Homeಕರ್ನಾಟಕದೇವೇಗೌಡರೂ ಬೆದರಿದರಾ ಮೋದಿ-ಶಾ ಜೋಡಿಯ ‘ಅರೆಸ್ಟ್’ ರಾಜಕಾರಣಕ್ಕೆ?

ದೇವೇಗೌಡರೂ ಬೆದರಿದರಾ ಮೋದಿ-ಶಾ ಜೋಡಿಯ ‘ಅರೆಸ್ಟ್’ ರಾಜಕಾರಣಕ್ಕೆ?

- Advertisement -
- Advertisement -

ಮನಿ ಲಾಂಡರಿಂಗ್ ಕೇಸಿನಲ್ಲಿ ಕೇಂದ್ರ ಸರ್ಕಾರದ ಇಡಿ ಬಂಧಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರ ಮನೆಗೆ ಮಾಜಿ ಸಿಎಂ ಕುಮಾರಸ್ವಾಮಿ ಹೋಗಿಬಂದಿದ್ದಾರೆ. ಡೀಕೆ ತಾಯಿ ಹೆಚ್ಡಿಕೆ ಮುಂದೆ ಗೋಳಾಡಿದ ವೀಡಿಯೋ ವೈರಲ್ ಆಗಿದೆ. ಸಾಮಾನ್ಯವಾಗಿ ಯಾರಾದರು ನಮ್ಮನ್ನಗಲಿದರೆ ಅಂತವರ ಮನೆಗೆ ಹೋಗಿ ಸಂಬಂಧಿಕರಿಗೆ ಸಾಂತ್ವನ ಹೇಳಿಬರೋದು ವಾಡಿಕೆ. ಆದರೆ ಪ್ರಕರಣವೊಂದರಲ್ಲಿ (ಅದು ಸರಿಯೋ, ತಪ್ಪೋ) ಆರೋಪಿಯಾಗಿ ಅರೆಸ್ಟಾದ ವ್ಯಕ್ತಿಯ, ಅದೂ ತನ್ನ ಎದುರಾಳಿ ರಾಜಕೀಯ ಮುಖಂಡನ ಮನೆಗೆ ಮಾಜಿ ಸಿಎಂ ಒಬ್ಬರು ಹೋಗಿಬಂದದ್ದು ಮೇಲ್ನೋಟಕ್ಕೆ ಕಾಣುವಷ್ಟು ‘ಸಾಂತ್ವನ’ದ ಪ್ರಸಂಗವಲ್ಲ. ಅದರ ಹಿಂದೆ ಸೋ ಕಾಲ್ಡ್ ಫೀನಿಕ್ಸ್ ರಾಜಕಾರಣಿ ದೇವೇಗೌಡರ ಸ್ಪಷ್ಟ ಲೆಕ್ಕಾಚಾರಗಳಿವೆ.

ಹೌದು, ದೇವೇಗೌಡರ ನೇರ ನಿರ್ದೇಶನಗಳಿಲ್ಲದೆ ಕುಮಾರಸ್ವಾಮಿ ಕನಕಪುರದ ಕೋಡಿಹಳ್ಳಿ ಮನೆಗೆ ಕಾಲಿಡಲು ಸಾಧ್ಯವೇ ಇಲ್ಲ. ಬಿಜೆಪಿಯ ಅಧಿಕಾರ ದುರ್ಬಳಕೆಯನ್ನು ವಿರೋಧಿಸಬೇಕೆನ್ನುವ ದಿಟ್ಟ ನಿರ್ಧಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ತನ್ನ ಪಾರ್ಟಿಯ ಡಿ.ಕೆ.ಶಿವಕುಮಾರ್ ಪರವಾಗಿ ಗಟ್ಟಿ ದನಿ ಎತ್ತುತ್ತಿದೆಯಾದರು ಆ ಪಕ್ಷದ ಯಾರೂ ಶಿವಕುಮಾರ್ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ. ಅಂತದ್ದರಲ್ಲಿ ಕುಮಾರಸ್ವಾಮಿ ಹೋಗಿ ಬಂದದ್ದನ್ನು ಅಷ್ಟು ಸಲೀಸಾಗಿ ನೋಡಲಾಗದು.

ಕೇಂದ್ರದ ಬಿಜೆಪಿ ಸರ್ಕಾರ, ನಿರ್ದಿಷ್ಟವಾಗಿ ಮೋದಿ-ಶಾ ಜೋಡಿ, ವಿರೋಧ ಪಕ್ಷಗಳನ್ನು ಮಟ್ಟಹಾಕಲು ಅಸ್ತ್ರವೊಂದನ್ನು ಅಣಿಗೊಳಿಸಿಕೊಂಡು ಕೂತಿದೆ. ಎದುರಾಳಿ ನಾಯಕರ ಮೇಲಿರುವ ಕೇಸುಗಳಿಗೆಲ್ಲ ಜೀವತುಂಬಿ ಬೆದರಿಸಿ, ಜೈಲುಭೀತಿ ಹುಟ್ಟಿಸಿ ಅವರನ್ನು ಒಂದೋ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳೋದು ಇಲ್ಲವೇ ಜೈಲಿಗೆ ತಳ್ಳಿ ಎದುರಾಳಿಗಳ ಬಲ ಕುಗ್ಗಿಸುವುದು ಈಗ ನಡೆಯುತ್ತಿರುವ ರಾಜಕೀಯ ಸರ್ಕಸ್ಸು. ಬೇರೆಬೇರೆ ಪಕ್ಷಗಳ ರಾಜಕಾರಣಿಗಳು ದಂಡಿಯಾಗಿ ಬಿಜೆಪಿಯತ್ತ ಗುಳೆ ಹೊರಟಿರೋದು ಈ ಅನುಮಾನವನ್ನು ದಟ್ಟವಾಗಿಸಿದರೆ, ಮಾಜಿ ಕೇಂದ್ರ ಮಂತ್ರಿ ಪಿ.ಚಿದಂಬರಂಗೆ ಆದ ಗತಿ ಇದನ್ನು ಒತ್ತಿ ಹೇಳುತ್ತೆ. ಕರ್ನಾಟಕದಲ್ಲೇ ತೆಗೆದುಕೊಂಡರೆ ಅಧಿಕಾರದಲ್ಲಿದ್ದ ಮೈತ್ರಿ ಸರ್ಕಾರವನ್ನು ಅನಾಮತ್ತು ಅಡ್ಡಡ್ಡ ಮಲಗಿಸಿ ಮಹಾರಾಷ್ಟ್ರದ ರೆಸಾರ್ಟು ಸೇರಿಕೊಂಡ ಅತೃಪ್ತ ಕಂ ಅನರ್ಹ ಶಾಸಕರನ್ನು ಸೆಳೆದಿದ್ದೂ ಇದೇ ತಂತ್ರದಿಂದ ಎನ್ನುವುದು ದಿನೇದಿನೇ ದಟ್ಟವಾಗುತ್ತಿರುವ ಸಂಗತಿ.

ಈ ಭಯವೇ ದೇವೇಗೌಡರಿಗೆ ಕಾಡಲು ಶುರುವಾಗಿದೆಯಾ? ಇಂಥಾ ಡರ್ಟಿ ರಾಜಕಾರಣಕ್ಕೆ ಕೌಂಟರ್ ಕೊಡಲೆಂದೇ ಅವರು ತಮ್ಮ ವೆರಿ ಓಲ್ಡ್ ‘ಒಕ್ಕಲಿಗ’ಜಾತಿ ಅಸ್ತ್ರವನ್ನು ಮೊನಚು ಮಾಡಿಕೊಳ್ಳುತ್ತಿದ್ದಾರಾ? ಎಂಬೆಲ್ಲ ಅನುಮಾನಗಳು ಎಚ್ಡಿಕೆ ಹೋಗಿ ಡೀಕೆ ತಾಯಿಯನ್ನು ಭೇಟಿ ಮಾಡಿ ಬಂದದ್ದರ ಸುತ್ತ ತಲೆ ಎತ್ತುತ್ತಿವೆ. ಅಜಮಾಸು ಅರ್ಧ ಶತಮಾನಗಳ ಕಾಲ ರಾಜ್ಯ ಮತ್ತು ದೇಶ ರಾಜಕಾರಣದಲ್ಲಿ ಸರಿದಾಡಿದ ಗೌಡರ ಕುಟುಂಬದ ಬೆನ್ನಿಗೆ ದೊಡ್ಡ ಸಂಖ್ಯೆಗಳಲ್ಲಿ ಹಗರಣಗಳು ಮೆತ್ತಿಕೊಂಡಿಲ್ಲ ಎನ್ನುವುದು ನಿಜವೇ ಆದರು ಕ್ಲೀನ್‌ಚಿಟ್ ಪಡೆದು ಬೀಗುವಷ್ಟು ಪಾರದರ್ಶಕವಾಗೇನೂ ಅವರ ವ್ಯವಹಾರಗಳಿಲ್ಲ. ಅದರಲ್ಲೂ ತೀರಾ ಇತ್ತೀಚೆಗಿನ ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ, ಫೋನ್ ಕದ್ದಾಲಿಕೆ ಹಗರಣ, ಮುಖ್ಯವಾಗಿ ಐಎಂಎ ವಂಚನೆ ಕೇಸುಗಳು ಕುಮಾರಸ್ವಾಮಿಯ ಮಗ್ಗುಲ ಮುಳ್ಳಾಗುವ ಎಲ್ಲಾ ಸಾಧ್ಯತೆಗಳಿವೆ. ಈಗಾಗಲೇ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಸಮನ್ಸ್ ಕೂಡಾ ಜಾರಿಯಾಗಿದೆ. ಜೊತೆಗೆ ಅವರ ಕುಟುಂಬದಿಂದ ಸ್ಪರ್ಧಿಸಿದ್ದ ಮೂವರು ಹುರಿಯಾಳುಗಳಲ್ಲಿ ಗೆದ್ದ ಏಕೈಕ ಸಂಸದ ಪ್ರಜ್ವಲ್ ರೇವಣ್ಣರ ಆಯ್ಕೆ ಅನೂರ್ಜಿತಗೊಳಿಸಬೇಕೆಂದು ಬಿಜೆಪಿಯ ಎ.ಮಂಜು ಕೊಟ್ಟ ಕೇಸ್ ಕೂಡಾ ಹೈಕೋರ್ಟ್‌ನಲ್ಲಿ ಲಗುಬಗೆಯಿಂದ ವಿಚಾರಣೆಗೆ ಒಳಪಟ್ಟಿದೆ. ಇಷ್ಟು ಸಾಕಲ್ಲವೇ ಮೋ-ಶಾ ಜೋಡಿಗೆ ದೇವೇಗೌಡರ ಕುಟುಂಬವನ್ನು ಮಟ್ಟಹಾಕಲು.

ವೀರಶೈವ ಓಟ್‌ಬ್ಯಾಂಕ್ ಮೂಲಕ ಉತ್ತರ ಕರ್ನಾಟಕದಲ್ಲಿ ಭರ್ಜರಿ ಬೇರೂರಿರುವ ಬಿಜೆಪಿಯನ್ನು ಕರ್ನಾಟಕದಲ್ಲಿ ಗಟ್ಟಿ ನೆಲೆಗೊಳಿಸಬೇಕೆಂದರೆ ಒಕ್ಕಲಿಗ ಪ್ರಾಬಲ್ಯದ ಹಳೇ ಮೈಸೂರು ಪ್ರಾಂತ್ಯದಲ್ಲೂ ಅಷ್ಟೇ ಆಳವಾಗಿ ಬೇರೂರಿಸಬೇಕು ಎಂಬ ಆಲೋಚನೆ ಬಿಜೆಪಿ ಹೈಕಮಾಂಡ್ ನದ್ದು. ಅದಕ್ಕೋಸ್ಕರ ಒಕ್ಕಲಿಗ ಲೀಡರುಗಳನ್ನೇ ಟಾರ್ಗೆಟ್ ಮಾಡಿಕೊಂಡಿರುವ ತಂತ್ರಗಾರಿಕೆ ದೇವೇಗೌಡರ ಕಿವಿಗೂ ತಲುಪಿದೆ. ಈಗಾಗಲೇ ಡೀಕೆ ಮೇಲೆ ಮುರಕೊಂಡು ಬಿದ್ದಿರುವ ಮೋದಿ-ಶಾ ಜೋಡಿಯ ಮುಂದಿನ ಟಾರ್ಗೆಟ್ ತಮ್ಮ ಕುಟುಂಬ ಎನ್ನುವುದೂ ಅವರಿಗೆ ಚೆನ್ನಾಗಿ ಮನದಟ್ಟಾಗಿದೆ. ಅದರಲ್ಲೂ ಕುಮಾರಸ್ವಾಮಿ ಸಿಎಂ ಆಗಿದ್ದಾಗಲೇ ಕರ್ನಾಟಕ ಪೊಲೀಸರು ದುಬೈಗೆ ಹೋಗಿ ಅರೆಸ್ಟು ಮಾಡಿ ಕರೆತರುತ್ತಿದ್ದ ಐಎಂಎ ಆರೋಪಿ ಮನ್ಸೂರ್ ಖಾನ್‌ನನ್ನು ಕೇಂದ್ರದ ಇಡಿ ಅಧಿಕಾರಿಗಳು ದೆಹಲಿಯಲ್ಲೇ ಅಡ್ಡಗಟ್ಟಿ ತಮ್ಮ ವಶಕ್ಕೆ ಪಡೆದಿದ್ದಂತೂ (ವಿಶ್ವಾಸಮತ ಹೈಡ್ರಾಮಾ ಅವಧಿಯಲ್ಲಿ ಸ್ವತಃ ಕುಮಾರಸ್ವಾಮಿ ಸದನದಲ್ಲೇ ಈ ಬಗ್ಗೆ ಹೇಳಿಕೊಂಡಿದ್ದರು) ಗೌಡರ ಕುಟುಂಬಕ್ಕೆ ದೊಡ್ಡ ಕಗ್ಗಂಟಾಗುವ ಸಾಧ್ಯತೆಯಿದೆ. ನೆನಪಿರಲಿ, ತನ್ನ ಮಗಳು ಶೀನಾ ಬೋರಾ ಮರ್ಡರ್ ಕೇಸಿನಲ್ಲಿ ಜೈಲುಹಕ್ಕಿಯಾಗಿರುವ ಇಂದ್ರಾಣಿ ಮುಖರ್ಜಿಯಿಂದ ಪಡೆದುಕೊಂಡ ಹೇಳಿಕೆಯನ್ನು ನೆಪವಾಗಿಟ್ಟುಕೊಂಡೇ ಪಿ.ಚಿದಂಬರಂ ಅವರನ್ನು ಅರೆಸ್ಟ್ ಮಾಡಿರೋದು. ಈಗ ಮನ್ಸೂರ್ ಖಾನನಿಂದಲೂ ಅಂತದ್ದೇ ಹೇಳಿಕೆ ಬರೆಸಿಕೊಳ್ಳೋದೇನು ಕಷ್ಟವಿಲ್ಲ. ಇನ್ನು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿರೋದು ಕೂಡಾ ಗೌಡರ ಆತಂಕವನ್ನು ದುಪ್ಪಟ್ಟುಗೊಳಿಸಿರಲಿಕ್ಕೂ ಸಾಕು.

ಹಾಗಂತ, ಬಿಜೆಪಿಯ ಈ ಅರೆಸ್ಟ್ ರಾಜಕಾರಣಕ್ಕೆ ದೇವೇಗೌಡರ ಮೊದಲ ಅಸ್ತ್ರ ಜಾತಿ ರಾಜಕಾರಣವಾಗಿರಲಿಲ್ಲ. ಮೈತ್ರಿ ಸರ್ಕಾರವನ್ನು ಬಿಜೆಪಿ ಬೀಳಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿದ ದೇವೇಗೌಡರು ತಮ್ಮ ವಾಕ್ಚಾತುರ್ಯವನ್ನು ಖರ್ಚು ಮಾಡಿದ್ದು ಸಿದ್ದರಾಮಯ್ಯನನ್ನು ತೆಗೆಳುವುದಕ್ಕೇ ವಿನಾಃ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುವುದಕ್ಕಲ್ಲ. ಒಂದು ಹಂತದಲ್ಲಿ, ಒಂದಷ್ಟು ಜೆಡಿಎಸ್ ಶಾಸಕರು ದೇವೇಗೌಡರ ಮನೆಯಲ್ಲಿ ಕೂತು ಬಿಜೆಪಿ ಸರ್ಕಾರಕ್ಕೆ ಬೆಂಬಲ ಕೊಡಬೇಕೆನ್ನುವ ಮಾತುಗಳೂ ಕೇಳಿಬಂದವು. ಆ ರೀತಿಯಲ್ಲಿ ಬಿಜೆಪಿಯೊಂದಿಗೆ ಸನಿಹಗೊಳ್ಳಲು ಗೌಡರು ಯತ್ನಿಸಿದ್ದುಂಟು. ಆದರೆ ಗೌಡರ ವರಾತಗಳ ಬಗ್ಗೆ ಚೆನ್ನಾಗಿ ಅರಿವಿರುವ ಬಿಜೆಪಿ ಅದಕ್ಕೆ ಸೊಪ್ಪು ಹಾಕಲಿಲ್ಲ.

ಯಾವಾಗ ಡೀಕೆ ಬುಡಕ್ಕೇ ‘ಇಡಿ’ ನೆಪದಲ್ಲಿ ಮೋ-ಶಾ ಜೋಡಿ ಲಗ್ಗೆ ಇಟ್ಟಿತೊ ಆಗ ಗೌಡರಿಗೆ ಅನಿವಾರ್ಯವಾಗಿ ಉಳಿದದ್ದು ತಮ್ಮ ಹಳೇ ಅಸ್ತ್ರ. ಅದು ಜಾತಿ ರಾಜಕಾರಣ. ಡೀಕೆ ಬಂಧನ ವಿರೋಧಿಸಿ ಒಕ್ಕಲಿಗರ ಪ್ರಾಬಲ್ಯವಿರುವ ಸ್ಥಳಗಳಲ್ಲಿ (ಅಲ್ಲಿ ಸ್ವತಃ ಕಾಂಗ್ರೆಸ್ ಪಕ್ಷ ಬಲಾಢ್ಯವಾಗಿಲ್ಲವಾದರು) ದೊಡ್ಡದೊಡ್ಡ ಪ್ರತಿಭಟನೆಗಳು ನಡೆದಿವೆ, ವಿಶ್ವ ಒಕ್ಕಲಿಗರ ಸಂಘ ಕೇಂದ್ರದ ದ್ವೇಷ ರಾಜಕಾರಣದ ವಿರುದ್ಧ ಹೇಳಿಕೆ ಕೊಟ್ಟಿದೆ. ಇವೆಲ್ಲವುಗಳ ಹಿಂದೆ ದೇವೇಗೌಡರ ಮುತುವರ್ಜಿ ಇದೆ ಎನ್ನುವುದು ಲೇಟೆಸ್ಟ್ ವರ್ತಮಾನ. ಆ ಮೂಲಕ ಒಕ್ಕಲಿಗ ನಾಯಕರ ಮೇಲೆ (ತಮ್ಮ ಕುಟುಂಬದ ಮೇಲೆ) ಅಟ್ಯಾಕ್ ಮಾಡಿದರೆ ಇಡೀ ಒಕ್ಕಲಿಗ ಸಮುದಾಯವೇ ಬಿಜೆಪಿ ವಿರುದ್ಧ ತಿರುಗಿಬೀಳಲಿದೆ ಎಂಬ ಸಂದೇಶವನ್ನು ಡೀಕೆ ಪ್ರಕರಣದ ಮೂಲಕ ಬಿಜೆಪಿ ಹೈಕಮ್ಯಾಂಡ್‌ಗೆ ರವಾನಿಸಲು ಗೌಡರು ಯತ್ನಿಸುತ್ತಿದ್ದಾರೆ.

ಅದರ ಭಾಗವಾಗಿಯೇ ಕುಮಾರಸ್ವಾಮಿ, ಡಿಕೆಶಿಯವರ ಮನೆಗೆ ಹೋಗಿ ಅವರ ತಾಯಿ ಜೊತೆ ಮಾತನಾಡುವ ಭಾವನಾತ್ಮಕ ಎಪಿಸೋಡು ಕ್ರಿಯೇಟ್ ಆಗಿರೋದು. ಅಲ್ಲಿ ನಿಂತು ಆಡಿದ ಕುಮಾರಸ್ವಾಮಿಯವರ ಮಾತಿನಲ್ಲೂ ಜಾತಿಯನ್ನು ಎಳೆದು ತರುವ ಪ್ರಯತ್ನ ಜೋರಾಗಿಯೇ ನಡೆಯಿತು. ‘ನಾನು ೧೪ ತಿಂಗಳ ಕಾಲ ಮುಖ್ಯಮಂತ್ರಿ ಆಗಿದ್ದೆ. ಮನಸ್ಸು ಮಾಡಿದ್ದರೆ ಯಡಿಯೂರಪ್ಪ ಅವರ ಆಡಿಯೊ ಪ್ರಕರಣವನ್ನು ಇಟ್ಟುಕೊಂಡು ಕ್ರಮ ಕೈಗೊಳ್ಳಬಹುದಿತ್ತು. ಹಾಗೆ ಮಾಡಿದ್ದರೆ ವೀರಶೈವ ಸಮಾಜದ ಮುಖಂಡರ ಮೇಲೆ ಕುಮಾರಸ್ವಾಮಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ದೂರುತ್ತಿದ್ದರು. ಈಗಾಗಲೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ದಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐ.ಟಿ. ಅಧಿಕಾರಿಗಳು ಅವರನ್ನು ಬಲಿ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ ಶಿವಕುಮಾರ್‌ಗೆ ತೊಂದರೆ ಕೊಡುತ್ತಿದ್ದಾರೆ’ ಎನ್ನುವ ಕುಮಾರಸ್ವಾಮಿಯವರ ಮಾತಿನಲ್ಲಿ ಜಾತಿ ರಾಜಕಾರಣ ಎದ್ದು ಕಾಣುತ್ತದೆ. ಸಿದ್ಧಾರ್ಥ್ ಆತ್ಮಹತ್ಯೆ ಮತ್ತು ಡೀಕೆ ಬಂಧನ ಪ್ರಕರಣಗಳನ್ನು ಮುಂದೆ ಮಾಡಿ ಬಿಜೆಪಿಯ ಅಡ್ಡಹಾದಿಗೇ ಚೆಕ್‌ಪೋಸ್ಟ್ ಕಟ್ಟುವ ಪ್ರಯತ್ನ ಇದು. ಈ ಪ್ರಯತ್ನದಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೊ ಕಾದುನೋಡಬೇಕು. ಒಟ್ಟಿನಲ್ಲಿ ಕುತಂತ್ರಗಳೇ ವಿಜೃಂಭಿಸುತ್ತಿರುವ ಕಾಲಘಟ್ಟದಲ್ಲಿ ನಾವಿರೋದು ದುರಂತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದ್ರಾಣಿ ಮುಖರ್ಜಿಯ ಹೇಳಿಕೆಯ ಆಧಾರದ ಮೇಲೆ ಚಿದಂಬರಂರನ್ನು ಬಂಧಿಸಿರುವ ರೀತಿಯಲ್ಲಿಯೇ; ಡಿಕೆಶಿ ಬಾಯಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್‌ ಗಾಂಧಿಯವರ ಹೆಸರು ಹೇಳಿಸಿ, ಇವರಿಬ್ಬರ ವಿರುದ್ಧವೂ ಎಫ್. ಐ.ಆರ್ ಮತ್ತು ಆರೋಪ ಪಟ್ಟಿ ಸಲ್ಲಿಸುವ ಎಲ್ಲಾ ಸಾಧ್ಯತೆಗಳು ಇವೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...