ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರಕಾರದ ವತಿಯಿಂದ 50 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧದ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥೀವ ಶರೀರವನ್ನು ದೆಹಲಿಯಿಂದ ಶುಕ್ರವಾರ ರಾತ್ರಿ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಾಯಿತು. ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ಸಕಲ ಸರಕಾರಿ ಗೌರವದೊಂದಿಗೆ ಪಾರ್ಥೀವ ಶರೀರವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ಯೋಧ ಎಂ.ವಿ.ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ಜೊತೆಗೆ ಗುಂಡಿನ ಚಕಮಕಿ ನಡೆಯಿತು. ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿ ಹುತಾತ್ಮರಾದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದು ಹೇಳಿದ್ದಾರೆ.
ಜಿಗಣಿಯ ನಂದನವನ ಬಡಾವಣೆಯಲ್ಲಿರುವ ಪ್ರಾಂಜಲ್ ಮನೆಯ ಎದುರು ಇಂದು ಬೆಳಗ್ಗೆ 7ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಆಡಳಿತವು 500 ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಿದೆ. ಕುಟುಂಬದವರು, ಸಂಬಂಧಿಕರಿಗೆ ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ 30ಕಿ.ಮೀ.ರಸ್ತೆಯುದ್ದಕ್ಕೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸಕಲ ಸರ್ಕಾರಿ ಮತ್ತು ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಮಗನ ಅಗಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಾಂಜಲ್ ತಂದೆ ವೆಂಕಟೇಶ್, 5 ದಿನದ ಹಿಂದೆ ಮಗ ಕರೆ ಮಾಡಿದ್ದ. ಪ್ರಾಂಜಲ್ ಇಂಟೆಲಿಜೆನ್ಸ್ ಕಾರ್ಯವೊಂದರ ಮೇಲೆ ನಿಯೋಜನೆಗೊಂಡಿದ್ದೇನೆ ಎಂದು ಹೇಳಿದ್ದ. ನೀವು ಕರೆ ಮಾಡಬೇಡಿ ನಾನೇ ಮೆಸೆಜ್ ಮಾಡುತ್ತೇನೆ ಅಥವಾ ಕರೆ ಮಾಡುತ್ತೇನೆ ಎಂದು ಹೇಳಿದ್ದ. ಆಲ್ ಓಕೆ ಎಂಬ ಸಂದೇಶ ಬರುತ್ತಿತ್ತು. ಆದರೆ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅರಿವಿರಲಿಲ್ಲ. ಆಲ್ ಓಕೆ ಎಂದು ಹೇಳುತ್ತಲೇ ಕೊನೆಯುಸಿರೆಳೆದಿದ್ದಾನೆ. 2 ವರ್ಷದ ಹಿಂದೆ ಬೆಂಗಳೂರಿನ ಅದಿತಿಯನ್ನು ಮದುವೆಯಾಗಿದ್ದ. ಚೆನ್ನೈನ ಐಐಟಿಯಲ್ಲಿ ಅದಿತಿ ಪಿಎಚ್.ಡಿ ಮಾಡುತ್ತಿದ್ದಾಳೆ. ಒಬ್ಬ ಯೋಧನ ಪತ್ನಿಯಾಗಿ ಪತಿಗೆ ಸದಾ ನೈತಿಕ ಬೆಂಬಲ ನೀಡುತ್ತಿದ್ದಳು. ಪ್ರಾಂಜಲ್ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ.
ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಪ್ರಾಂಜಲ್ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಹೆಗಲಾಗುವ… pic.twitter.com/MlNWvLgBba
— CM of Karnataka (@CMofKarnataka) November 24, 2023