Homeಮುಖಪುಟಬಾಗೇಪಲ್ಲಿಯಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?: ಕ್ಷೇತ್ರದ ಸ್ಥಿತಿಗತಿ ಹೀಗಿದೆ...

ಬಾಗೇಪಲ್ಲಿಯಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?: ಕ್ಷೇತ್ರದ ಸ್ಥಿತಿಗತಿ ಹೀಗಿದೆ…

ಮಧುಗಿರಿಯಲ್ಲಿ ಗೆದ್ದು, ಚನ್ನಪಟ್ಟಣದಲ್ಲಿ ಸೋತು ಆನಂತರ ರಾಮನಗರದಲ್ಲಿ ಗೆದ್ದಿರುವ ಅನಿತಾ ಕುಮಾರಸ್ವಾಮಿಯವರು ಮತ್ತೊಮ್ಮೆ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಆಂಧ್ರ ಪ್ರದೇಶದ ಗಡಿಗೆ ಅಂಟಿಕೊಂಡಿರುವ ಗುಡ್ಡಗಾಡು ಮತ್ತು ಬಯಲು ಪ್ರದೇಶಗಳಿಂದ ಕೂಡಿದ ಬಾಗೇಪಲ್ಲಿ ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದು. ಸತತ ಬರ ಅಪ್ಪಳಿಸಿದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಹಿಂದುಳಿದ ತಾಲ್ಲೂಕುಗಳೆನಿಸಿದ ಬಾಗೇಪಲ್ಲಿ, ಗುಡಿಬಂಡೆ ಮತ್ತು ಹೊಸದಾಗಿ ರಚನೆಯಾದ ಚೇಳೂರುಗಳನ್ನು ಸೇರಿಸಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ರಚನೆಯಾಗಿದೆ. ಇಲ್ಲಿನ ಬಡ ಕೂಲಿಕಾರರನ್ನು ಸಂಘಟಿಸಿ ಹೋರಾಟ ರೂಪಿಸಿದ್ದ ಸಿಪಿಎಂ ಪಕ್ಷದ ನೆಲೆ ಇದಾಗಿದೆ. ಮೂರು ಬಾರಿ ಸಿಪಿಎಂ ಪಕ್ಷ ಇಲ್ಲಿ ಜಯಗಳಿಸಿತ್ತು. ಹಾಗಾಗಿಯೇ ಇತ್ತೀಚೆಗೆ ಸಿಪಿಎಂ ಪಕ್ಷದ ರಾಜ್ಯ ಸಮ್ಮೇಳನವನ್ನು ಬಾಗೇಪಲ್ಲಿಯಲ್ಲಿ ನಡೆಸಿ, ಕೇರಳ ಸಿಎಂ ಪಿಣರಾಯಿ ವಿಜಯನ್‌ರವರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.

ಇಂತಹ ಬಾಗೇಪಲ್ಲಿಯಲ್ಲಿ 2023ರ ವಿಧಾನಸಭೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಹಲವು ಪಕ್ಷಗಳಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ನೆರೆದಿದೆ. ಈ ಎಲ್ಲಾ ಚಟುವಟಿಕೆಗಳ ನಡುವೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗಾಗಿ ರಾಮನಗರ ಕ್ಷೇತ್ರ ಬಿಟ್ಟುಕೊಟ್ಟಿರುವ ಅನಿತಾ ಕುಮಾರಸ್ವಾಮಿಯವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ.

2008ರ ಉಪ ಚುನಾವಣೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನಿತಾ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದರು. ಆದರೆ 2013ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ಸೋಲನ್ನು ಅನುಭವಿಸಿದ್ದರು. ಆನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿಯವರು ರಾಮನಗರ ಮತ್ತು ಚನ್ನಪಟ್ಟಣ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರಿಂದ ರಾಮನಗರ ವಿಧಾನಸಭಾ ಕ್ಷೇತ್ರವನ್ನು ತೆರವು ಮಾಡಿದರು. ಆಗ ಅಲ್ಲಿ ನಡೆದ ಉಪಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಅನಿತಾ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದರು. ಆನಂತರ 2023ರಲ್ಲಿ ಅಲ್ಲಿಂದ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಹಾಸನ, ರಾಮನಗರದಲ್ಲಿ ತಮ್ಮ ಕುಟುಂಬ ಸಾಮ್ರಾಜ್ಯ ಕಟ್ಟಿರುವ ಜೆಡಿಎಸ್ ಪಕ್ಷ ತುಮಕೂರು ಮತ್ತು ಮಂಡ್ಯದಲ್ಲಿ ಪ್ರಯತ್ನಿಸಿ ವಿಫಲಗೊಂಡಿದೆ. ಇಂತಹ ಸಂದರ್ಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಯವರ ಪತ್ನಿ ಪದೇ ಪದೇ ಕ್ಷೇತ್ರ ಬದಲಿಸುತ್ತ ಸದ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಗೆ ಬರುವ ಸೂಚನೆ ನೀಡಿದ್ದಾರೆ. ಇದಕ್ಕೆ ಕ್ಷೇತ್ರದ ಜನರ ಪ್ರತಿಕ್ರಿಯೆ ಹೇಗಿರಲಿದೆ ಎಂಬುದಕ್ಕೂ ಮುನ್ನ ಅಲ್ಲಿ ರಾಜಕೀಯ ಸ್ಥಿತಿಗತಿಯನ್ನು ಅರಿಯೋಣ.

ಅತಿಹೆಚ್ಚು ತೆಲುಗು ಭಾಷೆ ಮಾತನಾಡುವ ಇಲ್ಲಿನ ಜನ ಅಭಿವೃದ್ದಿಯಿಂದ ವಂಚಿತರಾಗಿದ್ದಾರೆ. ಸಮರ್ಪಕ ನೀರಾವರಿ ಸೌಲಭ್ಯ ಇಲ್ಲದೆ ತತ್ತರಿಸಿದ್ದಾರೆ. ಇಲ್ಲಿಂದ ಗೆದ್ದವರು ಬೆಂಗಳೂರಿನಲ್ಲಿ ನೆಲೆಸುತ್ತಾರೆ, ಕ್ಷೇತ್ರದ ಜನರ ಕಷ್ಟನಷ್ಟಗಳಿಗೆ ಬೆನ್ನುತಿರುಗಿಸುತ್ತಿದ್ದಾರೆ ಎಂಬ ಅಳಲು ಕಂಡುಬರುತ್ತಿದೆ. ಇಲ್ಲಿ ನಡೆದಿರುವ ಒಟ್ಟು 13 ಚುನಾವಣೆಗಳಲ್ಲಿ ಕಾಂಗ್ರೆಸ್ 8 ಬಾರಿ ಜಯ ಕಂಡರೆ, ಸಿಪಿಎಂ 3 ಬಾರಿ ಗೆಲುವು ಸಾಧಿಸಿದೆ. ಎರಡು ಬಾರಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಇಲ್ಲಿ ಹಸ್ತ ಮತ್ತು ಸುತ್ತಿಗೆ-ಕುಡುಗೋಲು ಗುರುತುಗಳು ಹಿರಿಯರಲ್ಲಿ ಅಚ್ಚಳಿಯದೆ ಉಳಿದುಬಿಟ್ಟಿವೆ. ಹಾಗಾಗಿ ಈ ಎರಡು ಪಕ್ಷಗಳ ನಡುವೆಯೇ ನೇರ ಹಣಾಹಣಿ ಇರುತ್ತದೆ. ಹಾಗಾಗಿ ಪಕ್ಷೇತರ ಅಭ್ಯರ್ಥಿಗಳನ್ನು ಹೊರತುಪಡಿಸಿ ಜೆಡಿಎಸ್, ಬಿಜೆಪಿ ಒಮ್ಮೆಯೂ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.

1962ರಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರವನ್ನು ರಚಿಸಲಾಗಿತ್ತು. 1978ರವರೆಗೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದ್ದ ಅದು ತದನಂತರ ಸಾಮಾನ್ಯ ಕ್ಷೇತ್ರವಾಗಿ ಬದಲಾಗಿದೆ. 1978ರವರೆಗೆ ಮೀಸಲು ಕ್ಷೇತ್ರವಾಗಿದ್ದರಿಂದ ಪ.ಜಾ ಶಾಸಕರಿದ್ದರು. ಆನಂತರ ಒಕ್ಕಲಿಗ ಮತ್ತು ಬಲಿಜ ಸಮುದಾಯದವರೆ ಕ್ಷೇತ್ರದ ಶಾಸಕರಾಗುತ್ತಾ ಬಂದಿದ್ದಾರೆ. ಇಂದಿಗೂ ಕ್ಷೇತ್ರದಲ್ಲಿ ಈ ಎರಡು ಸಮುದಾಯಗಳೇ ಪ್ರಾಬಲ್ಯ ಮೆರೆಯುತ್ತಿವೆ.

ಜಾತಿವಾರು ಅಂದಾಜು ಮತಗಳು

ಸುಮಾರು 60,000ದಷ್ಟಿರುವ ಒಕ್ಕಲಿಗ ಮತಗಳು ಇಲ್ಲಿದ್ದು, 50,000ದಷ್ಟು ದಲಿತ ಸಮುದಾಯದ ಮತಗಳಿವೆ. 25,000ದಷ್ಟು ಕುರುಬ ಸಮುದಾಯದ ಮತಗಳಿದ್ದರೆ, 23,000ದಷ್ಟು ಬಲಿಜ ಜನಾಂಗದ ಮತಗಳಿವೆ. 20,000ದಷ್ಟು ಮುಸ್ಲಿಂ ಮತಗಳಿದ್ದರೆ, ಸುಮಾರು 30,000ದಷ್ಟು ಇತರ ಸಮುದಾಯದ ಮತಗಳಿವೆ ಎನ್ನಲಾಗಿದೆ.

ಹಾಲಿ ಪರಿಸ್ಥಿತಿ

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಯವರು ಸತತ ಎರಡು ಬಾರಿ ಶಾಸಕರಾದರೂ ಕ್ಷೇತ್ರವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯಲು ವಿಫಲರಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ ಮತ್ತು ಸ್ವಜನಪಕ್ಷಪಾತ ಮಾಡುತ್ತಿದ್ದಾರೆ ಎಂದು ಜನ ದೂರುತ್ತಾರೆ. ಅವರು ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಮಾಜಿ ಶಾಸಕ ಎನ್ ಸಂಪಂಗಿ ಕೂಡ ಅರ್ಜಿ ಸಲ್ಲಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಹಾಲಿ ಶಾಸಕ ಸುಬ್ಬಾರೆಡ್ಡಿಗೆ ಮಣೆಹಾಕುವ ಸಾಧ್ಯತೆ ಹೆಚ್ಚಾಗಿದೆ.

ಸಿಪಿಎಂ

ಮೂರು ಬಾರಿ ಜಯ ಕಂಡಿರುವ ಸಿಪಿಎಂ ಪಕ್ಷ ಇತ್ತೀಚೆಗೆ ಇಲ್ಲಿಯೇ ರಾಜ್ಯ ಸಮ್ಮೇಳನ ನಡೆಸಿ ಬಲ ಪ್ರದರ್ಶನ ಮಾಡಿದೆ. ಕೊರೊನಾ ಸಮಯದಲ್ಲಿ ಎನ್‌ಜಿಓ ಜೊತೆ ಸೇರಿ ಬಹಳಷ್ಟು ಕೆಲಸ ಮಾಡಿರುವ ಡಾ.ಅನಿಲ್ ಕುಮಾರ್ ಅವರು ಜನಮನ್ನಣೆ ಗಳಿಸಿದ ವೈದ್ಯರೆನಿಸಿಕೊಂಡಿದ್ದಾರೆ. ಬಾಗೇಪಲ್ಲಿಯಲ್ಲಿಯೇ ಪೀಪಲ್ಸ್ ಆಸ್ಪತ್ರೆ ತೆರೆದು ನೆಲೆಸಿರುವ ಇವರಿಗೆ ಸಿಪಿಎಂ ಪಕ್ಷ ಟಿಕೆಟ್ ಘೋಷಿಸಿದೆ.

ಜೆಡಿಎಸ್

ಜೆಡಿಎಸ್ ಪಕ್ಷವು ಈ ಹಿಂದೆ ಚುನಾವಣೆಗೆ ನಿಂತು ಸೋತಿದ್ದ ಡಿ.ಜೆ ನಾಗರಾಜ ರೆಡ್ಡಿಯವರಿಗೆ ಟಿಕೆಟ್ ಘೋಷಿಸಿದೆ. ಆದರೆ ಪಕ್ಷದಲ್ಲಿ ಹಲವರು ಅವರ ವಿರುದ್ಧ ಅಪಸ್ವರವೆತ್ತಿದ್ದಾರೆ. ಅದೇ ಸಂದರ್ಭದಲ್ಲಿ ಪಂಚರತ್ನ ಯಾತ್ರೆಗೆ ಬಾಗೇಪಲ್ಲಿಯಲ್ಲಿ ಜನ ಸೇರಿಸಿಲ್ಲ ಎಂದು ನಾಗರಾಜ ರೆಡ್ಡಿ ವಿರುದ್ಧ ಹೆಚ್‌ಡಿಕೆ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಹಾಗಾಗಿ ಎಚ್.ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವ ಹರಿನಾಥ್‌ರೆಡ್ಡಿ ಮತ್ತು ಒಕ್ಕಲಿಗ ಸಮುದಾಯದ ಗೊಟ್ಟಿಗೊರೆ ಮಂಜುನಾಥ್‌ಗೌಡ ತಮಗೆ ಟಿಕೆಟ್ ಕೊಡಿ. ಇಲ್ಲದಿದ್ದರೆ ಅನಿತಾ ಕುಮಾರಸ್ವಾಮಿಯವರು ಜೆಡಿಎಸ್ ಅಭ್ಯರ್ಥಿಯಾಗಲಿ, ನಾವು ಅವರಿಗಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ. ಆದರೆ ಕುಮಾರಸ್ವಾಮಿಯವರು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಬದಲಾಗುವುದು ಖಚಿತ ಎಂದು ಹಲವರು ಮಾತನಾಡುತ್ತಿದ್ದಾರೆ.

ಬಿಜೆಪಿ

ಬಾಗೇಪಲ್ಲಿಯಲ್ಲಿ ಜೆಡಿಎಸ್‌ನಂತೆಯೆ ಬಿಜೆಪಿಗೆ ಕೂಡ ಒಮ್ಮೆಯೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಆದರೂ ಪಕ್ಷದ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ನೆರೆದಿದೆ. ಬಲಿಜ ಜನಾಂಗದ ಮುಖಂಡರು, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಸಿ ಮುನಿರಾಜುರವರು ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಬಿಜೆಪಿ ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸಾಕಷ್ಟು ಹಣ ಚೆಲ್ಲಲು ಸಹ ಸಿದ್ದರಿದ್ದಾರೆ.

ಇನ್ನು ಹರಿಕೆರೆ ಕೃಷ್ಣಾರೆಡ್ಡಿ ಸಹ ತಮ್ಮ ಜಾತಿ ಬಲ ಬಳಸಿಕೊಂಡು ಟಿಕೆಟ್‌ಗಾಗಿ ಯತ್ನಿಸುತ್ತಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪನವರು ಬಲಿಜ ಜನಾಂಗಕ್ಕೆ ಸೇರಿದ್ದು, 30 ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದೇನೆ, ನನಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇಷ್ಟು ದಿನ ಜೆಡಿಎಸ್‌ನಲ್ಲಿದ್ದು, ಆದರೆ ಟಿಕೆಟ್‌ ಸಿಗದುದ್ದರಿಂದ ಇತ್ತೀಚೆಗೆ ಬಿಜೆಪಿ ಸೇರಿರುವ ನಿವೃತ್ತ ಡಿವೈಎಸ್‌ಪಿ,  ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಕೋನಪ್ಪರೆಡ್ಡಿಯವರು ತನಗೆ ಟಿಕೆಟ್ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ನಾಲ್ವರ ಟಿಕೆಟ್ ರೇಸ್‌ನಲ್ಲಿ ಬಿಜೆಪಿ ಯಾರಿಗೆ ಮಣೆ ಹಾಕಲಿದೆ ಇನ್ನೂ ನಿರ್ಧಾರವಾಗಿಲ್ಲ.

ಜಿ.ವಿ ಶ್ರೀರಾಮರೆಡ್ಡಿಯವರು ಇಲ್ಲವಾದ ಮೇಲೆ..

ಜಿ.ವಿ ಶ್ರೀರಾಮರೆಡ್ಡಿಯವರು ಪಕ್ಷದ ತತ್ವಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಸಿಪಿಎಂ ಜಿಲ್ಲಾ ಸಮಿತಿಯು ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು. ಆನಂತರ ಅವರು 2020ರಲ್ಲಿ ಪ್ರಜಾ ಸಂಘರ್ಷ ಸಮಿತಿ (ಪಿಎಸ್‌ಎಸ್) ಎಂಬ ಪಕ್ಷ ಕಟ್ಟಿದರು. ಆದರೆ ಅವರು 2022ರ ಏಪ್ರಿಲ್‌ನಲ್ಲಿ ಹೃದಯಾಘಾತದಿಂದ ಕಾಲವಾದರು. ಈಗ ಈ ಪಕ್ಷದಿಂದಲೂ ಸಹ ಚುನಾವಣೆಯ ಕಣಕ್ಕಿಳಿಯಲು ಕೆಲವರು ತಯಾರಿ ನಡೆಸಿದ್ದಾರೆ. ಅವರಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಮಿಥುನ್ ರೆಡ್ಡಿಯಾಗಿದೆ.

ಈ ಹಿಂದೆ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಮಿಥುನ್ ರೆಡ್ಡಿ ಈಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಯತ್ನಿಸುತ್ತಿದ್ದಾರೆ. ಅವರು ಶ್ರೀರಾಮ ರೆಡ್ಡಿಯವರ ಹಾದಿಯಲ್ಲಿ ನಡೆಯುವುದಾಗಿ ಭರವಸೆ ನೀಡಿದ ನಂತರ ಪ್ರಜಾ ಸಂಘರ್ಷ ಸಮಿತಿ ಅವರಿಗೆ ಬೆಂಬಲ ನೀಡಲು ಮುಂದಾಗಿದೆ ಎನ್ನಲಾಗಿದೆ.

ಸಿಪಿಎಂನಿಂದ ಟಿಕೆಟ್ ಬಯಸಿದ್ದ, ನಂತರ ಸ್ವಾಭಿಮಾನಿ ಪಿಎಸ್‌ಎಸ್ ಕಟ್ಟಿ ಈ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದ ಡಾ.ಮಧು ಸೀತಪ್ಪನವರು ಸದ್ಯ ಆಮ್‌ ಆದ್ಮಿ ಪಕ್ಷ ಸೇರಿದ್ದಾರೆ. ಅವರಿಗೆ ಆಪ್ ಟಿಕೆಟ್ ಘೋಷಿಸಿದೆ.

ಹಾಗೆ ನೋಡಿದರೆ ಕಾಂಗ್ರೆಸ್, ಸಿಪಿಎಂ ಮತ್ತು ಆಪ್ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಲಾಬಿ ಮತ್ತು ಒಳಜಗಳ ಜೋರಾಗಿದೆ. ಹಾಗಾಗಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂ ನಡುವೆ ನೇರ ಪೈಪೋಟಿ ಏರ್ಪಡುವ ಸಂಭವವಿದೆ. ಉಳಿದ ಪಕ್ಷಗಳ ಅಭ್ಯರ್ಥಿಗಳು ಕೂಡ ಒಂದಷ್ಟು ಮತ ಸೆಳೆಯುವ ಸಾಮರ್ಥ್ಯ ಹೊಂದಿದ್ದಾರೆ. ಹಾಗಾಗಿ 2008ರಲ್ಲಾದಂತೆ ಮತಗಳು ಹಂಚಿಹೋಗುವ ಸಾಧ್ಯತೆಯಿದೆ. ಹಾಗಾಗಿ ಬಾಗೇಪಲ್ಲಿಯಲ್ಲಿ ಯಾರೇ ಗೆದ್ದರೂ ಮತಗಳ ಅಂತರ ಕಡಿಮೆ ಇರಲಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ.

ಇದನ್ನೂ ಓದಿ: ಬಾಗೇಪಲ್ಲಿಯ ಚುನಾವಣಾ ಇತಿಹಾಸದ ಸಂಪೂರ್ಣ ಸಮೀಕ್ಷೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...