ಅನ್ನಭಾಗ್ಯ ಜಾರಿಗೆ ತಂದಿದ್ದು ನಮ್ಮ ಸರ್ಕಾರ, ಆದರೆ ಇದೆಲ್ಲ ಮೋದಿ ಸರ್ಕಾರದ ಕೊಡುಗೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೋದಲೆಲ್ಲಾ ಹೇಳುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆ ಜಾರಿಗೊಳಿಸಿದ್ದು ಹಿಂದೆ ಅಧಿಕಾರದಲ್ಲಿದ್ದ ಮನಮೋಹನ್ ಸಿಂಗ್ ಅವರ ಯು.ಪಿ.ಎ ಸರ್ಕಾರ. ಇದು ಬಿಜೆಪಿ ಸರ್ಕಾರದ ನಿರ್ಧಾರವಲ್ಲ ಎಂಬುವುದನ್ನು ಮೊದಲು ಅರ್ಥೈಸಿಕೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಶೋಷಿತರ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದ್ದು ನಾನು. ಬಿಜೆಪಿ ಆಡಳಿತವಿರುವ ಯಾವ ರಾಜ್ಯದಲ್ಲಿ ಇದು ಜಾರಿಯಲ್ಲಿದೆ? ಇದು ಕೇಂದ್ರದ ಯೋಜನೆಯಾಗಿದ್ದರೆ ಎಲ್ಲಾ ರಾಜ್ಯಗಳಲ್ಲೂ ಜಾರಿಯಾಗಬೇಕಿತ್ತು ಅಲ್ಲವೇ? ಏಕೆ ಜಾರಿಯಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಕಾಯಕ ಜೀವಿಗಳ ಕಲ್ಯಾಣ ಆಗದೆ ‘ಕಲ್ಯಾಣ ಕರ್ನಾಟಕ’ ಎಂದು ಕರೆದುಕೊಂಡ್ರೆ ಏನುಪಯೋಗ? ಬಸವಣ್ಣ ಹೇಳಿದ್ದ ಕಾಯಕ ಮತ್ತು ದಾಸೋಹವನ್ನು ಅರ್ಥಮಾಡಿಕೊಂಡು ಅನುಷ್ಠಾನಕ್ಕೆ ತನ್ನಿ, ಕರ್ನಾಟಕದ ಕಲ್ಯಾಣ ಆಗುತ್ತೆ. ಬಸವಣ್ಣ ಹೇಳಿದ್ದನ್ನು ಹೇಳಿದ್ದಕ್ಕೆ ನಾನು ಧರ್ಮ ಒಡಿತಿದೀನಿ ಎಂದರಲ್ಲಿ ಸರಿಯೇ ಎಂದು ಪ್ರಶ್ನಿಸಿದ್ದಾರೆ.
ಮಂಡಲ್ ವರದಿ ವಿರೋಧಿಸಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಿದವರು ಯಾರು? ಅಂದು ಯಡಿಯೂರಪ್ಪ, ಈಶ್ವರಪ್ಪ ಯಾರ ಪರವಾಗಿ ಇದ್ದರು? ಶೋಷಿತ ಸಮಾಜಗಳು ತಮ್ಮ ಪರವಾಗಿರುವವರನ್ನು ಬೆಂಬಲಿಸಿದರೆ ಮಾತ್ರ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಭಿವೃದ್ಧಿ ಸಾಧ್ಯ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.