Homeಕರ್ನಾಟಕ`ವೈರಸ್' ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

`ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

- Advertisement -
- Advertisement -

ಈರುಳ್ಳಿ ಬೆಳೆಯುವ ಒಂದೂರ ಕಥೆ

ನನ್ನೂರು ತಾಳಿಕಟ್ಟೆ. ನಿಖರವಾಗಿ ಹೇಳಬೇಕೆಂದರೆ ಇಲ್ಲಿಂದ ಒಂದೂವರೆ ಮೈಲಿ ದೂರಕ್ಕೆ ಟಿಸಿಲೊಡೆದ ಪುಟ್ಟ ಕುಗ್ರಾಮ ನನ್ನೂರಾದರು, ನೂರಿಪ್ಪತ್ತು ಮನೆಗಳಿರುವ ನನ್ನ `ಕಾವಲು’ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳೋದು ಹೆಚ್ಚೂಕಮ್ಮಿ ಸಾವಿರ ಮನೆಗಳಿರುವ ಇದೇ ತಾಳಿಕಟ್ಟೆಯ ಮೂಲಕ. ಈ ತಾಳಿಕಟ್ಟೆಯ ಬಗ್ಗೆ, ಈ ಊರಿನ ಸೌಹಾರ್ದ ಪರಂಪರೆಯ ಬಗ್ಗೆ ಇಲ್ಲಿಗೆ ಮೂವತ್ತು ವರ್ಷಗಳ ಹಿಂದೆಯೇ ಲಂಕೇಶ್ ಮೇಷ್ಟ್ರು ತಮ್ಮ ಮರೆಯುವ ಮುನ್ನ ಅಂಕಣದಲ್ಲಿ ಬರೆದಿದ್ದರು. ಕಾಕತಾಳೀಯವೊ ಏನೊ, ಮುಂದೆ ಲಂಕೇಶ್ ಅವರು ಕನ್ನಡದ ಜಾಣಜಾಣೆಯರನ್ನೆ ಮುಂದಿಟ್ಟುಕೊಂಡು `ಪ್ರಗತಿರಂಗ’ ಕಟ್ಟಿದಾಗ ಅದರ ಮೊದಲ ಸಭೆ ನಡೆಸಿದ್ದು ಕೂಡಾ ಇದೇ ತಾಳಿಕಟ್ಟೆಯಲ್ಲಿ. ಇಲ್ಲಿ ಸರ್ ಸೈಯದ್ ಮಹಮದ್ ಇಸ್ಮಾಯಿಲ್ ಖಾದ್ರಿ ಎಂಬ ಸೂಫಿ ಸಂತರ ದರ್ಗಾ ಇದೆ. ಆದರು ಈ ಊರಿನಲ್ಲಿ ಇವತ್ತಿಗು ಒಂದು ಮುಸ್ಲಿಂ ಕುಟುಂಬ ಬಿಟ್ಟರೆ ಎರಡನೆಯ ಮನೆಯಿಲ್ಲ. ಈ ದರ್ಗಾದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳೋದು ಹಿಂದೂಗಳೆ. ವರ್ಷಕ್ಕೊಮ್ಮೆ ನಡೆಯುವ ಉರುಸಿನ ನೇತಾರಿಕೆ ಕೂಡಾ ಇಲ್ಲಿನ ಶೂದ್ರ ಸಮುದಾಯಗಳದ್ದೆ. ಬೇರೆ ಕಡೆಯಿಂದ ಉರುಸಿಗೆಂದು ಬರುವ ಮುಸ್ಲಿಂ ಜನರ ದೇಖರೇಖಿಯನ್ನು ಹಿಂದೂಗಳು ಮುತುವರ್ಜಿಯಿಂದ ನೋಡಿಕೊಳ್ಳುತ್ತಾರೆ.

ಈ ಸೌಹಾರ್ದತೆಯ ಬಗ್ಗೆ ಬರೆಯುತ್ತಾ ಲಂಕೇಶ್ ಮೇಷ್ಟ್ರು `ಜಾತಿ ಜಗಳದಲ್ಲಿ ಮನುಷ್ಯತ್ವವನ್ನೆ ಬಲಿತೆಗೆದುಕೊಳ್ಳುವ ನೀಚರೆಲ್ಲರು ಈ ಊರಿನ ಕುರುಬರಿಂದ ಕಲಿಯಬೇಕು ಎನ್ನುವುದೇ ನನ್ನ ಅನಿಸಿಕೆ’ ಎಂದು ಹೆಮ್ಮೆಯಿಂದ ದಾಖಲಿಸಿದ್ದರು. ಇಂಥಾ ಸೌಹಾರ್ದತೆಗೆ ಹೆಸರಾಗಿದ್ದ ಈ ಊರು, ಇವತ್ತು ದರ್ಗಾಕ್ಕೆ ಬರುವ ಮುಸ್ಲಿಂ ಭಕ್ತರ ಮಾತು ಒತ್ತಟ್ಟಿಗಿರಲಿ, ಮುಸಲ್ಮಾನ ವ್ಯಾಪಾರಿಗಳನ್ನೂ ತನ್ನೊಳಗೆ ಬಿಡಿಸಿಕೊಳ್ಳಬಾರದೆಂಬ ಅಲಿಖಿತ ಫರ್ಮಾನು ಧರಿಸಿಕೊಂಡು ಕೂತಿದೆ. ಮೂಲತಃ ಮನುಷ್ಯನೆ ಅಲ್ಲದ ಕ್ಷುದ್ರ ಕ್ರಿಮಿಯೊಂದು ತಂದೊಡ್ಡುವ ಕೊರೊನಾ ಎಂಬ ರೋಗದಲ್ಲು ಧರ್ಮದ ನಂಜು ಹುಡುಕಿ ಸಮಾಜವನ್ನೆ ಸೋಂಕುಗೊಳಿಸಿದ `ಪುಣ್ಯಾತ್ಮ?ರ ಪ್ರಭಾವಕ್ಕೆ ಈ ಊರಿನ ಸೌಹಾರ್ದತೆಯೂ ಬಲಿಯಾದುದರ ದ್ಯೋತಕ ಇದು.

ಈ ಕುರಿತಂತೆ ನನಗೆ ನನ್ನ ಜನರ ಬಗ್ಗೆ ಬೇಸರವಿಲ್ಲ, ಆಕ್ಷೇಪಗಳೂ ಇಲ್ಲ. ಯಾಕೆಂದರೆ ಈ ಒಂದು ಕಾರಣಕ್ಕೆ ನನ್ನ ಜನ ಸಂಪೂರ್ಣ ಕೋಮುವಾದಿಗಳಾಗಿಬಿಟ್ಟಿದ್ದಾರೆ, ಮೋದಿ ಭಜನಾ ಮಂಡಳಿ ಸೇರಿಕೊಂಡಿದ್ದಾರೆ, ಹೊಸದಾಗಿ ಅಜ್ಞಾನಿಗಳಾಗಿಬಿಟ್ಟಿದ್ದಾರೆ ಎಂದು ಆರೋಪಿಸಲಾರೆ. ಅಜ್ಞಾನ ಮತ್ತು ಮುಗ್ಧತೆ, ಇವೆರಡೂ ನಮ್ಮ ಜನರ ನಿತ್ಯಾಚರಣೆಗಳು. ಅವಕಾಶ ತಮ್ಮ ಕೈಯಲ್ಲಿದ್ದಾಗ ವಿವೇಕವನ್ನು ಜನರಿಗೆ ತಲುಪಿಸುವ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ಈ ದೇಶದ ಜಾತ್ಯತೀತ ವಾರಸುದಾರರು ಇವತ್ತು ಇಂಥಾ ಘಟನೆಗಳನ್ನು ನೆಪ ಮಾಡಿಕೊಂಡು `ಜನ’ರನ್ನು ದೂಷಿಸುವುದರ ಬಗ್ಗೆ ನನಗೆ ಅನೇಕ ಆಕ್ಷೇಪಣೆಗಳಿವೆ. ವಾಸ್ತವಗಳನ್ನು ಧಿಕ್ಕರಿಸಿ ಆದರ್ಶಗಳನ್ನು ಕಟ್ಟಲಾಗುವುದಿಲ್ಲ!

ಇಷ್ಟೆಲ್ಲ ಬದಲಾದ ನಮ್ಮ ಜನ ಮುಂದಿನ ವರ್ಷದಿಂದ ಉರುಸ್ ನಿಲ್ಲಿಸಿಬಿಡುತ್ತಾರೆಯೇ? ಖಂಡಿತ ಇಲ್ಲ. ಯಾಕೆಂದರೆ ಪ್ರತಿವರ್ಷ ತಾವು ಆಚರಿಸುವ ಗುಳ್ಳಮ್ಮ, ಬೀರಪ್ಪ ದೇವರುಗಳ ಉತ್ಸವದಷ್ಟೆ ಕಟಿಬದ್ಧರಾಗಿ ಆ ಉರುಸ್ ನಡೆಸುತ್ತಾರೆ. ಅದು ಅವರಿಗೆ ತಮ್ಮದೇ ಎನ್ನುವಷ್ಟು ಸಹಜವಾಗಿ ಒಗ್ಗಿಹೋಗಿದೆ. ಆದರು ಸಂದರ್ಭ ಮತ್ತು ಸಮೂಹಸನ್ನಿಗೆ ದನಿಗೂಡಿಸುವ ದೌರ್ಬಲ್ಯಕ್ಕೆ ಜನ ಮಾರುಹೋಗಿದ್ದಾರೆ. ನಾವಿಲ್ಲಿ ದೂಷಿಸಲೇಬೇಕೆಂದಿದ್ದರೆ ಅದು ಜನರನ್ನಲ್ಲ, ಸ್ವತಃ ಸೌಹಾರ್ದತೆ ಸ್ವಭಾವದ ನಮ್ಮ ಜನರನ್ನು ಅದಕ್ಕೆ ಕಮಿಟ್ ಮಾಡಿಸುವಲ್ಲಿ ಸೋತುಹೋದ ಇಷ್ಟುದಿನಗಳ ಅಧಿಕಾರಸ್ಥ-ಹೋರಾಟನಿರತ ಜಾತ್ಯತೀತ ವಾರಸುದಾರರನ್ನು ಮತ್ತು ಈ ವಾರಸುದಾರರ ಲೋಪಗಳ ಲಾಭ ಪಡೆದು ಕೋಮುಸನ್ನಿಗಳನ್ನು ಹುಟ್ಟುಹಾಕುತ್ತಿರುವ ಮನುಷ್ಯ ಕ್ರಿಮಿಗಳನ್ನು.

ಕೇವಲ ವಿಚಾರವಂತಿಕೆಗಷ್ಟೆ ಅಲ್ಲ, ಆರ್ಥಿಕತೆಯಲ್ಲು ನಮ್ಮ ಜನ ಇಂಥಾ ಸನ್ನಿಗಳಿಂದಾಗಿ ದೊಡ್ಡ ಗೊಂದಲಕ್ಕೆ ಬಿದ್ದಿದ್ದಾರೆ. ಫಲವತ್ತಾದ ಕಪ್ಪುಮಣ್ಣು ಹೊಂದಿರುವ ನಮ್ಮ ಜನರಿಗೆ ಈರುಳ್ಳಿಯೆ ಪ್ರಧಾನ ಆರ್ಥಿಕ ಬೆಳೆ. ಹೊಲಗಳನ್ನು ಅಣಿಗೊಳಿಸಿಕೊಂಡು ಕೂತಿರುವ ಜನ, ಒಂದೆರಡು ಮಳೆ ಬಿದ್ದು ನೆಲ ಹಸನಾದರೆ ಬಿತ್ತನೆಗೆ ದಿನ ಎಣಿಸುತ್ತಿದ್ದಾರೆ. ಸಾಬರ ಮೇಲಿನ ಈ ಅಘೋಷಿತ ಸಮೂಹಸನ್ನಿಯಂತಹ ಗ್ರಾಮೀಣ ನಿಷೇಧ ಈಗ ಅವರನ್ನು ದೊಡ್ಡ ಸಂಕಟಕ್ಕೆ ತಳ್ಳಿದೆ. ಬೆಳೆದ ಈರುಳ್ಳಿಯನ್ನು ಬೆಂಗಳೂರಿಗೊ, ಹಾಸನಕ್ಕೊ ತಂದು ಮಾರಾಟ ಮಾಡುವ ಪರಿಪಾಟ ಇದೆಯಾದರು, ಈರುಳ್ಳಿ ರೇಟು ಕುಸಿದಂತಹ ಸಂದರ್ಭದಲ್ಲಿ ನಮ್ಮೂರಿನ ರೈತರಿಗೆ ಆಸರೆಯಾಗಿ ನಿಲ್ಲೋದು `ಈರುಳ್ಳಿ ಸಾಬರು’. ಹತ್ತಿರದ ಪಟ್ಟಣಗಳ ಮುಸ್ಲಿಂ ವರ್ತಕರು ಮನೆ ಬಾಗಿಲಿಗೇ ಬಂದು ಒಂದಷ್ಟು ಚೌಕಾಸಿ ನಡೆಸಿ, ಚೂರು ಲಾಭವನ್ನೂ ಇಟ್ಟುಕೊಂಡು ಲೋಡುಗಟ್ಟಲೆ ಈರುಳ್ಳಿ ಖರೀದಿಸಿ ಒಯ್ಯುತ್ತಾರೆ. ಮೊದಲೇ ರೇಟು ಕಡಿಮೆ ಇರುವಾಗ ಖಾಲಿ ಚೀಲ, ಹಮಾಲಿ ಮತ್ತು ಲಾರಿ ಬಾಡಿಗೆಯಂತಹ ಹೆಚ್ಚಿನ ಹೊರೆ ತಪ್ಪಿಸಿಕೊಳ್ಳಲು ಜನ ಈರುಳ್ಳಿ ಸಾಬರಿಗೇ ತಮ್ಮ ಬೆಳೆ ಮಾರಾಟ ಮಾಡಿ ಕೈತೊಳೆದುಕೊಳ್ಳುತ್ತಾರೆ.

ಆದರೆ ಈ ಸಲ ಕೊರೊನಾ ಕಾಯಿಲೆ ಯಾವಾಗ ಸಂಪೂರ್ಣ ಸಮಾಪ್ತಿಯಾಗುತ್ತೆ ಎಂಬ ಖಾತ್ರಿಯಿಲ್ಲ. ಕಳೆದ ಸಲವೇ ಆರಂಭದಲ್ಲಿ ಒಳ್ಳೆಯ ಬೆಲೆ ಸಿಕ್ಕರು, ಆಮೇಲೆ ಏಕಾಏಕಿ ರೇಟು ಕುಸಿದು ಕಣ್ಣೀರಿಟ್ಟ ರೈತರು ಸಾಕಷ್ಟಿದ್ದಾರೆ. ಕೊರೊನಾ ಕಾರಣದಿಂದ ಹೊರ ದೇಶಕ್ಕೆ ಈರುಳ್ಳಿ ಎಕ್ಸ್ಪೋರ್ಟ್ ಅನುಮತಿ ಸಿಗದೆ ಹೋದರೆ ರೇಟು ಕೈಗತ್ತುವುದಿಲ್ಲ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಅಂಥಾ ಹೊತ್ತಲ್ಲಿ ಸಾಬರಿಗು ನಾವು ಹೀಗೆ ನಿಷೇಧ ಹೇರಿಕೊಂಡು ಕೂತರೆ ಈರುಳ್ಳಿಯ ಗತಿಯೇನು? ಎಂಬ ಚಿಂತೆಯೂ ಇದೇ ಜನರನ್ನು ಕಾಡುತ್ತಿದೆ. ಬೇರೆ ಬೆಳೆಗಳಂತೆ ಈರುಳ್ಳಿಯನ್ನು ದಾಸ್ತಾನು ಇಡಲಾಗದು.

ಬಿದ್ದ ಆರ್ಥಿಕತೆ, ಕುಂಠಿತಗೊಂಡ ಕೃಷಿ ಚಟುವಟಿಕೆಯಿಂದಾಗಿ ಈರುಳ್ಳಿ ಬೀಜಗಳು ಹಿಂದೆಂದು ಕಂಡರಿಯದಷ್ಟು ದುಬಾರಿಯಾಗಿವೆ. ಪ್ರತಿ ಸೇರಿಗೆ ಏಳುನೂರರಿಂದ ಎಂಟುನೂರು ರೂಪಾಯಿ ಇರುತ್ತಿದ್ದ ಬೀಜ, ಈಗಾಗಲೆ ಒಂದು ಸಾವಿರದ ಮುನ್ನೂರರಿಂದ ಒಂದೂವರೆ ಸಾವಿರ ರೂಪಾಯಿಯಾಗಿದೆ. ಬಿತ್ತನೆ ಕಾಲ ಸಮೀಪಿಸಿದಂತೆ ಅದು ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಈ ಸಲ ಕೃಷಿ ಚಟುವಟಿಕೆಯ ಇನ್ನಿತರೆ ಖರ್ಚೂ ದುಬಾರಿಯಾಗುವ ಸಾಧ್ಯತೆ ಇದೆ. ಹೀಗೆ ಎಕರೆಗೆ ಮೂವತ್ತರಿಂದ ನಲವತ್ತು ಸಾವಿರ ಖರ್ಚು ಮಾಡಿ ಕೊಳ್ಳುವವರೇ ಇಲ್ಲವಾದರೆ ಏನು ಗತಿ? ಎಂಬ ಆತಂಕವೂ ಇದೇ ಜನರನ್ನು ಕಾಡುತ್ತಿದೆ.

ಇದು ಕೇವಲ ಒಂದು ಊರಿನ ಕಥೆಯಲ್ಲ. ಹಿಂದೂಗಳು ಮಾತ್ರವಲ್ಲದೇ ಮುಸಲ್ಮಾನರು, ಸಿಖ್ಖರು, ಪಾರಸಿಗಳು, ಜೈನರು, ಬೌದ್ಧರು, ಕಿರಸ್ತಾನರು ಹೀಗೆ ಎಲ್ಲಾ ಧರ್ಮ ವರ್ಗಗಳನ್ನು ತನ್ನವರೆಂದು ಭಾವಿಸಿರುವ ಈ ನಮ್ಮ ದೇಶ ಈ ಎಲ್ಲರ ಆರ್ಥಿಕ ಪಾಲುದಾರಿಕೆಯಿಂದ ತನ್ನ ಆರ್ಥಿಕಶಕ್ತಿಯನ್ನು ಅರ್ಥಾತ್ ಜಿಡಿಪಿಯನ್ನು ಸೃಷ್ಟಿಸಿಕೊಂಡಿದೆ. ಇದೊಂಥರ ಆರ್ಥಿಕ ಸರಪಳಿಯಿದ್ದಂತೆ. ಯಾವುದೊ ರಾಜಕೀಯ ಅಥವಾ ಸೈದ್ದಾಂತಿಕ ದುರುದ್ದೇಶಕ್ಕಾಗಿ ಇವರಲ್ಲಿ ಒಬ್ಬರನ್ನು ಹೊರಗಿಡುವ ಹುನ್ನಾರ ನಡೆಸಿದರು, ಇಡೀ ಆರ್ಥಿಕ ಚಕ್ರವೆ ಕೊಂಡಿ ಕಳಚಿಕೊಂಡ ಸರಪಳಿಯಂತೆ ಅಸ್ತವ್ಯಸ್ತವಾಗಿ ಬಿದ್ದುಹೋಗುತ್ತೆ. ನನ್ನೂರು ಅನುಭವಿಸುತ್ತಿರುವ ಗೊಂದಲ ಇದಕ್ಕೊಂದು ನಿದರ್ಶನವಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is baseless. You haven’t addressed other problems happening around us. Our country remains secular only till Hindu’s are in majority. Please look at what happened in Pak and Bangladesh or even in West Bengal.

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...