ಹಾಸನ ಜಿಲ್ಲೆಯ ಅರಸೀಕೆರೆಯ ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ. ಮಾರ್ಚ್ 05ರಂದು ಅರಸೀಕೆರೆಯಲ್ಲಿ ಸಿದ್ದರಾಮಯ್ಯನವರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.
ಬುಧವಾರ ರಾತ್ರಿ ಅರಸೀಕೆರೆಯಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಭೆ ನಡೆಸಿದ ಅವರು, “ಇದೇ ಮಾ.5 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅರಸೀಕೆರೆ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ನನ್ನ ಅಧ್ಯಕ್ಷತೆಯಲ್ಲಿಯೇ ಪುತ್ಥಳಿ ಅನಾವರಣ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಅದಕ್ಕಿಂತ ಮೊದಲು ನಾನು ಒಂದು ಸ್ಪಷ್ಟ ತೀರ್ಮಾನಕ್ಕೆ ಬರಬೇಕು. ಹಾಗಾಗಿ ನೀವು ಹೇಳಿದಂತೆ ನಾನು ಕೇಳಬೇಕೇ ವಿನಃ ನಾನು ಹೇಳಿದಂತೆ ನೀವು ಕೇಳುವುದಲ್ಲ” ಎಂದಿದ್ದಾರೆ.
ಮುಂದುವರಿದು “ಮುಂದಿನ ದಿನಗಳಲ್ಲಿ ನಾನು ರಾಜಕೀಯದಲ್ಲಿ ಉಳಿಯಬೇಕೋ, ಬೇಡವೋ? ಸ್ಪರ್ಧಿಸುವುದಾದರೆ ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು? ಜೆಡಿಎಸ್, ಕಾಂಗ್ರೆಸ್ ಇಲ್ಲವೇ ಪಕ್ಷೇತರನಾಗಿ ಸ್ಪರ್ಧಿಸಲೇ? ಅಥವಾ ಚುನಾವಣೆ ರಾಜಕೀಯ ಬಿಟ್ಟು ಮನೆಯಲ್ಲಿ ಕುಳಿತುಕೊಳ್ಳಲೇ” ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಅನುಯಾಯಿಗಳು ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಕಾಂಗ್ರೆಸ್ ಕಾಂಗ್ರೆಸ್ ಎಂದು ಘೋಷಣೆ ಕೂಗಿದ್ದಾರೆ.
ಆ ಮೂಲಕ ಬಹುದಿನಗಳಿಂದ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹೆ ನಿಜವಾಗಿದೆ. ಅವರೊಂದಿಗೆ ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ ರಾಮಸ್ವಾಮಿಯವರು ಸಹ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ವಿಧಾನಸಭಾ ಫಲಿತಾಂಶ: ನಾಗಲ್ಯಾಂಡ್, ತ್ರಿಪುರದಲ್ಲಿ ಬಿಜೆಪಿ ಮುನ್ನಡೆ – ಮೇಘಾಲಯದಲ್ಲಿ NPP ಮುನ್ನಡೆ