ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಭಾರತದ ಮುಂದಿನ ಉಪರಾಷ್ಟ್ರಪತಿಯಾಗುವ ರೇಸ್ನಲ್ಲಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಕೂಟ ಪಂಜಾಬ್ನ ಮಾಜಿ ಮುಖ್ಯಮಂತ್ರಿಯನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ತನ್ನ ಅಭ್ಯರ್ಥಿಯನ್ನಾಗಿ ಹೆಸರಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
“ಅಮರಿಂದರ್ ಸಿಂಗ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಹೆಸರುಗಳು ಹಲವು ಸುತ್ತಿನಲ್ಲಿ ನಡೆಯುತ್ತಿವೆ. ಬಿಜೆಪಿಯ ಉನ್ನತ ನಾಯಕತ್ವ ಮತ್ತು ಸಂಸದೀಯ ಮಂಡಳಿಯು ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ” ಎಂದು ಬಿಜೆಪಿ ಮೂಲಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಅಮರಿಂದರ್ ಸಿಂಗ್ ಅವರು ಪ್ರಸ್ತುತ ಬೆನ್ನಿನ ಶಸ್ತ್ರಚಿಕಿತ್ಸೆಗಾಗಿ ಲಂಡನ್ನಲ್ಲಿದ್ದಾರೆ. ಆದರೆ, ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ನಾಮನಿರ್ದೇಶಿತರಾಗಿ ಅಮರಿಂದರ್ ಅವರ ಹೆಸರನ್ನು ಪ್ರಸ್ತಾಪಿಸುವ ಬಗ್ಗೆ ಯಾವುದೇ ದೃಢೀಕರಣ ಇನ್ನೂ ಬಂದಿಲ್ಲ ಎಂದು ಅವರ ಆಪ್ತರು ಹೇಳಿದ್ದಾರೆ.
ಈ ನಡುವೆ ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಎರಡನೇ ಅವಧಿ ನೀಡುವ ಸಾಧ್ಯತೆಯ ಬಗ್ಗೆ ಕೂಡಾ ಬಿಜೆಪಿ ವಲಯದಲ್ಲಿ ಮಾತುಗಳಿದ್ದು, ಆದರೆ ಸದ್ಯಕ್ಕೆ ಈ ಬಗ್ಗೆ ಯಾವುದೇ ಅಧಿಕೃತ ಚರ್ಚೆಗಳು ನಡೆದಿಲ್ಲ ಎಂದು ಇಕನಾಮಿಕ್ ಟೈಮ್ಸ್ ವರದಿ ಹೇಳಿದೆ.
ಇದನ್ನೂ ಓದಿ: ಬಿಜೆಪಿ ಸೇರಲಿರುವ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್!
ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲ್ಪಟ್ಟ ನಂತರ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಹುಟ್ಟುಹಾಕಿದ್ದರು. ಇತ್ತೀಚಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು.
ಕಳೆದ 2017ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಗೋಪಾಲಕೃಷ್ಣ ಗಾಂಧಿ ಅವರನ್ನು ಕಣಕ್ಕಿಳಿಸಿದ್ದರೂ ಅವರು ವೆಂಕಯ್ಯ ನಾಯ್ಡು ವಿರುದ್ಧ ಸೋತಿದ್ದರು. ವೆಂಕಯ್ಯ ಅವರು 516 ಮತಗಳನ್ನು ಪಡೆದರೆ, ಗೋಪಾಲಕೃಷ್ಣ ಗಾಂಧಿ ಕೇವಲ 244 ಮತಗಳನ್ನು ಗಳಿಸಿದ್ದರು. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.