Homeಮುಖಪುಟಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’

ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’

ಯಾವುದೇ ವಾದಕ್ಕೆ ಒಂದು ಪ್ರತಿವಾದವಿರುತ್ತದೆ. ಯಾವ ಕಡೆ ಹೆಚ್ಚು ಜನರಿರುತ್ತಾರೋ ಅದನ್ನು ಬೆಂಬಲಿಸಿದರೆ ತಮ್ಮ ವ್ಯಾಪಾರ ಹೆಚ್ಚು ಸುಲಲಿತವಾಗಿ ನಡೆಯುತ್ತದೆ ಎಂಬುದು ಅದರ ನಿಲುವು.

- Advertisement -
- Advertisement -

ನಾನು ಗೌರಿ ಡಾಟ್ ಕಾಂ’ನ ಯುಆರ್‌ಎಲ್‌ಗಳನ್ನು ಹಂಚಿಕೊಳ್ಳದಂತೆ ಫೇಸ್‌ಬುಕ್ ನಿರ್ಬಂಧಿಸಿ ಆಮೇಲೆ ಕ್ಷಮೆಕೋರಿದ್ದು ನಮಗೆಲ್ಲಾ ತಿಳಿದಿರುವ ಸಂಗತಿ. ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಬೆಂಬಲಿಸುವ ವಿಶ್ವದ ಹಲವೆಡೆ ಇರುವ ಅನೇಕರು ಫೇಸ್‌ಬುಕ್‌ನ ಈ ವರ್ತನೆಯನ್ನು ಖಂಡಿಸುತ್ತಿದ್ದಾಗಲೇ ಇದಕ್ಕೆ ‘ತಾಂತ್ರಿಕ ಕಾರಣ’ಗಳನ್ನು ಹುಡುಕುವುದರಲ್ಲಿ ಕೆಲವರು ನಿರತರಾಗಿದ್ದರು.

ಅಂದ ಹಾಗೆ ಇವರಾರೂ ಫೇಸ್‌ಬುಕ್‌ನ ನೌಕರರಲ್ಲ, ಝಕರ್‌ಬರ್ಗ್ ಅಭಿಮಾನಿ ಸಂಘದ ಸದಸ್ಯರಲ್ಲ. ನರೇಂದ್ರಮೋದಿ ಅಭಿಮಾನಿಗಳನ್ನೂ ಇಲ್ಲಿ ಪರಿಗಣಿಸಲಾಗಿಲ್ಲ. ಇವರಿಗಿದ್ದದ್ದು ಒಂದೇ ಒಂದು ಉದ್ದೇಶ. ‘ನಾನು ಗೌರಿ’ಯ ವೆಬ್‌ಸೈಟನ್ನು ಫೇಸ್‌ಬುಕ್ ಬ್ಲಾಕ್ ಮಾಡಿರುವುದರ ಹಿಂದೆ ಯಾವುದೇ ರಾಜಕಾರಣವಲ್ಲ ಎಂದು ತಮಗೆ ತಾವೇ ವಿವರಿಸಿಕೊಂಡು, ತಮ್ಮ ಗೆಳೆಯರಿಗೂ ವಿವರಿಸುವುದು!

ಇವರೆಲ್ಲರ ರಾಜಕೀಯ ಒಲವುಗಳನ್ನು ಬದಿಗಿಟ್ಟೇ ಅವರ ವಾದಗಳನ್ನು ನೋಡೋಣ. ಇವರು ಹೇಳುವಂತೆ ಫೇಸ್‌ಬುಕ್ ಯುಆರ್‌ಎಲ್ ಬ್ಲಾಕ್ ಮಾಡುವುದರ ಹಿಂದೆ ಯಾವುದೇ ರಾಜಕಾರಣವಿಲ್ಲ ಎಂಬುದನ್ನು ಒಪ್ಪಬಹುದೇ? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಫೇಸ್‌ಬುಕ್‌ನ ಒಂದು ನಿರ್ಧಾರವನ್ನು ಪ್ರಶ್ನಿಸುವುದಕ್ಕೆ ಅದರ ಬಳಕೆದಾರನಿಗೆ ಎಷ್ಟು ಅವಕಾಶವಿದೆ ಎಂಬುನ್ನು ನೋಡಬೇಕು.

ಫೇಸ್‌ಬುಕ್ ಒಂದು ಯುಆರ್‌ಎಲ್‌ಅನ್ನು ನಿರ್ಬಂಧಿಸಿದರೆ ಅದನ್ನು ಪ್ರಶ್ನಿಸುವುದಕ್ಕೆ ಒಂದೇ ಒಂದು ಮಾರ್ಗವಿದೆ. ನಾವು ಫೇಸ್‌ಬುಕ್‌ನ ಡಿಬಗ್ಗರ್ ಸೇವೆಗೆ ಹೋಗಿ ನಮ್ಮ ಯುಆರ್‌ಎಲ್‌ಅನ್ನು ಅಲ್ಲಿ ನಮೂದಿಸಿ ಪರೀಕ್ಷಿಸಬೇಕು. ಅದರ “ಕಮ್ಯುನಿಟಿ ಸ್ಟ್ಯಾಂಡರ್ಡ್ ಉಲ್ಲಂಘನೆ” ಆಗಿದ್ದರೆ ಆ ಮಾಹಿತಿ ಅಲ್ಲಿ ಕಾಣಿಸಿಕೊಳ್ಳುತ್ತದೆ. ಹಾಗೆಯೇ ಅದು ತಪ್ಪಾಗಿದ್ದರೆ ಮುಂದೇನು ಮಾಡಬೇಕು ಎಂಬ ಮಾಹಿತಿ ಕಾಣಿಸಿಕೊಳ್ಳುತ್ತದೆ.

ವಿಷಯ ಇಲ್ಲಿಗೇ ಕೊನೆಗೊಂಡಿದ್ದರೆ ಎಲ್ಲವೂ ಸರಿಯಾಗಿದೆ ಎಂದು ಹೇಳಬಹುದಿತ್ತು.
ಆದರೆ ಅದು ಹಾಗಿಲ್ಲ. ಯಾವುದೇ ಕಮ್ಯುನಿಟಿ ಸ್ಟ್ಯಾಂಡರ್ಡ್ ಉಲ್ಲಂಘಿಸದ ವೆಬ್‌ಸೈಟುಗಳನ್ನೂ ಫೇಸ್‌ಬುಕ್ ಬ್ಲಾಕ್ ಮಾಡುತ್ತದೆ. ಡಿಬಗ್ಗರ್ ಕೂಡಾ ಕೇವಲ ಬ್ಲಾಕ್ ಆಗಿರುವ ಯುಆರ್‌ಎಲ್ ಇದೆ ಎಂದಷ್ಟೇ ಹೇಳುತ್ತದೆ. ಮುಂದೇನು ಮಾಡಬೇಕು ಎಂಬುದಕ್ಕೆ ಯಾವ ಸೂಚನೆಯನ್ನೂ ಇದು ಕೊಡುವುದಿಲ್ಲ.

ಇಂಥ ಸಂದರ್ಭಗಳಲ್ಲಿ ಬಳಕೆದಾರ ಏನು ಮಾಡಬೇಕು? ಇದಕ್ಕೆ ಸರಳ ಉತ್ತರಗಳಿಲ್ಲ. ಫೇಸ್‌ಬುಕ್ ಸಪೋರ್ಟ್ ಸೆಂಟರನ್ನು ಹೇಗಾದರೂ ಮಾಡಿ ಸಂಪರ್ಕಿಸಬೇಕು ಅಷ್ಟೇ. ಫೇಸ್‌ಬುಕ್ ಜೊತೆಗೆ ಡೆವಲಪರ್, ಜಾಹೀರಾತು ಖಾತೆ, ಕಾರ್ಪೊರೇಟ್ ಪಾರ್ಟ್‌ನರ್‌ಶಿಪ್‌ನಂಥ ಸಂಬಂಧವಿದ್ದರೆ ಸಂಪರ್ಕಿಸುವ ದಾರಿಗಳಿರುತ್ತವೆ. ಇಲ್ಲವಾದರೆ ಹೆಲ್ಪ್ ಸೆಂಟರ್‌ನಲ್ಲಿ ದೂರು ಕೊಡುವ ಅರ್ಜಿ ತುಂಬಿಸಿ ಪ್ರತಿಕ್ರಿಯೆಗೆ ಕಾಯಬೇಕಷ್ಟೆ.

ವಿಶ್ವವ್ಯಾಪಿಯಾಗಿ ತನ್ನ ಜಾಲವನ್ನು ಹರಡಿಕೊಂಡಿರುವ, ಬೇರೆ ಬೇರೆ
ಬಗೆಯ ಕಾನೂನುಗಳನ್ನು ಪಾಲಿಸಬೇಕಾಗಿರುವ ಬಹುರಾಷ್ಟ್ರಿಯ ಸಂಸ್ಥೆಯೊಂದು ತನ್ನನ್ನು ಸಂಪರ್ಕಿಸುವ ವಿಧಾನವನ್ನು ಇಷ್ಟೊಂದು ಕ್ಲಿಷ್ಟಗೊಳಿಸಿರುವುದರ ಉದ್ದೇಶವೇನು? ಈ ಪ್ರಶ್ನೆಗೆ ಬೆಂಬಲಿಗರು ನೀಡುವ ಉತ್ತರ: ‘ವಿಶ್ವವ್ಯಾಪಿಯಾಗಿ ಭಾರಿ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ಸಂಸ್ಥೆ ಪ್ರತಿಯೊಬ್ಬನ ಪ್ರಶ್ನೆಗೆ ವೈಯಕ್ತಿಕವಾಗಿ ಉತ್ತರಿಸಲು ಸಾಧ್ಯವಿಲ್ಲ. ಅದಕ್ಕಾಗಿ ಈ ಬಗೆಯ ವ್ಯವಸ್ಥೆ ಮಾಡಿಕೊಂಡಿದೆ’. ತರ್ಕಕ್ಕಾಗಿ ಇದನ್ನು ಒಪ್ಪಿಕೊಳ್ಳೋಣ. ಫೇಸ್‌ಬುಕ್‌ನ ವ್ಯಾಪಾರ ಮಾದರಿಯೇ ಅದರ ಬಳಕೆದಾರರು ಮತ್ತು ಅವರು ಹಂಚಿಕೊಳ್ಳುವ ಮಾಹಿತಿ. ಅದಿಲ್ಲದೇ ಇದ್ದರೆ ಫೇಸ್‌ಬುಕ್‌ನ ಅಸ್ತಿತ್ವವೇ ಇರುವುದಿಲ್ಲ. ಅಂಥದ್ದರಲ್ಲಿ ಒಬ್ಬೊಬ್ಬ ಗ್ರಾಹಕನ ಸಮಸ್ಯೆಯನ್ನು ಅದು ಗಂಭೀರವಾಗಿ ಪರಿಗಣಿಸಬೇಕಲ್ಲವೇ? ಈ ಪ್ರಶ್ನೆಗೆ ಬರುವ ಹೊತ್ತಿಗೆ ಸಮರ್ಥಕರು ಸುಸ್ತಾಗಿರುತ್ತಾರೆ. ‘ನಿಮ್ಮನ್ನು ಫೇಸ್‌ಬುಕ್ ಬಳಸಲು ಹೇಳಿದವರು ಯಾರು?’ ಎಂಬಂಥ ಪ್ರಶ್ನೆಗಳನ್ನು ಕೇಳಲು ಆರಂಭಿಸುತ್ತಾರೆ.

ದುರದೃಷ್ಟವೆಂದರೆ ಇದನ್ನು ನಮ್ಮೆಲ್ಲರಿಗಿಂತ ಚೆನ್ನಾಗಿ ಫೇಸ್‌ಬುಕ್ ಅರಿತಿದೆ. ಯಾವುದೇ ವಾದಕ್ಕೆ ಒಂದು ಪ್ರತಿವಾದವಿರುತ್ತದೆ. ಯಾವ ಕಡೆ ಹೆಚ್ಚು ಜನರಿರುತ್ತಾರೋ ಅದನ್ನು ಬೆಂಬಲಿಸಿದರೆ ತಮ್ಮ ವ್ಯಾಪಾರ ಹೆಚ್ಚು ಸುಲಲಿತವಾಗಿ ನಡೆಯುತ್ತದೆ ಎಂಬುದು ಅದರ ನಿಲುವು. ವೈಯಕ್ತಿಕ ಮಾಹಿತಿಯ ಹಂಚಿಕೆಗೆ ಸಂಬಂಧಿಸಿದಂತೆ ಪ್ರಬಲವಾದ ಕಾನೂನುಗಳಿರುವ ಯೂರೋಪಿನ ದೇಶಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಕಡೆಯೂ ಫೇಸ್‌ಬುಕ್‌ನದ್ದು ಒಂದು ಬಗೆಯ ಸರ್ವಾಧಿಕಾರವೇ ಸರಿ. ಭಾರತದಲ್ಲಂತೂ ಫೇಸ್‌ಬುಕ್ ಮತ್ತು ಬಲಪಂಥೀಯ ಶಕ್ತಿಗಳು ಒಂದನ್ನೊಂದು ಬೆಂಬಲಿಸುತ್ತಲೇ ಪರಸ್ಪರ ಬೆಳೆದಿವೆ.

‘ನಾನು ಗೌರಿ’ ಬಲಪಂಥೀಯ ಶಕ್ತಿಗಳಿಗೆ ಇರಿಸುಮುರುಸುಂಟು ಮಾಡುವ ಸುದ್ದಿಗಳನ್ನು ಪ್ರಕಟಿಸುವ ಕರ್ನಾಟಕ ಬೆರೆಳಣಿಕೆಯ ಮುಖ್ಯವಾಹಿನಿ ಜಾಲತಾಣಗಳಲ್ಲಿ ಒಂದು. ಅದರ ಯುಆರ್‌ಎಲ್ ಅನ್ನು ಫೇಸ್‌ಬುಕ್ ಬ್ಲಾಕ್ ಮಾಡುವ ಮುಂಚೆಯೂ ಬಿಜೆಪಿ ಶಾಸಕರೊಬ್ಬರಿಗೆ ಸಂಬಂಧಿಸಿದ ಸುದ್ದಿಯನ್ನು ಅದು ಪ್ರಕಟಿಸಿತ್ತು. ಆಮೇಲೆ ತೆರವುಗೊಳಿಸುವ ಹೊತ್ತಿಗೆ ಇದೊಂದು ‘ತಾಂತ್ರಿಕ ಸಮಸ್ಯೆ’ ಆಗಿತ್ತು.

‘ವಾರ್ತಾಭಾರತಿ’ಯ ಯುಆರ್‌ಎಲ್ ಮತ್ತು ಅದರ ಫೇಸ್‌ಬುಕ್ ಪುಟ ಇದೇ ಬಗೆಯ ತೊಂದರೆಯನ್ನು ಎದುರಿಸಿತ್ತು. ರಾಷ್ಟ್ರಿಯ ಮಾಧ್ಯಮಗಳಲ್ಲಿ ಸುದ್ದಿಯಾದ ನಂತರ ಬ್ಲಾಕ್ ತೆರವಾಯಿತು. ಆಗಲೂ ಬ್ಲಾಕ್‌ಗೆ ಕಾರಣವಾದದ್ದು ತಾಂತ್ರಿಕ ಸಮಸ್ಯೆ. ವಾರ್ತಾಭಾರತಿ ಕೂಡಾ ಬಲಪಂಥೀಯ ವಿರೋಧಿ ನಿಲುವಿನ ಪತ್ರಿಕೆಯೇ ಆಗಿದೆ. ‘ಇಂಜಿಪೆಣ್ಣು’ ಹೆಸರಿನಲ್ಲಿ ಸಕ್ರಿಯರಾಗಿರುವ ಮಾನವ ಹಕ್ಕು ಕಾರ್ಯಕರ್ತೆಯ ಫೇಸ್‌ಬುಕ್ ಪುಟ/ಅಕೌಂಟ್, ‘ಕ್ಯಾರವಾನ್’ ಮಾಸಿಕದ ಜಾಹೀರಾತು ಹೀಗೆ ‘ತಾಂತ್ರಿಕ ಕಾರಣ’ಗಳಿಗೆ ಬ್ಲಾಕ್ ಆಗುವ ಎಲ್ಲಾ ಪ್ರಕರಣಗಳಲ್ಲಿಯೂ ಆಡಳಿತಾರೂಢರಿಗೆ ವಿರುದ್ಧವಾಗಿರುವ ವರದಿ ಇರುವುದು ಕೇವಲ ಕಾಕತಾಳೀಯ ಎಂದು ಹೇಳಲು ಸಾಧ್ಯವೇ?

‘ಕ್ಯಾರವಾನ್’ ಪ್ರಕರಣಕ್ಕೆ ಇನ್ನೊಂದು ತಿಂಗಳಲ್ಲಿ ಎರಡು ವರ್ಷ ತುಂಬುತ್ತದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ತಮ್ಮ ಸಾಲದ ಕುರಿತಂತೆ ಚುನಾವಣಾಧಿಕಾರಿಗೆ ಸಲ್ಲಿಸಿದ ಪ್ರಮಾಣದ ಪತ್ರದಲ್ಲಿ ಪ್ರಸ್ತಾಪಿಸಿಲ್ಲ ಎಂಬುದರ ಬಗ್ಗೆ ಕ್ಯಾರವಾನ್ ವರದಿ ಪ್ರಕಟಿಸಿತ್ತು. ಎಲ್ಲಾ ಪತ್ರಿಕೆಗಳು ಮಾಡುವಂತೆಯೇ ತನ್ನ ವಿಶೇಷ ವರದಿಯನ್ನು ಫೇಸ್‌ಬುಕ್‌ನಲ್ಲಿ ಜಾಹೀರಾತಾಗಿ ಪ್ರಕಟಿಸಲು ಪ್ರಯತ್ನಿಸಿತು. ಆದರೆ ಈ ಜಾಹೀರಾತಿಗೆ ಫೇಸ್‌ಬುಕ್ ಒಪ್ಪಿಗೆ ನೀಡಲೇ ಇಲ್ಲ. ಇದ್ಯಾಕೆ ಹೀಗೆ ಎಂಬ ಪ್ರಶ್ನೆಗೆ ಫೇಸ್‌ಬುಕ್ ಕಡೆಯಿಂದ ಯಾವುದೇ ಉತ್ತರ ದೊರೆಯಲಿಲ್ಲ. ಹನ್ನೊಂದು ದಿನಗಳ ನಂತರ ಜಾಹೀರಾತು ಪ್ರಕಟಣೆಗೆ ಒಪ್ಪಿಯನ್ನು ನೀಡಿದ ಫೇಸ್‌ಬುಕ್ ತಾಂತ್ರಿಕ ತೊಂದರೆಯಿಂದ ಹೀಗಾಯಿತು ಎಂಬ ಸ್ಪಷ್ಟನೆ ನೀಡಿತು.

ಫೇಸ್‌ಬುಕ್ ಮತ್ತು ಕ್ಯಾರವಾನ್‌ಗಳು ಜೊತೆ ಜೊತೆಯಾಗಿ ಕಾರ್ಯಕ್ರಮಗಳನ್ನು ಸಂಘಟಿಸಿವೆ. ಎರಡೂ ಸಂಸ್ಥೆಗಳ ನಡುವೆ ವ್ಯಾವಹಾರಿಕ ಸಂಬಂಧವೂ ಇತ್ತು. ಇಷ್ಟಾಗಿಯೂ ಫೇಸ್‌ಬುಕ್‌ನ ‘ಸಂಪರ್ಕ ಜಾಲದ ಬಲೆ’ಯನ್ನು ದಾಟಿ ಹೋಗಲು ಕ್ಯಾರವಾನ್‌ಗೆ ಸಾಧ್ಯವಾಗಿರಲಿಲ್ಲ. ‘ಕ್ಯಾರವಾನ್ ಡೈಲಿ’, ‘ಬೋಲ್ತಾ ಹಿಂದುಸ್ತಾನ್’, ‘ಜನ್‌ಜ್ವಾರ್’ ಹೀಗೆ ಅನೇಕ ಸಣ್ಣ ಮತ್ತು ದೊಡ್ಡ ಪತ್ರಿಕೆಗಳು ನರೇಂದ್ರ ಮೋದಿ ಮತ್ತು ಬಿಜೆಪಿ ವಿರೋಧಿ ವರದಿಗಳನ್ನು ಪ್ರಕಟಿಸಿದಾಗಲೆಲ್ಲಾ ಯುಆರ್‌ಎಲ್ ಬ್ಲಾಕ್‌ನ ಸಮಸ್ಯೆಯನ್ನು ಎದುರಿಸಿವೆ.

ಇಲ್ಲಿ ಉಲ್ಲೇಖಿಸುವ ಎಲ್ಲಾ ಪತ್ರಿಕೆಗಳು ಗಮನಾರ್ಹ ಪ್ರಮಾಣದ ಓದುಗರನ್ನು ಹೊಂದಿವೆಯಷ್ಟೇ ಅಲ್ಲದೇ ತಮ್ಮನ್ನು ಬ್ಲಾಕ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಒಂದು ಗದ್ದಲ ಸೃಷ್ಟಿಸುವ ಸಾಮರ್ಥ್ಯ ಹೊಂದಿದ್ದವು ಎಂಬುದೂ ಮುಖ್ಯವಾಗುತ್ತದೆ. ಇಂಥ ಶಕ್ತಿ ಇಲ್ಲದ ಅದೆಷ್ಟೋ ಮಂದಿಯ ವಿಷಯ ಹೊರಗೆ ಬಾರದೆಯೇ ಮುಚ್ಚಿ ಹೋಗಿರುವ ಸಾಧ್ಯತೆಗಳೇ ಹೆಚ್ಚು.

ಎನ್‌ಡಿಟಿವಿ ಇಂಡಿಯಾದ ಫೇಸ್‌ಬುಕ್ ಪುಟದಲ್ಲಿ ಸಂಭವಿಸುವ ಅದ್ಭುತ ಮತ್ತೊಂದು. ರವೀಶ್‌ಕುಮಾರ್ ತಮ್ಮ ಅಭಿಮಾನಿಗಳು ಮತ್ತು ವಿರೋಧಿಗಳಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯರು. ಅವರನ್ನು ಬ್ಲಾಕ್ ಮಾಡುವುದು ಸ್ವಲ್ಪ ಕಷ್ಟದ ಸಂಗತಿ.

ಆದರೆ ಅವರು ಆಡಳಿತ ಪಕ್ಷದ ಸೋಲುಗಳನ್ನು ಸಾಕ್ಷ್ಯ ಸಮೇತ ಬಯಲಿಗೆಳೆಯುವ ಕಾರ್ಯಕ್ರಮಗಳು ಫೇಸ್‌ಬುಕ್‌ನಲ್ಲಿ ಕಡಿಮೆ ಜನರನ್ನು ತಲುಪುವಂತೆ ನೋಡಿಕೊಳ್ಳುವ ಪ್ರಕ್ರಿಯೆಯೊಂದರ ಬಗ್ಗೆ ಸಿರಿಲ್ ಸ್ಯಾಮ್ ಮತ್ತು ಪರಂಜೊಯ್ ಗುಹಾ ಥಾಕೂರ್ಥಾ ಅವರ ಪುಸ್ತಕದಲ್ಲಿ ಹೇಳಲಾಗಿದೆ. ಈ ‘ಅಲ್ಗಾರಿದಂ ಮಹಾತ್ಮೆ’ ಯಾವತ್ತೂ ಸಮಸ್ಯೆಯೇ.

ಫೇಸ್‌ಬುಕ್ ವಿಶ್ವವ್ಯಾಪಿಯಾಗಿ ಅನುಸರಿಸುತ್ತಿರುವ ವ್ಯಾಪಾರ ತಂತ್ರ ಒಂದೇ. ಜನರು ಹೆಚ್ಚು ಹೆಚ್ಚು ತನ್ನ ವೇದಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡುವುದು. ಅರ್ಥಾತ್ ಅವರು ಹೆಚ್ಚು ವಿವರಗಳನ್ನು ಹಂಚಿಕೊಳ್ಳುವಂತೆ, ಹೆಚ್ಚು ಚರ್ಚಿಸುವಂತೆ ಮಾಡುವುದು. ಸದ್ಯಕ್ಕೆ ವಿಶ್ವವ್ಯಾಪಿಯಾಗಿ ಬಲಪಂಥ ಜನಪ್ರಿಯವಾಗಿದೆ. ಬಹುಸಂಖ್ಯಾತ ವಾದವನ್ನು ನೆಚ್ಚಿಕೊಂಡಿರುವ ಈ ರಾಜಕಾರಣಕ್ಕೆ ದೊಡ್ಡ ಸಂಖ್ಯೆಯ ಬೆಂಬಲಿಗರಿದ್ದಾರೆ. ಅವರ ಚಟುವಟಿಕೆಯನ್ನು ಬೆಂಬಲಿಸುವುದು ಫೇಸ್‌ಬುಕ್‌ನ ದೃಷ್ಟಿಯಲ್ಲಿ ಲಾಭದಾಯಕ. ಇದುವೇ ಫೇಸ್‌ಬುಕ್‌ನ ವ್ಯಾಪಾರ ಮಾದರಿ.

‘ನಾನು ಗೌರಿ’ಯೂ ಸೇರಿದಂತೆ ಜನರೆದುರು ವಾಸ್ತವವನ್ನು ತೆರೆದಿಡಲು ಪ್ರಯತ್ನಿಸುವ ಪ್ರತಿಯೊಂದು ಜಾಲತಾಣವೂ ಒಂದಲ್ಲಾ ಒಂದು ಸಂದರ್ಭದಲ್ಲಿ ಯುಆರ್‌ಎಲ್ ಬ್ಲಾಕ್ ಸಮಸ್ಯೆಯನ್ನು ಅನುಭವಿಸಿರುತ್ತವೆ. ಆದರೆ ಓಪಿಇಂಡಿಯಾದಂಥ ಸುಳ್ಳನ್ನೇ ಸದಾ ಹಂಚುವ ವೆಬ್‌ಸೈಟ್ ಇಲ್ಲಿಯ ತನಕ ಅಂಥ ಸಮಸ್ಯೆಯನ್ನು ಎದುರಿಸಿಲ್ಲ!.

ಸುದ್ದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವುದಕ್ಕಾಗಿ ಎಂಟು ಸ್ವತಂತ್ರ ಸಂಸ್ಥೆಗಳನ್ನು ಫೇಸ್‌ಬುಕ್ ನೇಮಿಸಿಕೊಂಡಿದೆ. ಆದರೂ ಬಲಪಂಥೀಯ ಸುಳ್ಳು ಸುದ್ದಿ ತಾಣಗಳು ಯುಆರ್‌ಎಲ್ ಬ್ಲಾಕ್‌ನಂಥ ಸಮಸ್ಯೆಯನ್ನು ಎದುರಿಸುವುದಿಲ್ಲ. ಇದು ಯಾವ ಬಗೆಯ ತಾಂತ್ರಿಕ ದೋಷ? ಈ ಪ್ರಶ್ನೆಗೆ ‘ನಾನು ಗೌರಿ’ಯ ಯಆರ್‌ಎಲ್ ಬ್ಲಾಕ್ ಅನ್ನು ವಿವರಿಸಲು ಪ್ರಯತ್ನಿಸಿದ ಯಾವ ಎನ್‌ಆರ್‌ಐ ಲಿಬರಲ್ ಕೂಡಾ ಉತ್ತರಿಸುವುದಿಲ್ಲ ಎನ್ನುವುದರಲ್ಲಿ ಫೇಸ್‌ಬುಕ್‌ನ ಗೆಲುವಿದೆ.

– ಗೌತಮ ಶರ್ಮ


ಇದನ್ನೂ ಓದಿ: ನಾನುಗೌರಿ ಪೇಜ್ ನಿರ್ಭಂಧಿಸಿದ ಫೇಸ್‌ಬುಕ್: ಗೌರಿ ಮೀಡಿಯಾ ತಂಡ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...