ಬಳಿಕ ಹೊಸ ಪಕ್ಷವನ್ನು ಘೋಷಿಸಿದ್ದಾರೆ.
ಇದನ್ನೂ ಓದಿ: ಪಂಜಾಬ್ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್ ಉರುಳಿಸಿದ ರಾಜಕೀಯ ದಾಳ!
I have today sent my resignation to @INCIndia President Ms Sonia Gandhi ji, listing my reasons for the resignation.
‘Punjab Lok Congress’ is the name of the new party. The registration is pending approval with the @ECISVEEP. The party symbol will be approved later. pic.twitter.com/Ha7f5HKouq
— Capt.Amarinder Singh (@capt_amarinder) November 2, 2021
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿರುವ ಅಮರಿಂದರ್ ಸಿಂಗ್, ಇಬ್ಬರು ನಾಯಕರು ತಮ್ಮ ಪ್ರತಿಸ್ಪರ್ಧಿ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಬೆಂಬಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೊತೆಗೆ ’ನಾನು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇನೆ ಎಂದು ಯಾವತ್ತೂ ಹೇಳಿಲ್ಲ, ನನ್ನ ಪಕ್ಷ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುವುದಾಗಿ ಹೇಳಿದ್ದೆ ಅಷ್ಟೇ. ಆದರೆ ಈ ಬಗ್ಗೆ ಬಿಜೆಪಿಯೊಂದಿಗೆ ಇನ್ನೂ ಮಾತನಾಡಿಲ್ಲ’ ಎಂದಿದ್ದಾರೆ.
ಈ ಹಿಂದೆಯೇ ಹೊಸ ಪಕ್ಷ ರಚನೆಯ ಬಗ್ಗೆ ಹೇಳಿಕೆ ನೀಡಿದ್ದ ಕ್ಯಾಪ್ಟನ್, “ರೈತರ ಹೋರಾಟ ಬಗೆಹರಿದರೆ, 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ತಾನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತನಾಗಿದ್ದೇನೆ” ಎಂದು ಘೋಷಿಸಿದ್ದರು.
“2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರೈತರ ಹಿತದೃಷ್ಟಿಯಿಂದ ರೈತರ ಹೋರಾಟ ಬಗೆಹರಿಸಿದರೆ ಬಿಜೆಪಿ ಪಕ್ಷದ ಜೊತೆ ಸೀಟು ಹೊಂದಾಣಿಗೆ ಮಾಡುವ ಭರವಸೆ ಇದೆ. ಬಂಡಾಯ ಅಕಾಲಿ ಗುಂಪುಗಳು, ವಿಶೇಷವಾಗಿ ದಿಂಡಸ ಮತ್ತು ಬ್ರಹ್ಮಪುರ ಬಣಗಳಂತಹ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಯನ್ನೂ ನಾವು ಎದುರು ನೋಡುತ್ತಿದ್ದೇವೆ” ಎಂದು ಟ್ವೀಟ್ನಲ್ಲಿ ತಿಳಿಸಿದ್ದರು.
ಆದರೆ, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಆದರೆ, ಬಿಜೆಪಿಗೆ ಸೇರುವ ವದಂತಿಗಳನ್ನು ತಳ್ಳಿ ಹಾಕಿದ್ದರು. ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಎಂದಿದ್ದರು.
ಇದನ್ನೂ ಓದಿ: ಶೀಘ್ರದಲ್ಲೇ ಅಮರೀಂದರ್ ಸಿಂಗ್ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!