ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತಾ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ 24 ಗಂಟೆಯೊಳಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ರಾಣಿ ಸಂಯುಕ್ತಾ ಅವರನ್ನು ಭಾನುವಾರದಿಂದಲೇ ಜಾರಿಗೆ ಬರುವಂತೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ರಾಣಿ ಸಂಯುಕ್ತಾ ಅವರು ಬಿಜೆಪಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಆಗಿದ್ದರು. ಆದರೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಸಿಂಗ್ ಅವರಿಗೆ ಟಿಕೆಟ್ ಕೈ ತಪ್ಪಿದೆ. ಅವರ ಬದಲಿಗೆ ಕ್ಷೇತ್ರದಲ್ಲಿ ಸಂಯುಕ್ತಾ ಸಿಂಗ್ ಅಳಿಯನೂ ಆಗಿರುವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಹೀಗಾಗಿ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಅವರು ಬಿಜೆಪಿಗೆ ರಾಜೀನಾಮೆ ನೀಡಿ ನಿನ್ನೆಯಷ್ಟೇ (ಶನಿವಾರ) ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಶನಿವಾರ ರಾಣಿ ಸಂಯುಕ್ತಾ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ರಾಣಿ ಸಂಯುಕ್ತಾ ಸಿಂಗ್ ಕಾಂಗ್ರೆಸ್ ಸೇರಿದರು. ಶುಕ್ರವಾರ ರಾತ್ರಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಭೇಟಿಯಾಗಿ ಮಾತುಕತೆ ಮಾಡಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಬಳಿಕ ಬಿಜೆಪಿ ಸೇರಿದ್ದ ಆನಂದ್ ಸಿಂಗ್ ಸಚಿವ ಸ್ಥಾನ ಪಡೆದಿದ್ದರು. ಕಳೆದ ಒಂದು ವರ್ಷದಿಂದ ತಂದೆ ಆನಂದ್ ಸಿಂಗ್ ಅವರ ಎಲ್ಲಾ ರಾಜಕೀಯ ಕಾರ್ಯಕ್ರಮಗಲ್ಲಿ ಪುತ್ರ ಸಿದ್ದಾರ್ಥ್ ಕಾಣಿಸಿಕೊಳ್ಳುತ್ತಿದ್ದರು. ಸಮಾಜ ಸೇವೆ, ಗ್ರಾಮ ವಾಸ್ತವ್ಯದ ಹೆಸರಿನಲ್ಲಿ ಮಾತ್ರವಲ್ಲದೆ, ಯಾವುದೇ ಕಾರ್ಯಕ್ರಮಗಳಿದ್ದರೂ ತಪ್ಪದೇ ಹಾಜರಾಗುವ ಮೂಲಕ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು. ಇವೆಲ್ಲವನ್ನು ಗಮನಿಸಿದಾಗ ಆನಂದ್ ಸಿಂಗ್ ತಮ್ಮ ಪುತ್ರನನ್ನು ಕಣಕ್ಕಿಳಿಸುತ್ತಾರೆ ಎಂಬ ಸುದ್ದಿ ಹರಿದಾಡತೊಡಗಿತ್ತು. ಆದರೆ ಇದೇ ಕ್ಷೇತ್ರದಲ್ಲಿ ಆನಂದ್ ಸಿಂಗ್ ಸಹೋದರಿ ಬಿಜೆಪಿ ಟಿಕೆಟ್ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಕ್ಷೇತ್ರದಲ್ಲಿ ಸಿದ್ದಾರ್ಥ್ ಸಿಂಗ್ಗೆ ಮಣೆ ಹಾಕಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದೇ ತಡ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿಯಲ್ಲಿನ ಭಿನ್ನಮತ ಸ್ಫೋಟಗೊಂಡಿತ್ತು. ಬಿಜೆಪಿಯ ಅನೇಕ ನಾಯಕರು ಅಸಮಾಧಾನ ಹೊರಹಾಕಿದ್ದಷ್ಟೇ ಅಲ್ಲದೇ ಪಕ್ಷವನ್ನೇ ಬಿಟ್ಟು ಹೊರಬಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಅದರಂತೆ ಆನಂದ್ ಸಿಂಗ್ ಸಹೋದರಿಯೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.
Hosapete 90 vidhansabha ksetra