ಲಂಚ ಪ್ರಕರಣದ ಆರೋಪಿ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಹಾಗಾಗಿ ಅವರಿಗೆ ಬಂಧನ ಭೀತಿ ಆರಂಭವಾಗಿದೆ.
ಕೆಎಸ್ಡಿಎಲ್ ವರ್ಕ್ ಆರ್ಡರ್ ನೀಡಲು ಲಂಚ ಪಡೆದಿರುವ ಪ್ರಕರಣದ ಎಓನ್ ಆರೋಪಿಯಾದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ವಯಸ್ಸು ಮತ್ತು ಆರೋಗ್ಯವನ್ನು ಗಮನಿಸಿ ಜಾಮೀನು ನೀಡಲಾಗಿದೆ ಎಂದು ಉಚ್ಚರಿಸಿತ್ತು. ಆದರೆ ಅಲ್ಲಿಯವರೆಗೂ ತಲೆ ಮರೆಸಿಕೊಂಡಿದ್ದ ಮಾಡಾಳ್ ವಿರೂಪಾಕ್ಷ ಜಾಮೀನು ಸಿಗುತ್ತಲೇ ಬೃಹತ್ ರೋಡ್ ಶೋ ನಡೆಸಿದ್ದರು.
ಇಂದು ಹೈಕೋರ್ಟ್ ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಏಕ ಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಬೇಕಾದರೂ ಮಾಡಾಳ್ ವಿರೂಪಾಕ್ಷಪ್ಪನವರನ್ನು ಬಂಧಿಸಬಹುದಾಗಿದೆ. ಅವರು ಮತ್ತೆ ತಲೆಮರೆಸಿಕೊಳ್ಳುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.
ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ರವರು ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ತಂದೆಯ ಬಂಧನವಾದರೆ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗುತ್ತಿದೆ.
ಇದನ್ನೂ ಓದಿ: ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ