ರಾಜ್ಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನನ್ನು ಅವರ ನಿವಾಸದಲ್ಲೇ ಭ್ರಷ್ಟಾಚಾರ ನಿಗ್ರಹ ದಳ ಲೋಕಾಯುಕ್ತರು ಬಂಧಿಸಿದ್ದಾರೆ. 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಶಾಸಕರ ಮನೆಯಲ್ಲಿ 6 ಕೋಟಿ ರೂ. ಹಣ ಪತ್ತೆಯಾಗಿದೆ. ಸಧ್ಯ ಶಾಸಕನ ಪುತ್ರನನ್ನು ಬಂಧಿಸಲಾಗಿದೆ.
ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ವೇಳೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ವಸ್ತು ಖರೀದಿ ಸಂಬಂಧ ಟೆಂಡರ್ ಅನುಮೋದನೆಗೆ 80 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಗುರುವಾರ ಸಂಜೆ ಪ್ರಶಾಂತ್ ಮಾಡಲ್ 40 ಲಕ್ಷ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಈ ಬೆನ್ನಲ್ಲೇ ಕರ್ನಾಟಕ ಸರ್ಕಾರದ ಭ್ರಷ್ಟಾಚಾರ ನಿಗ್ರಹ ದಳ ಶಾಸಕರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧಕಾರ್ಯ ನಡೆಸಿದೆ. ಶಾಸಕರ ನಿವಾಸದಲ್ಲಿ ಒಟ್ಟು 6 ಕೋಟಿ ರೂ. ಹಣ ಲೋಕಾಯುಕ್ತರಿಗೆ ಸಿಕ್ಕಿದೆ. ಭ್ರಷ್ಟಾಚಾರ ನಿಗ್ರಹ ದಳವು ಶಾಸಕರನ್ನೂ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.
40 ಲಕ್ಷ ಲಂಚದ ಹೊರತಾಗಿ, ಲೋಕಾಯುಕ್ತರು ಪ್ರಶಾಂತ್ ಮಾಡಾಳ್ ಅವರ ಕಚೇರಿಯಲ್ಲಿ 1.7 ಕೋಟಿ ರೂ. ಪತ್ತೆಯಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಗುರುವಾರ ಬೆಳಗ್ಗೆ ಪ್ರಶಾಂತ್ ವಿರುದ್ಧ ವ್ಯಕ್ತಿಯೊಬ್ಬರು ಲಂಚ ಪಡೆದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಅದರಂತೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಪ್ರಶಾಂತ್ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಲೋಕಾಯುಕ್ತದ ಅಧಿಕಾರಿಯೊಬ್ಬರು, ”ನಾವು ಅವರ ಕಚೇರಿಯಲ್ಲಿ ತಪಾಸಣೆ ನಡೆಸಿದ್ದೇವೆ, ಅಲ್ಲಿ 1.7 ಕೋಟಿ ರೂ. ಪತ್ತೆಯಾಗಿದೆ. ಪ್ರಶಾಂತ್ ಅವರ ತಂದೆಯ ಪರವಾಗಿ ಲಂಚ ಪಡೆಯುತ್ತಿದ್ದಾರೆ ಎಂದು ನಮಗೆ ಶಂಕಿಸಲಾಗಿದೆ. ನಾವು ಅವರ ಕಚೇರಿಯಲ್ಲಿ ಸಿಕ್ಕ ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಹೇಳಿದರು.